Saturday, November 1, 2014

ಬೆಂಗಾಲಿ ಸುಂದರಿ-36

(ತಾಹತ್ ಮಹಲ್ ರಂಗಪುರ)
           ಬಸ್ಸು ನಿಧಾನವಾಗಿ ಚಲಿಸುತ್ತಿತ್ತು. ಬಸ್ಸಿನ ಆಮೆವೇಗ ಬಹುಬೇಗನೆ ಬೇಸರ ತರಿಸಿಬಿಟ್ಟಿತು. ಚಲಿಸುವ ವೇಳೆಯಲ್ಲಿ ಬಸ್ಸಿನ ಪ್ರತಿಯೊಂದು ಭಾಗಗಳೂ ನಡುಗುತ್ತಿದ್ದವು. ವಿನಯಚಂದ್ರನಂತೂ ದೇವರೇ ಈ ಬಸ್ಸು ಎಲ್ಲಿಯೂ ಕೈಕೊಡದೇ ಇರಲಿ ಎಂದು ಪ್ರಾರ್ಥನೆ ಮಾಡಿಕೊಳ್ಳುತ್ತಿದ್ದ. ಏದುಸಿರು ಬಿಡುತ್ತಾ ಬಸ್ಸು ಸಾಗುತ್ತಿತ್ತು. ಮತ್ತೊಂರ್ಧ ತಾಸಿನ ನಂತರ ಬೋಗ್ರಾ ನಗರವನ್ನು ದಾಟಿದ ಬಸ್ಸು ರಂಗಪುರದತ್ತ ಮುಖ ಮಾಡಿತು. ಮಾರ್ಗ ಕ್ರಮಿಸಿದಂತೆಲ್ಲ ಬಸ್ಸಿನಲ್ಲಿ ನಿಧಾನಕ್ಕೆ ಜನ ತುಂಬಲಾರಂಭಿಸಿದರು.
           ಆಮೆವೇಗದ ಕಾರಣ ಪ್ರಯಾಣ ಮತ್ತಷ್ಟು ದೀರ್ಘವಾಗುತ್ತಿದೆಯಾ ಎಂದುಕೊಂಡ ವಿನಯಚಂದ್ರ. ಮನಸ್ಸಿನಲ್ಲಿ ಅದೇನೋ ಅಸಹನೆ. ಬಸ್ಸಂತೂ ಏರಿಳಿತವೇ ಇಲ್ಲವೇನೋ ಎಂಬಂತೆ ಸಾಗುತ್ತಿತ್ತು. ರಂಗಪುರವನ್ನು ಯಾವಾಗ ತಲುಪುತ್ತೇನಪ್ಪಾ ದೇವರೆ ಎನ್ನಿಸದೇ ಇರಲಿಲ್ಲ. ನೂನ್ಗೋಲಾ, ನಾಮೂಜಾ ಈ ಮುಂತಾದ ಊರುಗಳನ್ನು ಹಿಂದಕ್ಕೆ ಹಾಕು ಬಸ್ಸು ಮುಮದೆ ಸಾಗಿತು. ಮಧುಮಿತಾ ವಿನಯಚಂದ್ರನಿಗೆ ಪ್ರತಿ ಊರುಗಳು ಬಮದಾಗಲೂ ಬೆಂಗಾಲಿಯ ಹೆಸರುಗಳನ್ನು ಓದಿ ಹೇಳುತ್ತಿದ್ದಳು. ವಿನಯಚಂದ್ರ ತಲೆಯಲ್ಲಾಡಿಸುತ್ತಿದ್ದ. ಗೋವಿಂದೋಗೋಂಜ್ ಎಂಬ ಊರನ್ನು ತಲುಪುವ ವೇಳೆಗೆ ಒಂದೆರಡು ತಾಸುಗಳು ಕಳೆದಿತ್ತು. ನಿಧಾನವಾಗಿ ಏರುತ್ತಿದ್ದ ಬಿಸಿಲಿನ ಕಾರಣ ಬಸ್ಸಿನೊಳಗೆ ವಾತಾವರಣದಲ್ಲಿ ಬಿಸಿ ಹೆಚ್ಚಾಗುತ್ತಿತ್ತು. ಬಸ್ಸಿನ ನೆತ್ತಿ ಕಾದಂತೆಲ್ಲ ಒಳಗೆ ಕುಳಿತವರು ಚಡಪಡಿಸತೊಡಗಿದರು.
           ನಡುವೆಲ್ಲೋ ಜಮುನಾ ನದಿಯನ್ನು ಸೇರುವ ಉಪನದಿಯೊಂದು ಸಿಕ್ಕಿತು. ಈ ನದಿಯ ಬಳಿ ಬಸ್ಸನ್ನು ನಿಲ್ಲಿಸಿದ ಡ್ರೈವರ್ ಓಡಿ ಹೋಗಿ ಬಾಟಲಿಯಲ್ಲಿ ನೀರನ್ನು ಹಿಡಿದುಕೊಂಡು ಬಂದು ಬಸ್ಸಿನ ರೇಡಿಯೇಟರ್ ಗೆ ಹಾಕಿದ. ಒಮ್ಮೆ ಬಸ್ಸಿನ ಅಂತರಾಳದ ಬಾಯಾರಿಕೆಗೆ ತಂಪನ್ನು ನೀಡಿದ ಚಾಲಕ ಮತ್ತೆ ಬಸ್ಸನ್ನು ಮುಂದಕ್ಕೋಡಿಸಿದ. ವೇಗ ಮಾತ್ರ ಹೆಚ್ಚಲಿಲ್ಲ. ಇನ್ನೊಂದು ತಾಸಿನ ಪಯಣದ ನಂತರ ಬಸ್ಸು ಪಾಲಾಶ್ಬಾರಿ ಎಂಬಲ್ಲಿಗೆ ಹಾಗೂ-ಹೀಗೂ ಎಂಬಂತೆ ಬಂದು ತಲುಪಿತು. ಅಲ್ಲಿಗೆ ಬಂದು ತಲುಪಿದ ಬಸ್ಸು ಒಮ್ಮೆ ಗರ್ರ್ ಎಂದು ಸದ್ದು ಮಾಡಿ ಸ್ಥಬ್ಧವಾಯಿತು. ನಂತರ ಡ್ರೈವರ್ ಏನೇ ಪ್ರಯತ್ನ ಮಾಡಿದರೂ ಮತ್ತೆ ಮುಂದಕ್ಕೆ ಹೊರಡಲಿಲ್ಲ. ಸದ್ದನ್ನೂ ಮಾಡಲಿಲ್ಲ.
           `ನಾನಾಗ್ಲೇ ಹೇಳಿದ್ದೆ. ಈ ಬಸ್ಸು ಎಲ್ಲಾದರೂ ಕೈಕೊಡುತ್ತದೆ ಅಂತ.. ನೋಡು.. ಈಗ ಏನಾಯ್ತು ಅಂತ..' ಎಂದು ಮಧುಮಿತಾಳನ್ನು ಛೇಡಿಸಿದ ವಿನಯಚಂದ್ರ. ಹುಂ ಎಂದಳಾಕೆ. ಬಸ್ಸಿನಲ್ಲಾಗಲೇ ಗುಜು ಗುಜು ಶುರುವಾಗಿತ್ತು. ಕೆಲವರು ಸಣ್ಣದಾಗಿ ಗಲಾಟೆಯನ್ನೂ ಆರಂಭಿಸಿದರು. ಸೀಟಿನಿಂದೆದ್ದ ವಿನಯಚಂದ್ರ ನುಗ್ಗಾಡಿ ಮುಂದಕ್ಕೆ ಹೋಗಿ ಕಂಡಕ್ಟರ್ ಬಳಿ ಬಸ್ಸು ಮುಂದಕ್ಕೆ ಹೋಗದ ಕಾರಣ ತಮ್ಮ ಪ್ರಯಾಣದ ಹಣವನ್ನು ಮರಳಿಸುವಂತೆ ಕೇಳಿದ. ವಿನಯಚಂದ್ರನ ಹಿಂದಿ ಅರ್ಥವಾಗದಂತೆ ನೋಡುತ್ತಿದ್ದ ಕಂಡಕ್ಟರ್ ಬಳಿ ಮಧುಮಿತಾ ಬಂದು ವಿವರಿಸಿದಳು. ಕೊನೆಗೆ ಕಂಡಕ್ಟರ್ ಒಪ್ಪಲಿಲ್ಲ. ವಿನಯಚಂದ್ರನ ವಾದವನ್ನು ಕೇಳುತ್ತಿದ್ದ ಒಂದಷ್ಟು ಪ್ರಯಾಣಿಕರು ವಿನಯಚಂದ್ರನ ಪರವಾಗಿ ನಿಂತರು. ಸಣ್ಣ ಪ್ರಮಾಣದ ಗಲಾಟೆಯೇ ನಡೆಯಿತು. ಒಂದಿಬ್ಬರು ತೋಳೇರಿಸಿಕೊಂಡು ಕಂಡಕ್ಟರನ ಮೇಲೇರಿ ಹೋದರು. ಹೆದರಿದ ಕಂಡಕ್ಟರ್ ಹಣ ವಾಪಾಸು ನೀಡಲು ಮುಂದಾದ. ವಿನಯಚಂದ್ರ ಮೊದಲಿಗೆ ಹಣವನ್ನು ಇಸಿದುಕೊಂಡು ಗುಂಪಿನಿಂದ ಹೊರಬಂದ. `ಅಬ್ಬ ಇಷ್ಟಾದರೂ ಸಿಕ್ಕಿತಲ್ಲ. ಮುಂದಿನ ಪ್ರಯಾಣ ಹೇಗೆ ಮಾಡೋದು ಅಂದ್ಕೊಂಡಿದ್ದೆ. ಉಪವಾಸದಲ್ಲೇ ಭಾರತ ಗಡಿಯವರೆಗೆ ತಲುಪಬೇಕಾ ಎಂದುಕೊಂಡಿದ್ದೆ. ಆದರೆ ಪ್ರಯಾಣದ ಜೊತೆಗೆ ದುಡ್ಡೂ ಸಿಕ್ಕಿತು ನೋಡು..' ಎಂದವನೇ ಹಣ ಎಣಿಸಲು ಆರಂಭಿಸಿದ. ತಾನಂದುಕೊಂಡಿದ್ದಕ್ಕಿಂತ ಜಾಸ್ತಿ ಹಣ ವಾಪಾಸು ಬಂದಿತ್ತು. ಮತ್ತೊಮ್ಮೆ ಮುಖ ಊರಗಲವಾಯಿತು ವಿನಯಚಂದ್ರನಿಗೆ.
        ಊರಿನ ದಾರಿಯಲ್ಲಿ ನಡೆದು ಹೊರಟವರು ಕಂಡ ಕಂಡ ವಾಹನಕ್ಕೆಲ್ಲ ಕೈ ಮಾಡಲು ಆರಂಭಿಸಿದರು. ಆದರೆ ಮೊದ ಮೊದಲು ಯಾವ ವಾಹನಗಳೂ ನಿಲ್ಲಲಿಲ್ಲ. ಕೊನೆಗೊಂದು ಲಡಕಾಸಿ ಜೀಪು ಸಿಕ್ಕಿತು. ಜೀಪು ನೋಡಿದ ವಿನಯಚಂದ್ರ ಏರಲು ಅನುಮಾನ ಮಾಡಿದ. ಕೊನೆಗೆ ಮಧುಮಿತಾಳೇ `ಸಾಧ್ಯವಾದಷ್ಟು ದೂರದ ವರೆಗೆ ಹೋಗೋಣ..ಪ್ರಯಾಣ ಮಾಡಿದ್ದಷ್ಟೇ ಬಂತು.. ಮತ್ತೆ ಇಂತಹ ಅವಕಾಶ ಸಿಗುತ್ತದೆ ಎನ್ನುವುದು ಕಷ್ಟ ನೋಡಿ..' ಎಂದಳು. ವಿನಯಚಂದ್ರ ಒಪ್ಪಿಕೊಂಡು ಜೀಪೇರಿದ. ಜೀಪು ನಿಧಾನವಾಗಿ ಮುಂದಕ್ಕೆ ಸಾಗಿತು. ಅಂಕುಡೊಂಕಿನ ಹಾದಿಯಲ್ಲಿ ಸಾಗಿದ ಜೀಪು ಮಿಥಾಪುರ, ಪೀರ್ ಗಂಜ್, ದುರ್ಗಾಪುರಗಳನ್ನು ದಾಟಿ ಹಿಥೋಂಪುರಕ್ಕೆ ಆಗಮಿಸಿತು. ಆ ಊರು ಬಂದ ತಕ್ಷಣ ಜೀಪಿನ ಯಜಮಾನ ವಿನಯಚಂದ್ರನ ಬಳಿ `ಎಲ್ಲಿಗೆ ಹೋಗುತ್ತಿರುವುದು..' ಎಂದು ವಿಚಾರಿಸಿದ. ಮಧುಮಿತಾ `ರಂಗಪುರ್..' ಎಂದಳು. ಕೊನೆಗೆ ಜೀಪಿನ ಯಜಮಾನ ಅವರನ್ನು ಅಲ್ಲೇ ಇಳಿಸಿ ತಾನು ಬೇರೊಂದು ದಾರಿಯಲ್ಲಿ ಹೊರಟ. ಇವರ ಬಳಿ ಪ್ರಯಾಣದ ದರವನ್ನು ಇಸಿದುಕೊಳ್ಳಲಿಲ್ಲ. ವಿನಯಚಂದ್ರ ಮೇಲೆಬಿದ್ದು ದುಡ್ಡಕೊಡಬೇಕಾ ಎಂದೂ ಕೇಳಲಿಲ್ಲ.
         `ನೋಡು ಮಧು.. ದುಡ್ಡಿನ ಶಿಲ್ಕು ನಮ್ಮ ಬಳಿ ಕಡಿಮೆ ಇದೆ ಎಂದಾದರೆ ಪೈಸೆ ಪೈಸೆಗೆ ಲೆಕ್ಖಮಾಡಬೇಕಾಗುತ್ತದೆ. ಕೊಡುವ ಮೊತ್ತದಲ್ಲಿ ಒಂದು ರು. ಉಳಿದರೂ ಸಾಕು ಎನ್ನಿಸುತ್ತದೆ. ಈಗ ನೋಡು ಆ ಕಂಡಕ್ಟರ್ ದುಡ್ಡು ವಾಪಾಸು ಕೊಟ್ಟಿದ್ದಕ್ಕೆ ಮನಸ್ಸು ಹೂವಾಗುತ್ತಿದೆ... ' ಎಂದ ವಿನಯಚಂದ್ರ.
          `ಹೌದು.. ದುಡ್ಡು ಸಿಕ್ಕಾಪಟ್ಟೆ ಕೈಗೆ ಸಿಗುತ್ತಿದ್ದರೆ ಖರ್ಚು ಮಾಡುವುದೇ ಗೊತ್ತಾಗುವುದಿಲ್ಲ. ಆದರೆ ಈಗ ನೋಡು ಇರುವ ದುಡ್ಡನ್ನೇ ಎಷ್ಟು ಕಡಿಮೆಯೋ ಅಷ್ಟು ಕಡಿಮೆ ಪ್ರಮಾಣದಲ್ಲಿ ಖರ್ಚು ಮಾಡಬೇಕು. ದುಡ್ಡನ್ನು ಸಮರ್ಪಕವಾಗಿ ಬಳಕೆ ಮಾಡುವುದನ್ನು ಕಲಿಸುತ್ತದೆ ಇದು..' ಎಂದಳು.
           `ಚಿಕ್ಕಂದಿನಿಂದ ನನಗೆ ಅಪ್ಪ ಕೈತುಂಬಾ ಹಣಕೊಡುತ್ತಿದ್ದರು. ಕೊಟ್ಟ ಹಣಕ್ಕೆ ಲೆಕ್ಖ ನೀಡು ಅನ್ನುತ್ತಿದ್ದರು. ನಾನು ಅವರ ಕಣ್ಣು ಕಟ್ಟಲು ಲೆಕ್ಖ ಬರೆದಿದ್ದೂ ಇದೆ. ಆಗ ಬೇಕಾಬಿಟ್ಟಿ ಖರ್ಚು ಮಾಡಿದ್ದೆ. ಆದರೆ ಕೆಟ್ಟದ್ದಕ್ಕೆ ಖರ್ಚು ಮಾಡಲಿಲ್ಲ. ನಾನು ಖರ್ಚು ಮಾಡಿದ್ದೆಲ್ಲವೂ ಒಳ್ಳೆಯದಕ್ಕೇ ಎಂದುಕೊಂಡಿದ್ದೆ. ಆದರೆ ಈಗ ಮಾತ್ರ ದುಡ್ಡಿನ ಮಹತ್ವ ಗೊತ್ತಾಗುತ್ತಿದೆ. ಆಗ ಕಲಿತಿದ್ದಕ್ಕಿಂತ ಹೆಚ್ಚು ಈಗ ಕಲಿತಿದ್ದೇನೆ. ದುಡ್ಡಿಗೆ ನಮಸ್ಕಾರ ಕೊಡಬೇಕು ಅನ್ನಿಸುತ್ತದೆ..' ಎಂದ ವಿನಯಚಂದ್ರ.
           `ಹೌದು ವಿನು.. ಕಲಿಕೆ ನಿರಂತರ. ಯಾರಿಂದ, ಹೇಗೆ, ಯಾವಾಗ ಕಲಿಯುತ್ತೇವೆ ಎನ್ನುವುದನ್ನು ಹೇಳಲು ಬರುವುದಿಲ್ಲ ನೋಡು. ದುಡ್ಡು ನಮಗೆ ಭಾರಿ ಪಾಠ ಕಲಿಸುತ್ತದೆ. ಕೆಳಕ್ಕೆ ತಳ್ಳುತ್ತದೆ. ಮೇಲೆ ಬರಲು ಸಹಾಯ ಮಾಡುತ್ತದೆ..' ಎಂದಳು ಮಧುಮಿತಾ. ತಲೆಯಲ್ಲಾಡಿಸಿದ ವಿನಯಚಂದ್ರ.
(ಬೇಗಂ ರೋಖಿಯಾ ವಿಶ್ವವಿದ್ಯಾಲಯ ರಂಗಪುರ)
           ರಂಗಪುರ ಹತ್ತಿರದಲ್ಲೇ ಇತ್ತು. ವಾಹನ ಸಿಗುವ ವರೆಗೆ ನಡೆಯುತ್ತ ಸಾಗೋಣ ಎಂದು ನಿರ್ಧಾರ ಮಾಡಿದ ಇಬ್ಬರೂ ಮುಂದಕ್ಕೆ ಹೆಜ್ಜೆ ಹಾಕಿದರು. ದಾರಿ ಸಾಗುತ್ತಲೇ ಇದ್ದರೂ ಯಾವೊಂದು ವಾಹನವೂ ಇವರ ಬಳಿ ನಿಲ್ಲಲಿಲ್ಲ. ಮದ್ಯಾಹ್ನದ ಉರಿಬಿಸಿಲು ಕಡಿಮೆಯಾಗಿ ಸಂಜೆ ಮೂಡುತ್ತಿತ್ತು. ಆಗಲೇ ಇಬ್ಬರಿಗೂ ಮದ್ಯಾಹ್ನ ಏನೂ ತಿಂದಿಲ್ಲ ಎನ್ನುವುದು ಅರಿವಾಯಿತು. ರಂಗಪುರ ತಲುಪುವ ವರೆಗೆ ಏನನ್ನೂ ತಿನ್ನಬಾರದು ಎಂದು ನಿರ್ಧರಿಸಿ ಬೇಗ ಬೇಗನೆ ಹೆಜ್ಜೆ ಹಾಕಿದರು ಇಬ್ಬರೂ. ಹಸಿವಾಗಿರುವುದು ಮರೆಯಲಿ ಎನ್ನುವ ಕಾರಣಕ್ಕೆ ಯಾವು ಯಾವುದೋ ಸುದ್ದಿಗಳನ್ನು ಮಾತನಾಡುತ್ತ ಬರುತ್ತಿದ್ದರು. ಪೈರ್ ಬಂದ್ ಎನ್ನುವ ಊರು ಸಿಕ್ಕಿತು ಅವರಿಗೆ. ಅಲ್ಲಿಗೆ ಬರುವ ವೇಳೆಗೆ ಹಸಿವೆಯನ್ನು ತಾಳಲಾರೆ ಎನ್ನುವಂತಾಗಿತ್ತು ಇಬ್ಬರಿಗೂ. ರಸ್ತೆಯ ಅಕ್ಕಪಕ್ಕದಲ್ಲಿ ಜೋಳ ಬೆಳೆದು ನಿಂತಿದ್ದು ಕಾಣಿಸಿತು. ಉದ್ದುದ್ದದ ಜೋಳದ ಕುಂಡಿಗೆಗಳು ಬೆಳೆದಿದ್ದವು. ವಿನಯಚಂದ್ರ ತಡೆಯಲಾದರೆ ಹೋಗಿ ಒಂದೆರಡನ್ನು ಕಿತ್ತುಕೊಂಡು ಬಂದ.  ಇಬ್ಬರೂ ತಿನ್ನಲಾರಂಭಿಸಿದರು. ಚೀಲದಲ್ಲಿ ಕೊಂಚವೇ ನೀರಿತ್ತು. ನೀರನ್ನು ಕುಡಿಯುವ ವೇಳೆಗೆ ಹಸಿವು ಕೊಂಚ ಅಡಗಿದಂತಾಯಿತು. ಮತ್ತೆ ಮುಂದಕ್ಕೆ ಹೆಜ್ಜೆ ಹಾಕಿದರು.
           ವಿಸ್ತಾರವಾದ ಬಯಲು, ನಡು ನಡುವೆ ಸಿಗುವ ಒಣಗಿದ ಹೊಳೆಗಳು ಪದೇ ಪದೆ ಸಿಕ್ಕವು. ರಂಗಪುರ ನಿಧಾನವಾಗಿ ಹತ್ತಿರಾಗುತ್ತಿತ್ತು. ನಡು ನಡುವೆ ಒಂದೆರಡು ಅಡ್ಡ ರಸ್ತೆಗಳೂ ಸಿಕ್ಕವು. ಮತ್ತೊಂದರ್ಧ ತಾಸಿನ ಪಯಣದ ವೇಳೆಗೆ ಸೂರ್ಯನಾಗಲೇ ಕಂತಿದ್ದ. ನಿಧಾನವಾಗಿ ಕತ್ತಲಾವರಿಸಿಬಿಟ್ಟಿತ್ತು. ರಂಗಪುರ ನಗರದ ಹೊರ ಭಾಗದಲ್ಲೇ ಪ್ರಯಾಣ ಮಾಡಬಹುದಾದ ಬೈಪಾಸ್ ರಸ್ತೆ ಕೂಡ ಸಿಕ್ಕಿತು. ಅಲ್ಲಿ ವಿನಯಚಂದ್ರ `ನಾವು ಯಾವ ಮಾರ್ಗದಲ್ಲಿ ಸಾಗೋದು?' ಎಂದು ಕೇಳಿದ. `ಬೈಪಾಸ್.. ಬೇಡ ಮಾರಾಯಾ.. ಇಂತಹ ಬೈಪಾಸ್ ರಸ್ತೆಯಲ್ಲೇ ಅಲ್ಲವಾ ಸಲೀಂ ಚಾಚಾನನ್ನು ಕಳೆದುಕೊಂಡಿದ್ದಲ್ಲವಾ? ನಗರದೊಳಗೇ ಹೋಗೋಣ.. ಇವತ್ತು ರಾತ್ರಿ ಪ್ರಯಾಣ ಖಂಡಿತ ಸಾಧ್ಯವಾಗದ ಮಾತು. ಅಲ್ಲೆಲ್ಲಾದರೂ ಪಾರ್ಕು ಇದ್ದರೆ ಅಲ್ಲೇ ಮಲಗೋಣ. ಬೋಗ್ರಾದಲ್ಲಿ ಮಲಗಿದಂತೆ.. ಇಲ್ಲಿಂದ ಭಾರತದ ಗಡಿ ತೀರಾ ದೂರವೇನಲ್ಲ. ಒಂದೆರಡು ದಿನದ ಪಯಣ ಅಷ್ಟೇ. ಸಲೀಂ ಚಾಚಾ ಹೇಳಿದ ಏಜೆಂಟನ ಪೋನ್ ನಂಬರ್ ನನ್ನ ಬಳಿ ಇದೆ. ಒಮ್ಮೆ ಪೋನ್ ಮಾಡಿ ನೋಡೋಣ. ಆತನ ಸಹಾಯ ಸಿಕ್ಕರೆ ಹಾಗೆ.. ಇಲ್ಲವಾದರೆ ನಾವೇ ಒಂದು ಪ್ರಯತ್ನ ಮಾಡೋಣ..' ಎಂದಳು. ಆಕೆಯ ಸಲಹೆ ಸರಿಯೆನ್ನಿಸಿತು.
        ರಂಗಪುರ ನಗರಿಯೆಡೆಗೆ ತೆರಳುವ ರಸ್ತೆಯಲ್ಲೇ ಮುನ್ನಡೆದರು. ಅರ್ಧ ಗಂಟೆಯ ನಂತರ ರಂಗಪುರ ನಗರಿ ಕತ್ತಲೆಯ ಜೊತೆಗೆ, ಬೆಳಕಿನ ದೀಪಗಳೊಡನೆ ಬರಮಾಡಿಕೊಂಡಿತು. ಎಲ್ಲೆಲ್ಲೂ ಝಗಮಗಿಸುವ ಬೆಳಕು, ರಸ್ತೆಯ ತುಂಬೆಲ್ಲ ಸೈಕಲ್ ರಿಕ್ಷಾಗಳು, ಬೆಂಗಾಲಿಯಲ್ಲಿ ಮಾತನಾಡುತ್ತ ಓಡಾಡುವ ಜನ, ಕಣ್ಣಿಗೆ ಕಾಣಿಸಿತು. ನಗರದೊಳಗೆ ಕಾಲಿಟ್ಟಂತೆಲ್ಲ ಉಬ್ಬರ ಮನಸ್ಸೂ ಉಲ್ಲಾಸಗೊಂಡಿತು. ಅಲ್ಲೆಲ್ಲೋ ಒಂದು ಬೀದಿಯಲ್ಲಿ ಸಾಗುತ್ತಿದ್ದಾಗಲೇ ಒಂದು ದೇವಸ್ಥಾನ ಕಣ್ಣಿಗೆ ಬಿದ್ದಿತು. ಅಚ್ಚರಿಯಿಂದ ನೋಡದವರೇ ದೇವಸ್ಥಾನದ ಒಳಹೊಕ್ಕರು. ದೇವಸ್ಥಾನದಲ್ಲೇ ಇದ್ದ ಅರ್ಚಕರೊಬ್ಬರು ಇವರನ್ನು ಅನುಮಾನದಿಂದಲೇ ನೋಡಿದರು. ಕೊನೆಗೆ ಮಧುಮಿತಾಳೇ ಬೆಂಗಾಲಿಯಲ್ಲಿ ಎಲ್ಲ ವಿಷಯ ತಿಳಿಸಿದಾಗ ಅರ್ಚಕರು ದೇವಸ್ಥಾನದ ಒಳಗೆ ಉಳಿಯಲು ಅವಕಾಶ ಮಾಡಿಕೊಟ್ಟರು. ರಾತ್ರಿಯೂಟವನ್ನೂ ನೀಡಿದರು. ಹಸಿದಿದ್ದ ಇಬ್ಬರೂ ಬೇಗ ಬೇಗನೆ ಊಟ ಮಾಡಿದರು. ಊಟ ಮುಗಿದ ನಂತರ ಅರ್ಚಕರು ಮಾತಿಗೆ ಕುಳಿತರು.

(ಮುಂದುವರಿಯುತ್ತದೆ)

No comments:

Post a Comment