Wednesday, August 20, 2025
ದವಾಯಿ, ಮಜ್ಯಾರ್ (ನಿನ್ನ ನಡೆ, ಹಂಗೇರಿಯನ್, Davai Magyar )
Tuesday, February 25, 2025
ಬೆಂಕಿ
ಈಗಿನಂತೆಯೇ ಅದೂ ಕೂಡ ಬೆಟ್ಟಗಳಿಗೆ ಬೆಂಕಿ ಬೀಳುವ ಸಮಯ. ಅಲ್ಲೆಲ್ಲೋ ಬೆಟ್ಟಕ್ಕೆ ಬೆಂಕಿ ಬಿದ್ದು ಸುಟ್ಟು ಹೋಯ್ತಂತೆ, ಇಲ್ಲೆಲ್ಲೋ ಬೆಂಕಿ ಅವಘಡ ಆಯ್ತಂತೆ ಎಂಬ ಸುದ್ದಿಗಳು ಕಿವಿಗೆ ಬೀಳುತ್ತಿದ್ದ ಸಮಯವದು. ಆಗತಾನೆ ಹುಲ್ಲು ಒಣಗಿ ನಿಂತಿತ್ತು. ಬೆಟ್ಟ-ಗುಡ್ಡಗಳಲ್ಲೆಲ್ಲ ಒಣಗಿದ ಹುಲ್ಲುಗಳು ತಮ್ಮ ನೈಸರ್ಗಿಕ ಹಸಿರು ಬಣ್ಣವನ್ನು ಕಳೆದುಕೊಂಡು ಗಾಳಿಗೆ ತೂಗಾಡುತ್ತ-ತೊನೆದಾಡುತ್ತ ನಿಂತಿದ್ದವು. ಹೀಗಾಗಿ ಬೆಂಕಿ ಅವಘಡಗಳು ಹೆಚ್ಚುತ್ತಿದ್ದವು. ಇಂತಹ ಸುದ್ದಿಗಳನ್ನೆಲ್ಲ ಕೇಳುತ್ತಲೇ ನಾಗರಾಜ ತನ್ನ ಕಪ್ಪನೆಯ ಪಲ್ಸರ್ ಬೈಕ್ ತೆಗೆದುಕೊಂಡು ಶಿರಸಿಗೆ ಹೋಗಿದ್ದ. ಶಿರಸಿಯಲ್ಲಿ ಕೆಲಸ ಮುಗಿಸುವ ವೇಳೆಗಾಗಲೇ ಬಾನಂಚಿನಲ್ಲಿ ಸೂರ್ಯ ಇಳಿದು ಕತ್ತಲು ಆವರಿಸುತ್ತಿತ್ತು.
Thursday, February 6, 2025
Ghost Writer ಭಾಗ -1
Chase the hunter
-----
A ghostwriter is a professional writer hired to create content on behalf of someone else, without receiving public credit for their work. Ghostwriters are commonly used for **books, articles, speeches, blog posts, and even music lyrics**. They help clients—such as celebrities, politicians, business executives, and experts—articulate their ideas in a polished and engaging manner.
Ghostwriting involves **deep research, adapting to the client’s voice, and maintaining confidentiality**. While the original author gets the credit, the ghostwriter is compensated for their work, often through a flat fee or royalties.
This profession is crucial in publishing, journalism, and content marketing, allowing busy individuals to share their insights without dedicating time to writing.
****
ಎರಡು ದಿನಗಳ ಹಿಂದೆ ಕೊರಿಯರ್ ಮೂಲಕ ಬಂದಿದ್ದ ಆ ಪತ್ರವನ್ನು ತೆರೆದು ಯೋಚಿಸುತ್ತ ಕುಳಿತಿದ್ದ ಡಿಟೆಕ್ಟಿವ್ ವಿಕ್ರಮ್ ಕುಮಾರ್!
ಎರಡು ದಿನಗಳ ಹಿಂದೆ ಕೊರಿಯರ್ ಒಂದು ಆತನಿಗೆ ಬಂದಿತ್ತು. ಅದರಲ್ಲಿ ಒಂದು ಪತ್ರವಿತ್ತು, ಜೊತೆಗೆ ೫೦ ಸಾವಿರ ರೂಪಾಯಿಗಳ ಹಣ ಕೂಡ ಇತ್ತು.
ಪತ್ರದಲ್ಲಿ ಒಬ್ಬ ವ್ಯಕ್ತಿಯ ಹೆಸರಿತ್ತು. ಆತನನ್ನು ಹುಡುಕಿಕೊಂಡು ಬರುವ ಜವಾಬ್ದಾರಿಯನ್ನು ವಹಿಸಲಾಗಿತ್ತು. ಪತ್ರದ ಕೊನೆಯಲ್ಲಿ ಹುಡುಕಿಕೊಂಡು ಬರಬೇಕಿರುವ ವ್ಯಕ್ತಿ ಒಬ್ಬ ಘೋಸ್ಟ್ ರೈಟರ್! ಈತನನ್ನು ಬಹಳಷ್ಟು ಜನರು ಹುಡುಕುತ್ತಿದ್ದಾರೆ. ರಾಷ್ಟ್ರೀಯ ಭದ್ರತೆ, ಭಯೋತ್ಪಾದನೆ, ಸಿನಿಮಾ ಜಗತ್ತು ಸೇರಿದಂತೆ ಹಲವು ವಿಭಾಗಗಳ ಪ್ರಮುಖರು ಈತನ ಬೆನ್ನು ಹತ್ತಿದ್ದಾರೆ. ಯಾರ ಕೈಗೂ ಸಿಗುತ್ತಿಲ್ಲ! ಆತನ ಬರಹಗಳು ಮಾತ್ರ ವೆಬ್ ಜಗತ್ತಿನಲ್ಲಿ ಪಬ್ಲಿಷ್ ಆಗುತ್ತಿದೆ. ಪಬ್ಲಿಷ್ ಆದ ನಂತರ ಸಾಕಷ್ಟು ವೈರಲ್ ಕೂಡ ಆಗುತ್ತಿದೆ. ಹಲವು ಸಾರಿ ಸಮಾಜದಲ್ಲಿ ಅಲ್ಲೋಲ-ಕಲ್ಲೋಲವನ್ನೂ ಸೃಷ್ಟಿ ಮಾಡಿದ ನಿದರ್ಶನ ಇದೆ.
ಆತನನ್ನು ಹುಡುಕಿಕೊಂಡು ಬರುವ ಮಹತ್ತರ ಜವಾಬ್ದಾರಿ ನಿನಗೆ ವಹಿಸಲಾಗುತ್ತಿದೆ. ಆತನನ್ನು ಹುಡುಕುತ್ತಿರುವವರೆಲ್ಲರ ಕಣ್ಣುತಪ್ಪಿಸಿ, ಅತ್ಯಂತ ಗೌಪ್ಯವಾಗಿ ಕಾರ್ಯ ನಿರ್ವಹಿಸಬೇಕು! ಈ ಪತ್ರದ ಜೊತೆ ಇರುವ ೫೦ ಸಾವಿರ ರೂಪಾಯಿ ಅಡ್ವಾನ್ಸ್! ಕಾಲಕಾಲಕ್ಕೆ ಕೊರಿಯರ್ ಬರುತ್ತಿರುತ್ತದೆ ಹಾಗೂ ಹಣ ಸಂದಾಯ ಆಗುತ್ತಿರುತ್ತದೆ! ಪೂರ್ತಿ ಕೆಲಸ ಮುಗಿದ ನಂತರ ೧ ಕೋಟಿ ರೂಪಾಯಿ ಮೊತ್ತ ನೀಡಲಾಗುತ್ತದೆ! ಆತನ ಹೆಸರಿನಲ್ಲಿ ಪಬ್ಲಿಷ್ ಆದ ಬರಹಗಳ ಪೋಟೋ ಕಾಪಿ ಹಾಗೂ ಪ್ರಿಂಟೆಡ್ ಕಾಪಿಗಳು ಇಲ್ಲಿವೆ. ಕೂಡಲೇ ಕಾರ್ಯಪ್ರವೃತ್ತ ಆಗಬೇಕು! ಈ ಕೆಲಸ ಮಾಡೋದಿಲ್ಲ ಎನ್ನುವ ಆಯ್ಕೆ ನಿಮ್ಮೆದುರು ಇಲ್ಲವೇ ಇಲ್ಲ! ಒಪ್ಪಿಕೊಳ್ಳಲೇಬೇಕು ಇಲ್ಲವಾದಲ್ಲಿ ಮುಂದಿನ ಪರಿಣಾಮಗಳಿಗೆ ನೀವೇ ಜವಾಬ್ದಾರಿ ಎಂದು ಪತ್ರದಲ್ಲಿ ಬರೆಯಲಾಗಿತ್ತು!
ಕೆಲಸವನ್ನು ನನಗೆ ವಹಿಸಿದ್ದಾರೋ ಅಥವಾ ಆರ್ಡರ್ ಮಾಡಿದ್ದಾರೋ? ಎಂದುಕೊಳ್ಳುತ್ತಲೇ ಘೋಸ್ಟ್ ರೈಟರ್ ಕುರಿತು ಮಾಹಿತಿ ಕಲೆ ಹಾಕುವತ್ತ ವಿಕ್ರಮ್ ಕುಮಾರ್ ಕಾರ್ಯಪ್ರವೃತ್ತನಾಗಿದ್ದ. ಘೋಸ್ಟ್ ರೈಟರ್ ಪಬ್ಲಿಷ್ ಮಾಡುತ್ತಿದ್ದ ವೆಬ್ ತಾಣಗಳನ್ನು ಸರ್ಚ್ ಮಾಡಲು ಮುಂದಾಗಿದ್ದ.
ಅನಾಮಧೇಯ ಕೊರಿಯರ್ ಬಂದು ತಲುಪಿದ ಎರಡು ದಿನಗಳ ವೇಳೆಗೆ ʻಘೋಸ್ಟ್ ರೈಟರ್ ಕುರಿತು ಹಲವು ಸಂಗತಿಗಳ ವಿಕ್ರಮ್ ಕುಮಾರ್ ಗೆ ಗೊತ್ತಾಗಿದ್ದವು. ಆತನನ್ನು ಹುಡುಕಲು ಹೊರಡುವುದೊಂದೇ ಬಾಕಿ ಇತ್ತು.
ತಲೆಯ ತುಂಬೆಲ್ಲ ಘೋಸ್ಟ್ ರೈಟರ್ನನ್ನು ತುಂಬಿಕೊಂಡು, ಯಾವ ಕಡೆಯಿಂದ ತನ್ನ ಪತ್ತೆದಾರಿಕೆ ಕಾರ್ಯ ಶುರುಮಾಡಬೇಕು ಎಂದು ಆಲೋಚನೆ ಮಾಡುತ್ತಿದ್ದಾಗಲೇ ತನ್ನ ಮನೆ ಕಂ ಕಚೇರಿಯ ಕಾಲಿಂಗ್ ಬೆಲ್ ಸದ್ದು ಮಾಡಿತ್ತು.
ಬಾಗಿಲು ತೆರೆದು ನೋಡಿದರೆ ಬಾಗಿಲಲ್ಲಿ ಕೊರಿಯರ್ ಬಾಯ್ ನಿಂತಿದ್ದ! ಇನ್ನೊಂದು ಕೊರಿಯರ್ ಬಂದಿತ್ತು!
ಕೊರಿಯರ್ ಪಡೆದು ಫ್ರಂ ಅಡ್ರೆಸ್ ನೋಡಿದರೆ ʻಬೆಂಗಳೂರುʻ ಎಂದು ಬರೆದಿತ್ತು. ಕೊರಿಯರ್ ಬಾಅಯ್ ವಾಪಾಸ್ ತೆರಳಿದ ನಂತರ ಮನೆಯೊಳಗೆ ಬಂದು ವಿಕ್ರಮ್ ಕುಮಾರ್ ಆ ಕೊರಿಯರ್ ತೆರೆದ.
ಅದರೊಳಕ್ಕೆ ಇನ್ನಷ್ಟು ದುಡ್ಡು, ಒಂದಷ್ಟು ಮಾಹಿತಿ ಹಾಗೂ ಮತ್ತೊಂದು ಪತ್ರ ಇತ್ತು!
ಯಾರೋ ದೊಡ್ಡ ವ್ಯಕ್ತಿ, ಬಹಳ ಪ್ರಭಾವಿ, ಸಾಕಷ್ಟು ಕನೆಕ್ಷನ್ ಇರುವಾತನೇ ಈ ಕೆಲಸವನ್ನು ತನಗೆ ವಹಿಸುತ್ತಿದ್ದಾನೆ. ಘೋಸ್ಟ್ ರೈಟರ್ ಹುಡುಕುವ ಕಾರ್ಯದಲ್ಲಿ ತಾನು ಇನ್ನಷ್ಟು ಸೀರಿಯಸ್ ಆಗಬೇಕು ಎಂದುಕೊಳ್ಳುತ್ತಲೇ ವಿಕ್ರಮ್ ಕುಮಾರ್ ಪತ್ರವನ್ನು ಓದತೊಡಗಿದ!
ಓದುತ್ತಿದ್ದಂತೆಯೇ ನಿಧಾನವಾಗಿ ಬೆವರತೊಡಗಿದ
(ಮುಂದುವರಿಯುತ್ತದೆ)
Tuesday, January 14, 2025
ಮಾಳ ಹಾಗೂ ಹುಲಿ
ಬರಬಳ್ಳಿಯ ಗುಡ್ಡೆಮನೆ ಹೆಸರಿಗೆ ತಕ್ಕಂತೆ ಗುಡ್ಡದ ಮೇಲ್ಭಾಗದಲ್ಲಿರುವ ಮನೆ. ಅಲ್ಲಿಂದ ಕೂಗಳತೆ ದೂರದಲ್ಲಿ ವಾಸಂತಿ ಕೆರೆ. ಅದರ ಸುತ್ತಮುತ್ತಲೆಲ್ಲ ದಟ್ಟ ಕಾನನ. ಗುಡ್ಡೆಮನೆಯ ಜಮೀನು ವಾಸಂತಿ ಕೆರೆಯ ಕೆಳಭಾಗದಲ್ಲೇ ಇತ್ತು.
ವಾಸಂತಿ ಕೆರೆಯಿಂದ ಇನ್ನೊಂದು ದಿಕ್ಕಿನಲ್ಲಿ ಕೊಂಚ ದೂರದಲ್ಲಿಯೇ ಕಬ್ಬಿನ ಗದ್ದೆ ಮಾಡಲು ವಿಶ್ವೇಶ್ವರ ಮಾವ ಮುಂದಾಗಿದ್ದ. ಕಬ್ಬಿನ ಗದ್ದೆಗಾಗಿ ಬೀಜ ಹಾಕಿ, ಸರಿಯಾಗಿ ಮಣ್ಣು ಹಾಕಿ ಬಹುತೇಕ ಕೆಲಸ ಮುಗಿಸಿದ್ದ.
ಕಬ್ಬಿನಗದ್ದೆಗೆ ಹಂದಿಗಳ ಕಾಟ ವಿಪರೀತ. ಹಂದಿಗಳ ಗ್ವಾಲೆ ಕಬ್ಬಿನ ಗದ್ದೆಗೆ ದಾಳಿ ಕೊಟ್ಟರೆ ಮುಗಿದೇ ಹೋಯ್ತು ಸಂಪೂರ್ಣ ತಿಂದು ಹಾಳು ಮಾಡಿಬಿಡುತ್ತವೆ. ಹಂದಿಗಳಿಂದ ಕಬ್ಬಿನಗದ್ದೆ ರಕ್ಷಣೆಯೇ ದೊಡ್ಡ ಕೆಲಸ. ಕಬ್ಬಿನಗದ್ದೆಯನ್ನು ಉಳಿಸಿಕೊಳ್ಳಬೇಕೆಂಬ ಕಾರಣಕ್ಕಾಗಿಯೇ ವಿಶ್ವೇಶ್ವರ ಮಾವ ಮಾಳವೊಂದನ್ನು ಕಟ್ಟಿ ಅದರ ಮೇಲೆ ರಾತ್ರಿ ಉಳಿದು ಕಬ್ಬಿನಗದ್ದೆಯನ್ನು ಕಾಯುವ ಕೆಲಸ ಮಾಡುತ್ತಿದ್ದ. ಹಂದಿಗಳು ಬಂದರೆ ಛೂ ಹಾಕಿ ಕೂಗಿ ಅವುಗಳನ್ನು ಓಡಿಸುವ ಕಾರ್ಯ ಮಾಡುತ್ತಿದ್ದ.
ಆ ಮಳೆಗಾಲಕ್ಕೂ ಪೂರ್ವದಲ್ಲಿ ಅಮ್ಮ ತನ್ನ ಮೊದಲ ಹೆರಿಗೆಗೆ ತವರಿಗೆ ಬಂದಿದ್ದಳು. ಮಳೆಗಾಲ ಅದಾಗ ತಾನೇ ಕಳೆದಿತ್ತು. ಇನ್ನೇನು ಚಳಿಯೊಡೆಯುವ ಸಮಯ. ಅಕ್ಟೋಬರ್ ಮೊದಲ ವಾರವಿರಬೇಕು. ಎಂದಿನಂತೆ ಲಾಟೀನು ಹಿಡಿದು ವಿಶ್ವೇಶ್ವರ ಮಾವ ಮಾಳಕ್ಕೆ ಹೋಗಿದ್ದ. ಮನೆಯಲ್ಲಿ ಅಜ್ಜಿ ಹಾಗೂ ಅಮ್ಮ ಇಬ್ಬರೇ ಉಳಿದಿದ್ದರು. ಮಾಳಕ್ಕೆ ಹೋಗುವಾಗ ಲಾಟೀನನ್ನು ಹಿಡಿದು ಹೋಗಿದ್ದ ಮಾವ ಮಾಳದ ಕೆಳಗೆ ಸಣ್ಣದಾಗಿ ಬೆಂಕಿಯನ್ನು ಹಾಕಿ, ಮಾಳವನ್ನು ಏರಿ, ಮಾಳಕ್ಕೆ ಲಾಟೀನನ್ನು ನೇತುಹಾಕಿ ಮಲಗಿದ್ದ. ಚಳಿ ತೀವ್ರವಾಗಿಯೇ ಬೀಳತೊಡಗಿತ್ತು.
ಮಧ್ಯರಾತ್ರಿ ಇದ್ದಕ್ಕಿದ್ದಂತೆ ಮಾವನಿಗೆ ಎಚ್ಚರವಾಯಿತು. ಇಡಿಯ ಮಾಳವೇ ಅಲ್ಲಾಡುತ್ತಿದ್ದ ಅನುಭವ. ಅರೇ ಭೂಮಿ ಕಂಪಿಸುತ್ತಿದೆಯೇ? ಇದೇನಾಗುತ್ತಿದೆ? ಮಾಳವೇಕೆ ಅಲ್ಲಾಡುತ್ತಿದೆ ಎಂಬ ಭಾವನೆ ಮನದಲ್ಲಿ ಮೂಡಿತ್ತು. ನಿಧಾನವಾಗಿ ಮಾಳದ ಮೇಲಿನಿಂದ ಕೆಳಕ್ಕೆ ಹಣಕಿದ. ಕೆಳಗೆ ನೋಡಿದವನೇ ಒಮ್ಮೆಲೆ ಹೌಹಾರಿದ. ಮಾಳದ ಮೇಲೆ ಕುಳಿತವನು ಒಮ್ಮೆಲೆ ಬೆವರಲಾರಂಭಿಸಿದ್ದ. ಆತನ ಜೀವ ಭಾಯಿಗೆ ಬಂದಂತಾಗಿತ್ತು. ಕೆಳಗಡೆ ಎಂಟಡಿ ಉದ್ದದ ದೈತ್ಯ ಪಟ್ಟೆಹುಲಿ ಮಾಳದ ಕಂಬಕ್ಕೆ ಶೇಡಿ ನಿಂತಿತ್ತು. ಕೆಳಗಡೆ ಸಣ್ಣದಾಗಿ ಉರಿಯುತ್ತಿದ್ದ ಬೆಂಕಿಯನ್ನೇ ನೋಡುತ್ತಿತ್ತು.
ಉದ್ದದ ಪಟ್ಟೆಹುಲಿ ನೋಡಿದ ತಕ್ಷಣ ಮಾವನ ಮಾತು ಬಂದಾಗಿತ್ತು. ಕೂಗಿಕೊಳ್ಳಲು ಯತ್ನಿಸಿದರೂ ಬಾಯಿಂದ ಧ್ವನಿಯೇ ಹೊರಬರುತ್ತಿಲ್ಲ. ಎಂಟಡಿ ಎತ್ತರದ ಹುಲಿ ಜಿಗಿದರೆ ಸಾಕು ತಾನು ಅದರ ಬಾಯಿಗೆ ಆಹಾರವಾಗಬಹುದು, ಅಥವಾ ಮಾಳದ ಕಂಬಕ್ಕೆ ಸ್ವಲ್ಪವೇ ಗಟ್ಟಿಯಾಗಿ ಶೇಡಿದರೆ ಸಾಕು ಮಾಳವೇ ಉದುರಿ ಬೀಳಬಹುದು ʻಬರಬಳ್ಳಿ ಗಣಪ ಕಾಪಾಡಪ್ಪಾ..ʼ ಎಂದು ಮನಸ್ಸಿನಲ್ಲಿ ಬೇಡಿಕೊಂಡ. ಕೊರೆಯುವ ಚಳಿಯಿದ್ದರೂ ಯಾವಾಗಲೋ ಅದು ಹಾರಿಹೋದಂತಾಗಿತ್ತು. ಮೈ-ಮನಸ್ಸುಗಳಲ್ಲೆಲ್ಲ ಭಯದ ಬೆವರು ಕಿತ್ತು ಬರುತ್ತಿತ್ತು. ಒಂದು ಸಾರಿ ಜೀವ ಉಳಿದರೆ ಸಾಕು, ಮತ್ತೆ ಕಬ್ಬಿನ ಗದ್ದೆಯೂ ಬೇಡ, ಮಾಳದ ಸಹವಾಸವೂ ಬೇಡ ಎಂದುಕೊಂಡ.
ಮನೆಯ ದಿಕ್ಕಿಗೆ ಮುಖ ಮಾಡಿ ಮಾಳದಿಂದಲೇ ನೋಡಿದವನಿಗೆ ಮಿಣುಕು ಬೆಳಕು ಕಾಣಿಸಿದಂತಾಯಿತು. ಒಮ್ಮೆ ಗಟ್ಟಿಯಾಗಿ ಕೂಗಿಬಿಡಲೇ? ಕೂಗಿದರೆ ಅಬ್ಬೆಯಾದರೂ, ತಂಗಿ ಗಂಗುವಾದರೂ ಬರಬಹುದೇ? ಎಂದುಕೊಂಡ. ತಾನು ಕೂಗಿ, ಅವರ ಇರವನ್ನು ಅರಿತ ಹುಲಿ ಅತ್ತ ಕಡೆ ಧಾವಿಸಿದರೆ? ಅಬ್ಬೆಗೆ ಸರಿಯಾಗಿ ಕಿವಿ ಕೇಳಿಸುವುದಿಲ್ಲ, ತಂಗಿ ತುಂಬಿದ ಗರ್ಭಿಣಿ. ಹುಲಿ ದಾಳಿ ಮಾಡುವುದು ಹಾಗಿರಲಿ, ಒಮ್ಮೆ ಗಟ್ಟಿಯಾಗಿ ಘರ್ಜಿಸಿ ಏನಾದರೂ ಅನಾಹುತ ಆದರೆ ಏನು ಮಾಡುವುದು ಭಗವಂತಾ? ಎಂದುಕೊಂಡ.
ಆದರೂ ಧೈರ್ಯ ಮಾಡಿ ಅಬ್ಬೆಯನ್ನೂ- ಗಂಗುವನ್ನೂ ಕರೆದ. ಮನೆಯ ಕಡೆಯಿಂದ ಮಾರುತ್ತರ ಬರಲಿಲ್ಲ. ಆದರೆ ಮಾಳದ ಕೆಳಗಿದ್ದ ಹುಲಿ ಮಾವನ ಕೂಗಿಗೆ ಗಮನ ನೀಡಿಲ್ಲದಿರುವುದು ಸಮಾಧಾನ ತಂದಿತ್ತು. ಮತ್ತೆ ಕರೆದ ಆಗಲೂ ನಿಶ್ಯಬ್ಧ. ಹುಲಿಯೂ ಆರಾಮಾಗಿ ನಿಂತಿತ್ತು. ಅದಾದ ನಂತರ ಧೈರ್ಯದಿಂದ ಕೂಗಿದ. ಆರೆಂಟು ಸಾರಿ ಕೂಗಿ ಕೂಗಿ ಕರೆದರೂ ಮನೆಯ ಕಡೆಯಿಂದ ಉತ್ತರ ಬರದೇ ಇದ್ದಾಗ ನಿಟ್ಟುಸಿರು ಬಿಟ್ಟ ವಿಶ್ವೇಶ್ವರ ಮಾವ ಹುಲಿಯಿಂದ ಪಾರಾಗುವುದು ಹೇಗೆ ಎಂದು ಆಲೋಚಿಸಲು ಶುರುಮಾಡಿದ.
ಕೈಯಲ್ಲಿ ಕುಡಗೋಲು ಇತ್ತಾದರೂ ದೈತ್ಯ ವ್ಯಾಘ್ರನ ಮೇಲೆ ದಾಳಿ ಮಾಡಿ, ಹುಲಿಯನ್ನು ಕೊಲ್ಲುವುದು ಹಾಗೂ ತಾನು ಬದುಕುವುದು ಸಾಧ್ಯವೇ? ಹುಲಿಯ ಆಯದ ಜಾಗಕ್ಕೆ ಪೆಟ್ಟು ಬೀಳಬೇಕು, ಒಂದೇ ಹೊಡೆತಕ್ಕೆ ಹುಲಿ ಸತ್ತು ಬೀಳಬೇಕು, ಅಷ್ಟಾದಾಗ ಮಾತ್ರ ತಾನು ಜೀವ ಸಹಿತ ಇರಲು ಸಾಧ್ಯ. ಹೊಡೆತ ತಪ್ಪಿದರೆ? ಹುಲಿಗೆ ಗಾಯವಾಗಿಬಿಟ್ಟರೆ? ಮುಗಿಯಿತಲ್ಲ ಕಥೆ ಎಂದುಕೊಂಡ. ಕುಡಗೋಲಿನಿಂದ ದಾಳಿ ಮಾಡುವ ಯೋಜನೆ ಕೈಬಿಟ್ಟ.
ಅಷ್ಟರಲ್ಲಿ ಆರಾಧ್ಯದೈವ ಬಲಮುರಿ ಗಣಪತಿಯೇ ದಾರಿ ತೋರಿಸಿದರೆ ಮಾಳದ ಮಾಡಿಗೆ ನೇತು ಹಾಕಿದ್ದ ಕಂದೀಲು ನೆನಪಾಯಿತು. ಮಾಳ ಅಲ್ಲಾಡಿದಂತೆಲ್ಲ ಕಂದೀಲು ಕೂಡ ಹೊಯ್ದಾಡುತ್ತಿತ್ತಾದರೂ, ಅದರಲ್ಲಿ ಸಣ್ಣದಾಗಿ ಉರಿಯುತ್ತಿದ್ದ ಬೆಳಕು ಆರಿರಲಿಲ್ಲ. ಕೂಡಲೇ ಲಾಟೀನನ್ನು ಹಿಡಿದ. ಅತ್ತ ಇತ್ತ ನೋಡಿದವನಿಗೆ ಮಾಳದ ಮಾಡಿಗೆ ಹಾಕಿದ್ದ ಮಡ್ಲು ಹೆಡ (ತೆಂಗಿನ ಟೊಂಗೆ) ಕಾಣಿಸಿತು. ಅದನ್ನು ಎಳೆದು ಬೆಂಕಿ ಕೊಟ್ಟೇ ಬಿಟ್ಟ. ಒಮ್ಮೆಲೆ ದೊಡ್ಡ ಸೂಡಿಯಷ್ಟು ದೊಡ್ಡದಾದ ಬೆಂಕಿ ಕಾಣಿಸಿಕೊಂಡಿತು. ಅದನ್ನು ಸೀದಾ ಮಾಳದ ಮೇಲೆ ಇಟ್ಟ. ಬೆಂಕಿ ಹೊತ್ತಿಕೊಂಡಂತೆಯೇ ಮತ್ತಷ್ಟು ಮಡ್ಲನ್ನು ತೆಗೆದು ಉರಿ ಜ್ವಾಲೆಯನ್ನು ದೊಡ್ಡದು ಮಾಡಿದ. ಬೆಂಕಿ ದೊಡ್ಡದಾದಂತೆಲ್ಲ ಮಾಳದ ಅಡಿಯಲ್ಲಿದ್ದ ಹುಲಿ ಬಿತ್ತು. ಎಲ್ಲೋ ಅದರ ಮೈಮೇಲೆ ಕೂಡ ಕಿಡಿ ಬಿದ್ದಿರಬೇಕು. ಸಣ್ಣದಾಗಿ ಮುಲುಕಿ ಅಲ್ಲಿಂದ ಕಾಲ್ಕಿತ್ತಿತು. ಮಾವ ನಿರಾಳನಾಗಿದ್ದ. ಆದರೆ ಬೆಂಕಿಯನ್ನು ನಂದಿಸುವ ಧೈರ್ಯ ಆತನಿಗೆ ಆಗಿರಲಿಲ್ಲ. ಮಾಳಕ್ಕೆ ಹಾಕಿದ್ದ ತೆಂಗಿನ ಗರಿ ಖಾಲಿಯಾಗುವವರೆಗೂ ಉರಿ ಒಟ್ಟುತ್ತಲೇ ಇದ್ದ.
ಮೂಡಣದಲ್ಲಿ ನೇಸರ ಮೂಡುವ ಹೊತ್ತಾಗುವ ವರೆಗೂ ಬೆಂಕಿಯನ್ನು ಹಾಕುತ್ತಲೇ ಇದ್ದ ಮಾವ. ಕಣ್ಣು ಕೆಂಪಗಾಗಿತ್ತು. ಕೂದಲು ಕೆದರಿ ಹೋಗಿತ್ತು. ಮಾಳದ ಮಾಡಿನ ತೆಂಗಿನ ಗರಿಗಳೆಲ್ಲ ಸಂಪೂರ್ಣ ಖಾಲಿಯಾಗಿತ್ತು. ಇನ್ನು ಮಾಳದ ಕಡೆಗೆ ಬರಲಾರೆ ಎಂದು ದೃಢ ನಿರ್ಧಾರ ಮಾಡಿ ಮಾಳ ಇಳಿದು ಮನೆಗೆ ಹೋಗಿ ಅಮ್ಮಕ್ಕಜ್ಜಿಗೂ ಗಂಗುವಿಗೂ ನಡೆದ ವಿಷಯವನ್ನು ಹೇಳಿದ. ಅವರಿಬ್ಬರೂ ನಡೆದಿದ್ದನ್ನು ಕೇಳಿ ನಡುಗಿ ಹೋಗಿದ್ದರು. ಸಧ್ಯ ಜೀವ ಉಳಿಯಿತಲ್ಲ ಎಂಬ ಸಮಾಧಾನ ಅವರದ್ದಾಗಿತ್ತು. ʻಮೊದ್ಲು ಮೊಠಕ್ಕೆ ಹೋಗಿ ದೇವರಿಗೆ ನಮಸ್ಕಾರ ಮಾಡಿ ಬಾ..ʼ ಅಮ್ಮಕ್ಕಜ್ಜಿ ಹೇಳಿದ್ದರು. ಮಾವ ಸ್ನಾನ ಮುಗಿಸಿ ಗಣಪನ ದೇಗುಲದ ಕಡೆಗೆ ಮುಖ ಮಾಡಿದ್ದ.
Tuesday, November 26, 2024
ಬರಬಳ್ಳಿ ಬಸ್ಸಿನ ಪ್ರಯಾಣದಲ್ಲಿ ಅನಾವರಣಗೊಳ್ಳುತ್ತಿದ್ದ ಅಚ್ಚರಿಯ ಲೋಕ
Monday, November 18, 2024
ಯಕ್ಷಗಾನ-ತಾಳಮದ್ದಲೆಯ ಸ್ವಾರಸ್ಯಕರ ಘಟನೆಗಳು
********************
ತೊಂಭತ್ತರ ದಶಕದಲ್ಲಿ ನಡೆದ ಕತೆ ಇದು
Sunday, July 2, 2023
ಪಾರು (ಕಥೆ ಭಾಗ-2 )
ದೂರದಲ್ಲಿ ಕರಿಬಣ್ಣದ ಕಾಳಿ ಹರಿದು ಹೋಗುತ್ತಿತ್ತು. ಊರಿಗೂ ಕಾಳಿ ನದಿಗೂ ನಡುವೆ ವಿಶಾಲವಾದ ಗದ್ದೆ ಬಯಲಿತ್ತು. ಬೈಲುಗದ್ದೆ ಎಂದೇ ಕರೆಸಿಕೊಂಡ ಈ ಗದ್ದೆಯ ಬಯಲು ಸಾತೊಡ್ಡಿ ಹಳ್ಳದಿಂದ ಕಳಚೆಯ ತನಕವೂ ಇತ್ತು. ಇಲ್ಲಿ ಪ್ರಮುಖವಾಗಿ ಭತ್ತವನ್ನು ಬೆಳೆಯುತ್ತಿದ್ದರು.
ಗಣಪತಿ ಭಟ್ಟರು, ಚಿದಂಬರ, ನಾರಾಯಣ, ಶಂಕರ ಮುಂತಾದ ತನ್ನ ಜತೆಗಾರರ ಜೊತೆಗೆ ಈ ವಿಸ್ತಾರವಾದ ಬಯಲುಗಡ್ಡೆಯನ್ನು ದಾಟಿದರು. ಸೀದಾ ಕಾಳಿ ನದಿಯ ತೀರಕ್ಕೆ ಬಂದರು.
ಚಿಕ್ಕ ಚಿಕ್ಕ ನದಿಗಳನ್ನು ಸುಲಭವಾಗಿ ದಾಟಬಹುದು. ಆದರೆ ದೊಡ್ಡ ದೊಡ್ಡ ನದಿಗಳನ್ನು ದಾಟುವುದು ಸುಲಭವಲ್ಲ. ಆಳವಾಗಿ ಹಾಗೂ ವೇಗವಾಗಿ ಹರಿಯುವ ಈ ನದಿಯನ್ನು ದಾಟಲು ದೋಣಿಯ ಅವಲಂಬನೆ ಅತ್ಯಗತ್ಯ. ಆದರೆ ಕೆಲವು ನದಿಗಳಲ್ಲಿ ಕೆಲವು ಕಡೆ ನದಿಯ ಹರಿವು ಬೇರೆ ರೀತಿಯಲ್ಲಿರುತ್ತವೆ. ಎಲ್ಲ ಕಡೆಗಳಲ್ಲಿ ಆಳವಾಗಿ ಹರಿಯುವ ನದಿಯು ಭೌಗೋಲಿಕ ರಚನೆಗೆ ಅನುಗುಣವಾಗಿ ತನ್ನ ಅಳವನ್ನು ಕಳೆದುಕೊಂಡು ವಿಸ್ತಾರವಾಗಿ ಹರಿಯುತ್ತವೆ. ಇಂತಹ ಸ್ಥಳಗಳಲ್ಲಿ ಸೆಳವು ಕೂಡ ಕಡಿಮೆ ಇರುತ್ತದೆ. ಇಂತಹ ಜಾಗವನ್ನು ಪಾರು ಎಂದು ಕರೆಯುತ್ತಾರೆ.
ಕಾಳಿ ನದಿಯಲ್ಲಿಯೂ ಹಲವು ಕಡೆಗಳಲ್ಲಿ ನದಿಯನ್ನು ದಾಟಲು ಅನುಕೂಲವಾಗುವಂತೆ ಪಾರುಗಳಿದ್ದವು. ಶಾಟ ಶತಮಾನಗಳಿಂದ ಸ್ಥಳೀಯರು ಇಂತಹ ಪಾರುಗಳನ್ನು ದಾಟಿ ನದಿಯ ಇನ್ನೊಂದು ತೀರಕ್ಕೆ ಹೋಗುತ್ತಿದ್ದರು. ಗಣಪತಿ ಭಟ್ಟರು ಅವರ ಜತೆಗಾರರ ಜೊತೆಗೆ ನಸುಕಿನಲ್ಲಿ ಈ ಪಾರಿನ ಜಾಗಕ್ಕೆ ಬಂದರು.
ಕರಿ ಕಾಳಿಯಲ್ಲಿನ ಪಾರನ್ನು ಕೆಲವು ನಿಮಿಷಗಳ ಅಂತರದಲ್ಲಿ ದಾಟಿ ನದಿಯಾಚೆಗಿನ ಪ್ರದೇಶಕ್ಕೆ ತೆರಳಿದ್ದರು. ಭಟ್ಟರ ಬಳಗ ಇನ್ನೂ ಹೋಗುವ ದೂರ ಬಹಳಷ್ಟಿತ್ತು. ಮುಂದಿನ ಒಂದು ತಾಸುಗಳ ನಡಿಗೆಯ ಮೂಲಕ ಕೊಡಸಳ್ಳಿಯನ್ನು ಹಾದು ಹೋಗಿದ್ದರು.
ಸೂರ್ಯ ಬಾನಂಚಿನಲ್ಲಿ ಮೂಡಿ ಮೊದಲ ಕಿರಣಗಳು ಭೂಮಿಗೆ ಬೀಳುವ ವೇಳೆಗಾಗಲೇ ಗಣಪತಿ ಭಟ್ಟರ ಬಳಗ ಬೀರ್ಕೋಲ್ ತಲುಪಿಯಾಗಿತ್ತು.
``ಇಲ್ಲಿಂದಾಚೆಗೆ ಹೆಬ್ಬಗುಳಿ, ದೇವಕಾರು, ಬಾಳೆಮನೆ.. ಆಮೇಲೆ ಸೋಮವಾರ ಸಂತೆ ಬಯಲು.. ಅಲ್ಲಿಂದ ಸ್ವಲ್ಪದೂರ ಹೋದರೆ ಬಸ್ಸು ಸಿಕ್ತು.. ಆಮೇಲೆ ನೇಸರ ನೆತ್ತಿಗೇರುವ ಹೊತ್ತಿಗೆಲ್ಲ ಕಾರವಾರ ಹೋಗುಲಾಗ್ತು..'' ಎಂದು ತಮ್ಮ ತಮ್ಮಲ್ಲೇ ಮಾತಾಡಿಕೊಳ್ಳುತ್ತ ಹೊರಟವರು ತಮ್ಮೂರಿನಿಂದ ಆಗಲೇ ಹತ್ತಾರು ಕಿಲೋಮೀಟರ್ ದೂರವನ್ನು ಸವೆಸಿದ್ದರು.
ಸೋಮವಾರ ಸಂತೆಯನ್ನು ತಲುಪುವ ವೇಳೆಗಾಗಲೇ ಅಲ್ಲಿ ನಿಂತಿದ್ದ ಕೆಂಪುಬಸ್ಸು ಎರಡು ಸಾರಿ ಪೊಂ ಪೊಂ ಎಂದು ಸದ್ದು ಮಾಡಿ ಹೋರಾಡಲು ಅನುವಾಗಿತ್ತು. ತುಸು ಓಡುತ್ತಲೇ ಬಸ್ಸನ್ನೇರಿದರು.
``ವಾಪಾಸ್ ಬರಕಿದ್ರೆ ದೇವಕಾರು ಗೌಡಂದಿಕ್ಕಳ ಮನೆಗೆ ಹೋಗಿ ಬರುವ. ನಮ್ಮನೆ ಬೆಳ್ಳಿ, ಕೆಂಪಿ, ಕೆಂಚಿ, ಸರಸು ಎಲ್ಲ ಎಂತ ಮಾಡ್ತಿದ್ದು ನೋಡ್ಕಂಡು ಬರುವ'' ಎಂದು ಭಟ್ಟರು ಶಂಕರನ ಬಳಿ ಹೇಳಿದ್ದರು.
``ಗಣಪಣ್ಣ, ಗೌಡಂದಿಕ್ಕಳ ಬಳಿ ಎಷ್ಟು ದನ ಹೊಡೆದುಹಾಕಿದ್ಯೋ..'' ಶಂಕರ ಕೇಳಿದ್ದ.
``ನಿತ್ಯ ಪೂಜೆಗೆ ಎರಡು ಕಾಲ್ನಡೆ ಇಟಕಂಡು, ಬಾಕಿ ಎಲ್ಲ ದೇವಕಾರು ಬಯಲಿಗೆ ಹೊಡೆದಿಕ್ಕಿದೆ ನೋಡು'' ಭಟ್ಟರು ಉತ್ತರ ನೀಡಿದ್ದರು.
ಜಾನುವಾರುಗಳನ್ನು ಸಾಕಿ ಸಲಹುವ ನಿಟ್ಟಿನಲ್ಲಿ ಬರಬಳ್ಳಿಗೂ, ದೇವಕಾರು, ಹೆಬ್ಬಗುಳಿ ಹಾಗೂ ಕೈಗಾಕ್ಕೂ ವಿಶೇಷ ಸಂಬಂಧವಿತ್ತು. ಪ್ರತಿ ಬೇಸಿಗೆಯ ವೇಳೆಗೆ ಕೈಗಾ, ಹೆಬ್ಬಗುಳಿ ಹಾಗೂ ದೇವಕಾರಿನ ಗೌಡರು ಭುಜದ ಮೇಲೆ ದೊಡ್ಡ ಬಡಿಗೆಯನ್ನು ಕಟ್ಟಿಕೊಂಡು ಅದರ ಊದ್ದಕ್ಕೆ ವಿವಿಧ ಗಾತ್ರಗಳ ಮಡಿಕೆಯನ್ನು ತ್ತೋಗುಬಿಟ್ಟುಕೊಂಡು ಬರುತ್ತಿದ್ದರು. ಬರಬಳ್ಳಿ ಹಾಗೂ ಸುತ್ತಲಿನ ಊರುಗಳಲ್ಲಿ ಈ ಮಡಿಕೆಗಳನ್ನು ಮಾರಾಟ ಮಾಡುತ್ತಿದ್ದರು. ಅದರ ಜೊತೆಗೆ ವಿವಿಧ ಬಗೆಯ ತರಕಾರಿ, ಮೆಣಸು, ಮದ್ದುಗಳನ್ನು ಕೂಡ ತಂದು ಮಾರಾಟ ಮಾಡಿ ಕೊಂಚ ಕಾಸು ಮಾಡಿಕೊಳ್ಳುತ್ತಿದ್ದರು.
ವಾಪಸು ಹೋಗುವಾಗ ಬರಬಳ್ಳಿಗರ ಮಲೆನಾಡು ಗಿಡ್ಡ ತಳಿಯ ರಾಸುಗಳನ್ನು ಹೊಡೆದುಕೊಂಡು ಹೋಗುತ್ತಿದ್ದರು. ಈ ದನಗಳು ಮುಂದಿನ ಆರು-ಎಂಟು ತಿಂಗಳುಗಳ ಕಾಲ ದೇವಕಾರು, ಹೆಬ್ಬಗುಳಿ, ಕೈಗಾ ಗೌಡರುಗಳ ಕೊಟ್ಟಿಗೆಯಲ್ಲಿ ಜೀವನ ಸವೆಸಬೇಕಿತ್ತು. ಅವುಗಳನ್ನು ನೋಡಿಕೊಳ್ಳುವ ಜೊತೆಗೆ ಈ ದನಗಳ ಸಂತಾನೋತ್ಪತ್ತಿ ಕಾರ್ಯ ಮಾಡಿಸಿ, ಅವುಗಳು ಕರು ಹಾಕುವ ತನಕದ ಕಾರ್ಯ ಈ ಗೌಡರದ್ದಾಗಿತ್ತು. ಇದಕ್ಕೆ ಪ್ರತಿಯಾಗಿ ಬರಬಳ್ಳಿಗರು ದುಡ್ಡು ಕೊಡುತ್ತಿದ್ದರು. ಅಲ್ಲದೆ ಗಂಡುಗರು ಹುಟ್ಟಿದರೆ ಅದನ್ನು ಉಚಿತವಾಗಿ ಗೌಡರಿಗೆ ನೀಡುತ್ತಿದ್ದರು. ಹೆಣ್ಣು ಕರು ಹಾಕಿದರೆ ವಿಶೇಷ ಬಳುವಳಿ ಕೂಡ ಸಿಗುತ್ತಿತ್ತು. ಇದರ ಜೊತೆಗೆ ಈ ಜಾನುವಾರುಗಳ ಸಗಣಿ, ಗೊಬ್ಬರಗಳು ಗೌಡರ ಪಾಲಿಗೆ ವಿಶೇಷ ಆದಾಯ ತರುತ್ತಿದ್ದವು. ತಮ್ಮ ತೋಟಕ್ಕೆ ಇವುಗಳನ್ನು ಬಳಸುವ ಜೊತೆಗೆ ಗೊಬ್ಬರ ಮಾರಾಟ ಮಾಡಿ ಆದಾಯವನ್ನು ಮಾಡಿಕೊಳ್ಳುತ್ತಿದ್ದರು.
ಇಷ್ಟಲ್ಲದೆ ಬರಬಳ್ಳಿಗರ ಎತ್ತುಗಳು, ಹೋರಿಗಳನ್ನೂ ಈ ಗೌಡರು ಸಾಕುತ್ತಿದ್ದರು. ಬೇಸಿಗೆ ವೇಳೆಗೆ ಬರಬಳ್ಳಿಗೆ ಎಡತಾಕುವ ಗೌಡರುಗಳು ಬಯಲುಗದ್ದೆಯನ್ನು ಹೂಡುವ ಕಾರ್ಯವನ್ನೂ ಕೈಗೊಳ್ಳುತ್ತಿದ್ದರು. ಹೀಗೆ ಬರಬಳ್ಳಿಗರ ಪಾಲಿಗೆ ಕೈಗಾ, ಹೆಬ್ಬಗುಳಿ, ದೇವಕಾರು ಗ್ರಾಮದ ನಿವಾಸಿಗಳು ಅನಿವಾರ್ಯವಾಗಿದ್ದರು. ಆ ಗ್ರಾಮಗಳವರಿಗೆ ಬರಬಳ್ಳಿಯವರೂ ಕೂಡ ಅಷ್ಟೇ ಅಗತ್ಯವಾಗಿದ್ದರು. ಪರಸ್ಪರ ಸಹಕಾರ ಶತ ಶತಮಾನಗಳಿಂದ ಬೆಳೆದುಬಂದಿತ್ತು.
ಗುಡ್ಡೆ ಗಣಪತಿ ಭಟ್ಟರ ಹತ್ತಾರು ಕಾಲ್ನಡೆಗಳನ್ನು ದೇವಕಾರಿನ ಗೌಡನೊಬ್ಬ ಹೊಡೆದುಕೊಂಡು ಹೋಗಿದ್ದ. ಹೀಗಾಗಿ ಭಟ್ಟರ ಮನೆಯಲ್ಲಿ ನಿತ್ಯ ಪೂಜೆಗೆ ಹಾಲು, ಹೈನಿಗಾಗಿ ಒಂದೆರಡು ಆಕಳುಗಳು ಮಾತ್ರ ಇದ್ದವು. ಭಟ್ಟರದ್ದೇ ಎಡಿಎ ಒಂದು ಎತ್ತಿನ ಜೋಡಿಯೂ ದೇವಕಾರಿನ ಬಯಲು ಸೇರಿತ್ತು. ಕಾರವಾರದಿಂದ ವಾಪಸು ಬರುವಾಗ ದೇವಕರಿಗೆ ತೆರಳಿ ತಮ್ಮ ಮನೆಯ ರಾಸುಗಳನ್ನು ನೋಡಿ ಬರಬೇಕು ಎಂದು ಭಟ್ಟರು ಅಂದುಕೊಂಡಿದ್ದರು. ಆದರೆ ಹೀಗೆ ಭಟ್ಟರು ದೇವಕರಿಗೆ ಹೋಗಿ ಬರಬೇಕು ಎಂದು ನಿಶ್ಚಯಿಸಿದ್ದೆ ಅವರ ಬದುಕಿನಲ್ಲಿ ಎಂದೂ ಮರೆಯಲಾಗದ ಅಪರೂಪದ ಘಟನೆಗೆ ಸಾಕ್ಷಿಯಾಗಲಿತ್ತು..
(ಮುಂದುವರಿಯುತ್ತದೆ..)
Thursday, June 1, 2023
ಪಾರು (ಕಥೆ)
ಮರುದಿನ ಮುಂಜಾನೆ ನಾಲ್ಕಕ್ಕೆಲ್ಲ ಎದ್ದು ಕಾರವಾರದ ಕಡೆಗೆ ಹೊರಡುವ ಪತಿಯ ಬೆಳಗಿನ ಆಸ್ರಿಗೆಗಾಗಿ ತಯಾರಿ ಮಾಡುವಲ್ಲಿ ಅಮ್ಮಕ್ಕ ತೊಡಗಿಕೊಂಡಳು. ಭಟ್ಟರು ಸಾಯಿಂಕಾಲದ ಅನುಷ್ಠಾನಕ್ಕೆ ತೆರಳಿದರು.
ಮರುದಿನದ ಕಾರವಾರದ ಕಡೆಗಿನ ಭಟ್ಟರ ಪ್ರಯಾಣ, ಅವರ ಬದುಕಿನ ಅನೂಹ್ಯವಾದ ಘಟನೆಯೊಂದಕ್ಕೆ ಸಾಕ್ಷಿಯಾಗಲಿದೆ ಎನ್ನುವುದರ ಸಣ್ಣ ಕುರುಹೂ ಕೂಡ ಅವರಿಗಿರಲಿಲ್ಲ. ಬದುಕಿನಲ್ಲಿ ಹಲವು ತಿರುವುಗಳನ್ನು ಕಂಡಿದ್ದ ಭಟ್ಟರು ಇನ್ನೊಂದು ವಿಚಿತ್ರ ಸನ್ನಿವೇಶಕ್ಕೆ ಸಾಕ್ಷಿಯಾಗಲಿದ್ದರು.
******
ಭರತಖಂಡ ಭಾರತವರ್ಷಕ್ಕೆ ಹಸಿರ ಸೀರೆಯನ್ನು ಉಟ್ಟಂತೆ ಹಾದುಹೋಗಿದೆ ಪಶ್ಚಿಮ ಘಟ್ಟಗಳ ಸಹ್ಯಾದ್ರಿಯ ಸಾಲು. ಈ ಸಹ್ಯಾದ್ರಿಯ ಮಡಿಲಿನಲ್ಲಿ ಕರಿಬಣ್ಣವನ್ನು ಹೊಂದಿ ಮೈಮನಗಳಲ್ಲಿ ಭಯವನ್ನು ಹುಟ್ಟಿಸುತ್ತ ಹರಿದುಹೋಗುತ್ತಿದೆ ಕಾಳಿನದಿ.
ಜೋಯಿಡಾದ ಕಾಡಿನ ನಡುವೆಯೆಲ್ಲೋ ಹುಟ್ಟಿ ಕಡವಾಡದ ಬಳಿ ಸಮುದ್ರ ಸೇರುವ ಮೊದಲು ಅದೆಷ್ಟೋ ಪ್ರದೇಶಗಳನ್ನು ಬಳಸಿ, ಹಾದು ಹೋಗುವ ಕಾಳಿನದಿ ಸಾವಿರಾರು ಕುಟುಂಬಗಳ ಪಾಲಿಗೆ ಜೀವ ನದಿಯೂ ಹೌದು. ಮಳೆಗಾಲದಲ್ಲಿ ಅದೆಷ್ಟೋ ಜನರ ಬದುಕುಗಳನ್ನು ದುರ್ಭರ ಮಾಡಿದ ಕಣ್ಣೀರ ನದಿಯೂ ಹೌದು. ಇಂತಹ ಕರಿ ಕಾಳಿ ನದಿಯ ಆಗ್ನೇಯ ದಿಕ್ಕಿನ ದಡದಲ್ಲಿ ಇರುವ ಊರು ಬರಬಳ್ಳಿ. ಮೂರು ದಿಕ್ಕುಗಳಲ್ಲಿ ಎತ್ತರದ ಘಟ್ಟ, ದಟ್ಟ ಕಾಡು. ಇನ್ನೊಂದು ಕಡೆಯಲ್ಲಿ ಕಾಳಿ ನದಿ. ಅಡಿಕೆ, ತೆಂಗು ಮುಖ್ಯ ಬೆಳೆಗಳಾದರೂ, ಕೆಲವರು ಭತ್ತ ಬೆಳೆಯುತ್ತಾರೆ. ಮಾವು ಹಲಸುಗಳು ಹುಲುಸಾಗಿ ಬೆಳೆಯುತ್ತವೆ. ಹಣ್ಣು ಹಂಪಲುಗಳಿಂದ ತುಂಬಿಕೊಂಡು, ಎಂದೂ ಬರಿದಾಗದಂತಹ ಹಳ್ಳಿ. ಸಾತೊಡ್ಡಿಯಿಂದ ಹಿಡಿದು ಕೊಡಸಳ್ಳಿಯ ತನಕ ಬೆಳೆದು ನಿಂತಿದ್ದ ಊರು ಅದು.
ದಟ್ಟ ಕಾಡಿನ ನಡುವೆ ನಾಲ್ಕೈದು ಕಿಲೋಮೀಟರುಗಳಷ್ಟು ಅಗಲವಾಗಿ ಹಬ್ಬಿ 400 ಕುಟುಂಬಗಳನ್ನು ಹೊಂದಿರುವ ಈ ಬರಬಳ್ಳಿಯ ಆರಾಧ್ಯದೈವ ಬಲಮುರಿ ಗಣಪತಿ. ಭಕ್ತಿಯಿಂದ ಬೇಡಿಕೊಂಡವರನ್ನು ಸದಾಕಾಲ ಹರಸುವ, ಕಾಪಾಡುವ ದೇವರು.
ಈ ಬಲಮುರಿ ಗಣಪತಿಗೆ ನಿತ್ಯಪೂಜೆ ಗಣಪತಿ ಭಟ್ಟರ ಕೈಯಿಂದಲೇ ನಡೆಯಬೇಕಿತ್ತು. ದೇವಸ್ಥಾನದಿಂದ ಒಂದೂವರೆ ಕಿಲೋಮೀಟರ್ ದೂರದಲ್ಲಿದ್ದ ಗುಡ್ಡೇಮನೆಯಿಂದ ಆಗಮಿಸುವ ಗಣಪತಿ ಭಟ್ಟರು ದಿನನಿತ್ಯ ಶಾಸ್ತ್ರೋಕ್ತವಾಗಿ ಪೂಜಿಸುತ್ತಿದ್ದರು.
ಜೀವನದ ಮಧ್ಯಘಟ್ಟವನ್ನು ತಲುಪಿದ್ದ ಗಣಪತಿ ಭಟ್ಟರ ಮಡದಿಯೇ ಅಮ್ಮಕ್ಕ. ಭಟ್ಟರು ತಮ್ಮ ಮಡದಿಯನ್ನು ಪ್ರೀತಿಯಿಂದ ಸಾವಿತ್ರಿ ಎಂದೇ ಸಂಬೋಧಿಸುತ್ತಿದ್ದರು. ಈ ದಂಪತಿಗಳಿಗೆ ಪರಮೇಶ್ವರ, ಶಂಕರ ಹಾಗೂ ಮೂಕಾಂಬಿಕಾ ಎನ್ನುವ ಮೂವರು ಮಕ್ಕಳು. ಇವರಲ್ಲಿ ಪರಮೇಶ್ವರನಿಗೆ ನಾಲ್ಕೈದು ವರ್ಷ ವಯಸ್ಸಾಗಿದ್ದರೆ, ಪರಮೇಶ್ವರನಿಗಿಂತ ಶಂಕರ ಒಂದೂವರೆ ವರ್ಷ ಚಿಕ್ಕವನು. ಶಂಕರನಿಗಿಂತ ಎರಡು ವರ್ಷ ಚಿಕ್ಕವಳಾದ ಮೂಕಾಂಬಿಕೆ ಆಗಿನ್ನೂ ಅಂಬೆಗಾಲಿಡುತ್ತಿದ್ದ ಕೂಸು. ಗಣಪನ ಪೂಜೆ, ಮಠದಗದ್ದೆಯಲ್ಲಿ ದುಡಿತ, ಗುಡ್ಡೇಮನೆಯಲ್ಲಿ ಸಂಸಾರ ಹೀಗೆ ಸಾಗುತ್ತಿದ್ದಾಗಲೇ ತುರ್ತು ಕಾಗದಪತ್ರದ ಜರೂರತ್ತು ಗಣಪತಿ ಭಟ್ಟರಿಗೆ ಒದಗಿಬಂದಿತ್ತು. ಅದಕ್ಕಾಗಿ ಕಾರವಾರಕ್ಕೆ ಹೊರಟಿದ್ದರು.
****
ಮುಂಜಾನೆ ನಾಲ್ಕಕ್ಕೆಲ್ಲ ಎದ್ದು ನಿತ್ಯಕರ್ಮಗಳನ್ನು ಮುಗಿಸಿ, ಆಸ್ರಿಗೆ ಕುಡಿದು, ಮಡದಿ ಕಟ್ಟಿಕೊಟ್ಟ ತುತ್ತಿನ ಚೀಲವನ್ನು ಗಂಟಿನಲ್ಲಿ ಹಾಕಿ ಭುಜಕ್ಕೇರಿಸಿ ಬರಿಗಾಲಿನಲ್ಲಿ ಮನೆಯಿಂದ ಹೋರಾಟ ಗಣಪತಿ ಭಟ್ಟರು ಕಾರವಾರವನ್ನು ತಲುಪಲು ಹರಸಾಹಸ ಪಡಬೇಕಿತ್ತು.
ಕಾರವಾರಕ್ಕೆ ತಾವೂ ಬರುತ್ತೇವೆ, ತುರ್ತಿನ ಕೆಲಸವಿದೆ ಎಂದು ಹೇಳಿದ್ದರಿಂದ ತಮ್ಮದೇ ಊರಿನ ಚಿದಂಬರ, ನಾರಾಯಣ ಹಾಗೂ ಇನ್ನಿತರರ ಮನೆಯ ಕಡೆ ಭಟ್ಟರು ಎಡತಾಕಿದರು. ದಟ್ಟಕಾಡಿನ ನಡುವೆ, ಕಾಡುಪ್ರಾಣಿಗಳ ಹಾವಳಿಯ ನಡುವೆ ಒಬ್ಬರೇ ಸಾಗುವುದಕ್ಕಿಂತ ಗುಂಪಾಗಿ ತೆರಳುವುದು ಲೇಸು ಎನ್ನುವ ಕಾರಣಕ್ಕಾಗಿ ಭಟ್ಟರು ತಮ್ಮ ಸಹವರ್ತಿಗಳ ಜತೆ ಸೇರಿದ್ದರು.
(ಮುಂದುವರಿಯುವುದು)
Thursday, August 18, 2022
ಗಾಳಿಪಟ-2 ಮೂಲಕ ಮತ್ತೆ ಮೋಡಿ ಮಾಡಿದ ಯೋಗರಾಜ್ ಭಟ್-ಗಣೇಶ್(ನಾನು ನೋಡಿದ ಚಿತ್ರಗಳು -7)
ಇತ್ತೀಚಿನ ದಿನಗಳಲ್ಲಿ ನೋಡಲೇಬೇಕು ಅನ್ನಿಸಿ ಕಾದು ಕಾದು ನೋಡಿದ ಸಿನಿಮಾ ಅಂದರೆ ಅದು ಗಾಳಿಪಟ 2. ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಯೋಗರಾಜ್ ಭಟ್ ಅವರ ಕಾಂಬಿನೇಷನ್ ಚಿತ್ರ ಎನ್ನುವುದು ಈ ಚಿತ್ರದ ಕಡೆಗೆ ಇದ್ದ ಮೊದಲ ಕಾರಣವಾಗಿದ್ದರೆ, ಗಾಳಿಪಟ ಸಿನಿಮಾದ ಮೊದಲ ಭಾಗಕ್ಕೆ ಸಿಇಕ್ವೆಲ್ ಬರುತ್ತಿದೆ ಎನ್ನುವುದು ಇನ್ನೊಂದು ಕಾರಣ.
ಸಿನಿಮಾದಲ್ಲಿ ಬಹಳಷ್ಟು ಇಷ್ಟವಾದವು. ಕೆಲವಷ್ಟು ಕಷ್ಟವಾದವು. ಸಿನಿಮಾದಲ್ಲಿ ನಮಗೆ ಇಷ್ಟವಾಗಲು ಹಲವು ಸಂಗತಿಗಳಿವೆ. ಅದರಲ್ಲಿ ಮೊದಲನೆಯದು ಯೋಗರಾಜ್ ಭಟ್ ಅವರ ನವಿರಾದ ಚಿತ್ರಕಥೆ. ಸರಳ ಕಥಾ ಹಂದರ.
ಮೊದಲ ಭಾಗದಲ್ಲಿ ಮುಗಿಲು ಪೇಟೆಯನ್ನು ನೋಡಿದ್ದ ನಾವು ಇಲ್ಲಿ ನೀರು ಕೋಟೆಯನ್ನು ನೋಡುತ್ತೇವೆ, ಅದೇ ರೀತಿ ಟರ್ಕಿ ದೇಶದ ಹಿಮದ ಸಾಲಿನ ಮೇಲೆ ಓಡಾಡುತ್ತೇವೆ. ನೀರು, ಐಸು, ಆಗೊಮ್ಮೆ ಈಗೊಮ್ಮೆ ಬರುವ ಬೆಂಗಾಡಿನ ಪ್ರದೇಶ ಇವೆಲ್ಲವೂ ಸೆಳೆಯುತ್ತವೆ. ಆದರೆ ಸಿನಿಮಾದ ಮೊದಲರ್ಧ ಸ್ವಲ್ಪ ಸುದೀರ್ಘವಾಯಿತು ಎನ್ನಿಸುತ್ತದೆ. ಅಲ್ಲದೆ ಮೊದಲಾರ್ಧದಲ್ಲಿ ಬ್ಯಾಕ್ ಟು ಬ್ಯಾಕ್ ಬರುವ ಹಾಡುಗಳು ಕಥೆಯ ಓಟಕ್ಕೆ ಸ್ವಲ್ಪ ಕಡಿವಾಣ ಹಾಕುತ್ತದೆ.
ಗಣೇಶ್ ಹಾಗೂ ದಿಗಂತ್ ಕಾಲೇಜಿಗೆ ಮರಳಿ ಬರಲು ಕಾರಣಗಳಿದ್ದವು. ಆದರೆ ಪವನ್ ಯಾಕೆ ಬಂದರು ಎನ್ನುವುದು ಗೊತ್ತಾಗಲಿಲ್ಲ. ಚಿತ್ರ ಆರಂಭವಾಗಿ ಕೆಲವೇ ನಿಮಿಷಗಳಾದ ಮೇಲೆ ಗಣೇಶ್ ನಾಯಕಿಯನ್ನು ಪಟಾಯಿಸಲು ನದಿಯಲ್ಲಿ ಈಜು ಬರದಂತೆ ನಟಿಸುವ ಸನ್ನಿವೇಶವೊಂದಿದೆ. ಪಕ್ಕದಲ್ಲೇ ಸೇತುವೆ ಇದ್ದರೂ ನಾಯಕ, ನಾಯಕಿ ನದಿಯೊಳಕ್ಕೆ ಇಳಿದು ದಾಟಲು ಹೊರಟಿದ್ದು ಸ್ವಲ್ಪ ವಿಚಿತ್ರ ಅನ್ನಿಸಿತು.
ಇನ್ನು ಹಾಡುಗಳಂತೂ ಆಹಾ. ಜಯಂತ್ ಕಾಯ್ಕಿಣಿ ಬರೆದ ನೀನು ಬಗೆಹರಿಯದ ಹಾಡು, ನಾನಾಡದ ಮತ್ತೆಲ್ಲವ ಕದ್ದಾಲಿಸು ಹಾಗೂ ಯೋಗರಾಜ್ ಭಟ್ಟರು ಬರೆದ ನಾವು ಬದುಕಿರಬಹುದು ಪ್ರಾಯಶಃ ಈ ಹಾಡುಗಳಂತೂ ಪದೇ ಪದೇ ಗುನುಗುವಂತೆ ಮಾಡುತ್ತವೆ. ಭಟ್ಟರು ಬರೆದ ದೇವ್ಲೇ ದೇವ್ಲೇ ಹಾಡಂತೂ ಪಡ್ಡೆ ಹುಡುಗರ ಪಾಲಿಗೆ ಒಳ್ಳೆಯ ಕಿಕ್ ನೀಡುತ್ತದೆ. ಹಾಗೆಯೆ ಎಕ್ಸಾಂ ಕುರಿತಾದ ಹಾಡು ಸಹ ಇಷ್ಟವಾಗುತ್ತವೆ. ಗಣೇಶ್ ಮಗ ವಿಹಾನ್ ದು ಇಲ್ಲಿ ಚಿಕ್ಕ ಪಾತ್ರ. ಒಳ್ಳೆಯ ಎಂಟ್ರಿ. ಇನ್ನು ವಿಜಯ್ ಸೂರ್ಯ ಮಾತ್ರ ಸರ್ಪ್ರೈಸ್ ಎಂಟ್ರಿ.
ಸಿನಿಮಾ ಲೊಕೇಷನ್ನುಗಳು ಬಹಳ ಚನ್ನಾಗಿದೆ. ಕುದುರೆಮುಖ, ಟರ್ಕಿ ಇತ್ಯಾದಿ ಸ್ಥಳಗಳು ಕಣ್ಣಿಗೆ ಮುದ ನೀಡುತ್ತವೆ. ಆದರೆ ಚಿತ್ರದಲ್ಲಿ ಜೋಗ ಜಲಪಾತವನ್ನು ಸುಮ್ಮನೆ ಮೂರು ಸೆಕೆಂಡ್ ಕಾಲ ತೋರಿಸಿದರು ಅಷ್ಟೇ. ಜೋಗ ಜಲಪಾತವಲ್ಲದೆ ಬೇರೆ ಯಾವುದೇ ಜಲಪಾತ ತೋರಿಸಿದ್ದರೂ ಯಾವೂದೇ ನಷ್ಟವಿರಲಿಲ್ಲ.
ಕಾರಣಾಂತರಗಳಿಂದ ಕಾಲೇಜಿಗೆ ಬಂದು ಕನ್ನಡ ಕಲಿಯಲು ಮುಂದಾಗುವ ಮೂವರು ಯುವಕರು, ಅವರಿಗೊಬ್ಬ ಕನ್ನಡ ಲೆಕ್ಚರು, ಆ ಲೆಕ್ಚರ್ ಗೆ ಒಬ್ಬ ಕಾಣೆಯಾದ ಮಗ.. ಇಂತಹ ಕಥಾ ಹಂದರದಲ್ಲಿ ಸಾಕಷ್ಟು ಟ್ವಿಸ್ಟ್ ಇದೆ. ನಗೆಯ ಚಿಲುಮೆಯೇ ಇದೆ. ಭಾವನಾತ್ಮಕ ಸನ್ನಿವೇಶಗಳಿವೆ, ತಾಯಿಯ ಪ್ರೀತಿ ಇದೆ. ಗುರು - ಶಿಷ್ಯರ ಅವಿನಾಭಾವ ಸಂಬಂಧವೂ ಇದೆ. ಎರಡು ಮೂರು ಸಾಧಾರಣ ಚಿತ್ರಗಳನ್ನು ಮಾಡಿದ್ದ ಯೋಗರಾಜ ಭಟ್ಟರು ಇನ್ನೊಮ್ಮೆ ಒಳ್ಳೆಯ ಕಥೆಯ ಮೂಲಕ ಮರಳಿ ಬಂದಿದ್ದಾರೆ.
ಇನ್ನು ನಟನೆ ವಿಷಯಕ್ಕೆ ಬಂದರೆ ಹಲವಾರು ಫುಲ್ ಮಾರ್ಕ್ಸ್ ಪಡೆಯುತ್ತಾರೆ. ಕನ್ನಡ ಲೆಕ್ಚರ್ ಪಾತ್ರಧಾರಿ ಅನಂತ್ ನಾಗ್ ಅಂತೂ ವಾಹ್.. ಅವರ ಅಭಿನಕ್ಕೆ ಸಾಟಿಯೇ ಇಲ್ಲ. ಇನ್ನು ಗಣೇಶ್. ಇಂದಿನ ತಮ್ಮ ನಗಿಸುವ, ನಗಿಸುತ್ತಲೇ ಅಳಿಸುವ ಪಾತ್ರದಲ್ಲಿ ಮತ್ತೊಮ್ಮೆ ಮೋದಿ ಮಾಡಿದ್ದಾರೆ. ಗಂಭೀರ ಪಾತ್ರದಲ್ಲಿ ಪವನ್ ಇಷ್ಟವಾಗುತ್ತಾರೆ. ಗಣೇಶ್ ಅಂತಹ ಕಚಗುಳಿ ನಟರು ಇದ್ದರೂ ಸಿನಿಮಾದಲ್ಲಿ ಅತ್ಯಂತ ಹೆಚ್ಚು ನಗಿಸುವವರು ದಿಗಂತ್. ದಿಗಂತ್ ಅವರನ್ನು ಅಘೋರಿ ರೂಪದಲ್ಲಿ ನೋಡುವುದೇ ಮಜಾ. ದಿಗಂತ್ ತೆರೆಯ ಮೇಲೆ ಇದ್ದಷ್ಟು ಹೊತ್ತು ನಗುವಿಗೆ ನಗುವಿಗೆ ಕೊರತೆಯೇ ಇಲ್ಲ. ರಂಗಾಯಣ ರಘು, ಸುಧಾ ಬೆಳವಾಡಿ, ಪದ್ಮಜಾ, ಶ್ರೀನಾಥ್ ಅವರುಗಳು ಬಹಳ ಇಷ್ಟವಾಗುತ್ತಾರೆ. ಬುಲೆಟ್ ಪ್ರಕಾಶ್ ಒಂದೇ ಒಂದು ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ನಟಿಯರಾದ ವೈಭವೀ ಶಾಂಡಿಲ್ಯ, ಸಂಯುಕ್ತ ಮೆನನ್, ಶರ್ಮಿಳಾ ಮಾಂಡ್ರೆ ತಮ್ಮ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ.
ಪ್ಯಾನ್ ಇಂಡಿಯಾ, ಬಾಲಿವುಡ್, ಟಾಲಿವುಡ್, ಕಾಲಿವುಡ್ ಇತ್ಯಾದಿ ಸಿನಿಮಾಗಳಗಳ ಅಬ್ಬರಗಳ ನಡುವೆ ಅಚ್ಚ ಕನ್ನಡದ ಸಿನಿಮಾ ಬಹಳ ಇಷ್ಟವಾಗುತ್ತದೆ. ಈ ನೋಡುಗರಿಗಂತೂ ಪೈಸೆ ವಸೂಲ್ ಪಕ್ಕಾ. ಸಾಧ್ಯವಾದರೆ ಸಿನಿಮಾ ಮಂದಿರಗಳಿಗೆ ತೆರಳಿ ಈ ಚಿತ್ರ ವೀಕ್ಷಿಸಿ.
Sunday, August 7, 2022
ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ (ನಾನು ನೋಡಿದ ಚಿತ್ರಗಳು -6)
Friday, July 16, 2021
ಇರುವುದೆಲ್ಲವ ಬಿಟ್ಟು... (ಕಥಾ ಸರಣಿ ಭಾಗ-5)
`ವಾಣಿ..ತಮ್ಮಂಗೆ ಉಪನಯನ ಮಾಡನ..' ಎಂದು ಸುಧೀಂದ್ರ ಹೇಳಿದ್ದಕ್ಕೆ ಸುಮ್ಮನೆ ತಲೆ ಅಲ್ಲಾಡಿಸಿ ಹೂಂ ಅಂದಿದ್ದಳು ವಾಣಿ.
ಅದಾಗಿ ಕೆಲವೇ ದಿನಗಳಲ್ಲಿ ಸುಧೀಂದ್ರ ಎಲ್ಲ ತಯಾರಿಗಳನ್ನೂ ಆರಂಭಿಸಿದ್ದ. ಉಪನಯನದ ದಿನಾಂಕವನ್ನೂ ತನ್ನ ಪುರೋಹಿತ ಭಟ್ಟರ ಬಳಿ ಕೇಳಿಸಿಕೊಂಡು ಬಂದಿದ್ದಲ್ಲದೇ ಉಪನಯನದ ಕಾರ್ಡನ್ನೂ ಮುದ್ರಿಸಿಯಾಗಿತ್ತು.
`ನಿನ್ನ ಬಳಗದವರನ್ನೂ ಉಪನಯನಕ್ಕೆ ಕರೆಯಲೆ ಶುರು ಮಾಡಿದ್ಯಾ..?' ಎಂದು ಸುಧೀಂದ್ರ ಕೇಳಿಯೂ ಆಗಿತ್ತು. ಆಗ ವಾಣಿಗೆ ಮೊದಲು ನೆನಪಾಗಿದ್ದೇ ವಿನಾಯಕ.
ಸುಧೀಂದ್ರನ ಜೊತೆಗೆ ಮದುವೆಯಾಗಿ ಮಗನೂ ಹುಟ್ಟಿ ಇದೀಗ ಉಪನಯನದ ಸಮಯ ಬರುವ ವೇಳೆಗೆ ಜಗತ್ತು ಅದೆಷ್ಟೋ ಬದಲಾವಣೆಯನ್ನು ಹೊಂದಿತ್ತು. ಜಗತ್ತಿನ ಓಟಕ್ಕೆ ತಕ್ಕಂತೆ ಶಿರಸಿಯೂ ಕೂಡ ಆಧುನಿಕತೆಯ ಜಾಲದೊಳಕ್ಕೆ ಸಿಲುಕಿಯಾಗಿತ್ತು. ಹಳೆಯ ಹಂಚಿನ ಮನೆಗಳೆಲ್ಲ ಸಿಮೆಂಟಿನ ಕಟ್ಟಡಗಳಾಗಿ ಬದಲಾಗಿದ್ದವು. ಎಲ್ಲ ಕಟ್ಟಡಗಳಿಗೂ ಕಪ್ಪು ಬಣ್ಣದ, ಬಿಸಿಲು ನಿರೋಧಕ ಗಾಜುಗಳ ಅಳವಡಿಕೆಯಾಗಿತ್ತು. ಎರಡು ಮಹಡಿಯ ಮನೆಗಳ ಬದಲಾಗಿ ನಾಲ್ಕು-ಐದು ಮಹಡಿಗಳ ಕಟ್ಟಡಗಳು ತಲೆ ಎತ್ತಿ, ಗಗನದ ಕಡೆಗೆ ಮುಖ ಮಾಡಿದ್ದವು.
ತಾಸಿಗೆ ಒಂದು ಬಸ್ಸು ಓಡಾಡುತ್ತಿದ್ದ ಕಡೆಗಳಲ್ಲೆಲ್ಲ ಐದು-ಆರು ಬಸ್ಸುಗಳು ಓಡಾಡತೊಡಗಿತ್ತು. ಅಷ್ಟೇ ಅಲ್ಲದೇ ಮನೆ ಮನೆಗೊಂದು ಬೈಕು-ಕಾರು ಸವರ್ೇಸಾಮಾನ್ಯ ಎನ್ನುವಂತಾಗಿತ್ತು. ಎಲ್ಲಕ್ಕಿಂತ ಮಿಗಿಲಾಗಿ ಮಲೆನಾಡು ಇನ್ನೊಂದು ಬಹುದೊಡ್ಡ ಬದಲಾವಣೆಗೆ ಸಾಕ್ಷಿಯಾಗಿತ್ತು.
ಮಲೆನಾಡಿನ ಮನೆ-ಮನಗಳನ್ನು ಬೆಸೆದಿದ್ದ ಅಂಚೆ ಇದೀಗ ಬಹುಜನರ ನಿರ್ಲಕ್ಷ್ಯಕ್ಕೆ ಕಾರಣವಾಗಿತ್ತು. ಪತ್ರ ಸಂಸ್ಕೃತಿಯನ್ನು ಹುಟ್ಟಹಾಕಿದ್ದ ಅಂಚೆಯ ಮೂಲಕ ಇದೀಗ ಯಾವುದೇ ಪತ್ರಗಳ ವಿನಿಮಯ ಇಲ್ಲ ಎನ್ನುವಂತಾಗಿತ್ತು. ವಾರಕ್ಕೊಮ್ಮೆಯೋ, ಹತ್ತು ದಿನಗಳಿಗೆ ಒಮ್ಮೆಯೋ ಮನೆ ಅಂಗಳಕ್ಕೆ ಬಂದು ಪತ್ರ ಬಂದಿದೆ ಎನ್ನುವ ಅಂಚೆಯ ಅಣ್ಣ ನಾಪತ್ತೆಯಾಗಿದ್ದ. ಎಲ್ಲೋ ಅಪರೂಪಕ್ಕೊಮ್ಮೆ ಸೊಸೈಟಿಯ ಅಢಾವೆ ಪತ್ರಿಕೆಯೋ, ಇನ್ಯಾವುದೋ ನೋಟಿಸು ಸರಬರಾಜಿಗೆ ಮಾತ್ರ ಅಂಚೆಯ ಅಣ್ಣ ಸೀಮಿತವಾಗಿದ್ದ. ಪತ್ರ ವಿನಿಮಯದ ಜಾಗದಲ್ಲೀಗ ಮೊಬೈಲ್ ಎಂಬ ಮಾಯಾ ರಾಕ್ಷಸ ಫೆವಿಕಾಲ್ ಅಂಟಿಸಿಕೊಂಡು ಕುಳಿತಿದ್ದ.
ಮಾಯಾವಿ ಮೊಬೈಲ್ ಕೂಡ ಮಲೆನಾಡಿನಲ್ಲಿ ಸುಮ್ಮನೆ ಬರಲಿಲ್ಲ. ಮೊದ ಮೊದಲ ದಿನಗಳಲ್ಲಿ ಬಿಸ್ಸೆನ್ನೆಲ್ ಮೂಲಕ ಬಂದವನು ಸಿಮ್ ಕಾಡರ್ಿಗಾಗಿ ಉದ್ದುದ್ದದ ಸರತಿ ಸಾಲಿನಲ್ಲಿ ಜನರನ್ನು ನಿಲ್ಲಿಸಿದ್ದ. ಶಿರಸಿ ನಗರದಲ್ಲಿ ಒಂದೋ ಎರಡೋ ಟವರ್ ಮೂಲಕ ಜನರನ್ನು ಬೆಸೆಯಲು ಆರಂಭಿಸಿದ ಮೊಬೈಲ್ ಮಾಯಾವು ನಂತರದ ದಿನಗಳಲ್ಲಿ ಹಳ್ಳಿ ಹಳ್ಳಿಗಳ ಕಡೆಗೂ ಮುಖ ಮಾಡಿದ್ದ. ಬಿಸ್ಸೆನ್ನೆಲ್ ಜೊತೆ ಜೊತೆಯಲ್ಲಿಯೇ ಖಾಸಗಿ ಮೊಬೈಲ್ ಕಂಪನಿಗಳೂ ಬಂದವು. ಅಗ್ಗದ ದೂರವಾಣಿ ಕರೆಗಳ ಜೊತೆಗೆ ಅಗ್ಗದ ಇಂಟರ್ನೆಟ್ ಕೂಡ ನೀಡಲು ಆರಂಭಿಸಿದ್ದವು. ಮೊಬೈಲ್ ಎನ್ನುವ ಮಾಯಾವುಯನ್ನು ಅಂಗೈನಲ್ಲಿ ಹಿಡಿದಿದ್ದ ಮಲೆನಾಡಿನ ಮಂದಿ ತಮ್ಮನ್ನು ತಾವು ಬದಲಾವಣೆಗೆ ಒಗ್ಗಿಸಿಕೊಂಡಿದ್ದರು. ಸದ್ದಿಲ್ಲದೆ ಪತ್ರ ಬರೆಯುವ ಸಂಸ್ಕೃತಿ ಮಾಯವಾಗಿತ್ತು.
ಪತ್ರವನ್ನು ಬರೆದು ಪೋಸ್ಟ್ ಮಾಡುತ್ತಿದ್ದ ದಿನಗಳೇ ಚನ್ನಾಗಿತ್ತಲ್ಲವಾ ಎಂದುಕೊಂಡಳು ವಾಣಿ. ಆ ದಿನಗಳಲ್ಲಿ ಪತ್ರ ಬರೆದು ಪೋಸ್ಟ್ ಮಾಡಿ, ಅದಕ್ಕೆ ತಿಂಗಳುಗಳ ವರೆಗೆ ಉತ್ತರ ಬರುವುದನ್ನೇ ನಿರೀಕ್ಷೆ ಮಾಡುತ್ತಿದ್ದ ದಿನಗಳು ಎಷ್ಟು ಹಸುರಾಗಿದ್ದವಲ್ಲವಾ ಎಂದುಕೊಂಡಳು ಅವಳು. ಪತ್ರ ಅದೆಷ್ಟೋ ಮನಸ್ಸುಗಳನ್ನು ಬೆಸೆದಿತ್ತು ಅಲ್ಲವೇ. ಪತ್ರ ಬರೆಯುತ್ತಿದ್ದ ದಿನಗಳ ಪ್ರೀತಿಗೆ ಅದಷ್ಟು ಪಾವಿತ್ರ್ಯತೆ ಇತ್ತು ಅಲ್ಲವೇ ಎಂದುಕೊಂಡಳು ವಾಣಿ. ಈಗಿನ ಪ್ರೀತಿ ಹಾಗೆ ಅಲ್ಲವೇ ಅಲ್ಲ. ಮೊಬೈಲ್ ನಲ್ಲಿ ಹುಟ್ಟಿ, ಚಾಟಿಂಗ್ ನಲ್ಲಿ ಬೆಳೆದು ಡೇಟಿಂಗ್ ನಲ್ಲಿ ಅಂತ್ಯವಾಗಿಬಿಡುತ್ತವೆ ಎಂದು ನಿಟ್ಟುಸಿರು ಬಿಟ್ಟಳು. ಈಗೆಲ್ಲ ಪ್ರೀತಿ ಹುಟ್ಟಿದ ತಾಸು ಘಳಿಗೆಯಲ್ಲಿಯೇ ಅದನ್ನು ನಿವೇದನೆ ಮಾಡಿಕೊಂಡು ಬಿಡುತ್ತಾರೆ. ಆದರೆ ಆಗ ಹಾಗಿರಲಿಲ್ಲ. ಒನ್ ವೇ ಲವ್ ಆಗಿದ್ದರೂ ಅದನ್ನು ಹೇಳಿಕೊಳ್ಳಲು ವರ್ಷಗಟ್ಟಲೆ ಕಾದಿದ್ದು, ಪರಿತಪಿಸಿದ್ದು ಇರುತ್ತದಲ್ಲ. ಹೇಳಿಕೊಳ್ಳಲಾಗದೆಯೇ ಪ್ರೀತಿ ಸತ್ತು ಹೋಗಿರುವ ನಿದರ್ಶನ ಇದೆಯಲ್ಲ ಎಂದುಕೊಂಡಳು. ತನ್ನದೂ ಹಾಗೆಯೇ ಆಗಿತ್ತಲ್ಲವಾ ಎಂದು ನಿಟ್ಟುಸಿರು ಬಿಟ್ಟಳು.
ಗಂಡ ಸುಧೀಂದ್ರ ತನಗಾಗಿಯೇ ಒಂದು ಮೊಬೈಲ್ ತಂದುಕೊಟ್ಟಿದ್ದ. ನಂತರ ತನ್ನನ್ನು ಕಾಲೇಜು ದಿನಗಳ ಗೆಳೆಯರ ವಾಟ್ಸಾಪ್ ಬಳಗಕ್ಕೆ ಗೆಳತಿಯರು ಸೇರಿಸಿದ್ದರು. ಅಲ್ಲೆಲ್ಲ ಆಕೆ ವಿನಾಯಕನನ್ನು ಹುಡುಕಿದ್ದಳು. ಆ ಗುಂಪಿನಲ್ಲಿ ವಿನಾಯಕ ಕಂಡಿದ್ದನಾದರೂ, ಒಂದೇ ಒಂದು ಮೆಸೆಜ್ ಮಾಡಿರಲಿಲ್ಲ. ವಿನಾಯಕ ಸಂಪೂರ್ಣವಾಗಿ ಬದಲಾಗಿರಬಹುದೇನೋ ಎಂದುಕೊಂಡಿದ್ದಳು ವಾಣಿ. ಮದುವೆಯಾಗಿ ಮಕ್ಕಳ ಜೊತೆ ಖುಷಿಯಾಗಿರುವ ವಿನಾಯಕನಿಗೆ ತನ್ನ ನೆನಪೂ ಇರಲಿಕ್ಕೆ ಸಾಧ್ಯವಿಲ್ಲ ಎಂದುಕೊಂಡಿದ್ದಳು.
ಸುದೀರ್ಘ ಬಂಧ ಬೆಳೆಯುವುದಕ್ಕೆ ಸಣ್ಣ ನೆಪ ಸಾಕಾಗುತ್ತದೆ. ವಾಣಿಗೂ ಕೂಡ ಆಗಾಗ ವಿನಾಯಕನನ್ನು ಮಾತನಾಡಿಸಬೇಕು ಎನ್ನುವ ಆಸೆ ಆಗುತ್ತಲೇ ಇತ್ತು. ಆದರೆ ತಾನಾಗಿಯೇ ಮಾತನಾಡಿಸಿದರೆ ವಿನಾಯಕ ಮಾತನಾಡಬಹುದೇ? ಗೊತ್ತಿಲ್ಲದವರಂತೆ ನಡೆದುಕೊಳ್ಳಬಹುದೇ? ತಾನಾಗಿ ಮಾತನಾಡಿಸಿ ಅವಮಾನ ಮಾಡಿಸಿಕೊಳ್ಳಬೇಕೇ? ಸುಮ್ಮನೆ ಇದ್ದು ಬಿಡಲೇ? ಹೀಗೆ ಹಲವು ತಳಮಳ ತೊಳಲಾಟಗಳಲ್ಲಿ ಒದ್ದಾಡಿದ್ದಳು. ವಿನಾಯಕನನ್ನು ಮಾತನಾಡಿಸಲು ಇದೀಗ ನೆಪ ಒಂದು ಸಿಕ್ಕಂತಾಗಿತ್ತು.
`ಹಾಯ್ ವಿನಾಯಕ, ಹೇಂಗಿದ್ದೆ? ನಾನು ವಾಣಿ..' ವಾಟ್ಸಾಪ್ ನಲ್ಲಿ ಹೀಗೆ ಮೆಸೇಜ್ ಮಾಡಿದ್ದ ವಾಣಿ, ತನ್ನ ಮೆಸೇಜಿಗೆ ಪ್ರತ್ಯುತ್ತರ ಬರುವ ವರೆಗೂ ಪಟ್ಟ ತಳಮಳ ಅಷ್ಟಿಷ್ಟಲ್ಲ. ನಿಮಿಷ ನಿಮಿಷಕ್ಕೂ ಮೊಬೈಲ್ ನೋಡುತ್ತಾ, ವಾಟ್ಸಾಪ್ ತೆರೆಯುತ್ತಾ, ಕುಂತಲ್ಲಿ ಕೂರಲಾಗದೆ, ನಿಂತಲ್ಲಿ ನಿಲ್ಲಲಾಗದೆ ಒದ್ದಾಡಿದ್ದಳು. ಚಡಪಡಿಸಿದ್ದಳು. ಕೊನೆಗೂ ಒಮ್ಮೆ ಉತ್ತರ ಬಂದಿತ್ತು. `ಹಾಯ್ ವಾಣಿ? ಎಂತ ಆಶ್ಚರ್ಯ. ನಾನು ಚನ್ನಾಗಿದ್ದಿ. ನೀ ಹೇಂಗಿದ್ದೆ?' ವಿನಾಯಕ ಉತ್ತರಿಸಿದ್ದ. ವಾಣಿಗೆ ಆಗ ಒಮ್ಮೆ ಸ್ವರ್ಗವೇ ಅಂಗೈಗೆ ಸಿಕ್ಕಿದೆಯೋ ಅನ್ನಿಸಿತ್ತು. ವಿನಾಯಕ ನನ್ನ ಮರೆತಿಲ್ಲ ಎಂದು ಖುಷಿ ಪಟ್ಟಳು ವಾಣಿ.
ಉಭಯ ಕುಶಲೋಪರಿ ಸಾಂಪ್ರತ ನಡೆದ ಬಳಿಕ ವಾಣಿ ತನ್ನ ಮಗನ ಉಪನಯನಕ್ಕಾಗಿ ವಿನಾಯಕನ್ನು ಕರೆದಳು. ಅದಕ್ಕೆ ವಿನಾಯಕ ಬರುತ್ತೇನೆ ಎಂದೂ ಹೇಳಿದ. ಈ ಎಲ್ಲ ಮಾತುಗಳ ನಂತರ ನಡೆದ ಕ್ಷಣಕಾಲದ ನಿಶ್ಯಬ್ಧ ಅದೆಷ್ಟೋ ಪ್ರಶ್ನೆಗಳನ್ನು ಕೇಳಿತು. ಅದೆಷ್ಟೋ ಉತ್ತರಗಳನ್ನೂ ಹೇಳಿತು.
ಕಾಲೇಜು ಮುಗಿದ ನಂತರ ನಾನು ಒಮ್ಮೆ ಧೈರ್ಯ ಮಾಡಿ ವಿನಾಯಕನ ಬಳಿ ಹೇಳಿ ಬಿಡಬೇಕಿತ್ತು ಎಂದುಕೊಂಡಳು ವಾಣಿ. ಛೆ ತಾನೇ ಚೂರೇ ಚೂರು ಧೈರ್ಯ ಮಾಡಿದ್ದರೆ ವಿನಾಯಕ ನನ್ನವನಾಗುತ್ತಿದ್ದನಲ್ಲ ಎಂದುಕೊಂಡಳು. ಮರೆತ ವಿನಾಯಕನನ್ನು, ವಿನಾಯಕನ ಜೊತೆಗಿನ ಸಾಂಗತ್ಯವನ್ನು ಮತ್ತೆ ಮತ್ತೆ ನೆನಪು ಮಾಡಿಕೊಂಡಿದ್ದಳು ವಾಣಿ.
ಇತ್ತ ವಿನಾಯಕನ ಮನಸ್ಸಿನಲ್ಲಿ ಕೂಡ ತರಂಗಗಳೆದ್ದಿತ್ತು. ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ ಎನ್ನುವ ಹಾಗೆ ಆಗಿತ್ತು.
(ಮುಂದುವರಿಯುತ್ತದೆ)
Sunday, May 3, 2020
ಅಂ-ಕಣ - 12
ರಾತ್ರಿ ನನಗೆ
ಭಯವೇ ಆಗೋಲ್ಲ
ಎನ್ನುತ್ತಿದ್ದಾಳೆ!
ಹಗಲಲ್ಲಿ
ಬೆಚ್ಚಿ ಬೀಳುತ್ತಾಳೆ!
-------------
(2013 ರಲ್ಲಿ ಬರೆದಿದ್ದು)
ನಿನ್ನೆಯಿಂದ ಮನಸ್ಸು ಕಲ್ಲವಿಲವಾಗಿದೆ...
ಏನು ಮಾಡಬೇಕು ಏನು ಮಾಡಬಾರದು ಎನ್ನುವ ವಿವೇಚನೆ...
ಎಲೆಕ್ಷನ್ ಬಿಸಿಯ ನಡುವೆಯೂ ಮನಸ್ಸು ಮರುಗುತ್ತಿದೆ....
ಪಾಕಿಸ್ತಾನದ ಜೈಲಿನಲ್ಲಿ ಹಲ್ಲೆಗೊಳಗಾಗಿ ಸಾವನ್ನಪ್ಪಿದ ಸರಬ್ ಜಿತ್ ಸಿಂಗ್
ಸಾವನ್ನಪ್ಪಿರುವ ಕುರಿತು.. ಮನಸ್ಸು ಕುದಿಯುತ್ತಿದೆ...
ಅದೆಷ್ಟು ಜನ ಹೀಗೆ ಸಾವನ್ನಪ್ಪಿದ್ದಾರೋ ಗೊತ್ತಿಲ್ಲ...
ಇನ್ನೆಷ್ಟು ಜನ ಸಾಯಬೇಕೋ...
ಸರಬ್ ಜಿತ್ ಅಂತಿಮವಾಗಿ ಹೀಗೆ ಸಾಯಲಿಕ್ಕಾಗಿಯೇ 22 ವರ್ಷ ಜೈಲಿನಲ್ಲಿ ಕಳೆದು ಬಿಟ್ಟನಲ್ಲ..?
ನಮ್ಮ ಸರ್ಕಾರ ಆನತನ್ನು ಬಿಡುಗಡೆ ಗೊಳಿಸುವ ಬಗ್ಗೆ 22 ವರ್ಷಗಳಿಂದ ಬಾಯಿ ಮಾತಿನಲ್ಲಿಯೇ ಕಾಲ ಕಳೆಯಿತೆ..?
ಒಬ್ಬ ಸೈನಿಕ ತನ್ನ ನಾಡಿನವನು ಸತ್ತ, ಆತನನ್ನು ನೆರೆಯ ಪ್ಯಾಲಿಸ್ಟೈನ್ ದವರು ಕೊಂದರೆಂದರೆ ಸಾಕು.. ಪುಟ್ಟ ಇಸ್ರೇಲಿಗರು ಅಪ್ಪಟ ಸ್ವಾಭಿಮಾನಿಗಳು... ಅದಕ್ಕೆ ಪ್ರತಿಯಾಗಿ ಬಾಂಬು ದಾಳಿ ಮಾಡಿಯೋ., ರಾಕೆಟ್ಟು ಹಾರಿಸಿಯೋ 8-10 ಜನರನ್ನು ಕೊಂದು ಸೇಡಿ ತೀರಿಸಿಕೊಳ್ಳುತ್ತಾರೆ...
ಆದರೆ ನಾವ್ಯಾಕೆ ಹೀಗೆ..?
ಅಮಾಯಕನೋ.. ಅಲ್ಲವೋ... ಭಾರತೀಯ ಜನಸಾಮಾನ್ಯ.. ಸರಬ್ ಜೀತ್...
ನಿಜವಾಗಿಯೂ ಖೈದಿಗಳಿಂದ ಹಲ್ಲೆಗೊಳಗಾಗಿ ಸತ್ತ ಎನ್ನುವುದು ಖಂಡಿತ ಸುಳ್ಳು...
ಯಾವುದೋ ಅಧಿಕಾರಿ ಹಲ್ಲೆ ಮಾಡಿಯೇ ಕೊಂದಿರಬೇಕು... ಎಂದು ಮನಸ್ಸು ಶಂಕಿಸುತ್ತದೆ...
ಕಸಬ್, ಅಪ್ಝಲ್ ಗುರು ಹೀಗೆ ಉಗ್ರರನ್ನು ಕೊಂದಿದ್ದಕ್ಕೆ ಪ್ರತಿಯಾಗಿ ಸೇಡನ್ನು ತೀರಿಸಿಕೊಂಡಿರಲೂ ಬಹುದು..
ಆದರೆ ನಾವೇಕೆ ಸುಮ್ಮನಿದ್ದೇವೆ..?
ಪಾಕಿಸ್ತಾನದ ವಿರುದ್ಧ ಒಮ್ಮೆ ಗುಡುಗಿದರೆ ಸಾಕಿತ್ತು... ನಾಯಿ ಬುದ್ಧಿಯ ಪಾಕಿಸ್ತಾನ ಕುಂಯ್ ಗುಟ್ಟುತ್ತಿತ್ತು...
ನಮ್ಮ `ಮೌನ'ಮೋಹನ ಯಾಕೆ ಇನ್ನೂ ಮುರುಳಿ ಗಾನ ನುಡಿಸ್ತಾ ಇದ್ದಾರೆ ಅರ್ಥವಾಗುತ್ತಿಲ್ಲ...
`ಪಾಕಿಸ್ತಾನದ ಜೈಲಿನಲ್ಲಿ ಸರಬ್ ಜಿತ್ ಸಾವು.. ತಿಹಾರ್ ಜೈಲಿನಲ್ಲಿ ಪಾಕ್ ಖೈದಿಗಳಿಗೆ ಬಂದೋಬಸ್ತ್ ಎನ್ನುವ ಸುದ್ದಿಗಳು ಬರುತ್ತಿವೆ... ಮತ್ತೆ ಮನಸ್ಸು ಬೆಂಕಿಯ ಆಗರ...
ಇನ್ನೆಷ್ಟು ಹತ್ಯೆಯಾಗಬೇಕು ನಾವು ಎಚ್ಚೆತ್ತುಕೊಳ್ಳಲು..?
ಪಾಕಿಸ್ತಾನ ಕೊಲ್ಲುತ್ತಲೇ ಇರಬೇಕೇ..?
ನಾವು ಸಾಯುತ್ತಲೇ ಇರಬೇಕೆ..?
ಈ ನಡುವೆ `ನಮೋ' ಎಂದರೂ ನಾಯಕ ಬದಲಾಗುವ ಸೂಚನೆ ಸಿಗುತ್ತಿಲ್ಲ....
ಈಗಿರುವವರೆಲ್ಲ ಸತ್ತು ಮಲಗಿದ್ದಾರೆ...
ಉತ್ತರದ ಕಾಶ್ಮೀರದ ಅಕ್ಸಾಯ್ ಚಿನ್ ಪ್ರದೇಶದಲ್ಲಿ ಚೀನಿ ಡ್ರಾಗನ್ ಗಳು ನಮ್ಮ ನೆಲವನ್ನು ಚುನ್ ಚುನ್ ಕರ್ ಎನ್ನುವಂತೆ... ಕಿತ್ತು ಕೊಳ್ಳುತ್ತಿವೆ...
ಆದರೂ ನಾವು ಸುಮ್ಮನಿದ್ದೇವೆ...
ಇದು ಸಹನೆಯಾ..?
ಅಸಹಾಯಕತೆಯಾ..?
ಸೋಗಲಾಡಿತನವಾ..?
ಯಾರನ್ನೋ ಮೆಚ್ಚಿಸುವಂತಹ ಮಹಾನುಭಾವತನವಾ..?
ಏನನ್ನಬೇಕು..?
ಸತ್ತಮೇಲೆ ಭಾರತಕ್ಕೆ ಬಂದು ಮಣ್ಆಗುತ್ತಿರುವ ಸರ್ಬಜಿತ್ ಸಿಂಗ್ ಗೆ ಅಶ್ರುತರ್ಪಣ..
ಸೌಂಡು ಮಾಡದ ನಾಯಕರಿಗೆ ಧಿಕ್ಕಾರ...
---------------
ಎಲ್ಲ ಕೂಲಿ ಕಾರ್ಮಿಕರು ಅವರವರ ಊರುಗಳಿಗೆ ವಾಪಾಸಾಗುತ್ತಿದ್ದಾರೆ..!
ಬಾಂಗ್ಲಾದವರು....?
--------
ಸಂಭವಾಮಿ
ಯುಗೇ ಯುಗೇ...
ರಾಮಾಯಣ ಧಾರವಾಹಿಗೂ ಅನ್ವಯ ಆಗುತ್ತದೆ!
----------
ಅವಳ ಬಳಿ
ಕವಿಯಾಗು ಎಂದೇ
ಕವಿತೆಯಾಗುವ
ಕಷ್ಟ ನಂಗೆ ಬೇಡ,
ನನ್ನ ಆತ್ಮಕಥೆಯನ್ನು
ನೀನೆ ಬರೆದುಬಿಡು ಎಂದಳು!
Saturday, March 28, 2020
ಕತ್ತಲೆಕಾನು (ಕಥೆ ಭಾಗ- 3)
`ರೀ ನನಗೇನು ತಲೆ ಹಾಳಾಗಿದೆಯಾ. ಯಾವ ಲಾರಿನೂ ಇಲ್ಲ ಏನೂ ಇಲ್ಲ. ಹೋಗ್ರಿ ಸುಮ್ನೆ' ಎಂದ ಗಾರ್ಡ್. ನಾನು ನಿಧಾನವಾಗಿ ಮುಂದೆ ಹೋದೆ. ನನ್ನ ತಲೆಯಲ್ಲಿ ನೂರಾರು ಪ್ರಶ್ನೆಗಳು ತರಂಗಗಳಂತೆ ಎದ್ದು ಬಂದಿದ್ದವು.
ಮಾವಿನಗುಂಡಿಯಲ್ಲಿ ಒಂದು ಚಹಾ ಅಂಗಡಿ ಬಾಗಿಲು ಹಾಕುತ್ತಿತ್ತು. ಸೀದಾ ಅತ್ತ ಹೋಗಿ `ಒಂದು ಟಿ ಕೊಡಿ' ಎಂದೇ. ಆತ ನನ್ನನ್ನು ಒಮ್ಮೆ ದುರುಗುಟ್ಟಿಕೊಂಡು ನೋಡಿ, ಹ್ಮ್ ಎಂದು ಚಹಾ ತರಲು ಹೋದ.
ಅರೆ ನಾನು ಗೇರುಸೊಪ್ಪದಿಂದ ಆ ಲಾರಿಯ ಜೊತೆ ಬಂದಿದ್ದೇನಲ್ಲ. ಎಲ್ಲಿ ಹೋಗಲು ಸಾಧ್ಯ. ದಾರಿ ಮಧ್ಯದಲ್ಲಿ ಎಲ್ಲಾದರೂ ಕಳ್ಳ ನಟ ಹೊಡೆಯಲು ಅದು ಹೋಯಿತೇ? ಅಥವಾ ಬೇರೆ ಮಧ್ಯದಲ್ಲಿ ಯಾವುದಾದರು ಊರಿಗೆ ಹೋಯಿತೇ ಎಂಬ ಆಲೋಚನೆಗಳು ಬಂದವು. ಆದರೆ ಯಾರೇ ಆಗಿದ್ದರೂ ಕೂಡ ಅಂಕುಡೊಂಕಿನ ಹಾದಿಯಲ್ಲಿ ಅಷ್ಟೆಲ್ಲ ವೇಗವಾಗಿ ಗಡಿ ಓಡಿಸಲು ಸಾಧ್ಯವೇ ಇಲ್ಲ. ಇದರಲ್ಲಿ ಏನೋ ಇದೆ ಎಂದುಕೊಂಡೆ.
ನೋಡೋಣ ಈ ಚಹಾ ಅಂಗಡಿಯವನಿಗಾದರು ಗೊತ್ತಿರಬಹುದು, ಬರಲಿ ಅವ ಎಂದು ಸುಮ್ಮನಾದೆ. ಕೆಲ ಹೊತ್ತಿನ ನಂತರ ಹಬೆಯಾಡುತ್ತಿದ್ದ ಬಿಸಿ ಬಿಸಿ ಚಹಾ ಜೊತೆಗೆ ಬಂದ ಅವ. ಅವನ ಬಳಿ `ಹೊಯ್, ಈ ದಾರಿಯಲ್ಲಿ ಈಗಷ್ಟೇ ಯಾವುದಾದ್ರೂ ಲಾರಿ ಹೋಗಿದ್ದು ನೋಡಿದ್ರಾ' ಎಂದು ಕೇಳಿದೆ.
`ಲಾರಿಯಾ? ಯಾವ ಲಾರಿ? ಹೇಗಿದೆ ಬಣ್ಣ?' ಎಂದು ನನ್ನ ಬಳಿಯೇ ಮರು ಪ್ರಶ್ನೆ ಹಾಕಿದ. ಅದಕ್ಕೆ ನಾನು ಮೊದಲಿಂದ ನಡೆದ ಎಲ್ಲ ವಿಷಯ ಹೇಳಿದೆ.
ಅದಕ್ಕೆ ಕೊನೆಗೆ ಅವನು ಹೇಳಿದ ` ಹೊಯ್ ಮಾರಾಯ್ರೆ, ನಿಮ್ಮ ಅದೃಷ್ಟ ಚೊಲೋ ಇದೆ ಬಿಡಿ'ಎಂದ
ನಾನು ಗಾಬರಿಯಾಗಿ `ಯಾಕೆ ಎಂತ ಆಯಿತು?' ಎಂದೇ.
`ಅದು ಲಾರಿಯಲ್ಲ. ನೀವು ಬಂದಿದ್ದು ಲಾರಿಯ ಜೊತೆಗೂ ಅಲ್ಲ'
`ಮತ್ತೆ.. ಎಂತದ್ದು ಅದು?'
`ಅದು ಈ ಭಾಗದ ಭೂತ'
`ತಮಾಷೆ ಮಾಡಬೇಡಿ ಮಾರಾಯ್ರೆ.. ನಾನು ಆ ಲಾರಿಯ ಜೊತೆಗೆ ಬಂದಿದ್ದೆ, ಅದರ ಬೆಳಕು ಕಂಡಿದ್ದೇನೆ. ಆ ಲಾರಿ ಸೂಸುತ್ತಿದ್ದ ಹೊಗೆಗೆ ಮುಖ ಕೊಟ್ಟಿದ್ದೇನೆ. ಆ ಹೊಗೆಯ ಬಿಸಿ ಅನುಭವ ನನಗಾಗಿದೆ..' ಎಂದೇ.
`ಹ್ಮ್ಮ್,. ಈ ಥರ ಅನುಭವ ಹಲವರಿಗಾಗಿದೆ. ಬಹಳ ಜನರು ಇದೆ ರೀತಿ ಹೇಳಿದ್ದಾರೆ. ಆದರೆ ನಿಜಕ್ಕೂ ಅಂತಹ ಲಾರಿ ಇಲ್ಲವೇ ಇಲ್ಲ..' ಎಂದ.
ನಾನು ಬೆಪ್ಪಾಗಿ ನೋಡಲು ಆರಂಭಿಸಿದೆ.
`ಸುಮಾರು ವರ್ಷಗಳ ಹಿಂದೆ ಕತ್ತಲೆಕನು ಘಟ್ಟದಲ್ಲಿ ತಮಿಳುನಾಡಿನ ಲಾರಿಯೊಂದು ಉರುಳಿ ಶರಾವತಿ ಕಣಿಗೆಗೆ ಬಿದ್ದಿತ್ತು. ಆ ಲಾರಿಯಲ್ಲಿದ್ದ ಡ್ರೈವರ್ ಹಾಗೂ ಕ್ಲೀನರ್ ಇಬ್ಬರೂ ಸಾವನ್ನಪ್ಪಿದ್ದರು. ಅವರ ಹೆಣ ಕೂಡ ಸಿಕ್ಕಿರಲಿಲ್ಲ. ಅಂದಿನಿಂದ ಈ ಲಾರಿ ಭೂತ ಹಲವರನ್ನು ಕಾಡುತ್ತಿದೆ ನೋಡಿ.' ಎಂದ.
` ಈ ಲಾರಿ ಹಲವರಿಗೆ ಸಿಕ್ಕಿದೆ. ಹಲವರನ್ನು ಹೆದರಿಸಿದೆ,. ಕಾಡಿದೆ. ಬೀಳಿಸಿದೆ. ಹಲವಾರು ಗಾಯಗೊಂಡಿದ್ದಾರೆ. ಹಲವಾರು ತೀವ್ರ ಜ್ವರದಿಂದ ಬಳಲಿದ್ದಾರೆ. ಹಲವಾರು ಮತಿಭ್ರಮಣೆಗೆ ಒಳಗಾಗಿದ್ದಾರೆ. ಅದರಲ್ಲಿ ಇಷ್ಟುಹೊತ್ತು ಸರಿಯಾಗಿ ಇದ್ದಿದ್ದು ಎಂದರೆ ನೀವೊಬ್ಬರೇ ಇರಬೇಕು ನೋಡಿ' ಎಂದ.
ತಕ್ಷಣ ನನಗೆ ಆ ಲಾರಿ, ಅದರ ಹೊಗೆಯ ಅನುಭವ, ಅದರಿಂದ ಕೇಳಿ ಬರುತ್ತಿದ್ದ ತಮಿಳು ಹಾಡು ಎಲ್ಲ ನೆನಪಾಯಿತು. ಅದು ಭೂತವಾಗಿತ್ತು ಎಂದು ಕೇಳಿದಾಗಿನಿಂದ ಬರಲು ಶುರುವಾಗಿದ್ದ ಬೆವರು ಇನ್ನಷ್ಟು ಧಾರಾಕಾರವಾಗಿತ್ತು.
ನಾನು ಚಹಾದ ಬಿಲ್ಲು ಕೊಡುವಂತೆ ನನ್ನ ಮುಂದೆ ನಿಂತಿದ್ದ ಹೋಟೆಲಿನವನ ಕಾಲಿನ ಕಡೆಗೆ ದೃಷ್ಟಿ ಹೋಯಿತು. ಏನೋ ಸರಿ ಇಲ್ಲ ಎನ್ನುವಂತೆ ಅನ್ನಿಸಿತು. ದಿಟ್ಟಿಸಿ ನೋಡಿದೆ. ಆತನ ಕಾಲು ನೋಡಿ ಒಮ್ಮೆ ಎದೆಯಲ್ಲಿ ಚಳುಕು ಶುರುವಾಯಿತು. ಆತನ ಕಾಲು ತಿರುಗಾಮುರುಗ ಇತ್ತು. ಅಂದರೆ ಈತನೂ ಭೂತನೇ? ಅಯ್ಯೋ ದೇವರೇ.. ಎಲ್ಲಿಗೆ ಬಂದೇನಪ್ಪಾ ನಾನು ಎಂದುಕೊಳ್ಳುತ್ತಿರುವಂತೆ ಮೈಯಲ್ಲಿ ನಡುಕ ಶುರುವಾಗಿತ್ತು. ಎದೆಯಲ್ಲಿ ಅದೇನೋ ನೋವು. `ಅಹ್...' ಎಂದೇ. ಅದೇ ನನ್ನ ಕೊನೆಯ ಶಬ್ಧವಾಗಿತ್ತು.
(ಮುಗಿಯಿತು)
Monday, December 30, 2019
ಕತ್ತಲೆಕಾನು (ಕಥೆ ಭಾಗ- 2)
(ಮುಂದುವರಿಯುವುದು)
Wednesday, October 30, 2019
ಕತ್ತಲೆಕಾನು (ಕಥೆ ಭಾಗ 1)
'ಅರ್ಜೆಂಟ್ ಸಾಗರಕ್ಕೆ ಬಾ..' ಎಂದು ಸಹೋದರ ಗುರುಪ್ರಸಾದನಿಂದ ದೂರವಾಣಿ ಕರೆ. ಏನು? ಯಾಕೆ? ಎಂಬ ಯಾವುದೇ ಪ್ರಶ್ನೆಗೆ ಉತ್ತರವಿರಲಿಲ್ಲ.
ಆಗಲೇ ಬಾನಂಚಿನಲ್ಲಿ ಸೂರ್ಯ ಇಳಿದು ಪಶ್ಚಿಮದಲ್ಲಿ ಅರಬ್ಬಿ ಜಲಧಿಯಲ್ಲಿ ಅಸ್ತಮಿಸುತ್ತಿದ್ದ. ಬಾನು-ಸಮುದ್ರದ ಗಡಿಯಾದ್ಯಂತ ಹೊಂಬಣ್ಣದ ಕಲಾಕೃತಿಯನ್ನು ಮೂಡಿಸಿದ್ದ.
'ನಾನು ಹೊನ್ನಾವರದಲ್ಲಿ ಇದ್ದೇನಲ್ಲ ಮಾರಾಯಾ. ಈಗ ಬೇರೆ ಸಂಜೆಯಾಗುತ್ತಿದೆ.. ಈಗ ಬರಬೇಕಾ?' ಕೊಂಚ ಆಲಸ್ಯದಿಂದ ಆತನಿಗೆ ಹೇಳಿದ್ದೆ.
'ಇವತ್ ಎಷ್ಟೇ ಹೊತ್ತಾದರೂ ನೀನು ಸಾಗರಕ್ಕೆ ಬರಲೇಬೇಕು.. ನೀನು ಬರಲಿಲ್ಲ ಅಂದರೆ ಬಹುಮುಖ್ಯ ಸಂಗತಿಯೊಂದನ್ನ ನೀನು ಕಳೆದುಕೊಳ್ಳಬಹುದು.. ರಾತ್ರಿ ಎಷ್ಟು ಹೊತ್ತಾದರೂ ತೊಂದರೆ ಇಲ್ಲ.. ನಾನು ಕಾಯುತ್ತಿರುತ್ತೇನೆ.. ಬಾ' ಎಂದು ಪೋನ್ ಇರಿಸಿದ್ದ.
ಇದೊಳ್ಳೆ ಕಥೆಯಾಯ್ತಲ್ಲ.. ಎಂದುಕೊಂಡೆ. ಒಲ್ಲದ ಮನಸ್ಸಿನಿಂದ ನಿಧಾನವಾಗಿ ಎದ್ದೆ. ನನ್ನ ಜತೆ ಒಯ್ದಿದ್ದ ಬಟ್ಟೆಯನ್ನು ಬ್ಯಾಗಿಗೆ ತುಂಬಿಕೊಂಡೆ. ನನ್ನ ಪಲ್ಸರಿನ ಕಿವಿಯನ್ನ ಹಿಂಡಿದೆ. ಗುರ್ರೆಂದು ಸದ್ದು ಮಾಡಿದ ಪಲ್ಸರ್ ನಿಧಾನವಾಗಿ ವೇಗ ಪಡೆದುಕೊಂಡಿತು.
ಶರಾವತಿ ತೀರದಿಂದ ಹಾದು ಬಿಎಚ್ ರೋಡ್ ಆರಂಭವಾಗುವ ಸರ್ಕಲ್ಲಿಗೆ ಬರುವ ವೇಳೆಗೆ ಚಹಾ ಕುಡಿಯುವ ಮನಸ್ಸಾಗಿ ಪಕ್ಕದಲ್ಲೇ ಇದ್ದ ಪೆಟ್ಟಿಗೆ ಅಂಗಡಿಗೆ ಹೋದೆ. ನನ್ನ ಹೊಟ್ಟೆಗೆ ಚಹಾವನ್ನೂ, ಬಾಹುಬಲಿ ಎಂದು ನಾನು ಆಪ್ತವಾಗಿ ಕರೆಯುವ ಪಲ್ಸರಿನ ಹೊಟ್ಟೆಗೆ ಪೆಟ್ರೂಲನ್ನೂ ಹತ್ತಿರದ ಬಂಕ್ ನಲ್ಲಿ ಸುರುವಿ ಸಾಗರದ ಕಡೆಗೆ ಪಯಣ ಬೆಳೆಸುವ ವೇಳೆಗಾಗಲೇ ಸಂಪೂರ್ಣ ಕತ್ತಲಾಗಿತ್ತು. ದೂರದ ದಿಗಂತದಲ್ಲಿ ಪಶ್ಚಿಮ ಘಟ್ಟಗಳ ಸಾಲು ಕರ್ರಗೆ, ಮಬ್ಬಾಗಿ ಕಾಣುತ್ತಿತ್ತು.
'ಹುಟ್ಟೆಟ್ಟೆಟ್ಟೆಟ್ರೋ...' ಎಂಬ ಟಿಟ್ಟಿಭ ಹಕ್ಕಿಯ ದೊಡ್ಡ ಸದ್ದಿನ ಆಲಾಪ ನನ್ನ ಬಾಹುಬಲಿಯ ಗುರ್ರೆಂಬ ಸದ್ದಿನ ನಡುವೆಯೂ ಕಿವಿಗಪ್ಪಳಿಸಿ ಒಮ್ಮೆ ಮನಸ್ಸಿನಲ್ಲಿ ಅಲೆಯನ್ನೆಬ್ಬಿಸಿತ್ತು.
ಅದಾಗಲೇ ಚಳಿಗಾಲ ಆರಂಭವಾಗಿದ್ದ ಕಾರಣ ತಿಳಿಯಾಗಿ ಇಬ್ಬನಿ ಧರೆಯನ್ನು ಚುಂಬಿಸಲು ಆರಂಭಿಸಿತ್ತು. ಎದುರಿನಿಂದ ಬರುತ್ತಿದ್ದ ವಾಹನಗಳ ದಟ್ಟ ಬೆಳಕು ಕಣ್ಣನ್ನ ಮಂಜಾಗಿಸುತ್ತಿತ್ತು. ರಾಷ್ಟ್ರೀಯ ಹೆದ್ದಾರಿಯಾಗಿದ್ದರೂ ನಿಧಾನವಾಗಿ ಬಾಹುಬಲಿಯನ್ನ ಓಡಿಸಲು ಆರಂಭಿಸಿದ್ದೆ.
ಕೆಲ ಸಮಯದ ನಂತರ ಕವಲಕ್ಕಿಯೂ ತದನಂತರ ಉಪ್ಪೋಣಿಯೂ ಸಿಕ್ಕಿತು. ಇಲ್ಲೇ ಅಲ್ಲವಾ ಹೈಗುಂದ ಇರುವುದು ಎಂದುಕೊಂಡು ಮುಂದಕ್ಕೆ ತೆರಳಿದೆ. ರಸ್ತೆಯ ಪಕ್ಕದಲ್ಲೆಲ್ಲೋ ಶರಾವತಿ ನಿಶ್ಶಬ್ಧವಾಗಿ ಹರಿಯುತ್ತಿದ್ದಳು. ಅಂಕು ಡೊಂಕಾದ ರಸ್ತೆಯಲ್ಲಿ ಬಾಹುಬಲಿ ನಿಯಮಿತ ವೇಗದಲ್ಲಿ ಓಡುತ್ತಿದ್ದ. ಹಾಗೂ ಹೀಗೂ ಗೇರುಸೊಪ್ಪೆಗೆ ಬರುವ ವೇಳೆಗಾಗಲೇ ದಟ್ಟ ರಾತ್ರಿ.
ಕಾಳುಮೆಣಸಿನ ರಾಣಿ ಚನ್ನಭೈರಾದೇವಿಯ ರಾಜಧಾನಿ ಗೇರುಸೊಪ್ಪೆ. ಚಿಕ್ಕದೊಂದು ಊರು. ಸಾಕಷ್ಟು ಅಂಗಡಿ, ಮಳಿಗೆಗಳಿವೆ. ಗೇರುಸೊಪ್ಪಾ ಅಣೆಕಟ್ಟೆಯ ಕೆಲಸಗಾರರಿಗಾಗಿ ನಿರ್ಮಿಸಿದ ಕಾಲೋನಿ, ಒಂದಷ್ಟು ಸರ್ಕಾರಿ ಕಚೇರಿಗಳು ಇಲ್ಲಿವೆ. ನದಿಯ ಇನ್ನೊಂದು ದಡದಲ್ಲಿ ಚನ್ನಭೈರಾದೇವಿ ಅರಮನೆಯ ಕುರುಹುಗಳೂ, ಜೈನ ಬಸದಿಯ ಅವಶೇಷಗಳೂ ಇವೆ. ಹೊನ್ನಾವರದ ಕಡೆಯಿಂದ ಬರುವ ರಾತ್ರಿ ವೇಳೆಯ ಬಸ್ಸುಗಳು, ಪ್ರವಾಸಿ ವಾಹನಗಳು ಗೇರುಸೊಪ್ಪೆಯ ಸಣ್ಣ ಸಣ್ಣ ಹೊಟೆಲ್ ಗಳ ಬಳಿ ನಿಲ್ಲುತ್ತವೆ. ಚಾಲಕರು ತಿಂಡಿಯನ್ನೋ, ಊಟವನ್ನೋ ಮಾಡಿ ಮುನ್ನಡೆಯುತ್ತಾರೆ. ಗೇರುಸೊಪ್ಪೆಯಿಂದ ಘಟ್ಟದ ರಸ್ತೆ ಆರಂಭವಾಗುವ ಕಾರಣ, ಅದೆಷ್ಟೋ ದೂರದ ವರೆಗೆ ಮನೆಗಳು, ಅಂಗಡಿಗಳು ಸಿಗದ ಕಾರಣ ಇಲ್ಲಿ ನಿಲ್ಲುವುದು ವಾಡಿಕೆಯಾಗಿಬಿಟ್ಟಿದೆ.
ಪಶ್ಚಿಮ ಘಟ್ಟದ ಸಾಲಿನ ಕೊನೆಯ ಅಂಚಿನ ತುಣುಕಾಗಿ ಗೇರುಸೊಪ್ಪೆ ಇದ್ದು ಕರಾವಳಿಗೂ-ಘಟ್ಟದ ನಾಡಿಗೂ ಬೆಸುಗೆಯಾಗಿ ನಿಂತಿದೆ. ನಾನು ಗೇರುಸೊಪ್ಪೆಯ ಬಳಿ ಬರುವ ವೇಳೆಗಾಗಲೇ ಸಮಯ ಒಂಭತ್ತು ಗಂಟೆಯನ್ನ ಮೀರಿಯಾಗಿತ್ತು. ಗೇರುಸೊಪ್ಪೆ ಬಹುತೇಕ ಬಾಗಿಲು ಹಾಕುವ ಸಮಯ ಅದು. ಒಂದೋ ಎರಡೋ ಅಂಗಡಿಗಳು, ಹೊಟೆಲುಗಳು ಬೆಳಕು ಬೀರುತ್ತಿದ್ದುದು ಬಿಟ್ಟರೆ ಬಹುತೇಕ ಊರಿಗೆ ನಿದ್ರಾಸುರನ ಛಾಯೆ ಆವರಿಸಿತ್ತು. ಬಿಎಚ್ ರಸ್ತೆಯಲ್ಲಿ ಆಗಲೇ ವಾಹನಗಳ ಸಂಖ್ಯೆ ಬಹಳ ಕಡಿಮೆಯಾಗಿತ್ತು.
ನಾನು ಎಷ್ಟೇ ವೇಗವಾಗಿ ಸಾಗಿದರೂ ಸಾಗರವನ್ನು ತಲುಪಲು ಹನ್ನೆರಡು ಗಂಟೆಯಾಗುತ್ತದೆ. ಆ ಹೊತ್ತಿನಲ್ಲಿ ಸಾಗರದಲ್ಲಿ ಯಾವುದೇ ಹೊಟೆಲ್ ತೆರೆದಿರುವುದಿಲ್ಲ. ಇನ್ನು ಘಟ್ಟದ ಮೇಲಿನ ಮಾವಿನಗುಂಡಿಯನ್ನು ತಲುಪಿದರೂ ಅಲ್ಲಿಯೂ ಹೊಟೆಲ್ ತೆರೆದಿರುವ ಅನುಮಾನ ಮನದಲ್ಲಿ ಮೂಡಿತು. ಯಾವುದಕ್ಕೂ ಗೇರುಸೊಪ್ಪೆಯಲ್ಲಿ ಊಟ ಮಾಡುವುದು ಒಳಿತು, ಎಂದುಕೊಂಡು ಅಲ್ಲಿನ ಹೊಟೆಲನ್ನು ಹೊಕ್ಕೆ.
ಹೊಟೆಲ್ ಒಳಕ್ಕೆ ಒಬ್ಬರೋ, ಇಬ್ಬರೋ ಜನರಿದ್ದರಷ್ಟೇ. ಅವರಾಗಲೇ ತಮ್ಮ ಊಟ ಮುಗಿಸಿ ಇನ್ನೇನು ಹೊರಡುವ ಹವಣಿಕೆಯಲ್ಲಿದ್ದರು. ರಾತ್ರಿ ಒಂಭತ್ತೂವರೆಯ ಮೇಲೆ ಬಂದ ಒಬ್ಬಂಟಿ ಪಯಣಿಗನಾದ ನನ್ನನ್ನು ಕೊಂಚ ಅನುಮಾನದಿಂದಲೇ ನೋಡಿ, ತಮ್ಮ ಕೆಲಸದಲ್ಲಿ ನಿರತರಾದರು. ನಾನೋ ವೃತ್ತಿಪರ ಬೈಕರ್ ಗಳ ಹಾಗೇ ಕೈಗೆ ದಪ್ಪನೆಯ ಗ್ಲೌಸ್, ಮೊಣಕಾಲಿಗೆ ಪಟ್ಟಿಯನ್ನೆಲ್ಲ ಕಟ್ಟಿಕೊಂಡಿದ್ದೆ. ಹೆಲ್ಮೆಟ್ಟನ್ನೂ ಸರಿಯಾಗಿ ಹಾಕಿ ಗಾಡಿ ಓಡಿಸದ ಅವರಿಗೆ ಇದು ಸ್ವಲ್ಪ ವಿಚಿತ್ರವಾಗಿ ಕಾಣಿಸಿತಿರಬೇಕು.
'ಏನು ಬೇಕು?' ಹೊಟೆಲಿನ ಓನರ್ ಹಾಗೂ ಸಪ್ಲಾಯರ್ ಆಗಿದ್ದ ವ್ಯಕ್ತಿ ಕೇಳಿದಾಗ ' ಊಟ..' ಅಂದೆ.
'ಕಾರವಾರ- ಬೆಂಗಳೂರು ಬಸ್ ಇವತ್ ಬಹಳ ಲೇಟಂತೆ.. ಈ ಸಾರಿ ಮಳೆಗಾಲ ಅಂತೂ ನಿಂತಿತಲ್ಲ..
ಇವತ್ತಿಂದ ಚಳಿ ಸ್ವಲ್ಪ ಶುರುವಾಗಿದೆ ಅಲಾ..
ಯಾವ್ ಥರ ಇಬ್ಬನಿ ಬೀಳ್ತಾ ಉಂಟು.. ಹೀಗೆ ಹಲವು ಮಾತುಗಳು ನನ್ನ ಕಿವಿಗೆ ಬಿದ್ದವು. ಕೆಲ ಕ್ಷಣದಲ್ಲಿ ಊಟ ಬಂದು, ನಾನು ಊಟವನ್ನು ಮುಗಿಸುವ ವೇಳೆಗಾಗಲೇ ಹೊಟೆಲ್ ಬಹುತೇಕ ಖಾಲಿ ಖಾಲಿಯಾಗಿತ್ತು.
ಬಿಲ್ ಕೊಡಲು ಹೋದಾಗ ನನಗೆ ಊಟವನ್ನು ಕೊಟ್ಟ ಯಜಮಾನರು ಸುಮ್ಮನೆ ಮಾತಿಗೆ ನಿಂತರು.
' ಎಲ್ಲಿಂದ ಬಂದದ್ದು..' ಎಂದರು..
'ಹೊನ್ನಾವರದಿಂದ..' ಎಂದೆ.
'ಯಾವ ಕಡೆ ಹೊರಟದ್ದು?'
'ಸಾಗರಕ್ಕೆ ಹೋಗಬೇಕು..'
'ಸಾಗರಕ್ಕಾ? ಈ ಹೊತ್ತಿನಲ್ಲಿ ಹೊರಟ್ರಾ? ನಿಮ್ಮದೆಂತ ಬೈಕಲ್ಲಿ ಸವಾರಿಯಾ?' ಎಂದು ತುಸು ಅಚ್ಚರಿ ಹಾಗೂ ಗಾಬರಿಯಿಂದ ಕೇಳಿದರು.
'ಹೌದು.. ಯಾಕೆ?' ನಾನು ಕೇಳಿದೆ.
'ಈ ಹೊತ್ತಿನಲ್ಲಿ ಒಬ್ಬಂಟಿಯಾಗಿ ಹೋಗೋದು ಬೇಡವಾಗಿತ್ತು..' ಸಣ್ಣದಾಗಿ ಹೇಳಿದರು.
'ಅಯ್ಯೋ ನನಗೇನು ತೊಂದರೆ ಇಲ್ಲ ಬಿಡಿ.. ಇದೇ ರಸ್ತೆಯಲ್ಲಿ ಅದೆಷ್ಟೋ ಸಾರಿ ಓಡಾಡಿದ್ದೇನೆ. ಅದೂ ಅಲ್ಲದೇ ಕರ್ನಾಟಕದ ಅದೆಷ್ಟೋ ಊರುಗಳನ್ನ ಬೈಕಿನಲ್ಲಿಯೇ ಸುತ್ತಿದ್ದೇನೆ. ಹಗಲು, ರಾತ್ರಿ ಎನ್ನದೇ ಓಡಾಡಿದ್ದೇನೆ...' ಎಂದೆ
'ಹೌದ? ಘಟ್ಟದ ರಸ್ತೆಯಲ್ಲಿ ಓಡಾಡಿದ್ದೀರಾ? ಕತ್ತಲೆಕಾನು ಘಟ್ಟದಲ್ಲಿ ಹೋಗಿದ್ದಿರಾ?' ಎಂದು ಕೇಳಿದರು.
' ಹು.. ಅರಬೈಲು, ದೇವಿಮನೆ, ಬಡಾಳ, ಅಂಬೋಲಿ, ಚಾರ್ಮಾಡಿ, ಬಿಸಿಲೆ ಹೀಗೆ ಅದೆಷ್ಟೋ ಘಟ್ಟದಲ್ಲಿನಾನು ಹಾಗೂ ನನ್ನ ಬಾಹುಬಲಿ ಏಕಾಂಗಿಯಾಗಿ ಓಡಾಡಿದ್ದೇವೆ. ಈ ಕತ್ತಲೆಕಾನು ಘಟ್ಟದಲ್ಲಿಯೂ ಮೂರ್ನಾಲ್ಕು ಸಾರಿ ಓಡಾಡಿದ್ದೇನೆ...' ಎಂದೆ.
'ಕತ್ತಲೆಕಾನು ಘಟ್ಟದಲ್ಲಿ ರಾತ್ರಿ ಹೋಗಿದ್ದೀರಾ?' ಮತ್ತೊಮ್ಮೆ ಕೇಳಿದರು ಅವರು.
'ರಾತ್ರಿ ಹೋಗಿಲ್ಲ.. ಆದರೆ ಹಗಲಿನಲ್ಲಿ ಓಡಾಡಿದ್ದೇನೆ..' ಎಂದೆ.
'ಅದನ್ನೇ ನಾನು ಕೇಳಿದ್ದು. ಕತ್ತಲೆಕಾನು ಘಟ್ಟ ಇದೆಯಲ್ಲ ಇದು ಎಲ್ಲದರಂತಲ್ಲ. ಶರಾವತಿ ನದಿಯ ಪಕ್ಕದಲ್ಲಿ ಹಾದು ಹೋಗುವ ಇದು ದಟ್ಟ ಕಾಡಿನ ಪ್ರದೇಶ.. ಇಲ್ಲಿ ಹಗಲಿನಲ್ಲಿಯೇ ಒಬ್ಬಂಟಿಯಾಗಿ ಓಡಾಡುವುದು ಅಪಾಯಕರ. ಇನ್ನು ರಾತ್ರಿ ಕೇಳಬೇಕೆ? ನಮ್ಮ ಜಿಲ್ಲೆಯಲ್ಲಿ ಎಲ್ಲೇ ಕಾಳಿಂಗ ಸರ್ಪದಂತಹ ವಿಷ ಜಂತುಗಳು, ಅದೆಷ್ಟೋ ಕಾಡುಮೃಗಗಳು ಸಿಕ್ಕರೂ ಅವನ್ನು ಕತ್ತಲೆಕಾನಿಗೆ ತಂದು ಬಿಡುತ್ತಾರೆ. ಕತ್ತಲೆಕಾನು ಕಾಳಿಂಗ ಸರ್ಪಗಳ ತವರು ಎಂದೇ ಖ್ಯಾತಿ. ಕಾಳಿಂಗ ಸರ್ಪಗಳ ಸಂತಾನೋತ್ಪತ್ತಿ ಸ್ಥಳವಂತೆ ಅದು..' ಎಂದರು ಅವರು.
ನಾನು ಮಧ್ಯದಲ್ಲಿಯೇ ಬಾಯಿ ಹಾಕಿ ' ಹಾ.. ಹಾ.. ಹೌದು ಹೌದು.. ನನಗೆ ಗೊತ್ತು ಅದು.. ಕತ್ತಲೆಕಾನಿನ ಕಾಳಿಂಗ ಸರ್ಪಗಳ ಬಗ್ಗೆ ಡಿಸ್ಕವರಿ ಚಾನಲ್ಲಿನವರು ದೊಡ್ಡ ಕಾರ್ಯಕ್ರಮವನ್ನೇ ಮಾಡಿದ್ದಾರೆ. ಕಾಡಿನಲ್ಲಿಯೇ ಓಡಾಡುತ್ತ ಇರುವ ನನಗೆ ಇವುಗಳ ಕುರಿತು ಅಷ್ಟೇನೂ ಭಯ ಇಲ್ಲ ಬಿಡಿ..' ಎಂದೆ.
'ವಿಷಯ ಅದಲ್ಲ... ' ಎಂದು ಮಾತು ನಿಲ್ಲಿಸಿದರು ಯಜಮಾನರು.
(ಮುಂದುವರಿಯುತ್ತದೆ)













