Saturday, November 1, 2014

ಭಲೆ ಭೀಮನವಾರೆ

(ಭೀಮನಗುಡ್ದದಲ್ಲಿ ಸೂರ್ಯೋದಯ)
ಮೂಡಣದಲ್ಲಿ ಸೂರ್ಯ ಉದಯಿಸುತ್ತಿದ್ದರೆ ಮನಸ್ಸಿನಲ್ಲಿ ಉಂಟಾಗುವ ರೋಮಾಂಚನ ಬಣ್ಣಿಸಲಸದಳ. ಬಾನು ಕೆಂಪಾಗಿ, ಕಿತ್ತಳೆ ಹಣ್ಣಿನ ಬಣ್ಣದಲ್ಲಿ ನೇಸರ ಆಗಸದಲ್ಲಿ ಎತ್ತರೆತ್ತರಕ್ಕೆ ಬರುತ್ತಿದ್ದರೆ ನೋಡುಗರ ಮನಸ್ಸಿನಲ್ಲಿ ಉಂಟಾಗುವ ಆನಂದ ಬಣ್ಣಿಸಲಸದಳ. ಇದು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಭೀಮನವಾರೆ ಗುಡ್ಡದ ಸುಂದರ ಚಿತ್ರಣ.
ಉತ್ತರ ಕನ್ನಡ ಜಿಲ್ಲೆಯಲ್ಲಿಯೇ ಅತ್ಯಂತ ಮಳೆ ಬೀಳುವ ಪ್ರದೇಶ ಎನ್ನುವ ಖ್ಯಾತಿಯನ್ನು ಗಳಿಸಕೊಂಡಿರುವ ಸಿದ್ದಾಪುರ ತಾಲೂಕಿನ ನಿಲ್ಕುಂದದ ಫಾಸಲೆಯಲ್ಲಿಯೇ ಇರುವ ಸುಂದರ ಸ್ಥಳ ಭೀಮನವಾರೆಗುಡ್ಡ. ಸೂರ್ಯೋದಯ ಹಾಗೂ ಸೂರ್ಯಾಸ್ತ ಕಣ್ಣು ತುಂಬಿಕೊಳ್ಳಲು ಹೇಳಿ ಮಾಡಿಸಿದಂತಹ ಸ್ಥಳ. ಪಶ್ಚಿಮ ಘಟ್ಟದ ಕೊಟ್ಟ ಕೊನೆಯಲ್ಲಿರುವ ಈ ಪ್ರದೇಶದಲ್ಲಿ ನಿಂತು ನೋಡಿದರೆ ಕರಾವಳಿ ಭಾಗದ ದೂರದೂರದ ಚಿತ್ರಣ ಕಣ್ಣಿಗೆ ತುಂಬುತ್ತದೆ. ಕೆಳಗಿನ ಆಳದಲ್ಲೆಲ್ಲೋ ಅಂಗೈನ ರೇಖೆಗಳ ಆಕಾರದಲ್ಲಿ ಹರಿದು ಹೋಗುವ ಅಘನಾಶಿನಿ ನದಿಯಂತೂ ಮನಸ್ಸಿನಲ್ಲಿ ಸಂತಸಕ್ಕೆ ರೆಕ್ಕೆ ಕಟ್ಟುತ್ತದೆ.
ನೆರಳು ಬೆಳಕಿನ ಚಿತ್ತಾರ
ದ್ವಾಪರಯುಗದಲ್ಲಿ ವನವಾಸದಲ್ಲಿದ್ದ ಪಾಂಡವರು ಈ ಪ್ರದೇಶದಲ್ಲೆಲ್ಲ ಸುತ್ತಾಡಿದ್ದರಂತೆ. ಆಗ ಭುಜಬಲ ಪರಾಕ್ರಮಿ ಭೀಮ ಈ ಸ್ಥಳದಲ್ಲಿ ಒಂದು ವಾರೆಯಾಗಿ ಮಲಗಿ ವಿಶ್ರಮಿಸಿದ್ದನಂತೆ. ಆ ಕಾರಣಕ್ಕಾಗಿಯೇ ಈ ಸ್ಥಳಕ್ಕೆ ಭೀಮನವಾರೆ ಗುಡ್ಡ ಎನ್ನುವ ಹೆಸರು ಬಂದಿದೆ. ಭೀಮ ಮಲಗಿದ್ದ ಎನ್ನುವುದಕ್ಕೆ ಕುರುಹು ಎಂಬಂತೆ ಭೂಮಿಯ ಮೇಲೆ ಮಡಿಕೆ ಮಡಿಕೆಗಳೆದ್ದಿವೆ. ತಲೆದಿಂಬಿನಂತಹ ರಚನೆ ಮೇಲಕ್ಕೆದ್ದು ವಿಸ್ಮಯವನ್ನು ಹುಟ್ಟಿಸುತ್ತದೆ. ಭೀಮನವಾರೆಗುಡ್ಡದ ತುತ್ತ ತುದಿಯಲ್ಲಿ ನಿಂತರೆ ಬೀಸಿ ಬರುವ ಅಬ್ಬರದ ಗಾಳಿಯಂತೂ ಎದೆಯೊಳಗೆ ತಲ್ಲಣವನ್ನು ಮುಡಿಸುವಂತದ್ದು. ಅಕ್ಕಪಕ್ಕದಲ್ಲಿ ಪ್ರಪಾತ ನಡುವೆ ಕಾಲು ಹಾದಿಯಷ್ಟೇ ಇರುವ ಗುಡ್ಡವಂತೂ ನೋಡಿದಷ್ಟೂ ಖುಷಿಯನ್ನು ಕೊಡುತ್ತದೆ.
ಭೀಮನಗುಡ್ಡದ ಸುತ್ತಮುತ್ತ ದಟ್ಟವಾದ ಕಾಡಿದೆ. ಗುಡ್ಡದ ತುದಿಯಲ್ಲಿ ನಿಂತುಕೊಂಡರೆ ಕೆಳಭಾಗದಲ್ಲಿ ಜಲಪಾತ ಧುಮ್ಮಿಕ್ಕುವ ಸದ್ದು ಕಿವಿಗಪ್ಪಳಿಸುತ್ತದೆ. ಕರಾವಳಿ ಪ್ರದೇಶವನ್ನು ಆವರಿಸಿರುವ ಮಂಜು, ಊದ್ದಕ್ಕೆ ಅಂಕುಡೊಂಕಾಗಿ ಹರಿದು ಹೋಗಿರುವ ಅಘನಾಶಿನಿ ನದಿ, ತಲವಾರಿನಲ್ಲಿ ಕಡಿದಂತೆ ಚೂಪಾಗಿರುವ ಗುಡ್ಡಗಳು ನೋಡಿದಷ್ಟೂ ನೋಡಬೇಕು ಎನ್ನಿಸುತ್ತದೆ. ಮುಂಜಾನೆ 6 ಗಂಟೆಗೆಲ್ಲ ಭೀಮನವಾರೆ ಗುಡ್ಡವನ್ನು ತಲುಪಿದರಂತೂ ಸೂರ್ಯೋದಯದ ಸೊಬಗನ್ನು ಕಣ್ತುಂಬಿಕೊಳ್ಳಬಹುದು. ಕರ್ನಾಟಕದಲ್ಲಿ ಆಗುಂಬೆಯ ಸೂರ್ಯೋದಯ, ಸೂರ್ಯಾಸ್ತ ಹೆಸರುವಾಸಿ. ಅದಕ್ಕೆ ಸಾಟಿಯಾಗುವಂತಹ ಸೌಂದರ್ಯ ಭೀಮನವಾರೆಗುಡ್ಡದ್ದು ಎಂದರೂ ತಪ್ಪಾಗಲಿಕ್ಕಿಲ್ಲ.
ಈ ಸುಂದರ ತಾಣವನ್ನು ನೋಡಲು ರಾಜ್ಯ, ಹೊರ ರಾಜ್ಯಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ಬೆಳಗಿನ ಜಾವದಲ್ಲಿ ಗುಡ್ಡವನ್ನೇರುತ್ತಾರೆ. ಜೊತೆ ಜೊತೆಯಲ್ಲಿಯೇ ಸಂಜಯಾಗುವುದನ್ನೇ ಕಾಯುತ್ತ ಸೂಯರ್ಾಸ್ತವನ್ನು ನೋಡಿ ಆನಂದಿಸುತ್ತಾರೆ. ಭೀಮನವಾರೆ ಗುಡ್ಡವನ್ನು ನೋಡಲು ಆಗಮಿಸುವ ಪ್ರವಾಸಿಗರು ಹತ್ತಿರದಲ್ಲಿಯೇ ಇರುವ ಉಂಚಳ್ಳಿ ಜಲಪಾತ, ವಾಟೆಹೊಳೆ ಜಲಪಾತ, ನಿಲ್ಕುಂದದ ಪ್ರಾಚೀನ ದೇವಾಲಯ ವೀಕ್ಷಣೆ ಮಾಡಬಹುದಾಗಿದೆ. 10 ಕಿ.ಮಿ ಅಂತರದಲ್ಲೇ ಇರುವ ಲಕ್ಕಿಕುಣಿ ಬೆಟ್ಟ, ಬೆಣ್ಣೆಹೊಳೆ ಜಲಪಾತ, ಮಂಜುಗುಣಿ ದೇವಾಲಯಗಳನ್ನೂ ನೋಡಬಹುದಾಗಿದೆ. ಈ ಪ್ರಸಿದ್ಧ ತಾಣಕ್ಕೆ ಆಗಮಿಸುವವರು ಸಿದ್ದಾಪುರಕ್ಕೆ ಆಗಮಿಸಿ ಹಾರ್ಸಿಕಟ್ಟಾ ಹೆಗ್ಗರಣಿಯ ಮೂಲಕ ಬರಬಹುದಾಗಿದೆ. ಹುಬ್ಬಳ್ಳಿ ಭಾಗದ ಪ್ರವಾಸಿಗರು ಶಿರಸಿ-ಅಮ್ಮೀನಳ್ಳಿ ಮೂಲಕ ಭೀಮನಗುಡ್ಡವನ್ನು ತಲುಪಬಹುದಾಗಿದೆ. ಮಂಗಳೂರು ಭಾಗದವರು ಕುಮಟಾದಿಂದ ಬಂಡಲಕ್ಕೆ ಆಗಮಿಸಿ ಅಲ್ಲಿಂದ ಭೀಮನವಾರೆಗುಡ್ಡ ತಲುಪಬಹುದಾಗಿದೆ. ಶಿರಸಿಯಿಂದ 33 ಕಿ.ಮಿ, ಸಿದ್ದಾಪುರದಿಂದ 45 ಕಿ.ಮಿ ಹಾಗೂ ಕುಮಟಾದಿಂದ 60 ಕಿ.ಮಿ ದೂರದಲ್ಲಿ ಈ ಸುಂದರ ಸ್ಥಳವಿದೆ.
ಭೀಮನವಾರೆ ಗುಡ್ಡಕ್ಕೆ ಆಗಮಿಸುವ ಪ್ರವಾಸಿಗರು ಇತ್ತೀಚಿನ ದಿನಗಳಲ್ಲಿ ಇಲ್ಲಿನ ಪರಿಸರವನ್ನು ಹಾಳುಗೆಡವುವ ಕಾರ್ಯ ಮಾಡುತ್ತಿದ್ದಾರೆ. ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಕವರ್ ಬಿಸಾಡುವುದು, ತಿನ್ನಲು ತಂದ ತಿಂಡಿಗಳನ್ನು ಎಸೆಯುವ ಕೆಲಸ ಮಾಡುತ್ತಿದ್ದಾರೆ. ಭೀಮನಗುಡ್ಡದಲ್ಲಿ ನಿರ್ಮಾಣ ಮಾಡಿರುವ ವೀಕ್ಷಣಾ ಗೋಪುರದಲ್ಲಿ ಫೈರ್ ಕ್ಯಾಂಪ್ ಮಾಡುವ ಮೂಲಕ ಅದನ್ನು ಹಾಳುಮಾಡುತ್ತಿದ್ದರೆ ಗೋಪುರದ ಗೋಡೆಗಳ ಮೇಲೆ ತಮ್ಮ ವಿಕಾರ ಅಕ್ಷರಗಳನ್ನು ಬರೆಯುವ ಮೂಲಕ ಅಂದಗೆಡಿಸುತ್ತಿದ್ದಾರೆ. ಈ ತಾಣದ ಸುತ್ತಮುತ್ತ ಎಲ್ಲೆಂದರಲ್ಲಿ ಮದ್ಯದ ಬಾಟಲಿಗಳನ್ನು ಎಸೆಯಲಾಗಿದೆ. ಭೀಮನಗುಡ್ಡಕ್ಕೆ ಆಗಮಿಸುವ ಪ್ರವಾಸಿಗರು ಇಂತಹ ಕಾರ್ಯಗಳನ್ನು ನಿಲ್ಲಿಸಬೇಕಾಗಿದೆ. ನಿಸರ್ಗದ ಮಡಿಲಿನಲ್ಲಿರುವ ಸುಂದರ ಪ್ರದೇಶದ ಅಂದಗೆಡದಂತೆ ನೋಡಿಕೊಳ್ಳುವ ಜವಾಬ್ದಾರಿ ಪ್ರವಾಸಿಗರ ಮೇಲಿದೆ. ನಮ್ಮದೇ ನಾಡಿನ ಭಾಗವನ್ನು ಸುಂದರವಾಗಿ ಇಟ್ಟುಕೊಳ್ಳುವ ಕಾರ್ಯವೂ ನಡೆಯಬೇಕಾಗಿದೆ.

Thursday, October 30, 2014

ಒಪ್ಪಿಬಿಡು ಮನವೇ

(ಚಿತ್ರ : ವಿನಾಯಕ ಹೆಗಡೆ)
ಒಪ್ಪಿಬಿಡು ಮನವೇ ನೀ
ನನ್ನೊಡಲ ಪ್ರೀತಿಯಾ
ತೊರೆಯದಿರು ಜೊತೆ ನೀನು
ನನ್ನೊಡಲ ಬುತ್ತಿಯಾ |

ನೀನಿರುವೆ ನನ ಪ್ರಾಣ
ಸಕಲ ಜೀವವೂ ನೀನು
ನನ್ನ ಬಾಳೆಲೆಯ ನವ
ಚೈತ್ರದುಸಿರು ನೀನು |

ನಾನು ನಿನ್ನಯ ಪ್ರೇಮಿ
ಜೊತೆ ಬಾಳ್ವೆ, ನಿನ್ನ ಹಿತ
ಬಾಳು ಕರಗುವ ಮುನ್ನ
ಒಮ್ಮೆ ಒಪ್ಪಿಬಿಡು ಮನವೇ |

ಕಳೆದಿರಲಿ ಹಳೆ ದುಃಖ
ಮೂಡಿ ಬರಲೀ ಪ್ರೀತಿ
ನನ್ನ ನೀನೊಪ್ಪಿದೊಡೆ
ಬಾಳ್ವೆ ಪೂರಾ ಸ್ವಾತಿ ||

***
(ಈ ಕವಿತೆಯನ್ನು ಬರೆದಿರುವುದು 01-11-2006ರಂದು ದಂಟಕಲ್ಲಿನಲ್ಲಿ)

Monday, October 27, 2014

ಮುರೇಗಾರ್ ಸಮಸ್ಯೆಗೆ ಮುಕ್ತಿ ಎಂದು?

(ಮುರೇಗಾರ್ ಜಲಪಾತ)

          ಶಿರಸಿ ತಾಲೂಕಿನ ಸಾಲ್ಕಣಿ ಗ್ರಾ.ಪಂ ವ್ಯಾಪ್ತಿಯ ಮುರೇಗಾರ್ ಹಾಗೂ ಸುತ್ತಮುತ್ತಲ ಪ್ರದೇಶಗಳು ಹಲವಾರು ಸಮಸ್ಯೆಗಳಿಂದ ಬಳಲುತ್ತಿವೆ. ಅಸಮರ್ಪಕ ರಸ್ತೆ, ವಿದ್ಯುತ್ ಸಮಸ್ಯೆ ಈ ಊರುಗಳನ್ನು ಬಾಧಿಸುತ್ತಿದೆ.
ಶಿರಸಿಯನ್ನು ಜಿಲ್ಲೆಯಲ್ಲಿ ಮುಂದುವರಿದ ತಾಲೂಕು ಎಂದು ಕರೆಯಲಾಗುತ್ತದೆ. ಈ ತಾಲೂಕಿನ ಸಾಲ್ಕಣ ಪಂಚಾಯತ ವ್ಯಾಪ್ತಿಯಲ್ಲಿರುವ ಮುರೇಗಾರ್ ಹಾಗೂ ಸುತ್ತಮುತ್ತಲ ಪ್ರದೇಶಗಳು ಸಮರ್ಪಕ ರಸ್ತೆ ಸಂಚಾರದಿಂದ ಬವಣೆ ಎದುರಿಸುವಂತಾಗಿದೆ. ಮುರೇಗಾರ್, ಹುಡ್ಲೇಜಡ್ಡಿ, ದುಗ್ಗುಮನೆ, ಶಿರ್ಲಬೈಲ್, ಮಳ್ಳಿಕೈ ಈ ಮುಂತಾದ ಊರುಗಳಿಗೆ ತೆರಳುವ ರಸ್ತೆ ತೀವ್ರವಾಗಿ ಹಾಳಾಗಿದ್ದು ಸಂಚಾರ ಅಸಾಧ್ಯ ಎನ್ನುವಂತಾಗಿದೆ.
ಶಿರಸಿಯಿಂದ ಸಾಲ್ಕಣಿಗೆ ತೆರಳುವ ಮುಖ್ಯ ರಸ್ತೆಯಿಂದ 5 ಕಿ.ಮಿ ಅಂತರದಲ್ಲಿ ಈ ಎಲ್ಲ ಊರುಗಳಿವೆ. ಈ ಊರಿಗೆ ತೆರಳಲು ಡಾಂಬರು ರಸ್ತೆಯನ್ನು ನಿರ್ಮಾಣ ಮಾಡಲಾಗಿದೆ. ಆದರೆ ನಿರ್ವಹಣೆಯ ಕೊರತೆಯಿಂದಾಗಿ ಡಾಂಬರು ರಸ್ತೆ ಈಗಾಗಲೇ ಕಿತ್ತು ಹೋಗಿದೆ. ರಸ್ತೆಯಲ್ಲಿ ದೊಡ್ಡ ದೊಡ್ಡ ಹೊಂಡಗಳು ಉಂಟಾಗಿದ್ದು ಮಾರ್ಗದಲ್ಲಿ ಸಂಚಾರ ಮಾಡುವವರು ಹರಸಾಹಸ ಪಡಬೇಕಾದ ಪರಿಸ್ಥಿತಿಯಿದೆ. ಈ ಮಾರ್ಗದಲ್ಲಿ ಸಿಗುವ ಘಟ್ಟ ಪ್ರದೇಶದಲ್ಲಂತೂ ಡಾಂಬರು ರಸ್ತೆಯನ್ನು ಹುಡುಕಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ದ್ವಿಚಕ್ರ ವಾಹನ ಸವಾರರಂತೂ ರಸ್ತೆಯಲ್ಲಿ ಎದ್ದಿರುವ ಕಲ್ಲುಗಳು ಯಾವ ಕ್ಷಣದಲ್ಲಿ ವಾಹನವನ್ನು ಪಂಚರ್ ಮಾಡುತ್ತದೆಯೋ ಎನ್ನುವ ಭಯದಿಂದಲೇ ಸಾಗಬೇಕಾಗಿದೆ. ದೊಡ್ಡ ದೊಡ್ಡ ಹೊಂಡಗಳಲ್ಲಿ ನೀರು ತುಂಬಿಕೊಂಡಿದ್ದು ಸಂಪೂರ್ಣ ರಸ್ತೆಯನ್ನು ಆವರಿಸಿಕೊಂಡಿದೆ. ಹೊಂಡದ ಆಳವನ್ನರಿಯೇ ಮುಂದೆ ಸಾಗುವವರು ಬಿದ್ದ ಉದಾಹರಣೆಗಳೂ ಇದೆ.
ಈ ರಸ್ತೆಯನ್ನು 2004ರಿಂದ 2006ರ ಅವಧಿಯಲ್ಲಿ ಡಾಂಬರೀಕರಣ ಮಾಡಲಾಗಿದೆ. ಆದರೆ ರಸ್ತೆ ನಿರ್ಮಾಣ ಮಾಡಿದ ದಶಕಗಳು ಕಳೆಯುವಲ್ಲಿಯೇ ಸಂಪೂರ್ಣ ಹಾಳಾಗಿರುವುದು ಕಾಮಗಾರಿಯ ಗುಣಮಟ್ಟವನ್ನು ತೋರಿಸುತ್ತದೆ. ಈ ವರ್ಷ ಈ ರಸ್ತೆ ಮರುಡಾಂಬರೀಕರಣಕ್ಕಾಗಿ 1.5 ಲಕ್ಷ ರು. ಬಿಡುಗಡೆಯಾಗಿತ್ತು. ಆದರೆ ಈ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿಲ್ಲ. ಇದರಿಂದಾಗಿ 200ಕ್ಕೂ ಅಧಿಕ ಮನೆಗಳ 3000ಕ್ಕೂ ಹೆಚ್ಚಿನ ಜನರು ಹಾಳಾದ ರಸ್ತೆಯಲ್ಲಿ ಪ್ರಯಾಸದಿಂದ ಸಾಗುವ ಪರಿಸ್ಥಿತಿ ನಿರ್ಮಾಣಗೊಂಡಿದೆ.
ಮುರೇಗಾರ್ ಜಲಪಾತಕ್ಕೆ ತೆರಳುವ ರಸ್ತೆಯನ್ನು ಕಳೆದ ವರ್ಷ ಅಗಲೀಕರಣ ಮಾಡಲಾಗಿತ್ತು. ಇದಕ್ಕಾಗಿ 1.20 ಲಕ್ಷ ರು. ವೆಚ್ಚದಲ್ಲಿ ಅಲ್ಲಲ್ಲಿ ಅಗಲೀಕರಣವನ್ನೂ ಕೈಗೊಳ್ಳಲಾಗಿತ್ತು. ಆದರೆ ಈ ವರ್ಷದ ಮಳೆಗೆ ರಸ್ತೆ ಸಂಪೂರ್ಣ ಕೊಚ್ಚಿಕೊಂಡು ಹೋಗಿದೆ. ಕೆಲವು ಕಡೆಗಳಲ್ಲಂತೂ ರಸ್ತೆಯ ಮಧ್ಯದಲ್ಲಿಯೇ ದೊಡ್ಡ ದೊಡ್ಡ ಕಾಲುವೆಗಳು ಉಂಟಾಗಿವೆ. ದುಗ್ಗುಮನೆ ಸನಿಹದಲ್ಲಿ ಮೋರಿಯೊಂದರ ಪಾಶ್ರ್ವ ಮಳೆ ನೀರಿಗೆ ಕೊಚ್ಚಿಕೊಂಡು ಹೋಗಿದೆ. ಮುರೇಗಾರ್ ಜಲಪಾತವನ್ನು ವೀಕ್ಷಣೆ ಮಾಡಲು ಆಗಮಿಸುವ ಪ್ರವಾಸಿಗರು ಈ ಮಾರ್ಗದಲ್ಲಿ ಕಷ್ಟಪಟ್ಟು, ರಸ್ತೆಯನ್ನು ಹಳಿಯುತ್ತ ಪ್ರಯಾಣ ಮಾಡುತ್ತಿದ್ದಾರೆ. ಹೊಂಡಮಯ ರಸ್ತೆಯಿಂದಾಗಿ ಹೈರಾಣಾಗುತ್ತಿದ್ದಾರೆ.
(ಹಾಳು ರಸ್ತೆ)
ಸಾಲ್ಕಣಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ವಿದ್ಯುತ್ ಸಮಸ್ಯೆಯೂ ತೀವ್ರವಾಗಿದೆ. ಮುರೇಗಾರ್ ಹಾಗೂ ಸುತ್ತಮುತ್ತಲ ಊರುಗಳಿಗೆ ಸಾಲ್ಕಣಿ ಸಮೀಪದ ಟಿ.ಸಿ.ಯಿಂದಲೇ ವಿದ್ಯುತ್ ಸರಬರಾಜು ಆಗುತ್ತದೆ. ಆದರೆ ಅಸಮರ್ಪಕ ವಿದ್ಯುತ್ ಸರಬರಾಜಿನ ಕಾರಣ ಕತ್ತಲೆಯಲ್ಲಿಯೇ ಕಾಲಕಳೆಯುವ ಪರಿಸ್ಥಿತಿ ಈ ಭಾಗದ ಜನರದ್ದಾಗಿದೆ. ಪದೇ ಪದೆ ಟಿ.ಸಿ. ಹಾಳಾಗುತ್ತದೆ. ವಿದ್ಯುತ್ ಮಾರ್ಗದಲ್ಲಿ ದೋಷ ಸಂಭವಿಸುತ್ತದೆ. ವಿದ್ಯುತ್ ತಂತಿಗಳ ಮೇಲೆ ಮರದ ರೆಂಬೆಗಳು ಮುರಿದು ಬೀಳುತ್ತಿರುತ್ತದೆ. ಆದರೆ ಹೆಸ್ಕಾಂ ಈ ಭಾಗದ ಕಡೆಗೆ ಗಮನ ಹರಿಸುತ್ತಿಲ್ಲ. ಹುಲೇಕಲ್, ಸಾಲ್ಕಣಿ ಭಾಗದಲ್ಲಿರುವ ಲೈನ್ಮನ್ ಮುರೇಗಾರ್ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ವಿದ್ಯುತ್ ಸಮಸ್ಯೆ ಉಂಟಾದರೆ ಆ ಕಡೆಗೆ ಆಗಮಿಸುವುದೇ ಇಲ್ಲ. ಕಳೆದ ಎರಡು-ಮೂರು ವರ್ಷಗಳಲ್ಲಿ ಒಮ್ಮೆಯೂ ಈ ಗ್ರಾಮಗಳಿಗೆ ಬಂದಿಲ್ಲ ಎಂದು ಸ್ಥಳೀಯರು ಕಿಡಿಕಾರುತ್ತಾರೆ. ಈ ಕುರಿತು ಇಲಾಖೆಯ ಅಧಿಕಾರಿಗಳಲ್ಲಿ ಕೇಳಿದರೆ ಗ್ರಾಮಸ್ಥರೆ ಸರಿಪಡಿಸಿಕೊಳ್ಳಿ ಎಂದು ಉತ್ತರ ನೀಡಿದ್ದಾರೆ. ಇದರಿಂದಾಗಿ ಮುರೇಗಾರ್, ದುಗ್ಗುಮನೆ, ಶಿರ್ಲಬೈಲ್, ಹುಡ್ಲೆಜಡ್ಡಿ, ಮಳ್ಳಿಕೈ ಈ ಮುಂತಾದ ಕಡೆಗಳಲ್ಲಿ ವಿದ್ಯುತ್ ಸಮಸ್ಯೆ ಉಂಟಾದರೇ ಸ್ಥಳೀಯರೇ ಸರಿಪಡಿಸಿಕೊಳ್ಳುತ್ತಿದ್ದಾರೆ.
ಶಿರಸಿಯಿಂದ ಕೇವಲ 22 ಕಿ.ಮಿ ದೂರದಲ್ಲಿರುವ ಈ ಗ್ರಾಮಗಳಲ್ಲಿ ಸಮಸ್ಯೆಗಳು ಜ್ವಲಂತವಾಗಿದೆ. ಅಗತ್ಯ ವಸ್ತುಗಳನ್ನು ಕೊಳ್ಳಲು ಸಾಲ್ಕಣಿ, ಹುಲೇಕಲ್ ಅಥವಾ ಶಿರಸಿಗೆ ಆಗಮಿಸುವ ಅನಿವಾರ್ಯತೆಯಿದೆ. ಆದರೆ ರಸ್ತೆ ಸಮರ್ಪಕವಾಗಿಲ್ಲ. ವಿದ್ಯುತ್ ಸಮಸ್ಯೆ ತೀವ್ರವಾಗಿದೆ. ಕಳೆದ ಅವಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದವರು ಈ ಕುರಿತು ಗಮನ ಹರಿಸಿಲ್ಲ ಎನ್ನುವ ಆಕ್ರೋಶ ಗ್ರಾಮಸ್ಥರಲ್ಲಿದೆ. ಈಗಲೂ ಯಾವುದೇ ಜನಪ್ರತಿನಿಧಿಗಳು ತಮ್ಮ ಗೋಳನ್ನು ಕೇಳುತ್ತಿಲ್ಲ. ಪ್ರವಾಸಿ ತಾಣವಾದ ಮುರೇಗಾರ್ ಜಲಪಾತಕ್ಕೆ ತೆರಳುವ ರಸ್ತೆಯನ್ನೂ ಸರಿಪಡಿಸಲು ಮುಂದಾಗಿಲ್ಲ. ಆ ನೆಪದಲ್ಲಾದರೂ ಈ ಊರುಗಳಿಗೆ ಸರ್ವಋತು ರಸ್ತೆಯಾಗುತ್ತದೆ ಎನ್ನುವ ಕನಸು ಕನಸಾಗಿಯೇ ಉಳಿದಿದೆ. ಜಿಲ್ಲೆಯವರೇ ಆದ ಪ್ರವಾಸೋದ್ಯಮ ಸಚಿವರು, ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು ಇತ್ತ ಗಮನ ಹರಿಸಬೇಕಿದೆ. ರಸ್ತೆ ಹಾಗೂ ವಿದ್ಯುತ್ ಸಮಸ್ಯೆಗೆ ಪೂರ್ಣವಿರಾಮ ಹಾಕಬೇಕಾದ ಅಗತ್ಯವಿದೆ.

***
ರಸ್ತೆ ಹಾಗೂ ವಿದ್ಯುತ್ ಸಮಸ್ಯೆ ನಮ್ಮ ಭಾಗದಲ್ಲಿ ತೀವ್ರವಾಗಿದೆ. ರಸ್ತೆಯಲ್ಲಿ ದೊಡ್ಡ ದೊಡ್ಡ ಹೊಂಡಗಳು ಬಿದ್ದಿದ್ದು ಸಂಚರಿಸುವುದು ಅಸಾಧ್ಯ ಎನ್ನುವಂತಾಗಿದೆ. ರಸ್ತೆ ದುರಸ್ತಿ ಮಾಡಿಸಿಕೊಡಿ ಎಂದು ಹಲವಾರು ಸಾರಿ ಅರ್ಜಿ ಅದಕ್ಕೆ ಮನ್ನಣೆ ದೊರಕಿಲ್ಲ. ಈ ಭಾಗದಲ್ಲಿ ವಿದ್ಯುತ್ ಸಮಸ್ಯೆ ತೀವ್ರವಾಗಿದೆ. ಲೈನ್ಮನ್ ಈ ಭಾಗಕ್ಕೆ ವಿದ್ಯುತ್ ಸಮಸ್ಯೆಯನ್ನು ಸರಿಪಡಿಸಲು ಆಗಮಿಸುವುದೇ ಇಲ್ಲ. ಸ್ಥಳೀಯರೇ ದುರಸ್ತಿ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಈ ಸಮಸ್ಯೆಗಳನ್ನು ಸಂಬಂಧಪಟ್ಟವರು ಸರಿಪಡಿಸಬೇಕಾಗಿದೆ.
ರಾಘವೇಂದ್ರ ಎನ್ ನಾಯ್ಕ, ಇಲೆಕ್ಟ್ರಿಕ್ ಕೆಲಸಗಾರ, ಶಿರ್ಲಬೈಲ್


***
(ಇದು ಕನ್ನಡಪ್ರಭ ಪತ್ರಿಕೆಯಲ್ಲಿ ಪ್ರಕಟಗೊಂಡಿದೆ)

Sunday, October 26, 2014

ಬದಲು ಬಯಕೆ

ಇರುಳು ಹಾಯುವ ಹಾದಿಯಲ್ಲಿ
ಒಮ್ಮೆ ಮಾತನು ಆಡುವಾ |
ಸಾವು ಸುಳಿಯುವ ಬದುಕಿನಲ್ಲಿ
ಹಳೆಯ ಸೇಡನು ಮರೆಯುವಾ ||

ಬದುಕಿನಾ ಈ ರೇಖೆಯೊಳಗೆ
ಸೇಡು ಉನ್ನತಿ ಮೆರೆಯುತ್ತಿತ್ತು |
ಎದೆಯ ಆಳದ ಹುಮ್ಮಸ್ಸೆಲ್ಲ
ದ್ವೇಷವಾಗಿಯೇ ಸುರಿಯುತ್ತಿತ್ತು ||

ಈಗ ಹಾದಿಯು ಮಂಜು-ಮಂಜು
ಸ್ವಷ್ಟ ಚಿತ್ರಣ ಇಲ್ಲವೇ |
ನಿನ್ನೆ ಮಾಡಿದ ಕರ್ಮವೆಲ್ಲವೂ
ಮನದ ನೆನಪಲಿ ಉಳಿದಿವೆ ||

ಇನ್ನು ದ್ವೇಷವ ಮರೆತು ನಾವು
ಹೊಸತು ಲೋಕವ ಕಟ್ಟುವಾ |
ದ್ವೇಷ-ಸೇಡಿಗೆ ಅರ್ಥವಿಲ್ಲ
ಎಂದು ಲೋಕಕೆ ಸಾರುವಾ ||

**
(ಈ ಕವಿತೆಯನ್ನು ದಂಟಕಲ್ಲಿನಲ್ಲಿ ಬರೆದಿದ್ದು, 11-12-2006ರಂದು)

Saturday, October 25, 2014

ದೀಪಾವಳಿ ಆಚಾರ-ವಿಚಾರ

ದೀಪವಾಳಿ ತಯಾರಿ
(ಬಲಿವೇಂದ್ರನನ್ನು ಕೂರಿಸುತ್ತಿರುವುದು)

ದೀಪಾವಳಿ ಹಬ್ಬದ ಸಡಗರ ಮೇರೆ ಮೀರಿದೆ. ದೀಪಗಳ ಹಬ್ಬಕ್ಕೆ ಜನಸಾಮಾನ್ಯರು ಸಂಭ್ರಮದಿಂದ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಬಲಿವೇಂದ್ರನ ಪೂಜೆಗಾಗಿ ಮನೆ ಮನೆಯಲ್ಲಿ ವಿಶೇಷ ತಯಾರಿ ಮಾಡಿಕೊಂಡಿದ್ದಾರೆ.
ಬೆಳಕಿನ ಹಬ್ಬವಾದ ದೀಪಾವಳಿಯನ್ನು ದೊಡ್ಡಹಬ್ಬ ಎಂದೇ ಕರೆಯುತ್ತಾರೆ. ಎಲ್ಲ ಹಬ್ಬಗಳಿಗೂ ಕಿರೀಟವಿಟ್ಟಂತಹ ಹಬ್ಬ ಇದು. ನಗರ ಹಾಗೂ ಗ್ರಾಮೀಣ ಪ್ರದೇಶದ ಜನಸಾಮಾನ್ಯರು ತಮ್ಮನ್ನು ತಾವು ಮರೆತು ಆನಂದಿಸುವಂತಹ ಹಬ್ಬ. ಇಂತಹ ದೀಪಾವಳಿಯ ಸಂಭ್ರಮ ಬುಧವಾರದಿಂದ ಆರಂಭವಾಯಿತು. ಮನೆ ಮನೆಗಳಲ್ಲಿ ಬೂರೆ ಹಬ್ಬ ಎಂದು ಕರೆಯುವ ಈ ದಿನದಂದು ಬೂರೆ ನೀರನ್ನು ಮನೆಯೊಳಕ್ಕೆ ತರುವ ಮೂಲಕ ಹಬ್ಬ ಆರಂಭವಾಗುತ್ತದೆ. ಬೂರೆ ನೀರು ತಂದ ನಂತರ ಬಲಿವೇಂದ್ರನ ಹೋಲಿಕೆಯ ಮೂರ್ತಿಯನ್ನು ಕೂರಿಸಲಾಗುತ್ತದೆ. ಮಣೆಯ ಮೇಲೆ ಮಣ್ಣಿನ ಚಿತ್ತಾರ ಬಿಡಿಸಿ ಅದರ ಮೇಲೆ ತಾಮ್ರದ ಬಿಂದಿಗೆಯಲ್ಲಿ ನೀರನ್ನು ಹಾಕಿ, ಅದರ ಬಾಯಿಗೆ ಅಗಲವಾದ ಬಟ್ಟಲನ್ನು ಇಟ್ಟು ಅದರ ಮೇಲೆ ಅಕ್ಕಿಯನ್ನು ಹರವಿ, ತೆಂಗಿನ ಕಾಯಿ ಇಡಲಾಗುತ್ತದೆ. ತೆಂಗಿನಕಾಯಿಯ ಮೇಲೆ ಜೋಡು ಕೋಡನ್ನು ಹೊಂದಿರುವ ಅಡಿಕೆ ಸಿಂಗಾರದಿಂದ ಬಲೀಂದ್ರ ಮೂರ್ತಿಯನ್ನು ಕೂರಿಸಲಾಗುತ್ತದೆ. ಮೂರ್ತಿಯ ಅಕ್ಕಪಕ್ಕ ಬಲಿತ ಸೌತೆಕಾಯಿ ಹಾಗೂ ಮೊಗೆ ಕಾಯಿಗಳನ್ನು ಇಡಲಾಗುತ್ತದೆ.
(ಗೋಪೂಜೆ)
ಮೂರು ದಿನಗಳ ಕಾಲ ಬಲೀಂದ್ರ ಮೂತರ್ಿಯನ್ನು ಪೂಜೆ ಮಾಡಲಾಗುತ್ತದೆ. ಹಬ್ಬದ ಸರಣಿಯ ಎರಡನೇ ದಿನವಾದ ಗುರುವಾರ ವಾಹನ ಪೂಜೆ ಹಾಗೂ ಲಕ್ಷ್ಮೀ ಪೂಜೆ ನಡೆಯುತ್ತದೆ. ತಮ್ಮ ತಮ್ಮ ಮನೆಯ ವಾಹನಗಳು, ಆಭರಣಗಳನ್ನು ಇಂದು ಪೂಜೆ ಮಾಡಲಾಯಿತು. ವಾಹನಗಳಿಗೆ ಸಿಂಗರಿಸಿ ಸಭ್ರಮಿಸಿದರು. ಮೂರನೇ ದಿನವಾದ ಶುಕ್ರವಾರ ಗೋಪೂಜೆ ನಡೆಯಲಿದೆ. ಶುಕ್ರವಾರದಂದು ಗೋವನ್ನು ಸಿಂಗರಿಸಿ, ಗೋವಿನ ಪೂಜೆ ಮಾಡಿ ಸಂಭ್ರಮಿಸುತ್ತಾರೆ.
ಹಬ್ಬದ ತಯಾರಿಗಾಗಿ ಕಳೆದ ಮೂನರ್ಾಲ್ಕು ದಿನಗಳಿಂದ ಜನರು ಮಾರುಕಟ್ಟೆಗಳತ್ತ ಮುಖಮಾಡಿದ್ದರು. ಅಗತ್ಯದ ವಸ್ತುಗಳನ್ನು ಕೊಳ್ಳಲು ಮುಗಿಬಿದ್ದಿದ್ದರು. ತರಕಾರಿಗಳು, ಗೋವೆಕಾಯಿ, ಕಬ್ಬು, ಅಡಿಕೆ ಸಿಂಗಾರ, ಪುಂಡಿ ನಾರಿನ ಹಗ್ಗ, ಗೋವುಗಳ ಕುತ್ತಿಗೆಗೆ ಕಟ್ಟುವ ಗಂಟೆ, ಆಕಾಶಬುಟ್ಟಿ, ಹೂವುಗಳು ಸೇರಿದಂತೆ ವಿವಿಧ ವಸ್ತುಗಳನ್ನು ಕೊಳ್ಳಲು ಜನಸಾಮಾನ್ಯರು ಮಾರುಕಟ್ಟೆಯ ಕಡೆಗೆ ಮುಖ ಮಾಡಿದ್ದು ಸಾಮಾನ್ಯವಾಗಿತ್ತು. ಮಾರುಕಟ್ಟೆಗಳಲ್ಲಿಯೂ ಕೂಡ ದೀಪಾವಳಿಯ ಅಗತ್ಯ ವಸ್ತುಗಳ ಬೆಲೆಯಲ್ಲಿ ಏರಿಕೆಯಾಗಿತ್ತು. ತರಕಾರಿ ದರದಲ್ಲಿ ಸಾಮಾನ್ಯ ದಿನಕ್ಕಿಂದ 10-20 ರು. ಏರಿಕೆಯಾಗಿದ್ದರೆ, ದವಸ ಧಾನ್ಯಗಳಲ್ಲಿಯೂ ಕೂಡ 5-10 ರು. ಹೆಚ್ಚಳವಾಗಿತ್ತು. ಪುಂಡಿ ನಾರಿನ ಹಗ್ಗಕ್ಕೆ ಜೋಡಿಗೆ 20, 30, 40 ರು. ದರ ನಿಗದಿಯಾಗಿದ್ದರೆ ಹೂವುಗಳ ಬೆಲೆ ಮೊಳಕ್ಕೆ 30 ರಿಂದ 50 ರು. ಮುಟ್ಟಿತ್ತು. ಇದರಿಂದ ಜನಸಾಮಾನ್ಯರು ಅಗತ್ಯ ವಸ್ತುಗಳನ್ನು ಕೊಳ್ಳಲು ಹಿಂದೇಟು ಹಾಕಿದರು.
(ಎತ್ತ ನೋಡಿದರತ್ತ ಹಣತೆಗಳು)
ಪಟಾಕಿ ಸದ್ದು ಕೂಡ ಹಬ್ಬದ ಸಡಗರವನ್ನು ಹೆಚ್ಚಿಸಿದೆ. ಪರಿಸರ ಸ್ನೇಹಿ ದೀಪಾವಳಿಯನ್ನು ಆಚರಿಸಲು ಎಲ್ಲೆಡೆ ಜಾಗೃತಿ ಮೂಡಿಸಲಾಗುತ್ತಿದ್ದರೂ ಕೂಡ ಪಟಾಕಿ ಸಿಡಿಸುವ ಸಂತಸಕ್ಕೆ ತಡೆಯುಂಟಾಗಿಲ್ಲ. ಮಕ್ಕಳಾದಿಯಾಗಿ ಪಟಾಗಿ ಸಿಡಿಸಿ ಸಂತಸಪಟ್ಟರು. ಪಟಾಕಿ ಸಿಡಿಸುವ ಸಂಭ್ರಮವನ್ನು ಹೆಚ್ಚಿಸುವ ಸಲುವಾಗಿ ತರಹೇವಾರಿ ಪಟಾಕಿಗಳು ಅಂಗಡಿಗಳಲ್ಲಿ ಗಮನ ಸೆಳೆಯುತ್ತಿದ್ದವು. ಗ್ರಾಮೀಣ ಭಾಗದಲ್ಲಿಯೂ ಪಟಾಕಿ ಅಬ್ಬರ ಜೋರಾಗಿದೆ. ದೀಪಾವಳಿಯ ಹಬ್ಬ ಧಾಮರ್ಿಕವಾಗಿ ಮಾತ್ರ ಮಹತ್ವವನ್ನು ಪಡೆದುಕೊಂಡಿಲ್ಲ. ಬದಲಾಗಿ ಪರಿಸರ ಸ್ನೇಹಿ ಹಬ್ಬವಾಗಿದೆ. ಪ್ರಕೃತಿ ಮಾತೆಯನ್ನು ಪೂಜಿಸಲಾಗುತ್ತದೆ, ಆರಾಧಿಸಲಾಗುತ್ತದೆ. ಪ್ರಾಣಿ ಪಕ್ಷಿಗಳಿಗೂ ಈ ಹಬ್ಬದಲ್ಲಿ ಊಟೋಪಚಾರ ಮಾಡಿಸಲಾಗುತ್ತದೆ. ಪ್ರಾಣಿಗಳಲ್ಲಿ ದೇವರನ್ನು ಕಾಣಲಾಗುತ್ತದೆ.
ಬೆಳಕಿನ ಹಬ್ಬವೆಂದರೆ ಜೀವನದಲ್ಲಿ ಬೆಳಕನ್ನು ಹೊತ್ತಿಸುವಂತದ್ದು ಎನ್ನುವ ಭಾವನೆ ಹಲವು ಪ್ರದೇಶದಲ್ಲಿದೆ. ಯಾವುದೇ ಮಂಗಲಕಾರ್ಯ ಮಾಡುವುದಿದ್ದರೂ ದೀಪಾವಳಿಯ ನಂತರ ಎನ್ನುವ ನಂಬಿಕೆ ಬಹುತೇಕ ಕಡೆಗಳಲ್ಲಿದೆ. ಹಬ್ಬ ಆರಂಭವಾಗುತ್ತಿದ್ದಂತೆಯೇ ಮಣ್ಣಿನ ಹಣತೆಯಲ್ಲಿ ದೀಪ ಹಚ್ಚುತ್ತಾರೆ. ಅದರಲ್ಲೂ ಶೇಂಗಾ ಎಣ್ಣೆ ದೀಪ ಶ್ರೇಷ್ಟವಾದದ್ದು ಎನ್ನಲಾಗುತ್ತದೆ. ಗ್ರಾಮೀಣ ಪ್ರದೇಶದ ಮನೆಗಳಲ್ಲಿ ಹಣತೆಯ ದೀಪ ರಾರಾಜಿಸುತ್ತಿದ್ದರೆ ಪಟ್ಟಣಗಳಲ್ಲಿ ವಿದ್ಯುತ್ ದೀಪಗಳ ಆಕಾಶ ಬುಟ್ಟಿಗಳು ತೂಗಾಡುತ್ತವೆ. ವಿದ್ಯುತ್ ದೀಪಗಳ ಅಲಂಕಾರವನ್ನು ಪಟ್ಟಣದ ಮನೆ, ಅಂಗಡಿಗಳಲ್ಲಿ ಕಾಣಬಹುದಾಗಿದೆ.
(ಗೋವುಗಳನ್ನು ಓಡಸುತ್ತಿರುವುದು)
       ಹಬ್ಬ ಆರಂಭವಾಗುತ್ತಿದ್ದಂತೆಯೇ ಒಂದಲ್ಲ ಒಂದು ರೀತಿಯಲ್ಲಿ ಪ್ರಕೃತಿಯ ಆರಾಧನೆ ನಡೆಯುತ್ತದೆ. ಗೋವುಗಳಿಗೆ ಸಿಹಿ ಕಡುಬನ್ನು ಮಾಡಿ ತಿನ್ನಿಸಲಾಗುತ್ತದೆ. ಅದೇ ರೀತಿ ಗಂಟೆ, ವಿವಿಧ ನಮೂನೆಯ ದಂಡೆಗಳನ್ನು ಕಟ್ಟುವ ಮೂಲಕ ಗೋವುಗಳ ಶೃಂಗಾರ ಆರಂಭಗೊಳ್ಳುತ್ತದೆ. ಗೋಪೂಜೆ ದಿನವಾದ ಶುಕ್ರವಾರ ಗೋವುಗಳ ಪೂಜೆಯ ಜೊತೆ ವಿಶೇಷವಾದ ಭಕ್ಷ್ಯಗಳನ್ನು ನೀಡಲಾಗುತ್ತದೆ. ಇನ್ನಷ್ಟು ಅಲಂಕರಿಸಲಾಗುತ್ತದೆ. ಸಾಮೂಹಿಕವಾಗಿ ಗೋವುಗಳ ಶೃಂಗಾರ, ಪೂಜೆ, ಓಟ ಇತ್ಯಾದಿಗಳು ನಡೆಯುತ್ತವೆ. ಅಂದು ಸಂಜೆ ಬಲಿವೇಂದ್ರನನ್ನು ಕಳಿಸುವ ಮೂಲಕ ಹಬ್ಬದ ಸಂಭ್ರಮಕ್ಕೆ ತೆರೆ ಬೀಳುತ್ತದೆಯಾದರೂ ಬಿದಿಗೆಯ ದಿನ ವಸ್ತ್ರ ಉಡಿಕೆಯ ದಿನ ಅಥವಾ ವಸ್ತೊಳಿಕೆಯ ದಿನ ಎಂದು ಕರೆದು, ಹೊಸ ವಸ್ತ್ರವನ್ನು ತೊಟ್ಟು ಸಂಭ್ರಮಿಸುತ್ತಾರೆ. ಅಲ್ಲಿಗೆ ಹಬ್ಬ ಸಂಪೂರ್ಣಗೊಳ್ಳುತ್ತದೆ.

****
ಆಚರಣೆ'
(ಎತ್ತುಗಳ ಸಿಂಗಾರ)

ಬೆಳಕಿನ ಹಬ್ಬ ದೀಪಾವಳಿಯ ಮೂರನೇ ದಿನದ ಸಂಭ್ರಮ ಸಡಗರದಿಂದ ನಡೆಯಿತು. ಮನೆ ಮನೆಗಳಲ್ಲಿ ಗೋವಿನ ಪೂಜೆಯನ್ನು ಮಾಡುವ ಮೂಲಕ ಶಾಸ್ತ್ರ-ಸಂಪ್ರದಾಯ ಸಹಿತವಾಗಿ ಆಚರಿಸಲಾಯಿತು.
ಮುಂಜಾನೆ ಗೋವುಗಳನ್ನು ಸ್ನಾನ ಮಾಡಿಸುವುದರಿಂದ ಆರಂಭಗೊಳ್ಳುವ ಬಲಿಪಾಡ್ಯಮಿಯ ಸಡಗರ ನಿಧಾನವಾಗಿ ರಂಗೇರಿತು. ಅಡಿಕೆ, ಪಚೋಲಿ, ಪುಂಡಿ ನಾರು  ಸೇರಿದಂತೆ ಹಳ್ಳಿಗರೇ ತಯಾರಿಸಿದ ವಿಶಿಷ್ಟ ಬಗೆಯ ಹಾರದಿಂದ ಗೋವುಗಳನ್ನು ಅಲಂಕರಿಸುವುದು ವಾಡಿಕೆಯಾಗಿದೆ. ಶೇಡಿ ಹಾಗೂ ಕೆಮ್ಮಣ್ಣಿನಿಂದ ಗೋವುಗಳ ಮೈಮೇಲೆ ಚಿತ್ತಾರ ಬರೆಯುವ ಮೂಲಕ ಮತ್ತು ಗೋವುಗಳ ಕೋಡುಗಳಿಗೆ ಕೆಮ್ಮಣ್ಣು-ಶೇಡಿಯ ಬಣ್ಣ ಬಳಿದು ಸಿಂಗರಿಸಲಾಯಿತು. ಗೋ ಮಾತೆಯ ಪೂಜೆಯಲ್ಲಿ ಧನ್ಯತಾ ಭಾವ ಕಂಡುಕೊಂಡ ಆಸ್ತಿಕರು ಮನೆ ಮನೆಗಳಲ್ಲಿ ತಯಾರು ಮಾಡುವ ಹೋಳಿಗೆ, ಕಡುಬು ಸೇರಿದಂತೆ ವಿಶಿಷ್ಟ ತಿನಿಸುಗಳನ್ನೆಲ್ಲ ಗೋವುಗಳಿಗೆ ತಿನ್ನಿಸಿ ಸಂಭ್ರಮಿಸಿದರು. ಗೋವಿನ ರಕ್ಷಣೆಗಾಗಿ ಪಾರಂಪರಿಕವಾಗಿ ಆಚರಿಸುತ್ತ ಬಂದ ಹುಲಿಯಪ್ಪನ ಪೂಜೆಯನ್ನು ಸಾರ್ವತ್ರಿಕವಾಗಿ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಮನೆಯ ಆಧಾರ ಸ್ಥಂಭವೆಂದೇ ಪರಿಗಣಿಸಲ್ಪಡುವ ಪ್ರಧಾನ ಕಂಬಕ್ಕೂ ಪೂಜೆ ಮಾಡುವ ಸಂಪ್ರದಾಯ ಮಲೆನಾಡಿನ ವಿಶೇಷತೆಗಳಲ್ಲೊಂದಾಗಿದೆ. ತಮ್ಮ ಜಮೀನು ಮನೆಗಳನ್ನು ರಕ್ಷಿಸುವ ಗಣಗಳಿಗೆ ತೆಂಗಿನ ಕಾಯಿ ಒಡೆಯುವ ಮೂಲಕ ಪೂಜೆ ಸಲ್ಲಿಸುವುದೂ ಸಹ ಈ ಪ್ರದೇಶದ ವೈಶಿಷ್ಟ್ಯತೆಯಾಗಿದೆ. ಈ ಎಲ್ಲ ಪೂಜೆ ಗಳು ಮುಗಿದ ನಂತರವೇ ಮನೆ ಮನೆಗಳ ಗೋವುಗಳನ್ನು ಬಯಲಿಗೆ ಬಿಡಲಾಗುತ್ತದೆ.
(ಭೂತಪ್ಪನಿಗೆ ಪೂಜೆ)
ಗೋವಿನ ಬಯಲಿನಲ್ಲಿ ಎಲ್ಲರ ಮನೆಗಳಿಂದ ಆಗಮಿಸಿದ ಹಸುಗಳು ಒಂದೆಡೆ ಸೇರುತ್ತವೆ. ಈ ಬಯಲಿನಲ್ಲಿ ಎತ್ತುಗಳನ್ನು ಸಿಂಗರಿಸಿ ಓಡಿಸಲಾಯಿತು. ಓಡುವ ಎತ್ತು, ಹೋರಿಗಳ ಜೊತೆಗೆ ಅವುಗಳ ಮಾಲೀಕರೂ ಓಡಿ ಸಂಭ್ರಮಿಸಿದರು. ನಂತರ ಊರ ಸುತ್ತಮುತ್ತಲೂ ಇರುವ ಚೌಡಿ, ಬೀರಲು, ಜಟಕ, ನಾಗರು ಸೇರಿದಂತೆ ಸಮಸ್ತ ಊರು ರಕ್ಷಣೆ ಮಾಡುವ ದೇವಗಣಗಳನ್ನು ಪೂಜಿಸಲಾಯಿತು. ಮನೆ ಮನೆಗಳಲ್ಲಿ ಆಯುಧಗಳು, ಯಂತ್ರಗಳು, ಹೊಸ್ತಿಲು, ತುಳಸಿ ಕಟ್ಟೆ, ಕೊಟ್ಟಿಗೆ ಈ ಮುಂತಾದವುಗಳಿಗೆಲ್ಲ ಪೂಜೆ ನಿಡುವ ಮೂಲಕ ದೀಪಾವಳಿ ಪ್ರಕೃತಿಯ ಆರಾಧಿಸುವ ಹಬ್ಬ ಎನ್ನುವ ವಿಶೇಷಣಕ್ಕೆ ಪುಷ್ಟಿ ಸಿಕ್ಕಂತಾಯಿತು.
ಸಂಜೆ ತುಳಸಿ ಪೂಜೆಯ ನಂತರ ಬಲಿವೇಂದ್ರನನ್ನು ಕಳಿಸುವ ಸಂಪ್ರದಾಯ ನಡೆಯಿತು. ಈ ಸಂದರ್ಭದಲ್ಲಿ ಬಹುತೇಕ ಜನರು ಮನೆಯ ಸುತ್ತಮುತ್ತಲ ಪ್ರದೇಶಗಳಲ್ಲಿ ಜೊಂಜನ್ನು ಹಚ್ಚಿಡುತ್ತಾರೆ. ಮನೆಯಂಗಳದ ವರೆಗೂ ಶಿಂಡ್ಲೇ ಕಾಯಿಯ ಜೊಂಜನ್ನು ಉರಿಸಲಾಗುತ್ತದೆ. ತನ್ಮೂಲಕ ಬೆಳಕಿನ ಹಬ್ಬ ತೆರೆಯೆಳೆಯುತ್ತಿದ್ದಂತೆಯೇ ಬಲಿವೇಂದ್ರನನ್ನು ಮುಂದಿನ ವರ್ಷಕ್ಕಾಗಿಯೂ ಕರೆಯಲಾಯಿತು.
(ಭಾರ ಎತ್ತುವ ಸ್ಪರ್ಧೆ)
             ಹೊಸ ಬಟ್ಟೆಗಳನ್ನು ಧರಿಸುವ ಎಲ್ಲ ವಯೋಮಾನದವರು ಈ ಹಬ್ಬವನ್ನು ಹೊಸ ವರ್ಷವೆನ್ನುವ ನಂಬುಗೆಯಿಂದಲೂ, ಶೃದ್ಧೆಯಿಂದ ಆಚರಿಸುವುದು ವಿಶೇಷವಾಗಿದೆ. ಹಬ್ಬದ ದಿನ ಸಾರ್ವಜನಿಕ ಸ್ಥಳದಲ್ಲಿ ತೆಂಗಿನ ಕಾಯಿ ಒಡೆಯುವ ಜೂಜಾಟ ಸೇರಿದಂತೆ ಹಲವಾರು ವಿಧದ ಸಾಹಸವನ್ನು ಪ್ರದರ್ಶಿಸಬಲ್ಲ ಕ್ರೀಡೆಗಳನ್ನು ಪಣಕ್ಕಿಟ್ಟು ಆಡಲಾಗುತ್ತದೆ. ಕೆಲವೊಂದು ಪ್ರದೇಶಗಳಲ್ಲಿ ರಾತ್ರಿಯಿಂದ ಬೆಳಗಿನ ತನಕವೂ ಜೂಜಾಟಗಳು ನಡೆಯುತ್ತವೆ. ಇಂದಿನ ಜೂಜಾಟಕ್ಕೆ ಬಹುತೇಕ ಯಾರೂ ಅಡ್ಡಿಪಡಿಸುವುದಿಲ್ಲ. ಇಲ್ಲಿ ಮನರಂಜನೆಯು ಪ್ರಾಮುಖ್ಯತೆ ಪಡೆಯುತ್ತದೆ.
ಸಿದ್ದಾಪುರ ತಾಲೂಕಿನ ಕಾನಸೂರು ಪಂಚಾಯತ ವ್ಯಾಪ್ತಿಯ ಅಡ್ಕಳ್ಳಿಯಲ್ಲಿ ಬಾರ ಎತ್ತುವ ಸ್ಫಧರ್ೆಯಗಳನ್ನು ಹಮ್ಮಿಕೊಳ್ಳುವ ಮೂಲಕ ವಿಶಿಷ್ಟವಾದಿ ದೀಪಾವಳಿಯನ್ನು ಆಚರಿಸಲಾಯಿತು. ಸುತ್ತಮುತ್ತಲ ಕಾನಸೂರು, ಕಲ್ಮಟ್ಟಿಹಳ್ಳಿ, ಮಲೆನಳ್ಳಿ, ಕಲ್ಮನೆ, ಅಡ್ಕಳ್ಳಿ, ಸೊಂಡ್ಲಬೈಲ್, ಮುತ್ತಮುರ್ಡ, ಕೋಡಸಿಂಗೆ, ಹಿತ್ಲಕೈ, ಬಾಳಗಾರ್, ದಂಟಕಲ್ ಈ ಮುಂತಾದ ಊರುಗಳ ಯುವಕರು 60 ಕೆ.ಜಿ.ಗೂ ಅಧಿಕ ಭಾರದ ಕಲ್ಲನ್ನು ಎತ್ತಲು ಪ್ರಯತ್ನಿಸಿದರು. ಹಲವು ಈ ಭಾರದ ಕಲ್ಲನ್ನು ಎತ್ತದೇ ಬಸವಳಿದರೆ ಕೆಲವು ಯುವಕರು ಅದನ್ನು ಎತ್ತಲು ಸಫಲರಾದರು. ಭಾರದ ಕಲ್ಲನ್ನು ಎತ್ತಿದ ಯುವಕರು ಕಲ್ಲನ್ನು ಹೊತ್ತುಕೊಂಡೇ ಸ್ಥಳೀಯ ಭೂತಪ್ಪನ ಕಟ್ಟೆಯನ್ನು ಮೂರು ಸಾರಿ ಪ್ರದಕ್ಷಿಣೆ ಹಾಕುವುದು ವಾಡಿಕೆ. ಹೀಗೆ ಮಾಡಿದ ಯುವಕರಿಗೆ ವಿಶೇಷ ಬಹುಮಾನಗಳನ್ನೂ ನೀಡಲಾಗುತ್ತದೆ. ಪ್ರತಿ ವರ್ಷ ನಿಗದಿತ ಸಂಖ್ಯೆಯಲ್ಲಿ ಭಾಗವಹಿಸುವ ಯುವಕರು ಕಲ್ಲನ್ನು ಎತ್ತಲು ವಿಫಲರಾದರೆ ಬಹುಮಾನವನ್ನು ಬರುವ ವರ್ಷಕ್ಕಾಗಿ ಕಾಯ್ದಿರಿಸಲಾಗುತ್ತದೆ. ಹೀಗೆ ಒಂದೊಂದು ಊರಿನಲ್ಲಿ ಒಂದೊಂದು ವೈವಿಧ್ಯತೆಯೊಂದಿಗೆ ಆಟಗಳಲ್ನಡೆದು ಹಬ್ಬದ ಸಂಭ್ರಮವನ್ನು ಹಂಚಿಕೊಂಡರು.

**
(ಈ ಎರಡೂ ಲೇಖನಗಳು ಕನ್ನಡಪ್ರಭದಲ್ಲಿ ಪ್ರಕಟವಾಗಿದೆ )