Tuesday, January 7, 2014

ಜಾಂಡೀಸಾಯ ನಮಃ

ನಗು ನಗು ಎನ್ನುತ್ತಲೇ ಬಂದ
ನನಗೆ ಆ ದಿನ ಹೊಟ್ಟೆಯಾಳದಲ್ಲೆಲ್ಲೋ
ಒತ್ತರಿಸಿ ಬಂದಿತ್ತು ನೋವು |
ಅಷ್ಟಕ್ಕೇ ನಿಲ್ಲಲಿಲ್ಲ, ಜ್ವರ ಮತ್ತು ಸುಸ್ತು|
ತಿನ್ನಹೊರಟರೆ ಹೊಟ್ಟೆಗೇನೂ ಸೇರದು
ತಿಂದರೆ ವಾಂತಿಯ ಜಬರದಸ್ತು||

ಕೂಡಲೆ ವೈದ್ಯರನ್ನು ಕಂಡದ್ದಾಯ್ತು
ಆಸ್ಪತ್ರೆಗೆ ಅಡ್ಮಿಟ್ಟು ಬೇರೆ |
ಆದರೆ ಅವರಿಗೆ ರೋಗ ಕಾಣಲಿಲ್ಲ||
ಡ್ರಿಪ್ಪೆಂದರು, ಟೆಸ್ಟೆಂದರು, ರೋಗದ ಕುರುಹಿಲ್ಲ
ಮೊದಲು ಡೆಂಗ್ಯೂ ಎಂದರು
ನಂತರ ಇಲಿಜ್ವರ |
ಕೊನೆಗೊಮ್ಮೆ ವೈರಲ್ ಫಿವರ್ರು ಎಂದರು!
ಟೆಸ್ಟಿಗಾಗಿ ರಕ್ತ ಹರಿಸಿದ್ದೇ ಬಂತು ||

ಮಧ್ಯ-ಮದ್ಯ ಆಸ್ಪತ್ರೆಯ ನರ್ಸುಗಳು
ಬಹು-ಬಹಳೇ ಕಾಡಿದರು, ಕಟುಕಿಯರು |
ಜೊತೆಗೆ ವೈದ್ಯರ ಬೈಗುಳ ಬೇರೆ,
`ನೀನು ಪತ್ರಕರ್ತ.. ಏನೇನೋ ಬರೀತಿಯಲ್ಲ
ಈಗ ಅನುಭವಿಸು' ಎಂದು ಮೂದಲಿಸಿದರು||

ತಾಸಿಗೊಂದು ಇಂಜೆಕ್ಷನ್ನು, ಮತ್ತೊಂದು ಟೆಸ್ಟು
ಸಾಕಪ್ಪಾ ಸಾಕು, ಜೀವ ಹೈರಾಣಾಯ್ತು ||
ನಡುವೆಯೇ ಎಲ್ಲೋ ಮುಖ
ಕಣ್ಣು, ಕೈ, ಕಾಲುಗಳೆಲ್ಲ ಹಳದಿಯಾಯ್ತು ||

ಮನೆಯಲ್ಲಿ ಅಮ್ಮನಿಗೆ ನಿದಿರೆಯಿಲ್ಲ
ಅಪ್ಪನಿಗೆ ಕೈಯಲ್ಲಿ ದುಡ್ಡಿಲ್ಲ,
ನಡುವೆಯೇ ಡಾಕ್ಟರ್ರು `ಅವನಿಗ
ಜಾಂಡೀಸೂ ಐತ್ರಿ..' ಎಂದರು ||

ಆಸ್ಪತ್ರೆಯಲ್ಲೇ ಅರಾಮಾಗಿರುವಾ ಎಂದರೆ
ಮತ್ತೆ ಮತ್ತೆ ಕಾಡುವ ಆ ನರ್ಸಿಗಳು,
ಅವರ ಕೈ ಕಬ್ಬಿಣವೇನೋ?
ಅಷ್ಟು ಗಟ್ಟು-ಮುಟ್ಟು!
ಇಂಜೆಕ್ಷನ್ ಕೊಟ್ಟರೆ ಯಮಯಾತನೆ||
ಕೊನೆಗೆ ಗೊತ್ತಾಗಿದ್ದೇನೆಂದರೆ ನಂಗೆ ಬಂದಿದ್ದು
ಬೇರೇನೂ ಅಲ್ಲ, ಬರೀ ಜಾಂಡೀಸು |
ಡಾಕ್ಟರರಿಗೋ ಬಹು ಕಾಸು ||

`ವಾರದಲ್ಲೇ ಜಬರದಸ್ತಾಗಿ, ಖದರು
ತೋರಿಸಿದೆಯಲ್ಲಾ ಜಾಮಡೀಸೇ ನಿನಗೆ
ಹಳ್ಳಿಗರೇ ತಕ್ಕ ಪಾಠ ಕಲಿಸ್ತಾರೆ ಬಾ'
ಅಂತ ಹಳ್ಳಿ ಔಷಧಿಗೆ ಮೊರೆ ಹೋದೆ ||

ಅಬ್ಬಾ ಹಳ್ಳಿ ಔಷಧಿಯೇ,
ಅದೆಷ್ಟು ದಿನ ನಿನ್ನ ಪಥ್ಯ?
ಊಟದಲ್ಲಿ ಉಪ್ಪಿಲ್ಲ, ಹುಳಿಯಿಲ್ಲ,
ರುಚಿಯಿಲ್ಲ, ಖಾರವಂತೂ ಮಾರು ದೂರ !
ಎಲ್ಲವೂ ಸಪ್ಪೆ ಸಪ್ಪೆ !
ಬರೀ ಅನ್ನ, ಹೆಸರು ಕಟ್ಟು |
ಯಾರೋ ಅಂದದ್ದು ನೆನಪಾಯ್ತು
ಅಧರಕ್ಕೆ ಕಹಿ, ಉಧರಕ್ಕೆ ಸಿಹಿ ||

ಅಂತೂ ಸುಸ್ತು-ವೀಕನೆಸ್ಸು-ಬಡಕಲು
ಶರೀರಗಳ ಪಳೆಯುಳಿಕೆಯುಳಿಸಿ
ಜಾಡೀಸು ಮರೆಯುತ್ತಿದೆ ||

ವಾರದಲ್ಲಿಯೇ ಪರಂಧಾಮವನ್ನು ಒಮ್ಮೆ
ತೋರಿಸಿದ ಜಾಂಡೀಸೇ
ನಿನಗೆ ನಮೋನ್ನಮಃ ||


(ನನಗೆ ಜಾಂಡೀಸು ಬಂದು ವಾರಗಟ್ಟಲೇ ಆಸ್ಪತ್ರೆಯ ಬೆಡ್ಡಿನ ಮೇಲೆ ಮಲಗಿದ್ದಾಗ ಬರೆದ ಒಂದು ಅನುಭವ ಕವಿತೆ. ರೋಗ ಗೊತ್ತಾಗದಿದ್ದರೂ ಆ ರೋಗ, ಈ ರೋಗ ಎಂದು ಟೆಸ್ಟ್ ಮಾಡುವ ಡಾಕ್ಟರು, ಇದ್ದ ಬದ್ದ ದುಡ್ಡೆಲ್ಲ ಖಾಲಿಯಾಗಿ ಅಸಹಾಯಕತೆಯ ಪರಮಾವಧಿಯನ್ನು ತಲುಪಿದ ಅಪ್ಪಯ್ಯ, ಎಲ್ಲಾ ಮುಗತ್ತು ದೇವರೇ ನೀನೇ ಕಾಪಾಡು ಎಂದು ಅಂತಿಮವಾಗಿ ದೇವರ ಪಾದಕ್ಕೆ ಶರಣೆನ್ನುವ ಅಮ್ಮ, ನಿಂಗೆಂತ ಆತಲೆ.. ಅರಾಮಾಗ್ತೆ ಬೇಗ .. ಬಾ ಮಾರಾಯಾ ಎಂದು ಆಗಾಗ ಬಂದು ಸಮಾಧಾನ ಮಾಡುತ್ತಿದ್ದ ಗೆಳೆಯರು.. ಅಯ್ಯೋ ಎಷ್ಟ್ ದಪ್ಪ ಇದ್ದಂವ ಹೆಂಗ್ ತೆಳ್ಳಗಾಗೋಜ್ಯಲಾ..ಎಂದ ಗೆಳತಿ, ಹಳ್ಳಿ ಔಷಧಿಯ ಕಹಿ, ವಾರದಲ್ಲಿ 7 ದಿನವೂ ಕುಡಿಯಲೇ ಬೇಕು ಕಬ್ಬಿನ ಹಾಲು ಎಂಬ ಹಳ್ಳಿ ಡಾಕ್ಟರ ಫರ್ಮಾನು, ಹುಷಾರಿಲ್ಲ ಎಂದಾಗಲೇ ಬಾಯಲ್ಲಿ ನೀರು ತರಿಸಿ ಕಾಡುವ ಪಾನೀಪುರಿ, ಸೇವ್ ಭಾಜಿ, ಮಿಸ್ಸಳ ಭಾಜಿ, ಸುರಭಿ ಹೋಟ್ಲ ಮಂಜಣ್ಣನ ಪಾವ್ ಭಾಜಿ.. ಥೋ.. ಅನುಭವಗಳಿಗೆ ಕೊನೆಯಿಲ್ಲ ಬಿಡಿ..ಅಂತಹ ಜಾಂಡೀಸಿನ ಕುರಿತು ಒಂದು ಕವಿತೆ ಇದು.. ಸುಮ್ಮನೆ ಓದಿ)
(ದಂಟಕಲ್ಲಿನಲ್ಲಿ ಈ ಕವಿತೆಯನ್ನು 6-09-2007ರಂದು ಬರೆದಿದ್ದೇನೆ)

No comments:

Post a Comment