Thursday, May 28, 2015

ಮಾಸ್ತರ್ ಮಂದಿ-2

ಗಂಗಾ ನಾಯ್ಕ :
           ನಾನು ಒಂದು ಹಾಗೂ ಎರಡನೇ ಕ್ಲಾಸ್ ಓದುತ್ತಿದ್ದ ಸಂದರ್ಭದಲ್ಲಿಯೇ ನಮ್ಮ ಶಾಲೆಗೆ ಶಿಕ್ಷಕಿಯಾಗಿ ಬಂದವರು ಗಂಗಾ ನಾಯ್ಕ ಅವರು. ಗಂಗಾ ನಾಯ್ಕ ಅವರು ನಮ್ಮ ಶಾಲೆಗೆ ಬರುವ ವೇಳೆಗೆ ಕುಳ್ಳೀಶ್ವರ ನಾಯ್ಕ ಅವರು ಶಾಲೆಯಿಂದ ವರ್ಗಾವಣೆಯಾಗಿ ಹೋಗಿದ್ದರೆಂದೇ ಹೇಳಬಹುದು. ಒಂದು ಅಥವಾ ಎರಡು ವರ್ಷ ಇವರು ನಮ್ಮ ಶಾಲೆಯಲ್ಲಿದ್ದರು. ನಾನು 2ನೇ ಕ್ಲಾಸಿನಲ್ಲಿದ್ದಾಗ ನನಗೆ ಕಲಿಸಿದ ನೆನಪು. 
                  ಇವರು ಶಿಕ್ಷಕರಾಗಿದ್ದ ಸಂದರ್ಭದಲ್ಲಿ ಒಂದು ಘಟನೆ ಇನ್ನೂ ನೆನಪಿದೆ. ಆಗ ನಮ್ಮೂರಿನಲ್ಲಿ ಆಲೆಮನೆಯ ಸಂಭ್ರಮ. ನಮ್ಮ ಮನೆಯದ್ದೇ ಆಲೆಮನೆ ನಡೆಯುತ್ತಿತ್ತು ಎನ್ನಬಹುದು. ನಮ್ಮೂರಿನಿಂದ ಐದಾರು ಜನರು ಶಾಲೆಗೆ ಬರುತ್ತಿದ್ದೆವು. ನಮಗೆಲ್ಲರಿಗೂ ಆಲೆಮನೆಗೆ ಹೋಗುವ ಆಸೆ. ಆದರೆ ಆಲೆಮನೆಗೆ ಹೋಗಬೇಕು ಎಂದು ಹೇಳಿದರೆ ಶಾಲೆಗೆ ರಜಾ ಕೊಡುತ್ತಿರಲಿಲ್ಲ. ಈ ಕಾರಣದಿಂದಲೇ ನಾವೆಲ್ಲ ಸೇರಿ ಐಡಿಯಾ ಮಾಡಿದ್ದೆವು. ನಮ್ಮೂರಿನ ಎಲ್ಲರೂ ಒಂದಲ್ಲ ಒಂದು ನೆಪ ಹೂಡಿ ರಜಾ ಕೇಳಲು ಹೊರಟೆವು. ಇದ್ದವರಲ್ಲಿಯೇ ನಾನು ಚಿಕ್ಕವನು. ನಾನೇ ಮೊದಲು ರಜಾ ಕೇಳಲು ಹೋದೆ. ನಮ್ಮ ಮನೆಯಲ್ಲಿ ಅದೇನೋ ಪೂಜೆ ಇದೆ. ಹಾಗಾಗಿ ಶಾಲೆಯಿಂದ ಸ್ವಲ್ಪ ಬೇಗನೆ ಕಳಿಸಿಕೊಡಿ ಎಂದು ಗಂಗಕ್ಕೋರ ಹತ್ತಿರ ಕೇಳಿಕೊಂಡೆ. ನಾನು ಪುಟ್ಟ ಪುಟ್ಟಗೆ, ಕುಳ್ಳಗಿದ್ದೆನಲ್ಲ. ಅದೇನೆನ್ನಿಸಿತೋ ಏನೋ. ಕಳಿಸಿಕೊಡಲು ಒಪ್ಪಿದರು. ನಾನು ಖುಷಿಯಿಂದ ಹೋಗಲು ತಯಾರಾದೆ. ಆದರೆ ದುರದೃಷ್ಟಕ್ಕೆ ನಮ್ಮೂರಿನ ಉಳಿದ ಯಾರಿಗೂ ರಜಾವನ್ನೇ ಕೊಡಲಿಲ್ಲ. ಅವರ್ಯಾರೂ ಬರಲಿಲ್ಲ-ನಾನೊಬ್ಬನೇ ಯಾಕೆ ಮನೆಗೆ ಹೋಗುವುದು ಎಂದುಕೊಂಡೆ. ಜೊತೆಗೆ ನಮ್ಮೂರಿಗೆ ಹೋಗುವ ದಾರಿ ಕಾಡಿನ ದಾರಿ. ನನಗೆ ಆಗ ಸಿಕ್ಕಾಪಟ್ಟೆ ಹೆದರಿಕೆ ಬೇರೆ. ಹಾಗಾಗಿ ಹೋಗದೇ ಉಳಿದಕೊಂಡು ಬಿಟ್ಟೆ.
               ನಾನು ಮನೆಗೆ ಹೋಗದೇ ಶಾಲೆಯಲ್ಲಿ ಉಳಿದುಕೊಂಡಿದ್ದು ಹಾಗೂ ಮನೆಗೆ ಹೋಗಲು ಸುಳ್ಳು ಹೇಳಿದ ವಿಚಾರ ಅದ್ಹೇಗೆ ಗೊತ್ತಾಯಿತೇನೋ. ಅಥವಾ ನನ್ನ ಹಾಗೆ ಮನೆಗೆ ಬರಲು ರಜಾ ಸಿಗದ ನಮ್ಮೂರಿನ ಹುಡುಗರೇ ಹೇಳಿಬಿಟ್ಟಿದ್ದರೇನೋ ಗೊತ್ತಿಲ್ಲ. ಕ್ಲಾಸ್ ರೂಮಿಗೆ ಬಂದವರೇ `ವಿನಯ ಮನೆಗೆ ಹೋದನಾ?' ಎಂದು ಕೇಳಿದರು. ನಾನು ಹೋಗದೇ ಇರುವ ವಿಚಾರವನ್ನು ಉಳಿದ ಹುಡುಗರು ಹೇಳಿದರು. ಆಗ ಕೊಟ್ಟರು ನೋಡಿ ಏಟನ್ನಾ.. ಯಪ್ಪಾ ಯಪ್ಪಾ.. ದಡಾ ಬಡಾ ಹೊಡೆದರು. `ಸುಳ್ ಹೇಳ್ತಿಯೇನೋ.. ಇನ್ನೊಂದ್ ಸಾರಿ ಹಿಂಗೆ ಮಾಡು. ನಿನ್ ಚರ್ಮ ಸುಲಿದು ಬಿಡ್ತೇನೆ..' ಎಂದು ಬೈದರು. ನಾನು ಅತ್ತು ಅತ್ತು ಬಾಡಿದ್ದು ಇನ್ನೂ ನೆನಪಿನಲ್ಲಿದೆ. ಗಂಗಕ್ಕೋರು ಎಂದರೆ ನನಗೆ ನೆನಪಿದ್ದಿದ್ದು ಇಷ್ಟೇ ನೋಡಿ.
             ಇನ್ನೊಬ್ಬರು ಅಕ್ಕೋರಿದ್ದರು. ಅವರ ಹೆಸರು ಬಹುಶಃ ಸುಮಿತ್ರಕ್ಕೋರು ಇರಬೇಕು. ಕೊಂಕಣಿಗರು. ಮೂರು ತಿಂಗಳೋ ನಾಲ್ಕು ತಿಂಗಳೋ ಕಳಿಸಲು ಬಂದಿದ್ದರು. ಅವರ ಬಗ್ಗೆ ಹೆಚ್ಚಿಗೆ ಏನೂ ವಿಶೇಷವಿಲ್ಲ. ಕಲಿಸಲು ಬಂದವರಿಗೆ ಮದುವೆಯಾಯಿತು. ನಮ್ಮೂರಿನ ಬಳಿಯೇ ಈಗಲೂ ಇದ್ದಾರೆ ಅವರು. ಇಂವ ನನ್ನ ಸ್ಟೂಡೆಂಟ್ ಆಗಿದ್ದ ಎಂದು ಈಗಲೂ ನೆನಪು ಮಾಡಿಕೊಳ್ಳುತ್ತಾರೆ. ಆದರೆ ಅವರ ಬಳಿ ಹೆಸರು ಕೇಳಲು ಮುಜುಗರವಾಗಿ ಸುಮ್ಮನೇ ಇದ್ದೇನೆ.

ಜಿ. ಎಸ್. ಭಟ್ಟ್:
             ಗಣೇಶ ಭಟ್ಟರು ಎಂಬ ಹೆಸರಿನ ಈ ಮಾಸ್ತರ್ರಂತೂ ಯಾವತ್ತಿಗೂ ಮರೆಯೋಕಾಗೋದಿಲ್ಲ ಬಿಡಿ. ಜಿ. ಎಸ್. ಭಟ್ರು ಎನ್ನುವ ಹೆಸರನ್ನು ಕೇಳಿದ ತಕ್ಷಣ ನಾವೆಲ್ಲ ಭಯಂಕರ ಹೆದರುತ್ತಿದ್ದ ಕಾಲವೊಂದಿತ್ತು. ಅವರ ಹೊಡೆತ, ಅವರ ಸಿಟ್ಟು ಅಯ್ಯಪ್ಪಾ ಯಾರಿಗೂ ಬೇಡ. ಜಿ. ಎಸ್. ಭಟ್ಟರು ಶಾಲೆಗೆ ಬರುವಾಗ ಒಂದು ಡಜನ್ ಕೋಲುಗಳನ್ನು ಹೊಡೆತಕ್ಕಾಗಿಯೇ ತರುತ್ತಾರೆ ಎನ್ನುವ ಮಾತುಗಳೂ ಇದ್ದವು. ಡಜನ್ ಕೋಲುಗಳು ಖಾಲಿಯಾಗಿ ಶಾಲೆಯ ಆವರಣದಲ್ಲಿದ್ದ ಗಾಳಿ ಶೆಳಕೆ, ಹುಳಸೇ ಬರಲುಗಳನ್ನೆಲ್ಲ ಮತ್ತಷ್ಟು ಮುರಿದು ತರಲು ಆಜ್ಞಾಪಿಸುತ್ತಿದ್ದರು. ಅವರ ಸಿಟ್ಟಿಗೆ ಬಲಿ ಬೀಳದವರು ಯಾರೂ ಇರಲಿಲ್ಲ ನೋಡಿ. ನಾನು ಅವರ ಬಳಿ ಅದೆಷ್ಟೋ ಹೊಡೆತ ತಿಂದಿದ್ದೇನೆ. ಮೂ, ಕೈ, ಕಾಲುಗಳ ಮೇಲೆಲ್ಲ ಬಾಸುಂಡೆ ಬಂದಿದ್ದಿದೆ.
               ನನಗಿಂತ ಎರಡು ತರಗತಿಗಳ ಮೇಲೆ ಒಬ್ಬ ಹುಡುಗನಿದ್ದ. ಆತನ ಬ್ಯಾಚಿನಲ್ಲಿದ್ದ ಹುಡುಗರೆಲ್ಲ ಭಯಂಕರ ಪುಂಡು ಪೋಕರಿಗಳು. ಗಣಪತಿ ಎಂಬ ಹೆಸರಿನ ಆ ಹುಡುಗ ದೂರದಿಂದ ನನಗೆ ಸಂಬಂಧಿಕನೂ ಆಗಬೇಕು. ಆ ದಿನಗಳಲ್ಲಿ ಆತ ಸಿಕ್ಕಾಪಟ್ಟೆ ತಂಟೆ ಮಾಡುತ್ತಿದ್ದ. ಗಲಾಟೆಯಲ್ಲಿ ಎತ್ತಿದ ಕೈ ಆಗಿತ್ತು. ಭಾನಗಡಿಗೆ ಹೆಸರುವಾಸಿಯೂ ಆಗಿದ್ದ. ಸದಾ ಸುಮ್ಮನಿರಲು ಆಗದ ಆತ ಏನಾದರೂ ಒಂದು ಕಿತಾಪತಿ ಮಾಡುತ್ತಲೇ ಇರುತ್ತಿದ್ದ. ಶಾಲೆಗೆ ಕಳ್ಳ ಬೀಳುವುದು, ಮಾರ್ಕ್ಸ್ ಕಾರ್ಡಿನ ಮೇಲೆ ನಕಲಿ ಸಹಿ ಝಾಡಿಸುವುದು, ಸುಳ್ಳಿನ ಸರಮಾಲೆಗಳನ್ನು ಪೋಣಿಸುವುದು ಇತ್ಯಾದಿಗಳೆಲ್ಲ ಆತನಿಗೆ ನೀರು ಕುಡಿದಷ್ಟು ಸುಲಭವಾಗಿತ್ತು. ಇಂತಹ ಗಣಪತಿಗೆ ಜಿ. ಎಸ್. ಭಟ್ಟರು ಸಿಂಹಸ್ವಪ್ನವಾಗಿದ್ದರು.
               ನಮ್ಮೂರಿನಲ್ಲೇ ಇನ್ನೊಬ್ಬ ಹುಡುಗನಿದ್ದ. ನನಗಿಂತ ಮೂರ್ನಾಲ್ಕು ವರ್ಷ ದೊಡ್ಡವನು. ನಮ್ಮೂರಿನ ಒಬ್ಬರ ಮನೆಯಲ್ಲಿ ಉಳಿದುಕೊಂಡು ಶಾಲೆಗೆ ಹೋಗುತ್ತಿದ್ದ. ಆತ ಓದಿನಲ್ಲಿ ಅಷ್ಟು ಚುರುಕಾಗಿರಲಿಲ್ಲ. ಆದರೆ ತಂಟೆ ಮಾಡುವುದರಲ್ಲಿ ಎತ್ತಿದ ಕೈ. ಅವನಿಗೂ ಕೂಡ ಜಿ. ಎಸ್. ಭಟ್ಟರೆಂದರೆ ಭಯಂಕರ ಭಯ. ಶ್ರೀಪಾದ ಎನ್ನುವುದು ಆತನ ಹೆಸರು. ಗಣಪತಿ ಹಾಗೂ ಶ್ರೀಪಾದನ ಪಾಲಿಗೆ ಗಣೇಶ ಭಟ್ಟರು ವಿಲನ್ನು. ಈ ಜಿ. ಎಸ್. ಭಟ್ಟರು ಹೇಗಾದರೂ ಸತ್ತು ಹೋದರೆ ಚನ್ನಾಗಿತ್ತು ಎಂದು ಬೈದುಕೊಂಡು ಶಾಪ ಹೊಡೆಯುವಷ್ಟು ಭಟ್ಟರ ಮೇಲೆ ಸಿಟ್ಟಿತ್ತು.
               ಹೀಗಿದ್ದಾಗಲೇ ಗಣೇಶ ಭಟ್ಟರು ಹೊಸದೊಂದು ಬೈಕನ್ನು ಕೊಂಡಿದ್ದರು. ಬೈಕ್ ಪೂಜೆ ಮಾಡಿಸಬೇಕಲ್ಲ. ಹಿರಿಯ ಪ್ರಾಥಮಿಕ ಶಾಲೆ ಅಡ್ಕಳ್ಳಿ-ಕೋಡ್ಸಿಂಗೆಯ ಎದುರಿಗೆ ದೊಡ್ಡದೊಂದು ಭೂತಪ್ಪನ ಕಟ್ಟೆಯಿದೆ. ಹೊಸ ವಸ್ತುಗಳು, ಹೊಸ ವಾಹನ ಹೀಗೆ ಏನೆ ಇದ್ದರೂ ಅಲ್ಲಿ ಪೂಜೆ ಮಾಡಿಸುವುದು ವಾಡಿಕೆ. ಜಿ. ಎಸ್. ಭಟ್ಟರೂ ಕೂಡ ಹೊಸ ಬೈಕನ್ನು ಅಲ್ಲಿ ಪೂಜೆ ಮಾಡಿಸಿದ್ದರು. ಬೈಕ್ ಪೂಜೆ ಮಾಡಿದ್ದವನು ಅವರಿಂದ ಸಿಕ್ಕಾಪಟ್ಟೆ ಹೊಡೆತ ತಿನ್ನುವ ಗಣಪತಿ. ಭಟ್ಟರ ದುರಾದೃಷ್ಟವೋ ಗೊತ್ತಿಲ್ಲ ಪೂಜೆ ಮಾಡಿಸುವ ಸಂದರ್ಭದಲ್ಲಿ ಕಾಯಿ ಒಡೆಯಲಾಯಿತು. ಒಡೆದ ಕಾಯಿಯಲ್ಲಿ ಒಂದು ಕಾಯಿ ಕೊಳೆತು ಹೋಗಿತ್ತು. ಅದೆಂತಹ ಅಪಶಕುನವೋ ಗೊತ್ತಿಲ್ಲ. ಭಟ್ಟರು ಬೇರೆ ಕಾಯಿ ತಂದು ಒಡೆಸಿದ್ದರು.
                ಅದಾದ ನಂತರ ನಾವು ಶಾಲೆಯಲ್ಲಿ ಪ್ರಾರ್ಥನೆಗೆ ನಿಂತಾಗಲೆಲ್ಲ ಜಿ. ಎಸ್. ಭಟ್ಟರ ಬೈಕಿನ ಸದ್ದಾಗುತ್ತದೆಯೋ ಎಂದು ಆಲಿಸುತ್ತಿದ್ದೆವು. ಪ್ರಾರ್ಥನೆ ಮುಗಿಯುವ ವೇಳೆಗೆ ಬೈಕಿನ ಸದ್ದಾಗದಿದ್ದರೆ ಅವರು ಬಂದಿಲ್ಲ ಎಂದು ನಿಟ್ಟುಸಿರು ಬಿಡುತ್ತಿದ್ದೆವು. ಬೈಕು ಬಂತೋ ನಮ್ಮ ಜೀವ ಕೈಗೆ ಬರುತ್ತಿತ್ತು. ದೇವರೇ ಇವತ್ತು ಜಿ. ಎಸ್. ಭಟ್ಟರು ಶಾಲೆಗೆ ಬರದಿದ್ದರೆ ಸಾಕಪ್ಪಾ ಎಂದು ಬೇಡಿಕೊಳ್ಳುತ್ತಿದ್ದುದೂ ಇದೆ. ಭಟ್ಟರದ್ದು ಅದೆಂತಹ ಸಿದ್ಧಾಂತವಾಗಿತ್ತೋ ಏನೋ. ಪಾಠವನ್ನು ಮಾತ್ರ ಬಹಳ ಚನ್ನಾಗಿ ಕಲಿಸುತ್ತಿದ್ದರು. ಆದರೆ ನನಗೆ ಮಾತ್ರ ಅವರು ಪಾಠಕ್ಕಿಂತ ಹೆಚ್ಚಿಗೆ ಹೊಡೆತವನ್ನೇ ನೀಡಿದ್ದಾರೆ ಎಂದರೆ ತಪ್ಪಿಲ್ಲ. ಅವರು ನನಗೆ ಹೊಡೆದಾಗಲೂ ನಾನು ಹೆದರಿರಲಿಲ್ಲ. ಆದರೆ ನನ್ನ ಜೊತೆಗೆ ಬರುತ್ತಿದ್ದ ಗಣಪತಿ ಹಾಗೂ ಶ್ರೀಪಾದನ ಮೈಮೇಲಿನ ಬಾಸುಂಡೆಗಳು, ರಕ್ತ ಜಿನುಗುವ ಹೊಡೆತದ ಗಾಯಗಳನ್ನು ನೋಡಿದಾಗಲೆಲ್ಲ ಸಿಕ್ಕಾಪಟ್ಟೆ ಹೆದರಿದ್ದೂ ಇದೆ.
             ಹೊಡೆತ ತಪ್ಪಿಸಿಕೊಳ್ಳಬೇಕು ಎನ್ನುವ ಕಾರಣಕ್ಕಾಗಿ ಗಣಪತಿ ಅನೇಕ ಸಾರಿ ಶಾಲೆ ತಪ್ಪಿಸುತ್ತಿದ್ದ. ಆದರೆ ಮರುದಿನ ಮಾತ್ರ ಸಿಕ್ಕಾಪಟ್ಟೆ ಹೊಡೆತ ಬೀಳುತ್ತಿತ್ತು. ಮನೆಯಲ್ಲಿ ಶಾಲೆಗೆ ಹೋಗುತ್ತೇನೆ ಎಂದು ಹೇಳುತ್ತಿದ್ದ ಗಣಪತಿ (ನಾವೆಲ್ಲ ಅವನನ್ನು ಗಪ್ಪತಿ ಎನ್ನುತ್ತಿದ್ದೆವು. ಮುಂದೆ ಅವನ ಬಗ್ಗೆ ಬಹಳ ಬರೆಯಲಿಕ್ಕಿದೆ. ಬೇರೆ ಕಂತಿನಲ್ಲಿ ಬರೆಯುತ್ತೇನೆ) ನಮ್ಮ ಜೊತೆಗೆ ಅರ್ಧ ದಾರಿಯ ವರೆಗೆ ಬರುತ್ತಿದ್ದ. ನಮ್ಮೂರಿನಿಂದ ಶಾಲೆಗೆ ಹೋಗುವ ದಾರಿಯಲ್ಲಿ ದೊಡ್ಡದೊಂದು ಕಾಡು ಸಿಗುತ್ತದೆ. ಗಪ್ಪತಿ ಆ ಕಾಡಿನ ಜಾಗ ಬಂದ ತಕ್ಷಣ ಕಾನೊಳಗೆ ನುಸುಳಿ ಬಿಡುತ್ತಿದ್ದ. ಶಾಲೆಗೆ ಕಳ್ಳ ಬೀಳುತ್ತಿದ್ದ ಆತ ನಮ್ಮ ಬಳಿ ಮಾತ್ರ ಮನೆಯಲ್ಲಿ ಹೇಳಬೇಡ ಎಂದು ಹೇಳುತ್ತಿದ್ದ. ಶಾಲೆಯಲ್ಲಿ ಹಾಗೂ ಮನೆಯಲ್ಲಿ ಆತ ಕಳ್ಳಬೀಳುತ್ತಿದ್ದ ವಿಷಯವನ್ನು ಯಾರಿಗೂ ತಿಳಿಸದಂತೆ ಮ್ಯಾನೇಜ್ ಮಾಡಬೇಕಿತ್ತು ನಾವು. ಶಾಲೆಯಿಂದ ಮರಳುವ ವೇಳೆಗೆ ಆ ಕಾಡಿನ ಜಾಗಕ್ಕೆ ಬಂದ ನಾವು ಆತನ ಹೆಸರು ಹೇಳಿ ದೊಡ್ಡದಾಗಿ ಕೂಗು ಹಾಕಿದಾಗ ಕಾಡಿನೊಳಗಿಂದ ಓಡಿ ಬರುತ್ತಿದ್ದ. `ಗಪ್ಪತಿ ಎಂತಾ ಮಾಡ್ತದ್ಯಲೇ ಕಾಡೊಳಗೆ..' ಎಂದು ನಾವು ಕೇಳಿದರೆ ನಿದ್ದೆ ಮಾಡ್ತಿದ್ದೆ ಮಾರಾಯಾ ಎನ್ನುತ್ತಿದ್ದ.
              ಒಮ್ಮೆ ಹೀಗಾಯಿತು. ನಾಲ್ಕಾರು ದಿನ ಕಳ್ಳಬಿದ್ದಿದ್ದ ಗಪ್ಪತಿ. ಜಿ. ಎಸ್. ಭಟ್ಟರು ಪ್ರತಿದಿನ ನಮ್ಮ ಬಳಿ ಗಪ್ಪತಿ ಶಾಲೆಗೆ ಬರಲಿಲ್ಲವಾ ಎಂದು ಕೇಳುತ್ತಿದ್ದರು. ನಾವು ಅದೇನೋ ನೆಪ ಹೇಳುತ್ತಿದ್ದೆವು. ಅದೊಂದು ದಿನ ಭಟ್ಟರಿಗೆ ಅನುಮಾನ ಬಂದಿತು. ನನ್ನ ಹಿಡಿದು ದನಕ್ಕೆ ಬಡಿಯುವ ಹಾಗೆ ಬಡಿಯಲು ಆರಂಭಿಸಿದರು. ನಾನು ಹೊಡೆತದ ಉರಿಯನ್ನು ತಾಳಲಾರದೇ ಗಪ್ಪತಿ ಕಾಡಿನಲ್ಲಿ ಕದ್ದು ಕೂರುವ ವಿಚಾರವನ್ನು ಬಾಯಿ ಬಿಟ್ಟಿದ್ದೆ. ಸಿಟ್ಟಿನಿಂದ ಮತ್ತಷ್ಟು ಬಡಿದ ಜಿ. ಎಸ್. ಭಟ್ಟರು ನನ್ನನ್ನು ಸೀದಾ ಎಳೆದುಕೊಂಡು ಹೋದರು. ಅದೇ ಕಾಡಿನ ಬಳಿ ಹತ್ತಿರ ಬಂದ ತಕ್ಷಣ ಗಪ್ಪತಿಯ ಹೆಸರನ್ನು ದೊಡ್ಡದಾಗಿ ಕೂಗು ಎಂದರು. ನಾನು ಕೂಗಿದೆ. ಗಪ್ಪತಿ ಕಾಡಿನಿಂದ ಹೊರಗೆ ಬಂದ. ಬಂತ ತಕ್ಷಣವೇ ಜಿ. ಎಸ್. ಭಟ್ಟರ ಕೈಗೆ ಸಿಕ್ಕಿಬಿದ್ದ. ಅಲ್ಲಿಂದ ಗಪ್ಪತಿಗೆ ಹೊಡೆಯಲು ಆರಂಭಿಸಿದ ಜಿ. ಎಸ್. ಭಟ್ಟರು ಶಾಲೆಯ ವರೆಗೂ ಹೊಡೆಯುತ್ತಲೇ ಹೋಗಿದ್ದರು. ಆಮೇಲಿಂದ ಗಪ್ಪತಿ ಕಾಡಿನಲ್ಲಿ ಕದ್ದು ಕೂರುವುದು ಬಂದಾಗಿತ್ತು. ಕೆಲ ದಿನಗಳ ವರೆಗೆ ಗಪ್ಪತಿ ನನ್ನ ಬಳಿ ಮಾತಾಡುವುದನ್ನೂ ಬಿಟ್ಟು ಬಿಟ್ಟಿದ್ದ.
             ಹೀಗಿದ್ದಾಗ ಒಂದು ದಿನ ನಮಗೆ ಸುದ್ದಿ ಬಂದಿತ್ತು. ಶಿರಸಿ-ಕುಮಟಾ ರಸ್ತೆಯ ಹನುಮಂತಿ ಬಳಿ ಎಕ್ಸಿಡೆಂಟ್ ಆಯ್ತಂತೆ. ಜಿ. ಎಸ್. ಭಟ್ಟರಿಂದ ಬೈಕಿಗೆ ಹಿಂದಿನಿಂದ ಬಂದ ಬಸ್ಸೊಂದು ಡಿಕ್ಕಿ ಹೊಡೆಯಿತಂತೆ. ಡಿಕ್ಕಿ ಹೊಡೆದ ರಭಸಕ್ಕೆ ಜಿ. ಎಸ್. ಭಟ್ಟರು ಸ್ಥಳದಲ್ಲೇ ಸತ್ತು ಹೋದರಂತೆ ಎಂಬ ಸುದ್ದಿ ಬಂದಿತು. ಶಾಲೆಗೆ ನಾನು ಬರುವ ವೇಳೆಗೆ ಎಲ್ಲರೂ ಹೊರಗೆ ಕುಂತಿದ್ದರು. ಒಂದೆರಡು ಶಿಕ್ಷಕಿಯರು ಆಗಲೇ ಅಳುತ್ತಿದ್ದರು. ಕೊನೆಗೆ ಪೂರ್ತಿಯಾಗಿ ಗೊತ್ತಾಗಿದ್ದೇನೆಂದರೆ ಬ್ರೇಕ್ ಫೈಲ್ ಆದ ಕೆಎಸ್ಸಾರ್ಟಿಸಿ ಬಸ್ಸೊಂದು ಜಿ. ಎಸ್. ಭಟ್ಟರ ಬೈಕಿಗೆ ಹಿಂದಿನಿಂದ ಢಿಕ್ಕಿ ಹೊಡೆದಿತ್ತು. ಮಧುವೆ ಮಾಡಿಕೊಳ್ಳಬೇಕು ಎಂದು ಹೆಣ್ಣು ನೋಡಲು ಹೊರಟಿದ್ದ ಜಿ. ಎಸ್. ಭಟ್ಟರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. ಢಿಕ್ಕಿಯಾದ ರಭಸಕ್ಕೆ ಬೈಕಿನಿಂದ ಚಿಮ್ಮಿ ಬಿದ್ದಿದ್ದ ಜಿ. ಎಸ್. ಭಟ್ಟರ ಎದೆಯ ಮೇಲೆ ಬಸ್ಸಿನ ಹಿಂದಿನ ಚಕ್ರ ಹತ್ತಿ ಹೋದ ಪರಿಣಾಮ ಭಟ್ಟರು ಅಪ್ಪಚ್ಚಿಯಾಗಿ ಬಿಟ್ಟಿದ್ದರು. ಭಟ್ಟರ ಜೊತೆಗೆ ಹೋಗುತ್ತಿದ್ದ ಅಡಕಳ್ಳಿಯ ವಿ. ಆರ್. ಹೆಗಡೆ ಎನ್ನುವವರು ಕೂದಲೆಳೆಯ ಅಂತರದಲ್ಲಿ ಬಚಾವಾಗಿದ್ದರು. ಆದರೂ ಅವರಿಗೆ ಅನೇಕ ಕಡೆಗಳಲ್ಲಿ ಮೂಳೆ ಮುರಿತ ಉಂಟಾಗಿತ್ತು. ಆದಿನ ನನಗೆ ಅದೇಕೋ ಸಿಕ್ಕಾಪಟ್ಟೆ ಅಳು ಬಂದಿತ್ತು.
          ಮೌನ ಆಚರಿಸಿದ್ದರು. ಶಾಲೆಗೆ ರಜಾ ಕೊಟ್ಟಿದ್ದರು. ನಾನು ಬೇಜಾರಿನಲ್ಲಿಯೇ ವಾಪಾಸ್ ಬರುತ್ತಿದ್ದ ವೇಳೆ ಜೊತೆಯಲ್ಲಿದ್ದ ಶ್ರೀಪಾದ ಹಾಗೂ ಗಪ್ಪತಿ ಮಾತ್ರ ಕುಣಿದು ಕುಪ್ಪಳಿಸಿದ್ದರು. ಜಿ. ಎಸ್. ಭಟ್ಟರು ಗೋತಾ ಜೊ. ಎಸ್. ಭಟ್ಟರು ಗೋತಾ ಎಂದು ಕುಣಿಯುತ್ತ ಹೋಗುತ್ತಿದ್ದುದು ಇನ್ನೂ ನನ್ನ ಕಣ್ಣೆದುರಿಗಿದೆ. ಆ ದಿನಗಳಲ್ಲಿಯೇ ಕೆಲವು ಸುದ್ದಿಗಳೂ ನನ್ನ ಕಿವಿಗೆ ಬಿದ್ದಿದ್ದವು. ಎಷ್ಟು ಸತ್ಯವೋ, ಅದೆಷ್ಟು ಸುಳ್ಳೋ ಗೊತ್ತಿಲ್ಲ. ಭಟ್ಟರು ಹೊಸ ಬೈಕ್ ತೆಗೆದುಕೊಂಡಾಗ ಭೂತಪ್ಪನ ಕಟ್ಟೆಗೆ ಕಾಯಿ ಒಡೆಸಿದ್ದರು ಎಂದಿದ್ದೆನಲ್ಲ. ಅದು ಕೊಳೆತು ಹೋಗಿತ್ತು ಎಂದೂ ಹೇಳಿದ್ದೆನಲ್ಲ. ಆ ಕಾರಣಕ್ಕಾಗಿಯೇ ಬೈಕ್ ಎಕ್ಸಿಡೆಂಟ್ ಆಗಿತ್ತು ಎಂದು ಅನೇಕರು ಮಾತನಾಡಿಕೊಂಡರು. ಅನೇಕರು ಗಪ್ಪತಿಯ ಬಗ್ಗೆಯೂ ಮಾತನಾಡಿಕೊಂಡು. ಪ್ರತಿ ದಿನ ಭೂತಪ್ಪನ ಕಟ್ಟೆಯಲ್ಲಿ ಜಿ. ಎಸ್. ಭಟ್ಟರು ಸತ್ತು ಹೋಗಲಿ ಎಂದು ಬೇಡಿಕೊಳ್ಳುತ್ತಿದ್ದ, ಹೂವನ್ನು ತಂದು ಭೂತಪ್ಪನಿಗೆ ಹಾಕುತ್ತಿದ್ದ. ಅದೇ ಕಾರಣಕ್ಕೆ ಜಿ. ಎಸ್. ಭಟ್ಟರು ಎಕ್ಸಿಡೆಂಟ್ ನಲ್ಲಿ ಸತ್ತುಹೋದರು ಎಂದು ಅನೇಕ ಜನ ಮಾತನಾಡಿಕೊಂಡರು. ಅನೇಕ ದಿನಗಳ ಕಾಲ ಈ ಸುದ್ದಿ ಅನೇಕರ ಬಾಯಲ್ಲಿಯೂ ಹರಿದಾಡುತ್ತಿತ್ತು. ಆದರೆ ನಿಧಾನವಾಗಿ ಜಿ. ಎಸ್. ಭಟ್ಟರೂ ಮರೆತು ಹೋದರು. ಗಪ್ಪತಿ ಬಗ್ಗೆ ಇದ್ದ ಗಾಸಿಪ್ ಕೂಡ ಮರೆತು ಹೋಗಿತ್ತು. ಆದರೆ ನನಗೆ ಕಲಿಸಿದ ಮಾಸ್ತರ್ ಮಂದಿಯ ನೆನಪು ಮಾಡಿಕೊಳ್ಳುವ ಸಂದರ್ಭದಲ್ಲಿ ಮಾತ್ರ ಈ ಎಲ್ಲ ಘಟನೆಗಳೂ ನನ್ನ ನೆನಪಿನ ಖಜಾನೆಯಲ್ಲಿ ಅಚ್ಚಳಿಯದೇ ಉಳಿದುಕೊಂಡು ಬಿಟ್ಟಿವೆ.

(ಮುಂದುವರಿಯುತ್ತದೆ)

No comments:

Post a Comment