Thursday, January 31, 2013

ಅಬ್ಬ...ಆಲೆಮನೆ ಹಬ್ಬ..!!

ಅಬ್ಬ...ಆಲೆಮನೆ ಹಬ್ಬ..!! 

 ಒಂದು ಕಾಲವಿತ್ತು. ಆಲೆಮನೆ ಅಂದರೆ ಹಬ್ಬದ ವಾತಾವರಣವನ್ನೇ ಸೃಷ್ಟಿಸುವಂತಹ ಕಾಲ ಅದಾಗಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಆಲೆಮನೆ ಎಂಬುದು ತೀರಾ ಅಪರೂಪ ಎನ್ನುವಂತಾಗಿದೆ. ಆಲೆಮನೆ ಎಲ್ಲಿ ನಡೆಯುತ್ತಿದೆ ಎಂದು ಹುಡುಕಬೇಕಾದಂತಹ ಸ್ಥಿತಿ ಇಂದಿನದು.
    ಮಲೆನಾಡಿನಲ್ಲಿ ಕಬ್ಬುಬೆಳೆಸುವುದು ಸಾಹಸದ ಕೆಲಸ. ಅರಣ್ಯಗಳು ನಾಶವಾಗಿದ್ದರಿಂದ ಕಾಡುಪ್ರಾಣಿಗಳು ರೈತನ ಹೊಲಗದ್ದೆಗಳಿಗೆ ಮುಗಿ ಬೀಳುತ್ತಿವೆ. ಅದೇ ರೀತಿ ಕಬ್ಬಿನ ಗದ್ದೆಗಳಿಗೂ ಮಂಗ, ಕಾಡುಹಂದಿ, ಇಣಚಿ ಮುಂತಾದವುಗಳ ಕಾಟ. ಇವೆಲ್ಲವನ್ನೂ ಮೀರಿ ಕಬ್ಬು ಬೆಳೆದು ಆಲೆಮನೆ ಮಾಡೋಣವೆಂದರೆ ಕೂಲಿ ಕಾರ್ಮಿಕರ ಸಮಸ್ಯೆ. ಮತ್ತೊಂದೆಡೆ ಕಬ್ಬಿನ ಹಾಲನ್ನು ಬೇಯಿಸಿ ಬೆಲ್ಲ ತಯಾರಿಸಲು ಉರುವಲು ಸಮಸ್ಯೆ. ಉರುವಲು ತರಬೇಕೆಂದರೆ ಅರಣ್ಯ ಇಲಾಖೆಯವರ ಕಾಟ. ಹಾಗಾಗಿ ರೈತಾಪಿ ವರ್ಗ ಆಲೆಮನೆ ಸಹವಾಸದಿಂದಲೇ ದೂರ ಸರಿದಿದೆ. ಬೆಲ್ಲವನ್ನು ಕೊಂಡು ತರುವುದೇ ಸಲೀಸು ಎನ್ನುವ ಧೋರಣೆಯಿಂದಾಗಿ ಆಲೆಮನೆಗಳು ಮಾಯವಾಗುತ್ತಲಿವೆ. ಇನ್ನೊಂದೆಡೆ ಬೆಲ್ಲದ ದರ ವರ್ಷದಿಂದ ವರ್ಷಕ್ಕೆ ಏರುಮುಖದತ್ತ ಸಾಗಿದೆ.
    ಆಲೆಮನೆ ಈ ಪದವೇ ಸಾಕು ಮೈಮನಗಳನ್ನು ರೋಮಾಂಚನಗೊಳಿಸುತ್ತದೆ. ಕಬ್ಬು ಕಡಿದು ಅದನ್ನು ಗಾಣಕ್ಕೆ ಕೊಟ್ಟು ಹಾಲನ್ನು ಕುಡಿದು ಬೆಲ್ಲವನ್ನು ತಿಂದರೆ ಹಬ್ಬದ ಮೆರುಗು, ಮೆಲುಕು ಅನಿರ್ವಚನೀಯ. ಈಗ ಆಲೆಮನೆಯನ್ನು ಹಬ್ಬವನ್ನಾಗಿ ಮಾಡುವ ಮೂಲಕ ಅಚನಳ್ಳಿಯಲ್ಲಿ ಅದಕ್ಕೊಂದು ವಾಣಿಜ್ಯಾತ್ಮಕ ರೂಪವನ್ನು ನೀಡುತ್ತಿರುವುದು ವಿಶೇಷ.
    ಆಲೆಮನೆಯೆಂದಕೂಡಲೇ ಕಬ್ಬು, ಕಣೆ, ಬೃಹತ್ ಕೋಣಗಳು, ಅವನ್ನು ಓಡಿಸುವವನು, ವಾರಗಟ್ಟಲೆ ಕಬ್ಬು ಕಡಿಯುವ ಸಂಭ್ರಮ, ಕಬ್ಬಿನ ಹಾಲು ಸಂಗ್ರಹಣೆ, ಬಂದ ಅತಿಥಿಗಳಿಗೆಲ್ಲ ಅದನ್ನು ನೀಡುವುದು, ಬೆಲ್ಲ ತಯಾರಿಸುವುದು ಇತ್ಯಾದಿಗಳು ನೆನಪಾಗುತ್ತವೆ. ಬದಲಾದ ಸಂಗತಿಯಲ್ಲಿ ಈ ಆಲೆಮನೆ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಬೆಳೆದಿದೆ. ಕೂಲಿ ಕಾಮರ್ಿಕರ ಸಮಸ್ಯೆಯ ಕಾರಣ ವಾರಗಟ್ಟಲೆ ನಡೆಯುತ್ತಿದ್ದ ಆಲೆಮನೆಗಳು ಈಗ ಒಂದೆರಡು ದಿನಕ್ಕೆ ಇಳಿದುಬಿಟ್ಟಿವೆ. ಎಕರೆಗಟ್ಟಲೆ ಕಬ್ಬುಬೆಳೆಯುತ್ತಿದ್ದವರೀಗ ಒಂದೆರಡು ಗದ್ದೆಗಳಿಗೆ ಸೀಮಿತವಾಗಿದ್ದಾರೆ. ಹಳೆಯಕಾಲದ ಕೋಣನ ಕಣೆಯ ಜಾಗದಲ್ಲಿ ಆಧುನಿಕ ಯಂತ್ರದ ಮೂಲಕ ಓಡುವ ಕಣೆ ಬಂದಿದೆ. ಅದರ ಜೊತೆಗೆ ಬೆಲ್ಲ ತಯಾರಿಸುವ ಕೊಪ್ಪರಿಗೆಗೂ ಚಕ್ರಗಳು, ನಲ್ಲಿಗಳನ್ನು ಕೂಡ್ರಿಸುವ ಮೂಲಕ ಆಲೆಯಮನೆಗೆ ಮತ್ತಷ್ಟು ಆಧುನಿಕ ಮೆರಗನ್ನು ನೀಡಲಾಗಿದೆ.
            ಹಿಂದೆಲ್ಲ ಆಲೆಮನೆ ಬಂತೆಂದರೆ ಸುತ್ತಮುತ್ತಲ ಊರುಗಳಲ್ಲಿ ಸಂಭ್ರಮ ಸಡಗರ. ಯಾವುದೇ ಕಡೆಗಳಲ್ಲಿ ಆಲೆಮನೆ ಇದೆಯೆಂಬ ಸುದ್ದಿ ಕಿವಿಗೆ ಬಿದ್ದರೆ ಸಾಕು ತಂಡೋಪತಂಡವಾಗಿ ಬಂದು ಜನರು ಹಾಲುಕುಡಿದು ಕಬ್ಬನ್ನು ಪಡೆದು ಹೋಗುತ್ತಿದ್ದರು. ಎಷ್ಟೇ ಜನ ಬಂದರೂ ಮನೆಯವರು ಬೇಸರಿಸದೇ, ಸಿಟ್ಟಾಗದೇ ಕೇಳಿದಷ್ಟು ಹಾಲುಕೊಟ್ಟು ಕಳಿಸುತ್ತಿದ್ದರು. ಕಬ್ಬಿನ ಹಾಲು ಹಾಗೂ ಕಬ್ಬನ್ನು ಬೇರೆಯವರಿಗೆ ಹೆಚ್ಚು ಹೆಚ್ಚು ಕೊಟ್ಟಷ್ಟೂ ಮುಂದಿನ ವರ್ಷ ನಮ್ಮ ಬೆಳೆ ಜಾಸ್ತಿಯಾಗುತ್ತದೆ ಎಂಬ ಮಾತುಗಳನ್ನು ಹಿರಿಯರು ಆಡುತ್ತಿದ್ದರು. ಆದರೆ ಆಧುನಿಕ ದಿನಮಾನದಲ್ಲಿ ಅವೆಲ್ಲವೂ ಕಳೆದುಹೋಗಿ ಆಲೆಮನೆಯೆಂದರೆ ಸ್ವಂತ ಬಳಕೆಗಷ್ಟೇ ಎಂಬಂತಹ ವಾತಾವರಣ ನಿರ್ಮಾಣವಾಗತೊಡಗಿತ್ತು.
    ತುಂಡು ಹಿಡುವಳಿ, ಕಡಿಮೆ ಪ್ರಮಾಣದಲ್ಲಿ ಕಬ್ಬು ಬೆಳೆಯುವುದು ಇತ್ಯಾದಿಗಳ ಜೊತೆಗೆ ಒಂದೆರಡು ದಿನಗಳಲ್ಲಿ ಮುಗಿದುಹೋಗುವ ಆಲೆಮನೆಗಳಲ್ಲಿ  ಮೊದಲಿದ್ದ ಬಾಂಧವ್ಯದ ವಾತಾವರಣ ಕಾಣಲು ಸಾಧ್ಯವೇ ಇಲ್ಲ. ಅದಕ್ಕೆ ತಕ್ಕಂತೆ ಬೆಲ್ಲದ ಬೆಲೆ ಗಗನವನ್ನು ಮುಟ್ಟಿದಾಗ ಬೆಳೆಗಾರರು ಕಬ್ಬಿನ ಬೆಳೆಯನ್ನು ವಾಣಿಜ್ಯಾತ್ಮಕ ದೃಷ್ಟಿಯಿಂದ ನೋಡುವುದು ಹೆಚ್ಚಾಯಿತು. ಅದು ಅನಿವಾರ್ಯವೂ ಆಯಿತು. ಅದಕ್ಕೆ ತಕ್ಕಂತೆ ಮಾರ್ಪಾಡುಗಳೂ ಬಂದವು.
    ಇಂತಹ ದಿನಗಳಲ್ಲಿ ಆಲೆಮನೆಯನ್ನು ಹಬ್ಬವಾಗಿ ಮಾಡುವ ಆಲೋಚನೆಗೆ ಮುಂದಾಗಿದ್ದು ಅಚ್ಚನಳ್ಳಿಯ ಮಂಜುನಾಥ ಹೆಗಡೆ ಹಾಗೂ ಮಿತ್ರರು. ತುಂಡು ತುಂಡು ಕಬ್ಬು ಬೆಳೆಗಾರರು ಒಂದೆಡೆಗೆ ಸೇರಿ ಒಂದೆರಡು ದಿನಗಳ ಬದಲಾಗಿ ಹಿಂದಿನ ದಿನಮಾನದಲ್ಲಿದ್ದಂತೆ ವಾರಗಟ್ಟಲೆ ಆಲೆಮನೆಯನ್ನು ಮಾಡಿ, ಆಲೆಮನೆಗೆ ಪ್ರವಾಸಿಗರನ್ನು ಕರೆತಂದು, ಮಾಹಿತಿ ನೀಡಿ ಕಬ್ಬು ಟೂರಿಸಂ ಮಾಡುವ ಆಲೋಚನೆಯನ್ನು ರೂಪಿಸಿ ಅದನ್ನು ಯಶಸ್ವಿಯಾಗುವಂತೆ ಮಾಡಿದವರು ಮಂಜುನಾಥ ಹೆಗಡೆ.
    ಮಂಜುನಾಥ ಹೆಗಡೆಯವರ ಕನಸಿನ ಆಲೆಮನೆ ಹಬ್ಬಕ್ಕೆ ಬೆನ್ನೆಲುಬಾಗಿ ನಿಂತಿದ್ದು ಶಿರಸಿಯ ಕದಂಬ ಮಾರ್ಕೇಟಿಂಗ್ ಸೊಸೈಟಿ ಮತ್ತು ಅದರ ಅಧ್ಯಕ್ಷ ಶಂಭುಲಿಂಗ ಹೆಗಡೆ ನಡಗೋಡ. ಈ ಹಬ್ಬ ಜ.11ರಂದು ನಡೆದು ಜ.16ರಂದು ಮುಕ್ತಾಯಗೊಂಡಿತು. ಅಚನಳ್ಳಿ, ದೊಡ್ನಳ್ಳಿ ಹಾಗೂ ಸುತ್ತಮುತ್ತಲ ಊರುಗಳ ಕಬ್ಬು ಬೆಳೆಗಾರರು ಸೇರಿ ಮಾಡುತ್ತಿರುವ ಈ ಆಲೆಮನೆ ಹಬ್ಬಕ್ಕೆ ಶಿರಸಿಯ ಕದಂಬ ಸಂಸ್ಥೆ ಪ್ರವಾಸೋದ್ಯಮದ ಕಲ್ಪನೆ ನೀಡಿತು. ವಾಣಿಜ್ಯೀಕರಣವನ್ನಾಗಿ ಮಾರ್ಪಡಿಸಿತು. ಹಬ್ಬಕ್ಕೆ ಆಗಮಿಸುವವರು 100 ರು.ನ ಟಿಕೆಟ್ ಖರೀದಿ ಮಾಡುವುದು ಅಗತ್ಯ. ಹಣ ಕೊಟ್ಟು ಟಿಕೆಟ್ ಪಡೆದ ಪ್ರವಾಸಿಗರಿಗೆ ತಕ್ಕ ಆಥಿತ್ಯವನ್ನು ಮಾಡಲಾಗುತ್ತದೆ. ಜೊತೆಯಲ್ಲಿ ಕಬ್ಬು ಬೆಳೆಗಾರನಿಗೆ ಹೆಚ್ಚಿನ ವರಮಾನವನ್ನೂ ಕಲ್ಪಿಸುತ್ತದೆ.
    ಹಬ್ಬಕ್ಕೆ ಆಗಮಿಸಿದವರಿಗೆ ಕಬ್ಬಿನ ಹಾಲಿನ ಜೊತೆಗೆ ನೊರೆಬೆಲ್ಲ ನೀಡಲಾಗುತ್ತದೆ. ನೂರು ರು. ನೀಡಿ ಟಿಕೆಟ್ ತೆಗೆದುಕೊಂಡವರಿಗೆ ಒಂದು ತೊಡದೇವು ಪ್ಯಾಕೇಟ್, ಮಿರ್ಚಿ ಬಜೆ ಪ್ಯಾಕೆಟ್, ಖಾಂದಾ ಬಜೆ ಪ್ಯಾಕ್, ಗೋಬಿ ಮಂಚೂರಿ ಹಾಗೂ ವಿವಿಧ ಸ್ನಾಕ್ಸ್ಗಳ ಪ್ಯಾಕೇಟನ್ನು ನೀಡಲಾಗುತ್ತದೆ. ಇಷ್ಟೇ ಅಲ್ಲದೇ ಆಲೆಮನೆಯ ಹಬ್ಬದಲ್ಲಿ ಸಾದಾ ಕಬ್ಬಿನ ಹಾಲಿನ ಜೊತೆಗೆ ಶುಂಟಿಯ ಕಬ್ಬಿನ ಹಾಲು, ಕಿತ್ತಳೆ ಹಣ್ಣು, ದಾಲ್ಚಿನ್ನಿ, ಲವಂಗ, ಲಿಂಬೆ ಹಾಗೂ ಮಜ್ಜಿಗೆ ಹುಲ್ಲಿನ ಕಬ್ಬಿನ ಹಾಲುಗಳೂ ಸವಿಯಲು ಸಿಗುತ್ತದೆ. ಸಾದಾ ಹಾಲಿಗಿಂತ ಹಾಗೂ ಅದರಷ್ಟೇ ವಿಶಿಷ್ಟ ರುಚಿಯ ಅನುಭವ ನೀಡುವ ಈ ರೀತಿಯ ಆರೋಗ್ಯಪೂರ್ಣ ಸುವಾಸನೆಯುಕ್ತ ಹಾಲುಗಳನ್ನು ಯಾರಾದರೂ ಕುಡಿದಲ್ಲಿ ಅವುಗಳಿಗೆ ಮಾರುಹೋಗುವುದು ಖಂಡಿತ.
    ಬೆಂಗಳೂರು, ಉತ್ತರ ಭಾರತ, ಬಿಹಾರ ಕಡೆಗಳಿಂದ ಬರುವ ಪ್ರವಾಸಿಗರಿಗಾಗಿ ಆಲೆಮನೆಯ ಕುರಿತು ಸಮಗ್ರ ಮಾಹಿತಿ ನೀಡಲಾಯಿತು. ಅಲ್ಲದೇ ಆಗಮಿಸುವ ಪ್ರವಾಸಿಗರಿಗೆ ಆಲೆಮನೆ, ಕಬ್ಬಿನಿಂದ ಬೆಲ್ಲ ತಯಾರಿಸುವ ಬಗೆ, ಕಬ್ಬನ ಹಾಲಿನಿಂದ ತಯಾರಿಸಬಹುದಾದ ಉಪ ಉತ್ಪನ್ನಗಳು,  ಸೇರಿದಂತೆ ಕಬ್ಬನ್ನು ಬೆಳೆಯುವುದು ಹೇಗೆ ಈ ಮುಂತಾದ ಎಲ್ಲ ವಿವರಗಳಿಗೆ ಮಾಹಿತಿಯನ್ನೂ ನೀಡಲಾಯಿತು. ಅನುಭವ ಟೂರಿಸ್ಟ್ ಮುಂತಾದ ಸಂಸ್ಥೆಗಳವರು ಆಲೆಮನೆ ಹಬ್ಬಕ್ಕೆ ಪ್ರವಾಸಿಗರನ್ನು ಕರೆತಂದಿದ್ದರು ಎಂದು ಹಬ್ಬದ ರೂವಾರಿಗಳಲ್ಲೊಬ್ಬರಾದ ಮಂಜುನಾಥ ಹೆಗಡೆ ಮಾಹಿತಿ ನೀಡುತ್ತಾರೆ.

    ಕಳೆದ ವರ್ಷ ಆಲೆಮನೆ ನಡೆಸುತ್ತಿದ್ದ ವೇಳೆ ಈ ಆಲೆಮನೆಯನ್ನೂ ಹಬ್ಬವನ್ನಾಗಿ ಮಾಡಿ ಆಲೆಮನೆ ಸಂಸ್ಕೃತಿಯನ್ನು ವಿಶ್ವಕ್ಕೆ ಪರಿಚಯ ಮಾಡುವ ಆಲೋಚನೆ ಹೊಳೆಯಿತು. ಅಲ್ಲದೇ ಇದನ್ನೂ ಪ್ರವಾಸಿಗರನ್ನು ಕರೆತರುವ ತಾಣವನ್ನಾಗಿ ಮಾಡಬಹುದು. ಈ ಮೂಲಕ ಆಲೆಮನೆ ಲುಕ್ಸಾನು ಉಂಟು ಮಾಡದೇ, ಪ್ರವಾಸಿಗರನ್ನು ಕರೆತರುವ ಮೂಲಕ ಸಂಪೂರ್ಣ ಪ್ರವಾಸೋದ್ಯಮ ಹಾಗೂ ವಾಣಿಜ್ಯೀಕರಣಗೊಳಿಸುವ ಆಲೋಚನೆ ಬಂದಿತು. ಅದರ ಫಲವಾಗಿಯೇ ಈ ಹಬ್ಬವನ್ನು ನಡೆಸುತ್ತಿದ್ದೇವೆ ಎಂದು ಮಂಜುನಾಥ ಹೆಗಡೆ ವಿವರಿಸುತ್ತಾರೆ.
    ಒಟ್ಟಿನಲ್ಲಿ ಆಲೆಮನೆಯನ್ನು ವಿಶ್ವಕ್ಕೆ ಪರಿಚಯಿಸುವ, ಆಲೆಮನೆಯ ಮೂಲಕ ಪ್ರವಾಸಿಗರನ್ನು ಕರೆತರುವ ಹಾಗೂ ಅದರಲ್ಲಿ ವಿವಿಧತೆಗಳನ್ನು ಬಳಕೆ ಮಾಡಿಕೊಂಡು ವಾಣಿಜ್ಯಾತ್ಮಕವಾಗಿ ಹಬ್ಬವನ್ನಾಗಿ ಮಾಡಿದ ಅಚ್ಚನಳ್ಳಿಯ ಮಂಜುನಾಥ ಹೆಗಡೆಯವರ ಆಲೆಮನೆ ಹಬ್ಬ ಇತರ ಕಬ್ಬಿನ ಬೆಳೆಗಾರರಿಗೂ ಸ್ಫೂತರ್ಿಯಾಗುವುದರಲ್ಲಿ ಸಂದೇಹವೇ ಇಲ್ಲ. ಜೊತೆಗೆ ಮುಂದಿನ ದಿನಗಳಲ್ಲಿ ಶುಗರ್ಕೇನ್ ಟೂರಿಸಂ ಆಗುವ ಎಲ್ಲ ಸಾಧ್ಯತೆಗಳನ್ನೂ ಆಲೆಮನೆ ಹಬ್ಬ ಹುಟ್ಟುಹಾಕಿದೆ. ಈ ಹಬ್ಬದ ಕುರಿತು ನಿಮ್ಮಲ್ಲೂ ಕುತೂಹಲ ಮೂಡಿದ್ದರೆ ಯಾಕೆ ತಡ.. ಇಂತಹ ಪರಿಕಲ್ಪನೆಯನ್ನು ನೀವೂ ಮಾಡಿ..ಆಲೆಮನೆಯ ಹಬ್ಬ ಆಚರಿಸಿ.. ಹೆಚ್ಚಿನ ಮಾಹಿತಿ ನೀಡಲು ಮಂಜುನಾಥ ಹೆಗಡೆ 9483613900, 9036418230 ಅಥವಾ ಎಂ. ಎಸ್. ಹೆಗಡೆ 9483998511 ಈ ದೂರವಾಣಿ ಸಂಖ್ಯೆಯ ಮೂಲಕ ಪಡೆದುಕೊಳ್ಳಬಹುದಾಗಿದೆ.

    ಆಲೆಮನೆ ಹಬ್ಬಕ್ಕೆ ಕದಂಬ ಮಾರ್ಕೇಟಿಂಗ್ ಸಂಸ್ಥೆ ಬೆನ್ನೆಲುಬಾಗಿ ನಿಂತಿದೆ. ಸಹಾಯ, ಸಹಕಾರ, ಸಲಹೆಗಳನ್ನು ನೀಡುವ ಜೊತೆಗೆ ಈ ಆಲೆಮನೆಯಲ್ಲಿ ತಯಾರಾದ ಬೆಲ್ಲವನ್ನು ಸಂಸ್ಥೆ ಕೊಂಡು ಮಾರಾಟ ಮಾಡುತ್ತದೆ. ಕಬ್ಬು ಬೆಳೆಗಾರರಿಗೆ ಬೆಲ್ಲದ ದರ ವಿತರಿಸಲಾಗುತ್ತದೆ. ಆಲೆಮನೆಯನ್ನು ಹೊರ ಪ್ರದೇಶಗಳ ಪ್ರವಾಸಿಗರಿಗೆ ಪರಿಚಯಿಸುವ ನಿಟ್ಟಿನಲ್ಲಿ ಇದೊಂದು ಹೊಸ ಪ್ರಯತ್ನ
ಶಂಭುಲಿಂಗ ಹೆಗಡೆ
ಕೆ.ಎಂ.ಎಫ್. ನಿರ್ದೇಶಕ

    ನಮ್ಮೂರಿನ ಆಲೆಮನೆಯನ್ನೂ ಉದ್ಯಮವನ್ನಾಗಿ ಮಾಡಿ, ಪ್ರವಾಸಿಗರನ್ನು ಆಕಷರ್ಿಸುವುದು ನಮ್ಮ ಉದ್ದೇಶ. ಕೇವಲ ಕಬ್ಬು ಬೆಳೆದು ಆಲೆಮನೆ ಮಾಡಿ ಮುಗಿಸುವುದರ ಬದಲಾಗಿ ಹೀಗೆ ವಿವಿಧತೆಯನ್ನು ಅನುಸರಿಸಿ ಆದಾಯ ಗಳಿಸಬಹುದು. ಕಬ್ಬು ಬೆಳೆಗಾರರಿಗೆ ಇದೊಂದು ಹೊಸ ಆಶಯ ಮೂಡಿಸಬಲ್ಲದು. ಜೊತೆಗೆ ಆಲೆಮನೆ ಸಂಸ್ಕೃತಿಯನ್ನು ವಿಶ್ವಕ್ಕೆ ಪರಿಚಯ ಮಾಡಬಹುದಾಗಿದೆ.
ಮಂಜುನಾಥ ಹೆಗಡೆ

Saturday, January 5, 2013

ಸೇಡು




ಸುತ್ತೆಲ್ಲ ಹೂವಿನ ಹಾರ
ಮಲ್ಲಿಗೆಯ ದಂಡೆ
ಮೊದಲ ನಿಶೆಯ ನಶೆಯ ದಿನ..|
ಮಿಲನದ ಜೋಡಿಯ ಸುಖದ
ಹುಚ್ಚು ಖೋಡಿಯ ದೇಹದ
ಅಡಿ ಬಿದ್ದು ಹೂ ಹಾರ
ನಲುಗಿತು, ಸೊರಗಿತು,
ಬಾಡಿ ಸೋತಿತು..||


ವ್ಯಕ್ತಿ ಸತ್ತ, ವಸಂತಗಳಾಚೆ
ಜನ ನೆರೆದರು, ಅತ್ತರು
ಹುಯ್ಯಲಿಟ್ಟರು....
ಸತ್ತ ವ್ಯಕ್ತಿಯ ಎದೆಯ
ಮೇಲೆ ನಿಂತಿತು ಹೂ ಹಾರ..|
ಕುಣಿಯಿತು, ಮೆಟ್ಟಿತು,
ಹಾಡಿತು, ನಕ್ಕಿತು..||


ಸೇಡು ತೀರಿಸಿಕೊಂಡಿತು..||


ಬರೆದಿದ್ದು05-10-2008ರಂದು ದಂಟಕಲ್ಲಿನಲ್ಲಿ

Thursday, December 27, 2012

ಹಳೆಯ ನೆನಪು

ಹಳೆಯ ನೆನಪು


ಹಳೆಯ ಸಾಲಿಗೆ ಹೊಸತು ರಾಗವ
ಮನಸು ಸುಮ್ಮನೆ ಬೆಸೆದಿದೆ,
ಅಳಿದ ನೆನಪಿನ ತಳದ ಬುತ್ತಿಯ
ಮನವು ಮತ್ತೆ ಮೀಟಿದೆ..||


ಹಳೆಯ ಕವಿತೆಯ ಪದದ ಸಾಲಿಗೆ
ಹೊಸತು ಅರ್ಥವೆ ಹುಡುಕಿದೆ,
ಮೆಲ್ಲ ಮೆಲ್ಲನೆ ನಿನ್ನ ನೆನಪೇ
ಝಲ್ಲನೆದೆಯನು ತಟ್ಟಿದೆ..||


ಮರೆತು ಹೋದಕವನವೇಕೋ
ಮಧುರವೆನಿಸುತ ಮರಳಿದೆ,
ಕಳೆದು ಹೋಗಿಹ ಪದ ಸಮೂಹವೆ
ಹಾಡಲಾಗದೆ ಉಳಿದಿದೆ..||


ಹಳೆಯ ನೆನಹದು ಅಲೆಯ ತೆರದಲಿ
ಮನದ ದಡವನು ಮುತ್ತಿದೆ,
ಮರೆತೆನೆಂದರೂ ನಿನ್ನ ನೆನಪೇ
ಮನದ ಮಡಿಲಲಿ ಇಣುಕಿದೆ..||


(ಬರೆದಿದ್ದು ದಂಟಕಲ್ಲಿನಲ್ಲಿ ದಿ. 28.092008ರಂದು)

Sunday, December 23, 2012

ಮತ್ತೊಂದಿಷ್ಟು ಹನಿಚುಟುಕುಗಳು

ಮತ್ತೊಂದಿಷ್ಟು ಹನಿಚುಟುಕುಗಳು

38)ಪ್ರೀತಿಗೆ ಕಾರಣ

ಪ್ರಿಯಾ ನೀನು
ನಿನ್ನ ಕೈಯಲ್ಲಿ
ಫಳಫಳನೆ
ಹೊಳೆಯುತ್ತಿರುವ
ಚಿನ್ನದ ನೆಕ್ಲೆಸ್ಸಿನಷ್ಟೇ
ಸುಂದರ..|

39)ಧನ್ವಂತರಿ

ಧನ್ವಂತರಿ ಧನ್ವಂತರಿ
ರೋಗಗಳೆಲ್ಲಾ ಓಡಿ ಹೋಯ್ತ್ರೀ
ಆದ್ರೂ ಮೈ ಮರೀಬ್ಯಾಡ್ರಿ
ಆಗಾಗ ಇಲ್ಲಿಗ್ ಬರ್ತಾ ಇರ್ರಿ||

40)ಜೀಸಸ್

ಜೀಸಸ್
ನೀನು ಬಹಳ
ಜೀನಿಯಸ್
ನಮ್ಮನ್ನು ಕಾಪಾಡುವೆ ಎಂದು ಮಾಡು
ಪ್ರಾಮಿಸ್
ಅಷ್ಟಾದರೆ ನಿನ್ನೆದುರು ಉಳಿದ ದೇವರುಗಳೆಲ್ಲಾ
ನೋ ಯೂಸ್..||

41)ಪ್ರೀತಿ

ಪ್ರೀತಿ, ಪ್ರೀತಿ, ಪ್ರೀತಿ
ನೀ ಯಾಕ್ ಹಿಂಗ್ ಆದ್ತಿ.?
ನಂಗ ಕೋಪ ಬರತೈತಿ
ಆದರ ನೀ ನಂಗ ಎಲ್ಲಿ ಸಿಗ್ತಿ..?

42)ಪರೀಕ್ಷೆ

ಪರೀಕ್ಷೆ ಪರೀಕ್ಷೆ
ಬಹಳ ನಿರೀಕ್ಷೆ|
ಮಾಡಿದರೆ ಸಮೀಕ್ಷೆ
ಹಲವರಿಗಿಲ್ಲ ರಕ್ಷೆ||
ಸರಿಯಾಗಿ ಓದದಿದ್ರೆ ಮಾತ್ರ
ಫೇಲಾಗೋದೆ ಅವರಿಗೆ ಶಿಕ್ಷೆ||

(ಹೈಸ್ಕೂಲಿನ ಕೊನೆಯ ದಿನಗಳಲ್ಲಿ, ಇನ್ನೂ ಬರವಣಿಗೆಯೆಡೆಗೆ ತುಡಿಯುತ್ತಿದ್ದ ಮನಸ್ಸು. ಆ ಸಂದರ್ಭದಲ್ಲಿ ಮೂಡಿ ಬಂದ ಕೆಲವು ಹನಿ ಚುಟುಕುಗಳು. ಮೊದ ಮೊದಲ ಬರಹಗಳು ಇವು.. )

Wednesday, December 19, 2012

ಎಲ್ಲ ಮರೆತಿರುವಾಗ (ಕಥೆ ಭಾಗ-8)

ಎಲ್ಲ ಮರೆತಿರುವಾಗ

ಭಾಗ-8

(ಇಲ್ಲಿಯವರೆಗೆ- ರಚನಾಳಿಗೆ ತನ್ನ ಬದುಕಿನ ದುರಂತ ದಿನಗಳನ್ನು ಹೇಳುತ್ತಿರುವ ಜೀವನ್..)
ರಚನಾ ನೀನು ಏನೇ ಹೇಳು ಕಾಲೇಜು ಲೈಫಿದೆಯಲ್ಲ ಅದರಂತಹ ಸುಂದರ ಜೀವನ ಇನ್ನೊಂದಿಲ್ಲ. ಅಲ್ಲಿ ನಾವು ಏನೆಲ್ಲ ಮಾಡಬಹುದು. ಸಾಧಿಸಬಹುದು. ಬಹುಶಃ ಬದುಕನ್ನು ಸಂಪೂರ್ಣವಾಗಿ ರೂಪಿಸುವುದೇ ಕಾಲೇಜು ಎನ್ನಬಹುದು. ಅಲ್ವಾ?
ರಚನಾ ಸುಮ್ಮನೆ ತಲೆಯಾಡಿಸಿದಳು.
ಜೀವನ್ ಮುಂದುವರಿಸಿದ.
ನನ್ನ ಕಾಲೆಜು ಲೈಫು ಪ್ರಾರಂಭದ ಇರಡು ತಿಂಗಳು ಸೀದಾ ಸಾದಾ ಆಗಿಯೇ ಇತ್ತು. ಹೊಸ ಪರಿಚಯ, ಹೊಸ ವಾತಾವರಣ, ಹೊಸ ಗೆಳೆಯರು, ಹೀಗೆಯೇ ಸಾಗುತ್ತಿತ್ತು. ಯಥಾ ಪ್ರಕಾರ ಲೇಟ್ ಕಮ್ಮರ್ ನಾನಾದ್ದರಿಂದ ಶಿರಸಿಯಲ್ಲಿ ಸೂರ್ಯ ಹೇಗೆ ಹುಟ್ಟುತ್ತಾನೆ ಎಂಬುದು ನನಗೆ ಗೊತ್ತಿಲ್ಲ ಎಂದರೆ ಅತಿಶಯೋಕ್ತಿಯಲ್ಲಿ ಬಿಡು.
ಕಾಲೇಜಿನ ದಿನಗಳು ಸರಿದಂತೆಲ್ಲ ಒಮ್ಮೆ ಆ ದಿನದ ಕ್ಲಾಸುಗಳನ್ನು ಮುಗಿಸಿ ಬೇಗ ಮನೆಗೆ ಹೋಗುವ ತರಾತುರಿಯಲ್ಲಿದ್ದೆ. ಆಫ್ಶನಲ್ ಇಂಗ್ಲೀಶ್ ಆದ್ದರಿಂದ ಹುಡುಗರು ಕಡಿಮೆಯಿದ್ದರು. ಮುಂದಿನ ಕ್ಲಾಸಿಗೆ ಬಂಕ್ ಮಾಡುವುದೆಂದು ತೀರ್ಮಾನಿಸಿ ಹೊರಡಲನುವಾಗಿದ್ದೆ. 
ನಾನು 3 ಗಂಟೆಯ ನಂತರ ಕಾಲೇಜಿನಲ್ಲಿರೋದಿಲ್ಲ ಎಂಬ ಸಂಗತಿ ಹೆಚ್ಚಿನ ಹುಡುಗರಿಗೆ ಗೊತ್ತಿತ್ತಾದ್ದರಿಂದ ನನ್ನೆಡೆಗಿನ ಜೋಕುಗಳಲ್ಲಿ ಅದೂ ಒಂದಾಗಿ ಸೇರಿ ಹೋಗಿತ್ತು. ಹೀಗಿರಲು ಅವಳು ಬಂದು ಇದ್ದಕ್ಕಿದ್ದಂತೆ ನನ್ನನ್ನು ಪರಿಚಯ ಮಾಡಿಕೊಂಡಳು. ಹೆಸರು ಸಂಗೀತಾ. 
ಪರಿಚಯಕ್ಕೆ ಮುನ್ನ ಅನೇಕ ಸಾರಿ ಕ್ಲಾಸಿನಲ್ಲಿ ಕಂಡಿದ್ದೆ. ಮಾತನಾಡಲು ಮುಜುಗರ. ಇನ್ನೂ ಮುಖ್ಯ ಸಂಗತಿ ಎಂದರೆ ನಾನಾಗಿ ಯಾರನ್ನೂ ಮಾತನಾಡಿಸದ ವ್ಯಕ್ತಿ. ಅದಕ್ಕಿಂತ ಹೆಚ್ಚಾಗಿ ನಾನು ಗುಮ್ಮನಗುಸ್ಕನಾಗಿದ್ದೆ. ಅದ್ಯಾರು ನನ್ನ ಬಗ್ಗೆ ಹೇಳಿದ್ದರೋ, ಅಥವಾ ನನ್ನ ಮೇಲಿನ ಲೇಟ್ ಕಮ್ಮರ್ ಜೋಕುಗಳು ಅವಳ ಕಿವಿಗೂ ಬಿದ್ದಿದ್ದವೋ ಏನೋ.. ಪರಿಚಯ ಮಾಡಿಕೊಂಡಳು. ನಾನು ದೊಡ್ಡ ಶಾಕಿನೊಂದಿಗೆ ನನ್ನನ್ನು ಪರಿಚಯಿಸಿಕೊಂಡಿದ್ದೆ. 
ಬಹುಶಃ ಆಕೆ ಪರಿಚಯ ಆದ ಗಳಿಗೆಯಲ್ಲಿ ಆಕಾಶದಲ್ಲಿ ಅದ್ಯಾವುದೋ ದೇವತೆಗಳು ನಮ್ಮನ್ನು ಹರಸಿದ್ದವು ಅಂತ ಕಾಣುತ್ತದೆ. ಒಂದೆರಡು ದಿನಗಳಲ್ಲಿ ಸಂಗೀತಾ ನನ್ನ ಪರಮಾಪ್ತ ಗೆಳತಿಯಾಗಿಬಿಟ್ಟಳು. ರಚನಾ ಇನ್ನೊಂದು ತಮಾಶೆಯ ಸಂಗತಿ ಏನ್ ಗೊತ್ತಾ., ಆಕೆ ಮೊದಲ ದಿನ ನನ್ನ ಪರಿಚಯ ಮಾಡಿಕೊಂಡಿದ್ದಳಲ್ಲ, ಮರು ದಿನ ಮತ್ತೆ ಸಿಕ್ಕಳು. ನನಗೆ ಅವಳು ಪರಿಚಯ ಮಾಡ್ಕೊಂಡಿದ್ದು ಮರೆತಿತ್ತು. ಹಾಯ್ ಅಂದಳು. ನಾನೊಮ್ಮೆ ತಲೆ ಕೆರೆದುಕೊಂಡಿದ್ದೆ. ಹೆಸರೂ ನೆನಪಾಗಿರಲಿಲ್ಲ. ಕೊನೆಗೆ ಪೆಕರನಂತೆ ಹಾಯ್ ಅಂದು ಮತ್ತೊಮ್ಮೆ ಹೆಸರು ಕೇಳಿದ್ದೆ. 
ಸಂಗೀತಾ ಕುರಿತು ಒಂದೆರಡು ಸಂಗತಿ ಹೇಳಲೇ ಬೇಕು. ನನ್ನದೇ ಕ್ಲಾಸಿನ ಹುಡುಗಿ. ನನ್ನೂರಿನ ಬಸ್ಸಿಗೆ ಬರುತ್ತಿದ್ದಳು ಎಂಬುದು ನನ್ನ ಪರಿಚಯ ಆದ ಮೇಲೆ ಗೊತ್ತಾದ ಸಂಗತಿ. ಮನೆಯಲ್ಲಿ ಬೇಜಾನ್ ಆಸ್ತಿ ಇದೆ. ಅಲ್ಲದೆ ಅವರ ಅಪ್ಪ ಸ್ಥಳೀಯ ರಾಜಕಾರಣಿಯಾಗಿ ಹೆಸರು ಮಾಡಿದವರು. ದುಡ್ಡಿಗೆ ಕೊರತೆಯಿರಲಿಲ್ಲ. ಮಗಳು ಆಸೆಪಟ್ಟಿದ್ದರೆ ಎಂಜಿನಿಯರಿಂಗೋ ಅಥವಾ ಇನ್ಯಾವುದೋ ದೊಡ್ಡ ಹೆಸರಿನ ಕೋರ್ಸಿಗೆ ಸೇರಿಸಬಲ್ಲ ತಾಕತ್ತನ್ನು ಹೊಂದಿದ್ದವನು. 
ಆದರೆ ಸಂಗೀತಾಳೇ ವಿಚಿತ್ರ ಸ್ವಭಾವದವಳು. ಆಕೆಗೆ ಇಷ್ಟವಿರಲಿಲ್ಲವೋ, ಅಥವಾ ಅಂತಹ ದೊಡ್ಡ ದೊಡ್ಡ ಕೋರ್ಸುಗಳನ್ನು ಮಾಡಿಕೊಂಡರೆ ಕಾಲೇಜು ಲೈಫಿನಲ್ಲಿ ಬರೀ ಓದು ಓದು ಎಂದು ಆ ಕಾಲದ ರಸನಿಮಿಷಗಳ ಸಂತಸ ಕಳೆದುಹೋಗುತ್ತದೆ ಎಂದುಕೊಂಡಿದ್ದಳೋ ಏನೋ.. ಅಂತೂ ನನ್ನ ಕ್ಲಾಸಿಗೆ ಬರ್ತಿದ್ದಳು. ನನ್ನದೇ ಆಫ್ಶಿನಲ್ ಇಂಗ್ಲೀಶ್ ಕ್ಲಾಸೂ ಆಗಿದ್ದರಿಂದ ನನ್ನ ಪರಿಚಯವಾದಳು ಎನ್ನಬಹುದು.
ಮುಂದಿನ ದಿನಗಳು ಬಹಳ ಸಂತಸದಿಂದ ಕೂಡಿದ್ದವು. ಕಾಲೇಜಿನಲ್ಲಿ ನಾವಿಬ್ಬರೂ ಪರಮಾಪ್ತರಾಗಿದ್ದೆವು. ಒಂದೆ ಬಸ್ ಆದ್ದರಿಂದ ಬಸ್ಸಿನಲ್ಲೂ ಒಟ್ಟಿಗೆ ಬರುತ್ತಿದ್ದೆವು. ಇಬ್ಬರು ಹೊಸದಾಗಿ ಮಿತ್ರರಾದರೆ ಪರಸ್ಪರ ಪ್ರಭಾವ ಬೀರುತ್ತಾರೆ ಎಂಬ ಮಾತಿದೆಯಲ್ಲ.. ಅವಳು ನನ್ನ ಮೇಲೆ ಅದೆಷ್ಟು ಪ್ರಭಾವ ಬೀರಿದಳೋ ಗೊತ್ತಾಗಲಿಲ್ಲ.ಆದರೆ ಆಕೆ ಮಾತ್ರ ನನ್ನಂತೆಯೇ ಕ್ಲಾಸಿಗೆ ಬಂಕ್ ಹೊಡೆಯಲು ಪ್ರಾರಂಭಿಸಿದ್ದಂತೂ ಸತ್ಯ. ಬೆಳಿಗ್ಗೆ 11ಕ್ಕೆ ಕ್ಲಾಸಿಗೆ ಹೋಗುವುದು, ಮದ್ಯಾಹ್ನ 3ಕ್ಕೆ ವಾಪಸ್ಸು.
ಆ ದಿನಗಳಲ್ಲಿ ಮಾತು, ಮಾತು ಮಾತು ಇವುಗಳೇ ನಮ್ಮ ಜೊತೆಗೆ ಇದ್ದಿದ್ದು. ಇಬ್ಬರು ಹುಡುಗಿಯರೂ ಆ ರೀತಿ ನಾನ್ ಸ್ಟಾಪ್ ಮಾತಾಡುವುದಿಲ್ಲವೇನೋ.. ಆದರೆ ನಾವಿಬ್ಬರು ಹಂಗೆ ಮಾತಾಡ್ತಿದ್ದೆವು.
ನಮ್ಮಿಬ್ಬರ ಈ ದೋಸ್ತಿ ನಿಧಾನವಾಗಿ ಕಾಲೇಜಿನಲ್ಲಿ ಮನೆಮಾತಾಯಿತು. ಅದಕ್ಕೆ ತಕ್ಕಂತೆ ಗಾಸಿಪ್ಪಾಯಣ, ರೂಮರಾಯಣಗಳೂ ಹುಟ್ಟಿಕೊಂಡವು. ಇದಕ್ಕೆ ನಾನು ತಲೆಕೆಡಿಸಿಕೊಂಡಿದ್ದೆನಾದರೂ ಆಕೆ ತಲೆಬಿಸಿ ಮಾಡಿಕೊಳ್ಳಲಿಲ್ಲ. ಹಾಗಾಗಿ ನಮ್ಮ ದೋಸ್ತಿಗೆ ಭಂಗ ಬರಲಿಲ್ಲ. ಜೊತೆಗೆ ದೋಸ್ತಿಯಲ್ಲಿ ಅಪಸವ್ಯಗಳೂ ಕಾಣಲಿಲ್ಲ.
ಈ ಕುರಿತು ಇನ್ನೂ ಹೇಳಬೇಕು. ಈ ಸಂಗೀತಾಳಿಂದಲೇ ನನ್ನ ಬದುಕು ಟರ್ನಾಗಿದ್ದು ಎಂದರೆ ನೀನು ನಂಬಲೇ ಬೇಕು. ಎಂದೋ ಆಕೆಯ ಎದುರು ಒಮ್ಮೆ ಹಾಡು ಗುನುಗಿದ್ದನ್ನು ಕೇಳಿ ಅದನ್ನು ಬೆಳೆಸಿದ್ದೇ ಆಕೆ. 
ಅದೇ ರೀತಿ ಒಂದು ಖಯಾಲಿಯ ದಿನ ಕಾಲೇಜಿನಲ್ಲಿ ಕ್ಲಾಸು ಆಫಾಗಿತ್ತು.
ಮನಸ್ಸು ಯಾವುದೋ ಲಹರಿಯಲ್ಲಿತ್ತು.
ಸುಮ್ಮನೆ ಚಾಕ್ ಪೀಸ್ ಪಡೆದುಕೊಂಡು ಬೋರ್ಡಿನ ಮೇಲೆ
`ನಿನ್ನ ಪ್ರೀತಿಗೆ ನಾನು ಒಳ್ಳೆಯವನಲ್ಲ..
ನಿಜ ಗೆಳತಿ..ಖಂಡಿತವಾಗಿಯೂ
ಒಳ್ಳೆಯವನಲ್ಲ..."
ಎನ್ನುವ ಸಾಲುಗಳನ್ನು ಬರೆದೆ.
ಈ ಸಾಲುಗಳು ಆಕೆಯ ಕಣ್ಣಿಗೆ ಬಿದ್ದವು. ಆಗಿಂದ ಶುರುವಾಯಿತು ನೋಡಿ..ಜೀವನ್ ನೀನು ಬಹಳ ಚನ್ನಾಗಿ ಬರೀತಿಯಾ ಕಣೋ.. ಕೀಪ್ ಇಟ್ ಅಪ್.. ಎಂದು ಮೊದಲು ಅಪ್ರಿಸಿಯೇಶನ್ ಮಾಡಿದ ಆಕೆ ಆ ನಂತರ ನನ್ನಲ್ಲಿ ಬರವಣಿಗೆಯ ಸಾಲುಗಳು ಮೂಡಲು ಕಾರಣವಾದಳು. ಅವಳ ದೆಸೆಯಿಂದಲೇ ನಾನು ಅದೆಂತೆಂತದ್ದೋ ಕವಿತೆಗಳನ್ನು ಬರೆದೆ. ಸಂಗ್ರಹ ಮಾಡಿಯೂ ಇಟ್ಟಿದ್ದೆ. ಈಗ ಅದೆಲ್ಲಿ ಹೋಗಿದೆಯೋ ಗೊತ್ತಿಲ್ಲ.
ಒಂದೊಳ್ಳೆ ಸಂಗತಿಯೆಂದರೆ ಆಕೆ ನನಗೆ ಅದೆಷ್ಟು ಒಳ್ಳೊಳ್ಳೆ ಕಾದಂಬರಿಗಳನ್ನು ಸಜೆಸ್ಟ್ ಮಾಡಿದ್ಲು ಗೊತ್ತಾ. ಆ ದಿನಗಳಲ್ಲಿಯೇ ನಾನು `ಮಲೆಗಳಲ್ಲಿ ಮಧುಮಗಳು, ಕಾನೂರು ಹೆಗ್ಗಡತಿ, ಕರ್ವಾಲೋ, ಭಾರತೀಪುರ, ಚಿದಂಬರ ರಹಸ್ಯ, ಒಂದು ಬದಿ ಕಡಲು, ಆವರಣ, ತಂತು, ಭಿತ್ತಿ ಈ ಮುಂತಾದ ಕನ್ನಡದ ಮೇರು ಕೃತಿಗಳನ್ನು ಓದಿದ್ದೆ. ಈಗಲೂ ನೀನು ನೋಡಬಹುದು ನಮ್ಮ ಕಾಲೇಜಿನ ಲೈಬ್ರರಿಯಲ್ಲಿ ನನ್ನ ಐಕಾರ್ಡ್ ನಂಬರ್ 184 ಇದ್ದಷ್ಟು ಬೇರೆ ಯಾರ ನಂಬರುಗಳೂ ಲೈಬ್ರರಿಯ ಪುಸ್ತಕದಲ್ಲಿಲ್ಲ. 
ಇಷ್ಟೇ ಅಲ್ಲ. ಇಂಗ್ಲೀಷು ನನಗೆ ಬಹಳ ತಲೆ ತಿನ್ನುವ ವಿಷಯ ಆಗಿತ್ತು. ಆದರೂ ಕಾಲೇಜಿನಲ್ಲಿ ಅದನ್ನೇ ಒಂದು ವಿಷಯವಾಗಿ ತಗೊಂಡಿದ್ದೆ. 
ಆ ದಿನಗಳಲ್ಲಿ ಕಾರ್ನಾಡರ ತುಘಲಕ್, ಈ ಮುಂತಾದ ನಾಟಕಗಳು ನಮಗೆ ಸಿಲಬಸ್ ಆಗಿ ಇದ್ದವು. ಇಂಗ್ಲೀಷಿನ ಈ ಪುಸ್ತಕಗಳನ್ನು ಕೋಳ್ಳಲು ನನ್ನ ಬಳಿ ದುಡ್ಡಿರಲಿಲ್ಲ. ಆ ಸಂದರ್ಭದಲ್ಲೆಲ್ಲ ಇವಳೇ ನನಗೆ ಈ ಪುಸ್ತಕಗಳನ್ನು ಎರವಲು ನೀಡಿದ್ದು. ಈ ಪುಸ್ತಕಗಳೆಲ್ಲ ಕನ್ನಡದಿಂದ ಇಂಗ್ಲೀಷಿನಲ್ಲಿ ಅನುವಾದ ಆಗಿರುವ ಕಾರಣ ನಾನು ಕನ್ನಡದಲ್ಲಿ ಓದುತ್ತಿದ್ದೆ. ನಂತರ ಪರೀಕ್ಷೆಗಳಲ್ಲಿ ನನ್ನದೇ ವಾಕ್ಯಗಳನ್ನು ಬಳಸಿ ಇಂಗ್ಲೀಷಿನಲ್ಲಿ ಬರೆಯುತ್ತಿದ್ದೆ. ಇದರಿಂದಾಗೀ ತೀರಾ 70-80 ಮಾರ್ಕುಗಳು ಬೀಳದಿದ್ದರೂ 45-50ಕ್ಕಂತೂ ಕೊರತೆಯಾಗುತ್ತಿರಲಿಲ್ಲ. ಇದನ್ನು ಅರಿಯದ ಸಂಗೀತಾ ಹಾಗೂ ಇತರ ಮಿತ್ರರು ಯದ್ವಾ ತದ್ವಾ ಓದಿಯೂ ನನ್ನಷ್ಟೇ ಮಾರ್ಕು ಪಡೆಯುತ್ತಿದ್ದರು. ಕೊನೆಗೆ ನನ್ನ ಈ ಐಡಿಯಾವನ್ನು ಹೇಳಿದ್ದೇ ತಡ ಎಲ್ಲರೂ ಅದನ್ನು ಪಾಲಿಸಿ ಮಾರ್ಕುಗಳನ್ನು ಪಡೆದ ಮೇಲೆಯೇ ನನ್ನ ಕುರಿತು ಜೋಕುಗಳನ್ನು ಆಡುತ್ತಿದ್ದುದು ಕಡಿಮೆಯಾಗಿದ್ದು.

(ಮುಂದುವರಿಯುವುದು..)