Sunday, May 24, 2015

ಮಾಸ್ತರ್ ಮಂದಿ-1

              ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಶಿಕ್ಷಕರು ಬಹುಮುಖ್ಯ ಪಾತ್ರವನ್ನು ವಹಿಸುತ್ತಾರೆ. ವ್ಯಕ್ತಿಯ ಬದುಕನ್ನು ರೂಪಿಸುವವರು ಶಿಕ್ಷಕರು ಎಂದರೆ ತಪ್ಪಾಗಲಿಕ್ಕಿಲ್ಲ. ನನ್ನ ಬದುಕಿನಲ್ಲಿ ಅದೆಷ್ಟೋ ಶಿಕ್ಷಕರು ಬಂದು ಹೋಗಿದ್ದಾರೆ. ಬಿನ್ನೆತ್ತಿಯಿಂದ ಹಿಡಿದು ಕಾಲೇಜು ಕೊನೆಯ ವರ್ಷದ ವರೆಗೆ 50ಕ್ಕೂ ಹೆಚ್ಚು ಜನ ನನ್ನ ಬದುಕನ್ನು ರೂಪಿಸಿದವರು. ಅವರ ಬಗ್ಗೆ ಒಂದಿಷ್ಟು ಮಾತು ನಾನು ಹೇಳಿಕೊಳ್ಳಲೇಬೇಕು. ನನಗೆ ನೆನಪಿರುವಷ್ಟು ಶಿಕ್ಷಕರ ಬಗ್ಗೆ ಹೇಳುತ್ತೇನೆ. ಈ ಶಿಕ್ಷಕರು ನನ್ನ ಪಾಲಿಗೆ ಸಿಹಿಯೂ ಆಗಿದ್ದಾರೆ, ಕಹಿಯೂ ಆಗಿದ್ದಾರೆ. ಅಂತವರ ಬಗ್ಗೆ ನೆನಪು ಮಾಡಿಕೊಳ್ಳುವ ಲೇಖನ ಇದು. ಬರೆಯುತ್ತ ಸಾಗುತ್ತೇನೆ. ಕಂತುಗಳ ಲೆಕ್ಕವಾದರೂ ಆದೀತು.

ಸತೀಶ ಮಾಸ್ತರ್ರು :
                     ನನಗೆ ನೆನಪಿರುವಂತೆ ಸತೀಶ ಮಾಸ್ತರ್ರು ನನ್ನ ಶಾಲಾ ಜೀವನದ ಮೊಟ್ಟ ಮೊದಲ ಮಾಸ್ತರ್ರು. ಬಿನ್ನೆತ್ತಿಯಿಂದ ಹಿಡಿದು ಒಂದನೇ ಕ್ಲಾಸಿನಲ್ಲಿ ಕಲಿಸಿದ ಈ ಮಾಸ್ತರ್ರ ನೆನಪು ಅಸ್ಪಷ್ಟವಾಗಿದೆ. 4ನೇ ವರ್ಷದಿಂದ ಬಿನ್ನೆತ್ತಿಗೆ ಹೋಗಲು ಶುರು ಮಾಡಿದ್ದ ನಾನು 6ನೇ ವರ್ಷದ ವರೆಗೂ ಬಿನ್ನೆತ್ತಿಯಲ್ಲೇ ಉಳಿದುಕೊಳ್ಳಲು ಈ ಮಾಸ್ತರ್ರೇ ಪ್ರಮುಖ ಕಾರಣ. ಎಲ್ಲ ಹುಡುಗರಿಗಿಂತ ಕುಳ್ಳಗೆ ಕಾಣುತ್ತಿದ್ದ ನಾನು 6 ವರ್ಷವಾದರೂ 4 ವರ್ಷದ ಹುಡುಗರಂತೆ ಕುಳ್ಳಗೇ ಇದ್ದೆ. ಪ್ರತಿವರ್ಷ ಅವರು ನನ್ನನ್ನು ತಲೆಯ ಮೇಲಿನಿಂದ ಕೈಯನ್ನು ಉದ್ದ ಹಿಡಿದು ಕಿವಿಯನ್ನು ಮುಟ್ಟು ಎನ್ನುತ್ತಿದ್ದರು. ಆದರೆ ನನ್ನ ಕೈ ಕಿವಿಗೆ ತಲುಪುತ್ತಿರಲಿಲ್ಲ. ಇನ್ನೂ ಸಮಾ ವರ್ಷವಾಗಿಲ್ಲ ಎಂದು ಹೇಳಿ ನನ್ನನ್ನು 1ನೇ ಕ್ಲಾಸಿಗೆ ಸೇರಿಸಿಕೊಳ್ಳಲು ಹಿಂದೇಟು ಹಾಕಿದವರು ಈ ಮಾಸ್ತರ್ರು.
                    ಈ ಮಾಸ್ತರ್ರು ನಾನು ಕಲಿಯುತ್ತಿದ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ಕಳ್ಳ-ಕೋಡ್ಸಿಂಗೆಯಿಂದ ರಸ್ತೆ ಮಾರ್ಗದ ಮೂಲಕ ಅನಾಮತ್ತು 6 ಕಿಮಿ ದೂರದ ಕೋಡ್ಸರದಲ್ಲಿ ಉಳಿದುಕೊಳ್ಳುತ್ತಿದ್ದರು. ಒಳ ರಸ್ತೆಯಲ್ಲಿ ಕಾಲ್ನಡಿಗೆಯಲ್ಲಿ 3 ಕಿ.ಮಿ ನಡೆದು ಪ್ರತಿದಿನ ಶಾಲೆಗೆ ಬರುತ್ತಿದ್ದ ಸತೀಶ ಮಾಸ್ತರ್ರು ಕಪ್ಪಗಿದ್ದರು. ಥಟ್ಟನೆ ನೋಡಿದರೆ ಸಿನಿಮಾ ನಟ, ಹಿರಿಯ ಐಎಎಸ್ ಅಧಿಕಾರಿ ಕೆ. ಶಿವರಾಮು ಅವರನ್ನು ನೆನಪಿಸುವಂತಿದ್ದರು ಅವರು. ಮೂರ್ನಾಲ್ಕು ವರ್ಷ ನಮ್ಮೂರ ಶಾಲೆಯಲ್ಲಿ ಕಲಿಸಿದ್ದರೇನೋ. ಆದರೆ ನಾನು 1ನೇ ಕ್ಲಾಸಿಗೆ ಬರುವ ವೇಳೆಗೆ ಅವರು ವರ್ಗವಾಗಿ ಹೋಗಿದ್ದರು.
                   ಸತೀಶ ಮಾಸ್ತರ್ರು ನಮ್ಮೂರ ಶಾಲೆಗೆ ಕಲಿಸಲು ಬರುವ ವೇಳೆಗೆ ಇಡೀ ಶಾಲೆಯಲ್ಲಿ 120ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದರು. ಒಬ್ಬರೇ ಶಿಕ್ಷಕರಿದ್ದರು. ಆಗ ನಮ್ಮೂರಿನಲ್ಲಿ ಎಸ್ಎಸ್ಎಲ್ಸಿ ಓದಿ ಮುಗಿಸಿದ್ದ ನನ್ನ ಅತ್ತೆಯಂದಿರು ಇಬ್ಬರನ್ನು ಪಾರ್ಟ್ ಟೈಮಿಗೆ ಕಲಿಸಲು ಬರುವಂತೆ ಹೇಳಿದ್ದು ಇನ್ನೂ ನೆನಪಿದೆ. ಬಿನ್ನೆತ್ತಿ ಓದಲು ಬರುತ್ತಿದ್ದ ನನಗೆ ನನ್ನ ಅತ್ತೆಯಂದಿರು ಶಿಕ್ಷಕಿಯರಾಗಿ ಕಲಿಸುತ್ತಿದ್ದರು. ಸುಧತ್ತೆ ಹಾಗೂ ಶಾಂತಲತ್ತೆ ಎಂಬ ಹೆಸರಿನ ಅವರನ್ನು ನಾನು ಶಾಲೆಯಲ್ಲಿಯೂ ಸುಧತ್ತೆ ಹಾಗೂ ಶಾಂತಲತ್ತೇ ಎಂದೇ ಕರೆಯುತ್ತಿದ್ದೆ. ಒಂದಿನ ಈ ಅತ್ತೆಯರು ನನ್ನನ್ನು ಕರೆದು `ಶಾಲೆಯಲ್ಲಿ ಅತ್ತೆ ಅನ್ನಬೇಡ. ಟೀಚರ್ ಎಂದು ಕರಿ. ನೆಂಟಸ್ತನ ಏನಿದ್ದರೂ ಮನೆಯಲ್ಲಿ ನೋಡಿಕೊ..' ಎಂದು ಹೇಳಿದ್ದಿನ್ನೂ ನನ್ನ ನೆನಪಿನಲ್ಲಿ ಸ್ಪಷ್ಟವಾಗಿಯೇ ಇದೆ. ಬಹುಶಃ ಅತ್ತೆಯರು ಹೀಗೆ ಹೇಳಿದ ನಂತರವೇ ನಮ್ಮ ನೆಂಟರು ಯಾರಾದರೂ ಮಾಸ್ಟರಾಗಿ ನನಗೆ ಕಲಿಸಲು ಬಂದರೆ ಶಾಲೆಯಲ್ಲಿ ಅವರನ್ನು ಸರ್ ಎಂದು ಸಂಬೋಧನೆ ಮಾಡಬೇಕು, ಮನೆಯಲ್ಲಿ ಮಾತ್ರ ನೆಂಟರಾಗಿ ಕಾಣಬೇಕು ಎಂಬುದು ಅರಿವಾದದ್ದು. ಇಂತಹ ಅತ್ತೆಯರಿಗೆ ಸರಿಯಾಗಿ ಸಂಬಳ ಕೊಡಲಿಲ್ಲ ಎಂದು ಅತ್ತೆಯರ ಅಪ್ಪ ಸತೀಶ ಮಾಸ್ತರ್ರ ಬಳಿ ಜಗಳ ಕಾಯ್ದಿದ್ದು ಇನ್ನೂ ನನ್ನ ನೆನಪಿನಲ್ಲಿ ಉಳಿದುಕೊಂಡಿದೆ.
                  ಇಂತಹ ಮಾಸ್ತರ್ರು ನಮ್ಮೂರ ಶಾಲೆಯಿಂದ ಟ್ರಾನ್ಸಫರ್ ಆಗುವ ವೇಳೆಗೆ ಕುಳ್ಳೀಶ್ವರ ಮಾಸ್ತರ್ರು ಶಿಕ್ಷಕರಾಗಿ ಬಂದಿದ್ದರು. ಅವರಲ್ಲದೇ ಅನಸೂಯಕ್ಕೋರು, ಗಣೇಶ ಭಟ್ಟರು ಮಾಸ್ತರ್ರಾಗಿ ಬಂದಿದ್ದು ನನಗಿನ್ನೂ ನೆನಪಿದೆ. ಆ ಸಂದರ್ಭದಲ್ಲಿಯೇ ತಾರಕ್ಕೋರು ಕೂಡ ನಮ್ಮ ಶಾಲೆಗೆ ಅಕ್ಕೋರಾಗಿ ಬಂದಿದ್ದರು.
                  ಸತೀಶ ಮಾಸ್ತರ್ರ ಕಾಲದಲ್ಲೇ ನನ್ನ ಬದುಕಿನಲ್ಲೊಂದು ಮಜವಾದ ಸಂಗತಿ ಜರುಗಿತ್ತು. ಅದಿನ್ನೂ ನನ್ನ ನೆನಪಿನಲ್ಲಿ ಹಸಿಯಾಗಿದೆ. ನಾನು ಆವತ್ತೊಂದಿನ ಅದೇನೋ ನೆಪವನ್ನು ಹೂಡಿ ಶಾಲೆಗೆ ಹೋಗಿರಲಿಲ್ಲ. ನನ್ನ ಗ್ರಹಚಾರಕ್ಕೆ ಆ ದಿನವೇ ಶಾಲೆಯಲ್ಲಿ ಕ್ರೀಡಾಕೂಟವನ್ನು ಮಾಡಿಬಿಟ್ಟಿದ್ದರು. ನಾನು ಭಾಗವಹಿಸುವ ಹುಮ್ಮಸ್ಸಿನಲ್ಲಿದ್ದೆನಾದರೂ ಕಳ್ಳಬಿದ್ದ ಕಾರಣ ಭಾಗವಹಿಸವುದು ತಪ್ಪಿ ಹೋಗಿತ್ತು. ಆಮೇಲೆ ನಾನು ನನ್ನನ್ನು ಹಳಿದುಕೊಂಡು ಸುಮ್ಮನಾಗಿದ್ದೆ ಮರೆತೂ ಹೋಗಿತ್ತು. ಕೊನೆಗೊಂದು ದಿನ ಶಾಲಾ ವಾರ್ಷಿಕೋತ್ಸವ ಬಂದಿತ್ತು. ಆಗ ಇದ್ದಕ್ಕಿದ್ದಂತೆ ಮೈಕಿನಲ್ಲಿ ನನ್ನ ಹೆಸರನ್ನು ಕರೆದಾಗ ಮಾತ್ರ ನಾನು ಬೆಚ್ಚಿ ಬಿದ್ದಿದ್ದೆ. ಕ್ರೀಡಾಕೂಟದಲ್ಲಿ ನನಗೂ ಒಂದು ಬಹುಮಾನ ಬಂದಿತ್ತು. ಆಟದಲ್ಲಿ ಭಾಗವಹಿಸಿದ್ದಕ್ಕಾಗಿ ಸಮಾಧಾನಕರ ಬಹುಮಾನ ನನಗೆ ಪ್ರಾಪ್ತವಾಗಿತ್ತು. ಅರ್ರೇ ಶಾಲೆಗೆ ಹೋಗದ ನಾನು ಬಹುಮಾನ ಪಡೆದುಕೊಂಡಿದ್ದೆ ಎನ್ನುವುದು ಮಾತ್ರ ಬಹಳ ತಮಾಷೆಯ ವಿಷಯವಾಗಿತ್ತು. ಕೊನೆಗೆ ಗೊತ್ತಾಗಿದ್ದೇನೆಂದರೆ ಶಾಲೆಯ ಪ್ರತಿಯೊಂದು ವಿದ್ಯಾರ್ಥಿಗಳಿಗೂ ಕೂಡ ಆಟದಲ್ಲಿ ಭಾಗವಹಿಸಲಿ, ಭಾಗವಹಿಸದೇ ಇರಲಿ, ಯಾವುದೇ ತಾರತಮ್ಯ ಮಾಡದೇ ಪ್ರಶಸ್ತಿ ಪತ್ರ ನೀಡಬೇಕು ಎಂದು ಸತೀಶ ಮಾಸ್ತರ್ರು ಆಲೋಚಿಸಿದ್ದರಂತೆ. ಅದಕ್ಕೆ ತಕ್ಕಂತೆ ಅವರು ನಡೆದುಕೊಂಡಿದ್ದರು. ನನಗೆ ಪ್ರಶಸ್ತಿ ಬಂದಿತ್ತು.
               ಇಂತಹ ಸತೀಶ ಮಾಸ್ತರ್ರು ಶಾಲೆಯಲ್ಲಿ ಕಲಿಸುತ್ತಿದ್ದ ಸಂದರ್ಭದಲ್ಲಿ ಶಾಲಾ ವಾರ್ಷಿಕೋತ್ಸವ ಬಹಳ ಅದ್ಧೂರಿಯಾಗಿ ನಡೆಯುತ್ತಿತ್ತು. ರಾತ್ರಿಯಿಂದ ಬೆಳಗಿನವರೆಗೂ ವಾರ್ಷಿಕೋತ್ಸವದ ನಿಮಿತ್ತ ಕಾರ್ಯಕ್ರಮಗಳು ನಡೆಯುತ್ತಿದ್ದವು. ಒಂದು ಸಾರಿ ಘಾಟಿ ಮುದುಕಿ ಎನ್ನುವ ನಾಟಕವೂ ನಡೆದಿತ್ತು. ಅದರಲ್ಲಿ ಮಾಸ್ತರ್ರು ಪಾತ್ರ ಮಾಡಿದ್ದರು. ಅವರ ಮನೋಜ್ಞ ನಟನೆಗೆ ಬಹಳಷ್ಟ ಬಹುಮಾನಗಳು ಬಂದಿದ್ದು ನೆನಪಿನಲ್ಲಿದೆ. ಆಗಲೇ ಸ್ಟೇಜ್ ಹತ್ತಿದ್ದ ನಾನು ನಾಲ್ಕೈದು ಡ್ಯಾನ್ಸುಗಳನ್ನೂ ಮಾಡಿದ್ದೆ. ನಮ್ಮೂರಿನ, ನನ್ನದೇ ವಾರಗೆಯ ಕೂಸು ರಂಜನಾ `ಭಾಳ ಒಳ್ಳೇಯೋರ್ ನಮ್ಮಿಸ್ಸು,, ಏನ್ ಕೇಳಿದ್ರೂ ಯೆಸ್ ಯೆಸ್ಸು..' ಎನ್ನುವ ಹಾಡಿಗೆ ಸ್ಟೇಜಿನ ಮೇಲೆ ಹೋಗಿ ಪಕ್ಕದಲ್ಲಿ ನಿಂತಿದ್ದ ಶಿಕ್ಷಕರನ್ನು ನೋಡಿ ಡ್ಯಾನ್ಸ್ ಮಾಡಿದ್ದಿನ್ನೂ ನನ್ನ ನೆನಪಿನಲ್ಲಿ ಉಳಿದುಕೊಂಡಿದೆ.
               ಆ ವಾರ್ಷಿಕೋತ್ಸವದ ದಿನವೇ ನಾನು ಮೊಟ್ಟ ಮೊದಲ ಬಾರಿಗೆ ಉಲ್ಕಾಪಾತವನ್ನು ನೋಡಿದ್ದು. ತಾರಕೆಯೊಂದು ಆಗಸದಲ್ಲಿ ಸೊಯ್ಯನೆ ಹಾರಿ ಹೋಗಿ ಉರಿದು ಭಸ್ಮವಾಗಿತ್ತು. ಅದನ್ನು ನೋಡುತ್ತಿದ್ದ ನನ್ನ ಮಿತ್ರ ಮಹೇಶ ಎಂಬಾತ, ನೋಡು ಈಶ್ವರ ತನ್ನ ಮೂರನೇ ಕಣ್ಣನ್ನು ಬಿಟ್ಟಿದ್ದಾನೆ. ಯಾರನ್ನೋ ಸುಟ್ಟು ಹಾಕಿದ್ದ ನೋಡು ಎಂದು ಹೇಳಿದ್ದು ಇನ್ನೂ ನೆನಪಿನಲ್ಲಿಯೇ ಇದೆ.
                 ಸತೀಶ ಮಾಸ್ತರ್ರಿದ್ದಾಗಲೇ ನಮ್ಮೂರ ಶಾಲೆ ಮೊಟ್ಟ ಮೊದಲ ಬಾರಿಗೆ ಕಾನಸೂರು ಕೇಂದ್ರ ಶಾಲಾ ಮಟ್ಟದಲ್ಲಿ ವೀರಾಗ್ರಣಿ ಪ್ರಶಸ್ತಿ ಬಾಚಿಕೊಂಡಿತ್ತು. ಅಷ್ಟಲ್ಲದೇ ಹೆಗ್ಗರಣಿಯಲ್ಲಿ ನಡೆಯುತ್ತಿದ್ದ ವಲಯ ಮಟ್ಟದಲ್ಲೂ ವೀರಾಗ್ರಣಿಯಾಗಿ ಸಿದ್ದಾಪುರ ತಾಲೂಕಾ ಮಟ್ಟದಲ್ಲೂ ಭಾಗವಹಿಸಿತ್ತು. ಅವರಿದ್ದಾಗಲೇ ಆರಡಿ ಎತ್ತರದ ರವಿ ಹಾಗೂ ಆತನ ತಮ್ಮ ಹರೀಶ ಎಂಬಿಬ್ಬರು 100 ಮೀಟರ್, 200 ಮೀಟರ್, 500 ಮೀಟರ್ ಸೇರಿದಂತೆ ಓಟದ ಎಲ್ಲಾ ವಿಭಾಗದಲ್ಲಿ ಪ್ರಶಸ್ತಿಯನ್ನು ಬಾಚಿಕೊಂಡು ಬಂದಿದ್ದರು. ನನಗೆ ಇವರು ಆಗ ಬಹಳ ವಿಸ್ಮಯದ ವ್ಯಕ್ತಿಗಳಾಗಿ ಕಂಡಿದ್ದರು. ಶಾಲೆಗೆ ಪ್ರಶಸ್ತಿ ತಂದುಕೊಟ್ಟ ಇವರ ಮೇಲೆ ಭಯಂಕರ ಹೆಮ್ಮೆ ಮೂಡಿತ್ತು. ಇಂತಹ ಪ್ರಶಸ್ತಿ ಬಾಚಿಕೊಂಡು ಬಂದಿದ್ದ ಈ ಸಹೋದರರು ಕೊನೆಗೊಂದು ದಿನ ಸತೀಶ ಮಾಸ್ತರ್ರ ಕೈಯಲ್ಲಿ ಕಳ್ಳ ಎನ್ನುವ ಬಿರುದನ್ನೂ ಪಡೆದುಕೊಂಡಿದ್ದು ಮಾತ್ರ ಅಚ್ಚರಿಗೆ ಕಾರಣವಾಗಿತ್ತು.
             ಶಾಲೆಯಲ್ಲಿ ಏನೋ ಒಂದು ಕಳುವಾಗಿತ್ತಂತೆ. ಅದಕ್ಕೆ ಸರಿಯಾಗಿ ಎಲ್ಲರನ್ನೂ ಪ್ರಶ್ನಿಸಿದ್ದರು ಸತೀಶ ಮಾಸ್ತರ್ರು. ಆದರೆ ಹರೀಶ ಹಾಗೂ ರವಿ ಮಾತ್ರ ಸರಿಯಾಗಿ ಉತ್ತರ ಹೇಳಿರಲಿಲ್ಲ. ಅದಕ್ಕೆ ಪ್ರತಿಯಾಗಿ ಸತೀಶ ಮಾಸ್ತರ್ರು ಸಿಕ್ಕಾಪಟ್ಟೆ ಹೊಡೆದು ಹಾಕಿದ್ದರು. ನನಗಿನ್ನೂ ಸತೀಶ ಮಾಸ್ತರ್ರು ಆರು ಅಡಿ ಎತ್ತರದ ರವಿಯನ್ನು ಹೊಡೆಯುತ್ತಿದ್ದುದು ಹಾಗೂ ಆತ ದಿನವಿಡೀ ಅಳುತ್ತಿದ್ದುದು ನೆನಪಿನಲ್ಲಿದೆ.
               ಹೀಗಿದ್ದಾಗ ಒಂದು ದಿನ ನಮ್ಮ ಶಾಲೆಯಲ್ಲೊಂದು ಗಲಾಟೆ ನಡೆದು ಹೋಗಿತ್ತು. 7ನೇ ತರಗತಿ ವಿದ್ಯಾರ್ಥಿಗಳಿಗೆ ಸತೀಶ ಮಾಸ್ತರ್ರು ಸ್ಪೆಷಲ್ ಕ್ಲಾಸ್ ತೆಗೆದುಕೊಳ್ಳುತ್ತಿದ್ದರು. ಅದೊಂದು ದಿನ ಅವರು ಶಾಲೆಗೆ ಬರಲು ಲೇಟಾಗಿತ್ತು. ಅದೇ ಸಂದರ್ಭದಲ್ಲಿ ಒಬ್ಬ ಹುಡುಗ ಹುಡುಗಿಯೊಬ್ಬಳಿಗೆ ಪ್ರಪೋಸ್ ಮಾಡಿಬಿಟ್ಟಿದ್ದ. 7ನೇ ತರಗತಿಯಲ್ಲೇ ಲವ್ ನಡೆದಿತ್ತು. ಆ ಹುಡುಗಿ ಅದೇನು ಹೇಳಿದಳೋ. ಬಹುಶಃ ಯೆಸ್ ಅಂದಿರಬೇಕು. ಹುಡುಗ ನಾಯ್ಕರ ಪೈಕಿ. ಹುಡುಗಿ ಬ್ರಾಹ್ಮಣರವಳು. 7ನೇ ತರಗತಿಯ ಲವ್ ಗಲಾಟೆಗೆ ಕಾರಣವಾಗಿತ್ತು. ಅದ್ಹೇಗೆ ಸತೀಶ ಮಾಸ್ತರ್ರಿಗೆ ಗೊತ್ತಾಯಿತೋ. ಶಾಲೆಗೆ ಬಂದವರೇ ಹುಡುಗ, ಹುಡುಗಿ, ಅವರ ಲವ್ವಿಗೆ ಸಹಾಯ ಮಾಡಿದವರು, ಅವರ ಕ್ಲಾಸಿನವರು ಎಲ್ಲರನ್ನೂ ನಿಲ್ಲಿಸಿ ಹೊಡೆತದ ಮೇಲೆ ಹೊಡೆತ ಕೊಟ್ಟಿದ್ದರು. ಸತತ ಮೂರು ದಿನ ಹೊಡೆದಿದ್ದು ನೆನಪಿದೆ. ಶಾಲೆಯಲ್ಲಿ ಸಿಕ್ಕಾಪಟ್ಟೆ ಕಿಲಾಡಿ ಎನ್ನುವ ಬಿರುದನ್ನು ಗಳಿಸಿಕೊಂಡಿದ್ದ ನನಗೆ ಮೂರು ದಿನಗಳ ಸತೀಶ ಮಾಸ್ತರ್ರ ಪ್ರತಾಪ ನೊಡಿ 15 ದಿನ ಪುಂಗಿ ಬಂದಾಗಿತ್ತು.
                ಕೊನೆಗೊಂದು ದಿನ ಸತೀಶ ಮಾಸ್ತರ್ರ ವರ್ಗಾವಣೆಯಾಗಿತ್ತು. ಅವರು ಅದೆಷ್ಟೇ ರುದ್ರ ಪ್ರತಾಪ ತೋರಿಸಲಿ, ಸಿಟ್ಟು ಮಾಡಲಿ, ಪ್ರೀತಿಯನ್ನು ತೋರಿಸಲಿ, ನಮ್ಮಲ್ಲಿ ಅದೇನೋ ಬಂಧ ಬೆಳೆದು ಬಿಟ್ಟಿತ್ತು. ಶಾಲೆ ಬಿಟ್ಟು ಹೋಗುವಾಗ ಮಾತ್ರ ಪ್ರತಿಯೊಬ್ಬರಿಗೂ ಒಂದೊಂದು ಲೋಟವನ್ನು ಕೊಡುಗೆಯಾಗಿ ಕೊಟ್ಟು ಹೋಗಿದ್ದರು. ಪ್ರೀತಿಯ ವಿದ್ಯಾರ್ಥಿಗಳಿಗೆ ಸತೀಶ ಮಾಸ್ತರ್ರ ನೆನಪಿನ ಕಾಣಿಕೆ ಎಂದು ಬರೆದ ಚೂಪಿ ಮುಕುಳಿಯ ಸ್ಟೀಲ್ ಲೋಟ ಮೊನ್ನೆ ಮೊನ್ನೆ ಮೊನ್ನೆಯ ವರೆಗೂ ನನ್ನ ಬಳಿ ಇತ್ತು. ಇಂತಹ ಸತೀಶ ಮಾಸ್ತರ್ರು ಈಗ ಎಲ್ಲಿದ್ದಾರೋ? ಏನು ಮಾಡುತ್ತಿದ್ದಾರೋ ಗೊತ್ತಿಲ್ಲ. ಮೊದಲ ಶಿಕ್ಷಕರು ಸದಾ ನೆನಪಿನಲ್ಲಿದ್ದಾರೆ.

ಅನಸೂಯಕ್ಕೋರು :
             ಅನಸೂಯಕ್ಕೋರಿಗೆ ನಾವು ಯಾವತ್ತೂ ಅನಸೂಯಕ್ಕೋರು ಎಂದು ಕರೆದಿದ್ದೇ ಇಲ್ಲ. ಹೆಡ್ಡಕ್ಕೋರು ಎಂದು ಅಡ್ಡ ಹೆಸರಿನಲ್ಲಿ ಕರೆದೇ ರೂಢಿ. ನಾನು ಬಿನ್ನೆತ್ತಿಯಲ್ಲಿದ್ದಾಗ ಅನಸೂಯಕ್ಕೋರು ನನಗೆ ಕಲಿಸಲು ಬಂದಿದ್ದರು. ಇವರ ಬಗ್ಗೆ ಹೆಚ್ಚೇನೂ ನನಗೆ ಗೊತ್ತಿಲ್ಲ ಬಿಡಿ. ಬಿನ್ನೆತ್ತಿಯಾಗಿದ್ದ ಕಾರಣ ನಾನು ಬಹಳ ಶಾಲೆಗೆ ಕಳ್ ಬೀಳುತ್ತಿದ್ದೆ. ಆವಾಗೆಲ್ಲಾ ಜೊತೆಯಲ್ಲಿದ್ದ ಹುಡುಗರು ಹೆಡ್ಡಕ್ಕೋರು ಹೊಡಿತ್ರು ತಡಿ ಎಂದು ಹೇಳುತ್ತಿದ್ದುದು ನೆನಪಿನಲ್ಲಿರುತ್ತಿತ್ತು. ಆದರೆ ಬಿನ್ನೆತ್ತಿಯಾದ ಕಾರಣ ಅವರು ಮಾಫಿ ಮಾಡುತ್ತಿದ್ದರು.
                  ಇಂತಹ ಸಂದರ್ಭದಲ್ಲಿಯೇ ಬಯಲು ಸೀಮೆಯ ಒಬ್ಬ ಹುಡುಗ ನನ್ನ ಗೆಳೆಯನಾಗಿ ಸಿಕ್ಕಿದ್ದ. ಅವನ ಹೆಸರೂ ವಿನಯನೇ.  ಹಳೆಯ ಶಾಲೆಯಲ್ಲಿ ಇದ್ದಿದ್ದು 2 ರೂಮುಗಳಾಗಿದ್ದವು. ಜೊತೆಗೆ ಹಾಲು ಡೇರಿ ಎಂದು ಕರೆಯುವ ಒಂದು ಔಟ್ ಹೌಸ್ ಶಾಲೆಯಿಂದ ಸ್ವಲ್ಪ ದೂರದಲ್ಲಿತ್ತು. ಬಿನ್ನೆತ್ತಿ, ಒಂದನೇ ಕ್ಲಾಸ್ ಹಾಗೂ 2ನೇ ಕ್ಲಾಸಿನ ಮಕ್ಕಳು ಈ ಔಟ್ ಹೌಸಿನಲ್ಲಿ ಉಳಿದುಕೊಳ್ಳಬೇಕಿತ್ತು. ಸರಿ ಸುಮಾರು 40 ಜನರಿದ್ದೆವೇನೋ. ಒಂದು ದಿನ ನಾನು ಹಾಗೂ ದೋಸ್ತ ವಿನಯ, ಅಡಕಳ್ಳಿಯ ವಿಜಯ ಔಟ್ ಹೌಸ್ ಶಾಲೆಯಲ್ಲಿ ಕುಳಿತಿದ್ದೆವು. ಎಲ್ಲರೂ ಪಾಠ ಕೇಳುತ್ತಿದ್ದರೆ ನಾವು ಮಾತ್ರ ಸುತ್ತ ಮುತ್ತ ಇದ್ದ ಮರ, ಬೆಟ್ಟ ಗುಡ್ಡ ನೋಡುತ್ತಿದ್ದೆವು. ಆಗಲೇ ಶಾಲೆಗೆ ಹೊಂದಿಕೊಂಡಂತೆ ಇದ್ದ ಮರವೊಂದರ ಮೇಲೆ ದೊಡ್ಡದೊಂದು ಹಾವಿರುವುದು ನಮ್ಮ ಕಣ್ಣಿಗೆ ಬಿದ್ದು ಬಿಟ್ಟಿತ್ತು. ದೊಡ್ಡದಾಗಿ ಗಲಾಟೆ ಎಬ್ಬಿಸಿದೆವು. ಗಲಾಟೆಯಿಂದಾಗಿ ಒಮ್ಮೆಲೆ ಎಲ್ಲರಿಗೆ ದಿಗ್ಭ್ರಮೆ. ಕೊನೆಗೆ ಸತೀಶ ಮಾಸ್ತರ್ರು ಯಾರನ್ನೋ ಕರೆಸಿ ಆ ಹಾವನ್ನು ಕೊಲ್ಲಿಸಿದ್ದು ನೆನಪಿನಲ್ಲಿದೆ. ಈ ಘಟನೆಯ ನಂತರ ಔಟ್ ಹೌಸಿನಲ್ಲಿ ಎಲ್ಲರಿಗೂ ಕಲಿಸುವ ಕಾರ್ಯಕ್ಕೆ ಪುಲ್ ಸ್ಟಾಪ್ ಬಿದ್ದಿತ್ತು. ನಾವೆಲ್ಲ ಕಿಕ್ಕಿರಿದು ತುಂಬಿದ್ದ ಶಾಲೆಯ ಮುಖ್ಯ ಕೊಠಡಿಗೆ ವಾಪಾಸಾಗಿದ್ದೆವು.

ಈಶ್ವರ ನಾಯ್ಕರು :
            ಈಶ್ವರ ನಾಯ್ಕರು ಸತೀಶ ಮಾಸ್ತರು ಕಲಿಸುತ್ತಿದ್ದ ಸಂದರ್ಭದಲ್ಲಿಯೇ ಶಾಲೆಗೆ ಬಂದವರು. ಕೇವಲ 5 ಅಡಿ ಎತ್ತರ ಇದ್ದ ಈ ಮಾಸ್ತರ್ರನ್ನು ಎಲ್ಲರೂ ಕುಳ್ಳೀಶ್ವರ ಮಾಸ್ತರ್ರು ಎಂದೇ ಕರೆಯುತ್ತಿದ್ದರು. ಅವರಿಗೆ ಹೀಗೆ ಕರೆಯುವುದಕ್ಕೂ ಮಜವಾದ ಕಾರಣವಿದೆ. ಈಗಿನಂತೆ ಆಗಲೂ ಮಾಸ್ತರ್ರು ಮಕ್ಕಳ, ಜನರ ಗಣತಿ ಮಾಡಲೇಬೇಕಿತ್ತು. ದಂಟಕಲ್ಲಿಗೆ ಬಂದಿದ್ದ ಈ ಶ್ವರ ಮಾಸ್ತರ್ರನ್ನು ನೋಡಿ ನನ್ನ ಪಕ್ಕದ ಮನೆಯ ಅತ್ತೆಯರು ಸಿಕ್ಕಾಪಟ್ಟೆ ಗೋಳು ಹೊಯ್ದುಕೊಂಡಿದ್ದರು. ಆಗಷ್ಟೇ ಹೈಸ್ಕೂಲನ್ನು ಮುಗಿಸಿದ್ದ ಅತ್ತೆಯರು ಈಶ್ವರ ಮಾಸ್ತರ್ರು ಕುಳ್ಳಗಿದ್ದಾರೆ ಎಂಬುದನ್ನೇ ದೊಡ್ಡ ಜೋಕ್ ಮಾಡಿ ನಗಲು ಆರಂಭಿಸಿದ್ದರು. ಇದರಿಂದಾಗಿ ಅವಮಾನ ಪಟ್ಟುಕೊಂಡಿದ್ದ ಮಾಸ್ತರ್ರು ನೊಂದುಕೊಂಡು ವಾಪಸಾಗಿದ್ದರು. ಆ ದಿನದ ನಂತರ ಈಶ್ವರ ನಾಯ್ಕರ ಪ್ರಸ್ತಾಪ ಬಂದಾಗಲೆಲ್ಲ ಕುಳ್ಳೀಶ್ವರ ಮಾಸ್ತರ್ರು ಎಂದೇ ಕರೆಯುವುದು ರೂಢಿಯಾಗಿತ್ತು.
               ಈ ಈಶ್ವರ ಮಾಸ್ತರ್ರು ಇದ್ದ ಸಂರ್ಭದಲ್ಲಿಯೇ ಒಂದು ಘಟನೆ ನಡೆಯಿತು. ಶಾಲೆಯಲ್ಲಿ ಎಲ್ಲರೂ ಕ್ರಿಕೆಟ್ ಹುಚ್ಚಿಗೆ ಬಲಿಯಾಗಿದ್ದ ಸಂದರ್ಭದಲ್ಲಿ ಸತೀಶ ಮಾಸ್ತರ್ರು ನಮ್ಮಲ್ಲಿ ಪುಟ್ ಬಾಲ್ ಹುಚ್ಚನ್ನು ಬೆಳೆಸಲು ಮುಂದಾಗಿದ್ದರು. ಎಲ್ಲ ಹುಡುಗರನ್ನೂ ಎದುರಿಗೆ ನಿಲ್ಲಿಸಿ ಪುಟ್ ಬಾಲ್ ಕೊಟ್ಟು ಬಿಟ್ಟಿದ್ದರು. ಎಲ್ಲರ ಜೊತೆ ನಾನೂ ಹುರುಪಿನಿಂದ ಆಡಲು ಶುರು ಮಾಡಿದ್ದೆ. ಹೀಗಿದ್ದಾಗಲೇ ದತ್ತಾತ್ರೆಯ ಎಂಬ ದೈತ್ಯ ಹುಡುಗನೊಬ್ಬ ಜೋರಾಗಿ ಓಡಿಬಂದು ನನಗೆ ಢಿಕ್ಕಿ ಹೊಡೆದು ಬಿಟ್ಟಿದ್ದ. ಢಿಕ್ಕಿ ಹೊಡೆದ ರಭಸಕ್ಕೆ ನಾನು ಹಾರಿ ಹೋಗಿ ದೊಪ್ಪನೆ ಬಿದ್ದಿದ್ದೆ. ಬಿದ್ದ ಹೊಡೆತಕ್ಕೆ ಕಲ್ಲಿಗೆ ಜೋರಾಗಿ ನನ್ನ ತಲೆ ಬಡಿದು ಬಿಟ್ಟಿತ್ತು. ಬಡಿದ ರಭಸಕ್ಕೆ ತಲೆ ಒಡೆದು ಬಳಬಳನೆ ರಕ್ತ ಸುರಿಯಲು ಆರಂಭವಾಗಿತ್ತು. ತಕ್ಷಣವೇ ಹೆದರಿದ ಸತೀಶ ಮಾಸ್ತರ್ರು ಆಟವನ್ನು ಖೈದು ಮಾಡಿದ್ದರು. ಓಡಿ ಹೋದ ಕುಳ್ಳೀಶ್ವರ ಮಾಸ್ತರ್ರು ತಾವು ಚಾ ಮಾಡಲು ಬಳಕೆ ಮಾಡುತ್ತಿದ್ದ ಚಾಸೊಪ್ಪನ್ನು ತಂದು ಗಾಯಗೊಂಡ ನನ್ನ ತಲೆಗೆ ಹಾಕಿದ್ದರು. ರಕ್ತ ಬರುವುದು ನಿಂತಿತ್ತು. ಈಗಲೂ ನನ್ನ ತಲೆಯ ಮೇಲೆ ಚಿಕ್ಕಂದಿನ ಆ ಗಾಯ ಹಾಗೇ ಉಳಿದುಕೊಂಡಿದೆ. ಆ ಗಾಯದ ಕಲೆಯನ್ನು ಮುಟ್ಟಿಕೊಂಡಾಗೆಲ್ಲ ಸತೀಶ ಮಾಸ್ತರ್ರು, ಕುಳ್ಳೀಶ್ವರ ಮಾಸ್ತರ್ರು, ಪುಟಬಾಲ್ ಆಟ ಹಾಗೂ ನನಗೆ ಢಿಕ್ಕಿ ಹೊಡೆದ ದತ್ತಾತ್ರೇಯ ನೆನಪಾಗುತ್ತಿರುತ್ತಾರೆ.

(ಮುಂದುವರಿಯುತ್ತದೆ)

No comments:

Post a Comment