Sunday, November 2, 2014

ಮೌನ ಭೋಜನ

ಮೌನಭೋಜನ
ಏನೆಲ್ಲಾ ನೀಡಿತು ? ಹೊಸತನ !
ಘಮ್ಮೆಂದು ಕಂಪುಚೆಲ್ಲಿ ಮನವ
ತಣಿದು-ಕುಣಿಸಿದ ಧೂಪದ ಕಂಪು,
ಜೊತೆಗೆ ಹರ್ಷಾನಂದವ ನೀಡಿದ
ಕೊಳಲಗಾನದ ಇಂಪು |

ಮೌನಭೋಜನ..
ನವ ಜೀವೋದ್ಧೀಪನ |
ಹಣತೆಯಿಂದ ಬೆಳಕು ಚೆಲ್ಲಿ
ಬಾಳು ಬೆಳಗುವ ದೀಪ,
ಮೌನ ಮೆರೆಯುವ ನಿಶೆಯ ಹೊಸ್ತಿಲೊಳು
ಆತ್ಮ-ಮನಸ್ಸು ಪಡೆದಿದೆ
ಹೊಸದಾದ ಒಂದು ರೂಪ |

ಮೌನಭೋಜನ..
ಮರೆಯದ ಮಧುರ ಭಾವನ |
ಚಿರಂತನ | ಕಾಪಿಡಿದು ಕೊನೆಯ
ಜೀವ ಬಿಂದು ಉಳಿವವರೆಗೆ
ಮೈಝುಮ್ಮೆನ್ನಿಸುವ ಭಾವ ಮಿಲನ
ಜೊತೆಗೆ ಭಾವಸ್ಫುರಣ |

ಮೌನಭೋಜನ..
ಸ್ಫೂರ್ತಿಯ ಬಟ್ಟಲೊಳು,
ಮನದ ತುಂಬಾ ತೃಪ್ತಿ ಇಟ್ಟು
ಬದುಕಿಗೊಂದು ನವ ಸ್ಫೂರ್ತಿಯಾಗಿ
ಸವಿ ನೆನಪಿಟ್ಟ ಕವನ |
ಭಾವ ತಂತುಗಳ ಮಿಲನ |

ಮೌನಭೋಜನ..
ಸ್ಪೂರ್ತಿ-ಮಾರ್ಗದರ್ಶಿ-ಚೇತನಾ |
ಬಾಳಿಗೆ ಹೊಸತು ಪ್ರೇರಣಾ |
ಕಳೆದಿದೆ ಏಕತಾನ |
ಗದ್ದಲದ ಗುಡ್ಡದೊಳು
ಮೌನ ಹೃದಯ ಸ್ಪಂದನ |

***
(ಈ ಕವಿತೆಯನ್ನು ಬರೆದಿರುವುದು ಹುಳಗೋಳದಲ್ಲಿ 18-12-2006ರಂದು)
(ನಾನು ಕಾಲೇಜು ಓದುತ್ತಿದ್ದ ದಿನಗಳಲ್ಲಿ ಎಬಿವಿಪಿಯಲ್ಲಿ  ಅರೆಕಾಲಿಕ ಸದಸ್ಯನಾಗಿದ್ದೆ. ಆ ಸಂದರ್ಭದಲ್ಲಿ ಎಬಿವಿಪಿಯಿಂದ ಹುಳಗೋಳದಲ್ಲಿ ಸ್ಪೂರ್ತಿ-2006ರ ಎಂಬ ಶಿಬಿರ ಹಮ್ಮಿಕೊಳ್ಳಲಾಗಿತ್ತು. ವ್ಯಕ್ತಿತ್ವ ವಿಕಸನದ ಆ ಶಿಬಿರದಿಂದ ನಾನು ಕಲಿತದ್ದು ಹಲವಷ್ಟು. ಆ ಸಂದರ್ಭದಲ್ಲಿ ಮೌನಭೋಜನ ಎನ್ನುವ ಹೊಸ ವಿಧಾನವನ್ನು ನಾನು ಸವಿದ ನಂತರ ಬರೆದಿದ್ದು ಈ ಕವನ.
ಈ ಮೌನಭೋಜನದ ಬಗ್ಗೆ ನಾವು ಹೇಳುವುದು ಸಾಕಷ್ಟಿದೆ. ಬ್ರಾಹ್ಮಣರ ಮನೆಗಳಲ್ಲಿ ಉಪನಯನವಾದ ನಂತರ ಉಪಾಕರ್ಮ ಆಗುವ ವರೆಗೆ ಊಟಕ್ಕೆ ಕುಳಿತಾಗ ಮಾತನಾಡಬಾರದು ಎನ್ನುವ ನಿಯಮ/ಶಾಸ್ತ್ರವಿದೆ. ನನ್ನ ಉಪನಯನದ ಸಂದರ್ಭದಲ್ಲೂ ನಾನು ಹೀಗೆ ಮಾಡಿದ್ದೆ. ಈಗಿನವರು ಹಾಗೆಮಾಡಿದ್ದು ನಾ ಕಾಣೆ ಬಿಡಿ. ಅದೇ ರೀತಿಯ ಈ ಮೌನಭೋಜನ ಕೊಂಚ ವಿಶಿಷ್ಟವಾದುದು ಎಂದೇ ಹೇಳಬಹುದು. ವಿದ್ಯುತ್ ದೀಪವಿಲ್ಲದೇ ಹಣತೆಯ ದೀಪದ ಬೆಳಕಲ್ಲಿ ಮೌನವಾಗಿ ಊಟವನ್ನು ಮಾಡುವುದೇ ಈ ಪ್ರಕ್ರಿಯೆ.
ಹಣತೆ ಸೂಸುವ ಮಂದ್ರಬೆಳಕು. ಘಮ್ಮೆನ್ನುವಾ ವಾಸನೆ ಸುತ್ತೆಲ್ಲ ಪರಿಸರವನ್ನು ಆವರಿಸಿ ವಿಶಿಷ್ಟ ಅನುಭವ ನೀಡಿದರೆ ಆ ಸಂದರ್ಭದಲ್ಲಿ ಹಾಕಲಾಗುವ ಕೊಳಲ ನಿನಾದ ಮನಸ್ಸನ್ನು ತಲ್ಲೀನಗೊಳಿಸುತ್ತದೆ. `ಇಂತದ್ದು ಬೇಕು, ಇದು ಬೇಡ..' ಎಂದು ಕೈ ಸನ್ನೆಯಲ್ಲೇ ಹೇಳಿ ಹಾಕಿಸಿಕೊಳ್ಳುವ, ಬೇಡವೆನ್ನುವ ವಿಧಾನವಂತೂ ಮಜಾ ಕೊಡುತ್ತದೆ. ಇಂತಹ ಮೌನಭೋಜನ ಉಣ್ಣುವವರಿಗಷ್ಟೇ ಅಲ್ಲ ಬಡಿಸುವವರಿಗೂ ಸವಾಲು ಕೂಡ ಹೌದು. ಇಂತದ್ದೊಂದು ಮೌನಭೋಜನದ ಅವಕಾಶ ಸಿಕ್ಕರೆ ತಪ್ಪಿಸಿಕೊಳ್ಳಬೇಡಿ. ನೀವೂ ಭಾಗವಹಿಸಿ. ಉಂಟಾಗುವ ಆನಂದ ಎಲ್ಲರಿಗೂ ಹಂಚಿ )

No comments:

Post a Comment