Thursday, August 18, 2022

ಗಾಳಿಪಟ-2 ಮೂಲಕ ಮತ್ತೆ ಮೋಡಿ ಮಾಡಿದ ಯೋಗರಾಜ್ ಭಟ್-ಗಣೇಶ್(ನಾನು ನೋಡಿದ ಚಿತ್ರಗಳು -7)

ಇತ್ತೀಚಿನ ದಿನಗಳಲ್ಲಿ ನೋಡಲೇಬೇಕು ಅನ್ನಿಸಿ ಕಾದು ಕಾದು ನೋಡಿದ ಸಿನಿಮಾ ಅಂದರೆ ಅದು ಗಾಳಿಪಟ 2. ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಯೋಗರಾಜ್ ಭಟ್ ಅವರ ಕಾಂಬಿನೇಷನ್ ಚಿತ್ರ ಎನ್ನುವುದು ಈ ಚಿತ್ರದ ಕಡೆಗೆ ಇದ್ದ ಮೊದಲ ಕಾರಣವಾಗಿದ್ದರೆ, ಗಾಳಿಪಟ ಸಿನಿಮಾದ ಮೊದಲ ಭಾಗಕ್ಕೆ ಸಿಇಕ್ವೆಲ್ ಬರುತ್ತಿದೆ ಎನ್ನುವುದು ಇನ್ನೊಂದು ಕಾರಣ.

ಸಿನಿಮಾದಲ್ಲಿ ಬಹಳಷ್ಟು ಇಷ್ಟವಾದವು. ಕೆಲವಷ್ಟು ಕಷ್ಟವಾದವು. ಸಿನಿಮಾದಲ್ಲಿ ನಮಗೆ ಇಷ್ಟವಾಗಲು ಹಲವು ಸಂಗತಿಗಳಿವೆ. ಅದರಲ್ಲಿ ಮೊದಲನೆಯದು ಯೋಗರಾಜ್ ಭಟ್ ಅವರ ನವಿರಾದ ಚಿತ್ರಕಥೆ. ಸರಳ ಕಥಾ ಹಂದರ. 

ಮೊದಲ ಭಾಗದಲ್ಲಿ ಮುಗಿಲು ಪೇಟೆಯನ್ನು ನೋಡಿದ್ದ ನಾವು ಇಲ್ಲಿ ನೀರು ಕೋಟೆಯನ್ನು ನೋಡುತ್ತೇವೆ, ಅದೇ ರೀತಿ ಟರ್ಕಿ ದೇಶದ ಹಿಮದ ಸಾಲಿನ ಮೇಲೆ ಓಡಾಡುತ್ತೇವೆ. ನೀರು, ಐಸು, ಆಗೊಮ್ಮೆ ಈಗೊಮ್ಮೆ ಬರುವ ಬೆಂಗಾಡಿನ ಪ್ರದೇಶ ಇವೆಲ್ಲವೂ ಸೆಳೆಯುತ್ತವೆ. ಆದರೆ ಸಿನಿಮಾದ ಮೊದಲರ್ಧ ಸ್ವಲ್ಪ ಸುದೀರ್ಘವಾಯಿತು ಎನ್ನಿಸುತ್ತದೆ. ಅಲ್ಲದೆ ಮೊದಲಾರ್ಧದಲ್ಲಿ ಬ್ಯಾಕ್ ಟು ಬ್ಯಾಕ್ ಬರುವ ಹಾಡುಗಳು ಕಥೆಯ ಓಟಕ್ಕೆ ಸ್ವಲ್ಪ ಕಡಿವಾಣ ಹಾಕುತ್ತದೆ.

ಗಣೇಶ್ ಹಾಗೂ ದಿಗಂತ್ ಕಾಲೇಜಿಗೆ ಮರಳಿ ಬರಲು ಕಾರಣಗಳಿದ್ದವು. ಆದರೆ ಪವನ್ ಯಾಕೆ ಬಂದರು ಎನ್ನುವುದು ಗೊತ್ತಾಗಲಿಲ್ಲ. ಚಿತ್ರ ಆರಂಭವಾಗಿ ಕೆಲವೇ ನಿಮಿಷಗಳಾದ ಮೇಲೆ ಗಣೇಶ್ ನಾಯಕಿಯನ್ನು ಪಟಾಯಿಸಲು ನದಿಯಲ್ಲಿ ಈಜು ಬರದಂತೆ ನಟಿಸುವ ಸನ್ನಿವೇಶವೊಂದಿದೆ. ಪಕ್ಕದಲ್ಲೇ ಸೇತುವೆ ಇದ್ದರೂ ನಾಯಕ, ನಾಯಕಿ ನದಿಯೊಳಕ್ಕೆ ಇಳಿದು ದಾಟಲು ಹೊರಟಿದ್ದು ಸ್ವಲ್ಪ ವಿಚಿತ್ರ ಅನ್ನಿಸಿತು. 

ಇನ್ನು ಹಾಡುಗಳಂತೂ ಆಹಾ. ಜಯಂತ್ ಕಾಯ್ಕಿಣಿ ಬರೆದ ನೀನು ಬಗೆಹರಿಯದ ಹಾಡು, ನಾನಾಡದ ಮತ್ತೆಲ್ಲವ ಕದ್ದಾಲಿಸು ಹಾಗೂ ಯೋಗರಾಜ್ ಭಟ್ಟರು ಬರೆದ ನಾವು ಬದುಕಿರಬಹುದು ಪ್ರಾಯಶಃ ಈ ಹಾಡುಗಳಂತೂ ಪದೇ ಪದೇ ಗುನುಗುವಂತೆ ಮಾಡುತ್ತವೆ. ಭಟ್ಟರು ಬರೆದ ದೇವ್ಲೇ ದೇವ್ಲೇ ಹಾಡಂತೂ ಪಡ್ಡೆ ಹುಡುಗರ ಪಾಲಿಗೆ ಒಳ್ಳೆಯ ಕಿಕ್ ನೀಡುತ್ತದೆ. ಹಾಗೆಯೆ ಎಕ್ಸಾಂ ಕುರಿತಾದ ಹಾಡು ಸಹ ಇಷ್ಟವಾಗುತ್ತವೆ. ಗಣೇಶ್ ಮಗ ವಿಹಾನ್ ದು ಇಲ್ಲಿ ಚಿಕ್ಕ ಪಾತ್ರ. ಒಳ್ಳೆಯ ಎಂಟ್ರಿ. ಇನ್ನು ವಿಜಯ್ ಸೂರ್ಯ ಮಾತ್ರ ಸರ್ಪ್ರೈಸ್ ಎಂಟ್ರಿ.

ಸಿನಿಮಾ ಲೊಕೇಷನ್ನುಗಳು ಬಹಳ ಚನ್ನಾಗಿದೆ. ಕುದುರೆಮುಖ, ಟರ್ಕಿ ಇತ್ಯಾದಿ ಸ್ಥಳಗಳು ಕಣ್ಣಿಗೆ ಮುದ ನೀಡುತ್ತವೆ. ಆದರೆ ಚಿತ್ರದಲ್ಲಿ ಜೋಗ ಜಲಪಾತವನ್ನು ಸುಮ್ಮನೆ ಮೂರು ಸೆಕೆಂಡ್ ಕಾಲ ತೋರಿಸಿದರು ಅಷ್ಟೇ. ಜೋಗ ಜಲಪಾತವಲ್ಲದೆ ಬೇರೆ ಯಾವುದೇ ಜಲಪಾತ ತೋರಿಸಿದ್ದರೂ ಯಾವೂದೇ ನಷ್ಟವಿರಲಿಲ್ಲ. 

ಕಾರಣಾಂತರಗಳಿಂದ ಕಾಲೇಜಿಗೆ ಬಂದು ಕನ್ನಡ ಕಲಿಯಲು ಮುಂದಾಗುವ ಮೂವರು ಯುವಕರು, ಅವರಿಗೊಬ್ಬ ಕನ್ನಡ ಲೆಕ್ಚರು, ಆ ಲೆಕ್ಚರ್ ಗೆ ಒಬ್ಬ ಕಾಣೆಯಾದ ಮಗ.. ಇಂತಹ ಕಥಾ ಹಂದರದಲ್ಲಿ ಸಾಕಷ್ಟು ಟ್ವಿಸ್ಟ್ ಇದೆ. ನಗೆಯ ಚಿಲುಮೆಯೇ ಇದೆ. ಭಾವನಾತ್ಮಕ ಸನ್ನಿವೇಶಗಳಿವೆ, ತಾಯಿಯ ಪ್ರೀತಿ ಇದೆ. ಗುರು - ಶಿಷ್ಯರ ಅವಿನಾಭಾವ ಸಂಬಂಧವೂ ಇದೆ. ಎರಡು ಮೂರು ಸಾಧಾರಣ ಚಿತ್ರಗಳನ್ನು ಮಾಡಿದ್ದ ಯೋಗರಾಜ ಭಟ್ಟರು ಇನ್ನೊಮ್ಮೆ ಒಳ್ಳೆಯ ಕಥೆಯ ಮೂಲಕ ಮರಳಿ ಬಂದಿದ್ದಾರೆ. 

ಇನ್ನು ನಟನೆ ವಿಷಯಕ್ಕೆ ಬಂದರೆ ಹಲವಾರು ಫುಲ್ ಮಾರ್ಕ್ಸ್ ಪಡೆಯುತ್ತಾರೆ. ಕನ್ನಡ ಲೆಕ್ಚರ್ ಪಾತ್ರಧಾರಿ ಅನಂತ್ ನಾಗ್ ಅಂತೂ ವಾಹ್.. ಅವರ ಅಭಿನಕ್ಕೆ ಸಾಟಿಯೇ ಇಲ್ಲ. ಇನ್ನು ಗಣೇಶ್. ಇಂದಿನ ತಮ್ಮ ನಗಿಸುವ, ನಗಿಸುತ್ತಲೇ ಅಳಿಸುವ ಪಾತ್ರದಲ್ಲಿ ಮತ್ತೊಮ್ಮೆ ಮೋದಿ ಮಾಡಿದ್ದಾರೆ. ಗಂಭೀರ ಪಾತ್ರದಲ್ಲಿ ಪವನ್ ಇಷ್ಟವಾಗುತ್ತಾರೆ. ಗಣೇಶ್ ಅಂತಹ ಕಚಗುಳಿ ನಟರು ಇದ್ದರೂ ಸಿನಿಮಾದಲ್ಲಿ ಅತ್ಯಂತ ಹೆಚ್ಚು ನಗಿಸುವವರು ದಿಗಂತ್. ದಿಗಂತ್ ಅವರನ್ನು ಅಘೋರಿ ರೂಪದಲ್ಲಿ ನೋಡುವುದೇ ಮಜಾ. ದಿಗಂತ್ ತೆರೆಯ  ಮೇಲೆ ಇದ್ದಷ್ಟು ಹೊತ್ತು ನಗುವಿಗೆ ನಗುವಿಗೆ ಕೊರತೆಯೇ ಇಲ್ಲ. ರಂಗಾಯಣ  ರಘು, ಸುಧಾ ಬೆಳವಾಡಿ, ಪದ್ಮಜಾ, ಶ್ರೀನಾಥ್ ಅವರುಗಳು ಬಹಳ ಇಷ್ಟವಾಗುತ್ತಾರೆ. ಬುಲೆಟ್ ಪ್ರಕಾಶ್ ಒಂದೇ ಒಂದು ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ನಟಿಯರಾದ ವೈಭವೀ ಶಾಂಡಿಲ್ಯ, ಸಂಯುಕ್ತ ಮೆನನ್, ಶರ್ಮಿಳಾ ಮಾಂಡ್ರೆ ತಮ್ಮ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ. 

ಪ್ಯಾನ್ ಇಂಡಿಯಾ, ಬಾಲಿವುಡ್, ಟಾಲಿವುಡ್, ಕಾಲಿವುಡ್ ಇತ್ಯಾದಿ ಸಿನಿಮಾಗಳಗಳ ಅಬ್ಬರಗಳ ನಡುವೆ ಅಚ್ಚ ಕನ್ನಡದ ಸಿನಿಮಾ ಬಹಳ ಇಷ್ಟವಾಗುತ್ತದೆ. ಈ ನೋಡುಗರಿಗಂತೂ ಪೈಸೆ ವಸೂಲ್ ಪಕ್ಕಾ. ಸಾಧ್ಯವಾದರೆ ಸಿನಿಮಾ ಮಂದಿರಗಳಿಗೆ ತೆರಳಿ ಈ ಚಿತ್ರ ವೀಕ್ಷಿಸಿ.

Sunday, August 7, 2022

ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ (ನಾನು ನೋಡಿದ ಚಿತ್ರಗಳು -6)

 ಇತ್ತೀಚಿನ ದಿನಗಳಲ್ಲಿ ಬೇರೆ ಬೇರೆ ಭಾಷೆಯ ಹಲವು ಸಿನಿಮಾಗಳನ್ನು ನಾನು ನೋಡಿದ್ದರೂ, ಕನ್ನಡ ಭಾಹೆಯ ಸಿನಿಮಾ ನೋಡಿದ್ದು ಒಂದೇ ಒಂದು. ಅದೇ ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ ಸಿನಿಮಾ. ಈ ಸಿನಿಮಾ ಬಿಡುಗಡೆಯಾದ ವೇಳೆ ನಾನು ಶಿರಸಿಯ ನಟರಾಜ ಟಾಕೀಸಿನಲ್ಲಿ ಇದನ್ನು ನೋಡಬೇಕು ಎಂದುಕೊಂಡಿದ್ದೆ. ಕೊನೆಗೂ ಆ ಟಾಕೀಸಿಗೆ ಈ ಸಿನಿಮಾ ಬರಲೇ ಇಲ್ಲ. ಕೊನೆಗೆ OTT ಯಲ್ಲಿ ನೋಡಿದ್ದಾಯ್ತು.

ವಿನಾಯಕ ಕೋಡ್ಸರ ಅವರ ಹಲವು ಪ್ರಯತ್ನಗಳಲ್ಲಿ ಇದೂ ಒಂದು. ಮೊದಲ ಬಾರಿಗೆ ಸಿನಿಮಾ ನಿರ್ದೇಶನದ ಕಾರ್ಯಕ್ಕೆ ಅವರು ಮುಂದಾಗಿದ್ದಾರೆ. ಸಿನಿಮಾ ಹಲವು ವಿಷಯಗಳಲ್ಲಿ ಆಪ್ತ ಎನ್ನಿಸಿತು.
2300 ಈಗಿನ ದಿನಮಾನದಲ್ಲಿ ತೀರಾ ದೊಡ್ಡ ಮೊತ್ತವೇನಲ್ಲ. ಕೇವಲ 2300 ರೂಪಾಯಿಗೆ ನಾಯಕ ಅಷ್ಟೆಲ್ಲ ಒದ್ದಾಡುತ್ತಾನಾ ಎನ್ನುವ ಭಾವನೆ ನನ್ನ ಮನಸ್ಸಿನಲ್ಲಿ ಕಾದಿದ್ದು ಸುಳ್ಳಲ್ಲ. ಕೇವಲ 2300 ರೂಪಾಯಿಗಾಗಿ ನಾಯಕ ಹೋರಾಟ ನಡೆಸುವ ಕಥೆಯನ್ನು ನಿರ್ದೇಶಕರು ಮಾಡಿದ್ದಾರೆ, ಲಕ್ಷ, ಕೋಟಿಗಳಲ್ಲಿ ಹಣ ಲೆಖ್ಖ ಮಾಡುವ ದಿನಮಾನದಲ್ಲಿ ನಿರ್ದೇಶಕರು ಸಾವಿರ ರೂಪಾಯಿಗಾಗಿ ಹೋರಾಡುವ ಕಥೆ ಮಾಡಿದ್ದೂ ಸರಿಯಲ್ಲ ಎನ್ನುವ ಭಾವನೆ ಸಿನಿಮಾ ನೋಡುವಾಗ ನನಗೆ ಅನ್ನಿಸಿದ್ದು ಸುಳ್ಳಲ್ಲ. ಆದರೆ ಸಿನಿಮಾ ಮುಂದುವರಿದಂತೆಲ್ಲ ಈ ಭಾವನೆಗಳು ಬದಲಾದವು.
ನನ್ನ ಪರಿಚಯದ ಗೆಳೆಯನೊಬ್ಬ ಸೈಬರ್ ಜಾಲಕ್ಕೆ ಸಿಲುಕಿ ಅಪಾರ ಹಣ ಕಳೆದುಕೊಂಡಿದ್ದ. ಆ ವೇಳೆ ಅನೇಕರು ಸೈಬರ್ ಜಾಲದಲ್ಲಿ ಸಿಲುಕಿ ಕಳೆದುಕೊಂಡ ಹಣ ಯಾವತ್ತೂ ಮರಳಿ ಬರುವುದಿಲ್ಲ ಎಂದಿದ್ದರಂತೆ. ಆದರೆ ಆ ಗೆಳೆಯ ಪೊಲೀಸ್ ಕಂಪ್ಲೇಂಟ್ ಕೊಟ್ಟು, ನ್ಯಾಯಾಲಯದ ಮೆಟ್ಟಿಲು ಏರಿ, ಹಲವು ತಿಂಗಳುಗಳ ಕಾಲ ಪೊಲೀಸ್ ಸ್ಟೇಷನ್ ಹಾಗೂ ಬ್ಯಾಂಕ್ ಮೆಟ್ಟಿಲು ಸವೆಸಿ ಕೊನೆಗೂ ಆ ಹಣವನ್ನು ಖದೀಮರಿಂದ ವಾಪಾಸ್ ಕಕ್ಕಿಸುವಲ್ಲಿ ಯಶಸ್ವಿಯಾಗಿದ್ದ. ಈ ಸಿನಿಮಾ ನೋಡಿದ ತಕ್ಷಣ ಆ ಗೆಳೆಯನ ಬಳಿ, `ಇದು ನಿನ್ನದೇ ಕಥೆ' ಎಂದಿದ್ದೆ.
ಮಲೆನಾಡು, ಶರಾವತಿ ನದಿ, ಅಡಿಕೆ ಕೊಯ್ಲು, ಹವ್ಯಕ ಸಂಸ್ಕೃತಿ ಹೀಗೆ ಹಲವು ವಿಷಯಗಳಲ್ಲಿ ಸಿನಿಮಾ ಬಹಳ ಆಪ್ತವಾಯಿತು. ನನ್ನ ಇಷ್ಟದ ನಟರಲ್ಲಿ ಒಬ್ಬನಾದ ದಿಗಂತ್ ಸಿನಿಮಾದಲ್ಲಿ ಅಚ್ಚುಕಟ್ಟಾಗಿ ನಟಿಸಿದ್ದಾನೆ. ಐಂದ್ರಿತಾ ಕೂಡ ಸೊಗಸಾಗಿ ನಟಿಸಿದ್ದಾಳೆ. ನಮ್ಮ ನಡುವೆಯೇ ಇದ್ದು, ಆಗಾಗ ಭೇಟಿಯಾಗುವ ಗೋಕರ್ಣ ಪುರಾಣದ ರೂವಾರಿ ಎಂ. ಎ. ಹೆಗ್ದೆಯವರದ್ದು ಅಚ್ಚರಿಯ ನಟನೆ. ಹಿತ್ಲಕೈ ಗಣಪತಿ ಭಟ್ಟರು, ವಿದ್ಯಾಮೂರ್ತಿ, ರಂಜಿನಿ ರಾಘವನ್, ಬಾಳೇಸರ ವಿನಾಯಕ ಹೀಗೆ ಎಲ್ಲರೂ ಲೀಲಾಜಾಲವಾಗಿ ನಟಿಸಿ ನೋಡುಗರನ್ನು ಖುಷಿ ಪಡಿಸುತ್ತಾರೆ.
ವಿನಾಯಕ ಕೋಡ್ಸರ ಅವರ ಮೊದಲ ಸಿನಿಮಾ ಇದಾಗಿರುವ ಕಾರಣ ಸಿನಿಮಾದಲ್ಲಿ ಇರುವ ಕೆಲವು ಚಿಕ್ಕಪುಟ್ಟ ಲೋಪ ದೋಷಗಳಿಗೆ ಮಾಫಿ. ಬೇರೆ ರೀತಿಯ ಮಾತು, ಸಂಸ್ಕೃತಿ, ಆಚರಣೆ, ನಡೆ ನುಡಿಯನ್ನು ಹೊಂದಿರುವ ಹವ್ಯಕರ ಬದುಕನ್ನು ಬಹಳ ಚನ್ನಾಗಿ ಚಿತ್ರಿಸಿದ್ದಾರೆ. ಮಲೆನಾಡಿಗೆ ಬಹಳಷ್ಟು ಬಣ್ಣ ತುಂಬಿದ್ದಾರೆ. ಇವರ ಮುಂದಿನ ಚಿತ್ರ ಯಾವುದಿರಬಹುದು? ಮಲೆನಾಡಿನ ಆಚೆಗಿನ ಚಿತ್ರವನ್ನು ಮಾಡಬಹುದೇ ಎನ್ನುವ ಕುತೂಹಲ ಇದೆ.
ನಮ್ಮೂರ ಮಂದಾರ ಹೂವೆ ಸಿನಿಮಾದ ನಂತರ ಮತ್ತೊಮ್ಮೆ ಈ ಚಿತ್ರ ಹವ್ಯಕರ ಸಂಸ್ಕೃತಿ ಅನಾವರಣ ಮಾಡಿದೆ ಅನ್ನುವುದನ್ನು ಹೆಮ್ಮೆಯಿಂದ ಹೇಳಬಹುದು. ಚಿತ್ರ ಅಮೆಜಾನ್ ಪ್ರೈಮ್ ನಲ್ಲಿದೆ. ಇನ್ನೂ ನೋಡಿಲ್ಲ ಅಂದ್ರೆ ತಪ್ಪದೆ ನೋಡಿ.