Monday, September 26, 2016

ಪರಿಸರ ಮಿತ್ರರು

ಇವರೆಲ್ಲ ನಮ್ಮ ಗೆಳೆಯರು
ಕಾನನದ ಜೊತೆಗಾರರು |
ಮಿತ್ರರು, ಭ್ರಾತ್ರರು,
ಸದಸ್ಯರು ಸೋದರರು |

ತೇಗ ಚೆಲುವು ಬಿದಿರು ಕೊಳಲು
ಪ್ರಾಣಿ ನೂರು, ತುಂಟ ಅಳಿಲು |
ಬಹಳ ಗಟ್ಟಿ ಜಟ್ಟಿ ಬೀಟೆ
ಇರುವರೇನು ನಿನಗೆ ಸಾಟಿ |

ಆನೆ ಹುಲಿ ಸಿಂಹ ಕರಡಿ
ಕಾನನದ ಸಿರಿಯ ಕಣ್ಗಳು |
ಹಕ್ಕಿ ಪಕ್ಷಿ ನದ ನದಿಗಳು
ನೂರು ಇಂಪು ಸವಿಯ ನುಡಿಗಳು |

ದೇವದಾರು ಬಲು ಜೋರು
ನಯನ ಸೆಳೆವುದು |
ಜಿಂಕೆ ಕಡವೆ ಮೃಗ ಸಮೂಹ
ನಮ್ಮ ಕರೆವವು ||

ಲವಂಗವಾದಿ ವನ ಸಿರಿಗಳು
ಜೀವ ಜ್ಯೋತಿಯು
ರೋಗ ರುಜಿನ ಬಂದರೀಗ
ಜೀವ ಕೊಡುವವು |

ನವಿಲು ಹಕ್ಕಿ, ನೂರು ಪಕ್ಷಿ
ಕಾನನದ ಸಿರಿಗಳು |
ಮಿಂಚುಳ್ಳಿ ಚುಕ್ಕಿ, ಹಕ್ಕಿ
ಮನವ ಬೆಸೆವ ಖಗಗಳು |

ನದಿಯಲಾಡೋ ಮೀನು ಮರಿ
ಖುಷಿಯ ಕೊಡುವವು |
ಹಂಸ ಗಿಳಿ ಪಾರಿವಾಳ
ಮನದಿ ಮೆರೆವವು |

ಬಾನು ಕಾನು ನೆಲ ಜಲವು
ನಮ್ಮ ಜೀವವು |
ಉಸಿರ್ಗಾಳಿ ಜೀವ ಜಲವ
ಇವು ಕೊಡುವವು |

ನಮ್ಮ ಈ ಸೋದರರನು
ನೀವು ಉಳಿಸಿರಿ |
ಮುಂದಿನ ಕೆಲ ಜೀವನವ
ಹಸಿ ಹಸಿರಾಗಿಸಿರಿ ||


+++++++++++++++++++++++

( ಈ ಕವಿತೆಯನ್ನು ಬರೆದಿರುವುದು 20-12-2005ರಂದು ದಂಟಕಲ್ಲಿನಲ್ಲಿ)

(ಯಾವುದೇ ಕವಿಯ ಕಾವ್ಯಲೋಕದ ಪಯಣ ಇಂತಹ ಕವಿತೆಗಳಿಂದಲೇ ಆರಂಭವಾಗುತ್ತದೆ. ಇದೊಂದು ಮಕ್ಕಳ ಕವಿತೆ ಎನ್ನಬಹುದೇನೋ. ನನ್ನ ಬರವಣಿಗೆಯ ಪ್ರಾರಂಭದ ದಿನಗಳ ಕವಿತೆ ಇದು. 49ನೇ ಕವಿತೆ ಇದು ಎನ್ನುವುದನ್ನು ನನ್ನ ಪಟ್ಟಿ ಉಲ್ಲೇಖಿಸಿದೆ. ಕಲಿಕೆ ನಿರಂತರ. ಬದಲಾವಣೆ ಕೂಡ ನಿರಂತರ. ಅಂದಿಗೂ ಇಂದಿಗೂ ಅದೆಷ್ಟೋ ಬದಲಾವಣೆಗಳಾಗಿವೆ. ಆಗ ಹೀಗೆಲ್ಲಾ ಬರೆದಿದ್ದೆನಾ ಎಂದು ನನಗೇ ಆಶ್ಚರ್ಯವಾಗುವಂತಿದೆ. ಅಲ್ಲದೇ ಸ್ವಲ್ಪ ನಾಚಿಕೆಯೂ ಆಗುತ್ತಿದೆ. ಏನೇ ಆಗಲಿ. ನೀವೂ ಓದಿಬಿಡಿ. 11 ವರ್ಷಗಳ ಹಿಂದಿನ ಕವಿತೆ ನಿಮ್ಮ ಮುಂದೆ )

Saturday, September 17, 2016

ಅಘನಾಶಿನಿ ಕಣಿವೆಯಲ್ಲಿ-33

 
           `ನಾ ಎಂತಾ ಹೇಳೂದು..' ಎಂದು ಶುರುಮಾಡಿದ ಬಾಬು. ಪ್ರದೀಪ ಕೆಕ್ಕರಿಸಿ ನೋಡಿದ. `ನಾ ಒಬ್ನೆ ಅಲ್ಲ. ನೀವ್ ನೋಡಿದ್ರೆ ನನ್ನ ಮಾತ್ರ ಹಿಡಕಂಡ್ರಿ. ಬಹಳಷ್ಟ್ ಜನ ಇದ್ದಾರೆ. ಅವ್ರು ಮಾಡದೇ ಇರುವಂತದ್ದೇನೂ ನಾ ಮಾಡನಿಲ್ಲ.' ಎಂದು ಅಲವತ್ತುಕೊಂಡ. ಪ್ರದೀಪನ ಸಹನೆಯ ಕಟ್ಟೆ ಮೀರಿತ್ತು. ರಪ್ಪನೆ ಬಾಬುವಿನ ಮುಸಡಿಗೆ ಒಂದು ಬಡಿದ. ಹೊಡೆದ ಹೊಡೆತಕ್ಕೆ ಬಾಬುವಿನ ಮುಖದಿಂದ ಬಳ್ಳನೆ ರಕ್ತ ಬಂದಿತು. ಕೈ ಮುಗಿದ ಬಾಬು.
              `ನಾನು ಮೊದ ಮೊದಲು ಇಂತದ್ದೆಲ್ಲ ಮಾಡಿರ್ನಿಲ್ಲ. ಆದರೆ ಹೊಟೆಲ್ ಮಾಡಬೇಕು ಅಂದಕಂಡು ಮುಂಬೈಗೆ ಹೋದೆ. ಅಲ್ಲಿ ಗಂಧವನ್ನು ಕಳ್ಳತನ ಮಾಡುವ ಗ್ಯಾಂಗ್ ಪರಿಚಯವಾಯಿತು. ಒಂದೆರಡು ವರ್ಷ ಮುಂಬೈನಲ್ಲಿ ಹೊಟೆಲ್ ಕೆಲಸ ಮಾಡಿದಂತೆ ಮಾಡಿದೆ. ಆದರೆ ನಂತರ ನನಗೆ ಗಂಧದ ತುಂಡುಗಳನ್ನು ಮಾರಾಟ ಮಾಡುವ ಜಾಲದ ಉದ್ದಗಲಗಳು ನನಗೆ ಗೊತ್ತಾದವು. ಮುಂಬೈನಲ್ಲಿ ಯಾವುದನ್ನು ಹೇಗೆ ಮಾರಾಟ ಮಾಡಬೇಕು? ಯಾವುದಕ್ಕೆ ಎಷ್ಟು ರೇಟಿದೆ ಎನ್ನುವುದನ್ನೆಲ್ಲ ತಿಳಿದುಕೊಂಡೆ. ಗಂಧದ ತುಂಡುಗಳ ಮಾರಾಟದ ನೆಪದಲ್ಲಿ ನಾನು ಆ ಜಾಲದ ಭಾಗವಾಗಿದ್ದೆ. ಆದರೆ ನಂತರದ ದಿನಗಳಲ್ಲಿ ಕೇವಲ ಗಂಧದ ತುಂಡುಗಳಿಗೆ ಮಾತ್ರ ನಮ್ಮ ದಂಧೆ ಸೀಮಿತವಾಗಿಲ್ಲ ಎನ್ನುವುದು ಅರಿವಾಯಿತು. ಕ್ರಮೇಣ ಗಾಂಜಾ ಮಾರಾಟವೂ ಗೊತ್ತಾಯಿತು. ಯಾರೋ ತಂದುಕೊಡುತ್ತಿದ್ದರು. ಅದನ್ನು ಇನ್ಯಾರಿಗೋ ದಾಟಿಸುವ ಕೆಲಸ ಮಾಡುತ್ತಿದೆ. ಹೀಗೆ ಮಾಡುತ್ತಿದ್ದಾಗಲೇ ಒಂದೆರಡು ಮಧ್ಯವರ್ತಿಗಳ ಪರಿಚಯವೂ ಆಯಿತು. ಇದಲ್ಲದೇ ಮುಂಬೈನಲ್ಲಿ ಅಧಿಕಾರಿಗಳ ಕಣ್ಣುತಪ್ಪಿಸಿ ಬಂದರುಗಳಲ್ಲಿ ಲಂಗರು ಹಾಕಿರುತ್ತಿದ್ದ ಹಡಗುಗಳಿಗೆ ಮಾದಕ ವಸ್ತುಗಳನ್ನು ದಾಟಿಸುವುದನ್ನೂ ತಿಳಿದುಕೊಂಡಿದ್ದೆ. ಹೀಗಿದ್ದಾಗಲೇ ನನಗೆ ನಮ್ಮೂರ ಕಾಡುಗಳಲ್ಲಿ ಹೇರಳವಾಗಿ ಸಿಗುತ್ತಿದ್ದ ಗಂಧದ ತುಂಡುಗಳ ವಿಷಯ ನೆನಪಾದವು. ಅದನ್ನು ಇಲ್ಲಿ ತಂದು ಮಾರಾಟ ಮಾಡಿದರೆ ಹೇಗೆ ಎನ್ನುವುದೂ ಅರಿವಾಯಿತು. ತಲೆಯಲ್ಲಿ ಬಂದ ತಕ್ಷಣವೇ ನಾನು ಮುಂಬೈಯನ್ನು ಬಿಟ್ಟು ನಮ್ಮೂರಿಗೆ ವಾಪಾಸಾಗಿದ್ದೆ..' ಬಾಬು ಒಂದೇ ಉಸುರಿಗೆ ಹೇಳಿದ್ದ.
           `ಮುಂಬೈನಿಂದ ಬರುವಾಗ ನನ್ನಲ್ಲಿ ಅಷ್ಟೋ ಇಷ್ಟೋ ದುಡ್ಡಾಗಿತ್ತು. ಊರಿಗೆ ವಾಪಾಸು ಬಮದವನೇ ದೊಡ್ಡದೊಂದು ಕಾರನ್ನು ಕೊಂಡುಕೊಂಡೆ. ನೋಡುಗರಿಗೆ ನಾನು ಮುಂಬೈನಲ್ಲಿ ಹೊಟೆಲ್ ಬ್ಯುಸಿನೆಸ್ ನಲ್ಲಿ ಭಾರೀ ಲಾಭ ಮಾಡಿಕೊಂಡೆ ಎನ್ನುವ ಭಾವನೆ ಮೂಡುವಂತೆ ಮಾಡಿದೆ. ಆದರೆ ವಾಸ್ತವದಲ್ಲಿ ನಾನು ಕಾರು ಕೊಂಡಿದ್ದೇ ಬೇರೆ ಕಾರಣಕ್ಕಾಗಿತ್ತು. ನಮ್ಮೂರ ಭಾಗದಲ್ಲಿ ಸಿಗುವ ಗಂಧದ ಮಾಲನ್ನು ಕದ್ದು ಕಾರಿನಲ್ಲಿ ಹಾಕಿಕೊಂಡು ಮಧ್ಯವರ್ತಿಗಳಿಗೆ ಸಾಗಿಸುವ ಕೆಲಸವನ್ನು ನಾನು ಮಾಡುತ್ತಿದ್ದೆ. ಹೇರಳವಾಗಿ ದುಡ್ಡು ಬರುತ್ತಲೇ ಇತ್ತು. ಆದರೆ ಮೊದ ಮೊದಲಿಗೆ ಗಂಧದ ತುಂಡುಗಳನ್ನು ಕಳ್ಳತನ ಮಾಡುತ್ತಿದ್ದ ನಾನು ನಂತರದ ದಿನಗಳಲ್ಲಿ ಬೇರೆ ಬೇರೆ ದಂಧೆಯನ್ನೂ ಶುರು ಹಚ್ಚಿಕೊಂಡೆ. ಕಳ್ಳ ನಾಟಾ ಮಾಡುವುದು, ಅದರ ಮಾರಾಟ, ಗಾಂಜಾ ಬೆಳೆಯುವುದು, ಅದನ್ನು ಮಾರಾಟ ಮಾಡುವುದು ಹೀಗೆ ಹಲವಾರು ದಂಧೆ ಶುರು ಮಾಡಿದೆ. ಮೊದ ಮೊದಲು ಎಲ್ಲವೂ ಸರಾಗವಾಗಿಯೇ ಇತ್ತು. ಯಾವಾಗಲೂ ಅಷ್ಟೆ ಪ್ರತಿಸ್ಪರ್ಧಿಗಳಿಲ್ಲ ಅಂದರೆ ದಂಧೆ ನಿರಾತಂಕವಾಗಿ ಸಾಗುತ್ತದೆ. ನನಗೂ ಹಾಗೆಯೇ ಆಗಿತ್ತು. ಆದರೆ ಪ್ರತಿಸ್ಪರ್ಧಿ ಹುಟ್ಟಿಕೊಂಡ ನಂತರ ಮಾತ್ರ ನಮ್ಮ ದಂಧೆಯಲ್ಲಿ ಏರಿಳಿತ ಕಾಣಬಹುದು. ನನಗೂ ಹಾಗೆಯೇ ಆಯಿತು...'
             `ನಾನೇನೋ ಹಾಯಾಗಿದ್ದೆ. ತಿಂಗಳು ತಿಂಗಳೂ ಲಕ್ಷ ಲಕ್ಷ ದುಡ್ಡು ಬರುತ್ತಿತ್ತು. ಆದರೆ ಇದ್ದಕ್ಕಿದ್ದಂತೆ ನನ್ನ ದಂಧೆಯಲ್ಲಿ ಲುಕ್ಸಾನು ಆರಂಭವಾಯಿತು. ನಾನು ಗಂಧದ ತುಂಡುಗಳನ್ನು ಮಾರಾಟ ಮಾಡಲು ಹೋದರೆ ಅರ್ಧ ಬೆಲೆಗೆ ಕೇಳುತ್ತಿದ್ದರು. ನಾನು ಬೆಳೆಸುತ್ತಿದ್ದ ಗಾಂಜಾ ಬೆಳೆಗೆ ಬೆಲೆಯೇ ಇರಲಿಲ್ಲ. ಯಾಕೆ ಹೀಗಾಯಿತು ಅಂದುಕೊಳ್ಳುತ್ತಿದ್ದಂತೆಯೇ ನನ್ನ ದಂಧೆಗೆ ಪ್ರತಿಯಾಗಿ ಇನ್ನೊಂದು ತಂಡ ಇದೇ ದಂಧೆಯನ್ನು ಶುರು ಮಾಡಿಕೊಂಡಿರುವುದು ತಿಳಿದು ಬಂದಿತು. ಯಾರಿರಬಹುದು ಎಂದುಕೊಂಡು ತಂಡವನ್ನು ಹುಡುಕಾಡಿದೆ. ಊಹೂ ಗೊತ್ತಾಗಲಿಲ್ಲ. ಆದರೆ ನಮ್ಮ ಭಾಗದಲ್ಲಿ ಈ ತಂಡ ಸಕ್ರಿಯಾಗಿದೆ ಎಂದೂ ಗೊತ್ತಾಯಿತು. ಕೊನೆಗೊಮ್ಮೆ ನಾನು ಆ ತಂಡವನ್ನು ಹದ್ದು ಬಸ್ತಿನಲ್ಲಿ ಇಡಬೇಕೆಂದು ಸಾಕಷ್ಟು ಪ್ರಯತ್ನ ಮಾಡಿದೆ. ಏನೇನೋ ಮಾರ್ಗಗಳನ್ನು ಅನುಸಿರಿಸಿದೆ. ಆದರೆ ಯಾವುದೂ ಉಪಯೋಗಕ್ಕೆ ಬರಲಿಲ್ಲ. ಬದಲಾಗಿ ಆ ತಂಡದಿಂದ ಒಂದಷ್ಟು ಬೆದರಿಕೆ ಕರೆಗಳು ಬಂದವು. ನಾನು ಅವನ್ನು ನಿರ್ಲಕ್ಷಿಸಿದೆ. ಆದರೆ ಕೊನೆಗೆ ನನ್ನ ಮೂಲೆ ಎರಡು ಸಾರಿ ಹಲ್ಲೆಯೂ ಆಯಿತು. ನನಗೆ ಆಗಲೇ ಜೀವ ಭಯ ಕಾಡಿದ್ದು. ನಾನು ಪೂರ್ತಿ ಹೆದರಿ ಹೋಗಿದ್ದೆ. ಕೊನೆಗೆ ಇವರ ಸಹವಾಸ ಸಾಕು. ಬದುಕಿ ಉಳಿದರೆ ಏನಾದರೂ ಮಾಡಿಯೇನು ಎಂದುಕೊಂಡು ನಾನು ಆ ವೃತ್ತಿಯನ್ನು ಬಿಟ್ಟು ಬಿಟ್ಟೆ. ಇದೀಗ ಮನೆಯಲ್ಲಿ ಎರಡು ಜೀಪುಗಳನ್ನು ಇಟ್ಟುಕೊಂಡು ಬಾಡಿಗೆ ಹೊಡೆಯುತ್ತಿದ್ದೇನೆ..' ಎಂದ ಬಾಬು.
            `ನೀ ಹೇಳಿದ್ದನ್ನು ನಂಬ ಬಹುದಾ?..' ಪ್ರದೀಪ ಗಡುಸಾಗಿಯೇ ಕೇಳಿದ್ದ.
             `ನಂಬಬಹುದು. ಯಾಕಂದ್ರೆ ಇದೇ ನಿಜ. ನನಗೆ ಸುಳ್ಳು ಹೇಳಿ ಆಗಬೇಕಾಗಿದ್ದು ಏನೂ ಇಲ್ಲ. ಬದಲಾಗಿ ನನ್ನ ಜೀವ ುಳಿದರೆ ಸಾಕಾಗಿದೆ..' ಎಂದ ಬಾಬು.
            `ನಿನ್ನ ದಂಧೆಗೆ ಪ್ರತಿಯಾಗಿ ದಂಧೆ ಶುರು ಮಾಡಿದ್ದು ಯಾರು? ನಿನ್ನ ಮೇಲೆ ಧಾಳಿ ಮಾಡಿದವರು ಯಾರು? ಹೇಳು..'
            `ಗೊತ್ತಿಲ್ಲ. ದಂಧೆ ಶುರುವಾಗಿಗೆ ಅಂತ ಅಷ್ಟೇ ಮಾಹಿತಿ ಕಿವಿಗೆ ಬೀಳುತ್ತಿತ್ತು. ಯಾರು ಮಾಡುತ್ತಿದ್ದಾರೆ? ಈ ಜಾಲದ ಮುಖ್ಯಸ್ಥರ ಯಾರು ಎಂಬುದು ನನಗೆ ಗೊತ್ತಿಲ್ಲ. ನಾನು ಹಲವು ಸಾರಿ ತಿಳಿದುಕೊಳ್ಳಲು ನೋಡಿದೆ ಆಗಲೇ ಇಲ್ಲ. ನನ್ನ ಜೊತೆಗೆ ಕೆಲಸ ಮಾಡುತ್ತಿದ್ದವರೆಲ್ಲ ನನ್ನನ್ನು ಬಿಟ್ಟು ಹೋದರು. ನಾನು ಕೊಡುತ್ತಿದ್ದ ಹಣಕ್ಕಿಂತ ಎರಡು ಪಟ್ಟು ಜಾಸ್ತಿ ಅವರು ಕೊಡುತ್ತಿದ್ದರಂತೆ. ಅವರನ್ನು ನನ್ನ ಬಳಿಯೇ ಉಳಿಸಿಕೊಳ್ಳಬೇಕು ಅಂತ ಸಾಕಷ್ಟು ಪ್ರಯತ್ನ ಮಾಡಿದೆ. ಆಗಲಿಲ್ಲ. ಈಗಲೂ ಒಂದಿಬ್ಬರು ಅವರ ಬಳಿ ನಿಯತ್ತಾಗಿ ಕೆಲಸ ಮಾಡುತ್ತಿದ್ದಾರೆ. ನಾನು ಸಿಕ್ಕಾಪಟ್ಟೆ ಲಾಸ್ ಆಗಿ ಇದೀಗ ಆ ದಂಧೆ ಬಿಟ್ಟು ಬಿಟ್ಟಿದ್ದೇನೆ. ನನಗೆ ಈಗಲೂ ಕುತೂಹಲ ಇದೆ. ಇದ್ದಕ್ಕಿದ್ದಂತೆ ನನ್ನ ದಂಧೆಯನ್ನೇ ಬುಡಮೇಲು ಮಾಡಿ, ನನಗಿಂತ ಹೆಚ್ಚು ಲಾಭ ಮಾಡುತ್ತಿರುವವರು ಯಾರು ಅಂತ. ಖಂಡಿತವಾಗಿಯೂ ಒಬ್ಬಿಬ್ಬರಿಂದ ಇದು ಸಾಧ್ಯವಿಲ್ಲ. ದೊಡ್ಡದೊಂದು ತಂಡವೇ ಇರಬೇಕು. ವ್ಯವಸ್ಥಿತ ಜಾಲವೇ ಇರಬೇಕು ಅನ್ನಿಸುತ್ತಿದೆ. ನಾನು ಈ ಜಾಲದ ಮುಖ್ಯಸ್ಥನನ್ನು ನೋಡುವ ಆಸೆಯನ್ನೂ ಇಟ್ಟುಕೊಂಡಿದ್ದೇನೆ..' ಎಂದು ಬಾಬು ಮನದಾಳದ ಬಯಕೆಯನ್ನು ತೋಡಿಕೊಂಡಿದ್ದ.
           `ಆಗಲಿ.. ನೀನು ಹೇಳಿದ್ದನ್ನು ನಾವು ನಂಬುತ್ತೇವೆ. ಆದರೆ ಒಂದು ಕೆಲಸ ಮಾಡಬೇಕು ನೀನು. ನಮಗೆ ನಿನ್ನ ಜೊತೆಗೆ ಕೆಲಸ ಮಾಡುತ್ತಿದ್ದ ಕೆಲಸಗಾರರನ್ನು ತೋರಿಸಬೇಕು. ಅವರು ಈಗ ಆ ತಂಡದ ಜೊತೆಗೆ ಕೆಲಸ ಮಾಡುತ್ತಿದ್ದಾರೆ ಅಂದೆಯಲ್ಲ. ಅವರನ್ನು ತೋರಿಸು. ನಮಗೆ ಈ ಕಾರ್ಯದಲ್ಲಿ ಸಹಾಯ ಮಾಡಿದರೆ ನಿನ್ನನ್ನು ಬಿಟ್ಟು ಬಿಡುತ್ತೇವೆ. ಇಲ್ಲವಾದಲ್ಲಿ ನಿನಗೆ ಬದುಕಿದ್ದಂತೆಯೇ ನರಕ ದರ್ಶನ ಮಾಡುತ್ತೇವೆ..' ಪ್ರದೀಪ ಗುಡುಗಿದ್ದ.
             `ನಾಳೆಯೇ ತೋರಿಸುತ್ತೇನೆ...' ಎಂದಿದ್ದ. ಬಾಬುವನ್ನು ಅವನ ಮನೆಯ ಬಳಿಯೇ ಬಿಟ್ಟು ಪ್ರದೀಪ ಹಾಗೂ ಇತರರು ಮರಳಿದ್ದರು. ಬಾಬು ಖಂಡಿತವಾಗಿಯೂ ತಪ್ಪಿಸಿಕೊಂಡು ಹೋಗಲಾರ. ಆತನಿಗೆ ಭಯವಿದೆ. ಆ ಕಾರಣದಿಂದ ಎಲ್ಲೂ ಹೋಗದೇ, ತಮಗೆ ಸಹಾಯ ಮಾಡುತ್ತಾನೆ ಎಂಬ ನಂಬಿಕೆಯ ಮೇಲೆ ಆತನನ್ನು ಮನೆಯಲ್ಲಿಯೇ ಬಿಟ್ಟು ಬಂದಿದ್ದರು. ಆದರೆ ಹೀಗೆ ಬಿಟ್ಟು ಬಂದಿದ್ದೇ ಸಾಕಷ್ಟು ತೊಂದರೆಗೂ ಕಾರಣವಾಯಿತು.
             ಇತ್ತ ಬಾಬುವಿನ ಪರಿಸ್ಥಿತಿ ಬೆಂಕಿಯಿಂದ ಬಾಣಲೆಗೆ ಬಿದ್ದಂತಾಗಿತ್ತು. ಒಂದೆಡೆ ಈಗಾಗಲೇ ಎರಡು, ಮೂರು ಸಾರಿ ದಾಳಿ ಂಆಡಿ ಜೀವಭಯ ಹುಟ್ಟಿಸಿರುವ ತಂಡ, ಇನ್ನೊಂದು ಕಡೆಗೆ ಪ್ರದೀಪನ ಭಯ. ಏನು ಮಾಡಲಿ ಎಂಬುದನ್ನು ತಿಳಿಯದೇ ಚಿಂತಾಕ್ರಾಂತನಾಗಿದ್ದ. ಮರುದಿನ ಇನ್ನೇನಾಗುತ್ತದೆಯೋ ಎಂದುಕೊಂಡು ಮನೆಯೊಳಕ್ಕೆ ಹೋಗಿದ್ದ. ಆದರೆ ಮರುದಿನ ಬಾಬುವಿನ ಮನೆಯ ಬಾಗಿಲು ತೆರೆಯಲೇ ಇಲ್ಲ. ಬಾಬು ಹಾಗೂ ಆತನ ಮಡದಿ ಇಬ್ಬರೂ ಮನೆಯೊಳಕ್ಕೆ ಹೆಣವಾಗಿದ್ದರು. !!


(ಮುಂದುವರಿಯುತ್ತದೆ)

Tuesday, September 13, 2016

ಅಪ್ಪ (ಕಥೆ) - ಭಾಗ-2

              ಅಪ್ಪನೇನೋ ಸೈಕಲ್ ರಿಪೇರಿಗಾಗಿ ಹೋಗಿಬಿಟ್ಟಿದ್ದ. ನಾನು, ಅಮ್ಮ ಇಬ್ಬರೇ ಉಳಿದಿದ್ದೆವು. `ತಮಾ.. ಹೋಪನ ನೆಡಿ..' ಎಂದ ಅಮ್ಮ ನಿಧಾನವಾಗಿ ಹೆಜ್ಜೆ ಹಾಕಲು ಆರಂಭಿಸಿದ್ದಳು. ಅಮ್ಮನ ಒಂದು ಕಾಲಿಗೆ ಕಬ್ಬಿಣದ ಮೊಳೆ ಚುಚ್ಚಿತ್ತು. ಇನ್ನೊಂದು ಕಾಲು ಸೈಕಲ್ ಚಕ್ರಕ್ಕೆ ಸಿಲುಕಿ ಜಜ್ಜಿದಂತಾಗಿತ್ತು. ನೋವಿನಲ್ಲಿಯೂ ನಡೆಯಲು ಆರಂಭಿಸಿದ್ದಳು. ನಾನು ಆಕೆಯ ಸರಿಸಮಾನವಾಗಿ ಹೆಜ್ಜೆ ಹಾಕಲು ಆರಂಭಿಸಿದ್ದೆ.
                ನಿಮಿಷಗಳು ಉರುಳಿದವು. ನಾವು ಸಾಗುತ್ಲೇ ಇದ್ದೆವು. `ಅಮಾ.. ಅಪ್ಪ ಬಂದನನೆ..?' ನಾನು ಆಗಾಗ ಕೇಳುತ್ತಿದ್ದೆ. ಅದಕ್ಕೆ ಅಮ್ಮ ನಿಟ್ಟುಸಿರುವ ಬಿಟ್ಟು `ಇಲ್ಯಾ ತಮಾ.. ಸೈಕಲ್ ರಿಪೇರಿ ಆಜಿಲ್ಲೆ ಕಾಣಿಸ್ತಾ.. ನಾವು ನೆಡಕಂಡು ಹೋಗ್ತಾ ಇಪ್ಪನ. ಕಲ್ಮಟ್ಟಿ ಹಳ್ಳದ ಹತ್ರ ಹೋಪಕಿದ್ರೆ ಅಪ್ಪ ಬಂದು ಮುಟ್ಟತಾ..' ಅಮ್ಮ ನನ್ನನ್ನು ಸಾಗ ಹಾಕಿದ್ದಳು. ಅಮ್ಮನಿಗೆ ಅಪ್ಪ ಇಷ್ಟು ಬೇಗನೆ ಬರುವುದಿಲ್ಲ ಎಂಬುದು ಗೊತ್ತಿತ್ತೇನೋ. ನನ್ನನ್ನು ಏನೋ ಹೇಳಿ ಸಾಗ ಹಾಕುತ್ತಿದ್ದಳು. ಆ ದಿನ ಮಾತ್ರ ನಾವು ಎಷ್ಟು ನಡೆದರೂ ಕೂಡ ದಾರಿ ಸಾಗುತ್ತಲೇ ಇರಲಿಲ್ಲ. ಅರ್ಧ ಗಂಟೆಯ ಅಂತರದಲ್ಲಿ ನಮ್ಮನ್ನು ಕೈಬೀಸಿ ಕರೆಯಬೇಕಿದ್ದ ಕಲ್ಮಟ್ಟಿ ಹಳ್ಳ ಆ ದಿನ ತಾಸಾದರೂ ಕೂಡ ಬರಲಿಲ್ಲ. ನಾವು ಅಷ್ಟು ನಿಧಾನವಾಗಿ ನಡೆಯುತ್ತಿದ್ದೆವೆನ್ನಿ.
             ಕಲ್ಮಟ್ಟಿಹಳ್ಳ ಬರುವ ವೇಳೆಗೆ ನಾವು ಎರಡು ಸಾರಿ ಕುಳಿತಿದ್ದೆವು. ಸೈಕಲ್ ಚಕ್ರಕ್ಕೆ ಸಿಲುಕಿದ್ದ ಅಮ್ಮನ ಕಾಲು ಆಗಲೇ ಆನೇಕಾಲು ರೋಗ ಬಂದವರಂತೆ ಊದಿಕೊಂಡಿತ್ತು. ಕಾಲಿಗೆ ಹಾಕಿದ್ದ ಹವಾಯಿ ಚಪ್ಪಲ್ ಬಿಗಿಯಾಗಿತ್ತು. ಹವಾಯಿ ಚಪ್ಪಲಿನ ಬಾರು ಹಾಲಿಗೆ ಅಂಟಿಕೊಂಡಿತ್ತು. ಕಲ್ಮಟ್ಟಿ ಹಳ್ಳ ಬಂದಿತ್ತು. ಕಲ್ಮಟ್ಟಿ ಹಳ್ಳದಲ್ಲಿ ಮಂಜು ನಾಯ್ಕ ಸಿಕ್ಕಿದ್ದ. `ನಮ್ಮನೆ ಹೆಗುಡ್ರು ಹೋದ್ರನೋ..' ಅಮ್ಮ ಮಂಜುನಾಥ ನಾಯ್ಕನ ಬಳಿ ಕೇಳಿದ್ದಳು. `ಇಲ್ರಲಾ ಅಮ್ಮಾ.. ನಾನು ನೋಡನಿಲ್ಲ. ಅವರು ಈ ದಾರಿಯಲ್ಲಿ ಹೋಗಿದ್ದನ್ನ ನಾನು ಕಾಣನಿಲ್ಲ..' ಎಂದು ಉತ್ತರ ನೀಡಿದಾಗ ಅಮ್ಮ ನಿಟ್ಟುಸಿರು ಬಿಟ್ಟು ನನ್ನನ್ನು ಹೊರಡಿಸಿದ್ದಳು. ನನಗೊಂದು ನಿಂಬೂ ಚಾಕಲೇಟು ತಿನ್ನುವ ಆಸೆಯಾಗಿ ಅಮ್ಮನ ಬಳಿ ನಾಲ್ಕಾಣೆ ಪಡಕೊಂಡಿದ್ದೆ. ಅಮ್ಮ ಎಂಟಾಣೆ ಕೊಟ್ಟಾಗ ಎರಡು ನಿಂಬೂ ಚಾಕಲೇಟು ತೆಗದುಕೊಂಡು ಒಂದನ್ನು ಸಿಪ್ಪೆ ಸುಲಿದು ಬಾಯಿಗಿಟ್ಟು ಇನ್ನೊಂದು ಚಡ್ಡಿ ಕಿಶಗೆ ಗೆ ಹಾಕಿದ್ದೆ.
            ಇನ್ನೊಂದು ಕಿಲೋಮೀಟರ್ ದೂರದ ಅಡಕಳ್ಳಿ ಶಾಲೆಗೆ ಹತ್ತಿರ ನಾವು ಬರುವ ಹೊತ್ತಿಗೆ ನೇಸರನಾಗಲೇ ಬಾನಂಚಿನ ಕಡೆಗೆ ತನ್ನ ರಥವನ್ನು ಹೂಡಿಯಾಗಿತ್ತು. `ತಮಾ.. ಕತ್ಲೆ ಆಗ್ತಾ ಇದ್ದೋ...' ಎಂದ ಅಮ್ಮ ನನ್ನನ್ನು ಮುನ್ನಡೆಸಿದ್ದಳು. `ಇನ್ನೂ ಅಪ್ಪ ಬಂಜ್ನೇ ಇಲ್ಯಲೆ...' ಆಗಲೇ ಅದೆಷ್ಟನೆಯ ಸಾರಿಯೋ ಹೇಳಿದ್ದೆ. `ಬತ್ರು ಅವು..' ಮತ್ತೊಮ್ಮೆ ಅಮ್ಮ ಹೇಳಿದ್ದಳು.
           ನಾವು ನಡೆಯುತ್ತಲೇ ಇದ್ದೆವು. ನಮ್ಮೂರ ದಾರಿಯಲ್ಲಿ ಸಿಗುವಂತಹ ಹೆಣಸುಡುವ ಮುರ್ಕಿಯೂ ದಾಟಿತ್ತು. ಅದನ್ನು ಹಾದು ಮುಂದೆ ಬರುವ ವೇಳೆಗಾಗಲೇ ನನ್ನೊಳಗೆ ಅದೇನೋ ಅಳುಕು. ಏಕೆಂದರೆ ಮುಮದಿನ ದಾರಿ ಕತ್ತಲು ಕವಿದಂತಹ ಕಾಡು. ನಾನು ನಿಧಾನವಾಗಿ ಅಮ್ಮನ ಬಳಿ ಸರಿದು ನಡೆಯಲಾರಂಭಿಸಿದೆ. `ಎಂತಾ ಆತಾ ತಮಾ..' ಅಮ್ಮ ಕೇಳಿದ್ದಳು.
             `ಅಮ್ಮಾ.. ಕಾನಬೈಕಲು ಬಂತು. ಇಲ್ಲಿ ಕಾಡು ಪ್ರಾಣಿ ಎಲ್ಲಾ ಇರ್ತಡಾ..' ಎಂದೆ. `ಶೀ ಮಳ್ ಮಾಣಿ.. ಎಂತದ್ದೂ ಬರ್ತಿಲ್ಲೆ.. ಸುಮ್ನೆ ಹೋಪನ ಬಾ.. ಕತ್ಲೆ ಆಗೋದ್ರೊಳಗೆ ಮನೆ ಸೇರೋಣ..' ಎನ್ನವ ವೇಳೆಗೆ `ಆಯ್...' ಎಂದಳು. `ಎಂತಾ ಆತೆ ಅಮಾ..' ಎಂದೆ. ಅಮ್ಮನ ಕಾಲಿಗೊಂದು ಕಲ್ಲು ಚುಚ್ಚಿತ್ತು. ನೋವಿನಿಂದ ನರಳಿದ್ದಳು. `ಹಾಳಾದ್ದು.. ಕಲ್ಲು..' ಎಂದು ಬೈದು ಮುನ್ನಡೆದೆವು.
            `ಅಮ್ಮಾ... ಅಲ್ನೋಡೆ.. ಎಂತದ್ದೋ ಇದ್ದು.. ಸರಬರ ಹೇಳಿ ಶಬ್ದ ಆಗ್ತು..' ಭಯದಿಂದಲೇ ನಾನು ಕೇಳಿದ್ದೆ. ರಸ್ತೆ ಪಕ್ಕದ ಕಾಡಿನಲ್ಲಿ ಏನೋ ಶಬ್ದವಾಗಿತ್ತು. ನನಗೆ ಕಾಡೆಮ್ಮೆಯಿರಬೇಕು ಎನ್ನುವ ಅನುಮಾನ. ಅನುಮಾನದಿಂದಲೇ ಕೇಳಿದ್ದೆ. ಅಮ್ಮನಿಗೂ ಭಯವಾಗಿತ್ತಿರಬೇಕು.. `ಸುಮ್ನಿರಾ..' ಎಂದಳು. ನಾನು ಸುಮ್ಮನಾದೆ. ಮತ್ತೊಂದು ಮಾರು ದೂರ ಹೋಗಿದ್ದೆವು. ಅಮ್ಮ ಇದ್ದಕ್ಕಿದ್ದಂತೆ `ಇಡಾ ಪಿಂಗಳಾ ತ್ವ ಸುಸುಷ್ಮ್ನಾಚನಾಡಿ.. ತ್ವಮೇಕಾ ಗತಿರ್ದೇವಿ ಸದಾನಂದ ರೂಪೆ...' ಎಂದಳು.. ನಾನು ಅಮ್ಮನ ಮುಖ ನೋಡಿದೆ. ಅಮ್ಮನಿಗೂ ಭಯವಾಗಿತ್ತಿರಬೇಕು. ಭಯದಿಂದ ಅಮ್ಮ ಲಲಿತಾ ಸಹಸ್ರನಾಮವನ್ನು ಪಠಿಸಲು ಆರಂಭಿಸಿದ್ದಳು.
            ನಮ್ಮೂರ ಗುಡ್ಡದ ನೆತ್ತಿಯನ್ನು ತಲುಪುವ ವೇಳೆಗಾಗಲೇ ಸೂರ್ಯ ಬಾನಂಚಲ್ಲಿ ನಾಪತ್ತೆಯಾಗಿದ್ದ. ರಸ್ತೆ ಅಸಕು-ಮಸುಕಾಗಿ ಕಾಣುವಷ್ಟು ಕತ್ತಲಾಗಿತ್ತು. ರಸ್ತೆಯಲ್ಲಿ ನಡೆದು ಹೋದರೆ ಕನಿಷ್ಟ ಇನ್ನೊಂದು ತಾಸಾದರೂ ಬೇಕು ಎಂದುಕೊಂಡು ನಾವು ಅಡ್ಡದಾರಿಯನ್ನು ಹಿಡಿದೆವು. ಇಷ್ಟಾದರೂ ಕೂಡ ಅಪ್ಪ ಬಂದಿರಲಿಲ್ಲ.
           ಗುಡ್ಡದ ಅಂಕುಡೊಂಕಿನ ಕಾಲು ದಾರಿಯಲ್ಲಿ ನಾನು-ಅಮ್ಮ ಇಳಿಯುತ್ತಿದ್ದಾಗಲೇ ಗಡ ಗಡ ಸದ್ದಾಯಿತು. `ಅಮ್ಮಾ.. ಅಪ್ಪ ಬಂದ ಕಾಣಿಸ್ತು..' ಎಂದೆ. `ಇಲ್ಯಾ.. ತಮಾ.. ಅವ್ರು ಬಂಜಿರಿಲ್ಲೆ..' ಎಂದಳು. ನಿಧಾನವಾಗಿ ಗುಡ್ಡ ಇಳಿದೆವು. ಅಷ್ಟರಲ್ಲಿ ಸಂಪೂರ್ಣವಾಗಿ ಕತ್ತಲಾಗಿಬಿಟ್ಟಿತ್ತು. ನಮಗೆ ದಾರಿಯೇ ಕಾಣುತ್ತಿರಲಿಲ್ಲ. ಇನ್ನೇನು ಮಾಡುವುದು ದೇವರೇ.. ಎಂದುಕೊಂಡು ಹೆಜ್ಜೆ ಹಾಕಿದೆವು. ಮಾರ್ಗ ಮಧ್ಯದಲ್ಲಿ ಒಂದು ಬೆಳಕು ಕಾಣಿಸಿತು. ಅದೊಂದು ಮನೆ. ಸೀದಾ ಮನೆಯೊಳಕ್ಕೆ ಹೋದ ನಾವು ಬ್ಯಾಟರಿ ಸಿಗಬಹುದಾ ಎಂದೆವು. ಮನೆಯ ಯಜಮಾನರು ಬ್ಯಾಟರಿ ಕೊಟ್ಟರು. ಬ್ಯಾಟರಿಯ ಮಿಣುಕು ಬೆಳಕಿನಲ್ಲಿ ಮನೆಯ ಕಡೆಗೆ ಹೆಜ್ಜೆ ಹಾಕಿದೆವು. ಇಷ್ಟಾದರೂ ಕೂಡ ಅಪ್ಪ ಬಂದಿರಲಿಲ್ಲ.
           ಮನೆ ಹತ್ತಿರವಾದಂತೆಲ್ಲ ನನಗೆ ಅಪ್ಪನ ಮೇಲೆ ಕಡುಕೋಪ ಬರಲು ಆರಂಭಿಸಿತು. ಅಪ್ಪ ಬರದೇ ಇರುವ ಕಾರಣ ಭಯವೂ ಆಯಿತೆನ್ನಿ. `ಅಮ್ಮಾ.. ಅಪ್ಪನನ್ನು ಗಮಿಯ (ಕಾಡೆಮ್ಮೆ) ಅಡ್ಡ ಹಾಕಿಕ್ಕನೇ.. ಅದಕ್ಕೆ ಬಂಜನಿಲ್ಯಾ ಹೆಂಗೆ..' ಎಂದೆ. `ಥೋ ಸುಮ್ನಿರಾ.. ಹಂಗೆಲ್ಲಾ ಎಂತದ್ದೂ ಆಜಿಲ್ಲೆ..' ಎಂದಳು ಅಮ್ಮ. ಮನೆಯ ಕಡೆಗೆ ಹೆಜ್ಜೆ ಹಾಕುತ್ತಿದ್ದಂತೆ ದೂರದಲ್ಲಿ ಮನೆಯ ಬೆಳಕು ಕಾಣಿಸತೊಡಗಿತು.
            ಇನ್ನೇನು ಮನೆಗೆ 100 ಮೀಟರ್ ದೂರವಿದೆ ಎನ್ನುವಾಗ ಯಾರೋ ಕೆಮ್ಮಿದ ಸದ್ದಾಯಿತು. ನಾನೊಮ್ಮೆ ಬೆಚ್ಚಿದ್ದೆ. ಕೆಮ್ಮಿನ ಶಬ್ದ ಕೇಳಿದ ಜಾಗದಲ್ಲಿ ಯಾವುದೋ ಬೆಳಕು ಇತ್ತು. ಅದು ನಮ್ಮತ್ತಲೇ ಬರುತ್ತಿತ್ತು. `ತಮಾ..' ಎಂದಿತು ಶಬ್ದ. ನಾನು ಆಲಿಸಿದೆ. ಅಪ್ಪ ಕರೆದಿದ್ದ. ನನಗೆ ಒಮ್ಮೆಲೆ ಧೈರ್ಯ ಬಂದಿತ್ತು. ನಡುವೆಯೇ ಆಶ್ಚರ್ಯ. ಸೈಕಲ್ ಸರಿ ಮಾಡಿಸಿಕೊಂಡು ಬರುತ್ತೇನೆ ಎಂದು ಕಾನಸೂರು ಕಡೆಗೆ ಹೋಗಿದ್ದ ಅಪ್ಪ ಈಗ ಮನೆಯ ಕಡೆಯಿಂದ ನಮ್ಮೆಡೆಗೆ ನಡೆದುಕೊಂಡು ಬರುತ್ತಿದ್ದಾನಲ್ಲ ಇದು ಹೇಗೆ ಸಾಧ್ಯ ಎನ್ನಿಸಿತು. `ನೀ ಹೆಂಗೆ ಬಂದ್ಯೋ..' ಅಪ್ಪನ ಬಳಿ ಕೇಳಿದ್ದೆ. `ಆನು ಬಂದು ಹತ್ತು ನಿಮಿಷ ಆತಾ ತಮಾ.. ಬಂದು ಊಟ ಮುಗಿಸ್ಕಂಡು ಬಂದಿ. ನಿಂಗವ್ ಇನ್ನೂ ಬಂದು ಮುಟ್ಟಿದ್ರಿಲ್ಲೆ ಅಂತ ಮನೆಯಲ್ಲಿ ಹೇಳಿದ್ದ. ಅದಕ್ಕೆ ಕರಕಂಡು ಹೋಪನ ಅಂತ ಬಂದಿ..' ಎಂದ.
              ವಾಸ್ತವದಲ್ಲಿ ನಾವು ಅಡ್ಡದಾರಿಯಲ್ಲಿ ಗುಡ್ಡವನ್ನು ಇಳಿಯುತ್ತಿದ್ದಾಗಲೇ ಅಪ್ಪ ಸೈಕಲ್ ಮೂಲಕ ಮನೆಗೆ ಬಂದಿದ್ದ. ನನಗೆ ಗಡ ಗಡ ಸದ್ದು ಕೇಳಿಸಿದ್ದು ಸೈಕಲ್ಲಿನದ್ದೇ ಆಗಿತ್ತು.  ಕೈ ಹಿಡಿದುಕೊಂಡು ನನ್ನನ್ನು ಕರೆದುಕೊಂಡು ಬರುತ್ತಿದ್ದಳು ಅಮ್ಮ. ಅಪ್ಪ ಬಂದು ಬೆಳಕು ತೋರಿಸಿ, ಮನೆಗೆ ಬಂದು ತಲುಪಿದ್ದೇನೆ. ನನ್ನದು ಊಟವಾಯಿತು ಎಂಬ ಮಾತು ಕೇಳುತ್ತಿದ್ದಂತೆ ನನ್ನ ಕೈ ಮೇಲೇ ನೀರ ಹನಿ ಬಿದ್ದಂತಾಯಿತು. ನಾನು ಮಳೆ ಬಂತೇ ಎಂದು ನೋಡಿದೆ. ಮಳೆ ಬಂದಿರಲಿಲ್ಲ. ಅಮ್ಮ ಬಿಕ್ಕುತ್ತಿದ್ದಳು. ಅಪ್ಪ `ಬನ್ನಿ ಹೋಪನ ಮನಿಗೆ..' ಎಂದ. ಮನೆಯ ಅಂಗಳದತ್ತ ಹೆಜ್ಜೆ ಹಾಕಿದ್ದೆವು.

(ಮುಗಿಯಿತು)

Sunday, September 11, 2016

ಮುಂಗಾರು ಮಳೆ ಭಾಗ 2ರಿಂದ ನನಗೆ ವಯಕ್ತಿಕ ಶಾಪ ವಿಮೋಚನೆ : ಜಯಂತ ಕಾಯ್ಕಿಣಿ (ಸಂದರ್ಶನ)

ಕನ್ನಡ ಸಾಹಿತ್ಯ ಲೋಕದಲ್ಲಿ ಜಯಂತ ಕಾಯ್ಕಿಣಿಯವರು ತಮ್ಮದೇ ಆದ ಛಾಪನ್ನು ಮೂಡಿಸಿದವರು. ಕಥೆಗಾರರಾಗಿ ಓದುಗರನ್ನು ಸೆಳೆದ ಜಯಂತ ಕಾಯ್ಕಿಣಿಯವರು ಕಳೆದೊಂದು ದಶಕದಿಂದೀಚೆಗೆ ಚಿತ್ರ ಸಾಹಿತಿಯಾಗಿ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಮುಂಗಾರು ಮಳೆ ಚಲನಚಿತ್ರದ ಹಿಟ್ ಗೀತೆಗಳನ್ನು ನೀಡಿದ ಜಯಂತ ಕಾಯ್ಕಿಣಿಯವರು ಮುಂಗಾರು ಮಳೆ ಕವಿ, ಮಳೆ ಕವಿ, ಪ್ರೇಮಕವಿ ಎಂದೆಲ್ಲ ಕರೆಸಿಕೊಳ್ಳುತ್ತಿದ್ದಾರೆ. ಯುವ ಜನರ ಕನಸುಗಳಿಗೆ ಅಕ್ಷರ ರೂಪವನ್ನು ನೀಡಿದವರು ಜಯಂತ ಕಾಯ್ಕಿಣಿ. ಕನ್ನಡ ಚಿತ್ರರಂಗದಲ್ಲಿ ಮಧುರ ಹಾಡುಗಳ ಟ್ರೆಂಡ್ ಸೃಷ್ಟಿಸಿದವರು ಇವರು. ಮತ್ತೆ ಮತ್ತೆ ಕೇಳುವಂತಹ, ಏಕಾಂತದಲ್ಲಿ ಗುನುಗುವಂತಹ ಹಾಡುಗಳನ್ನು ನೀಡಿದವರು ಕಾಯ್ಕಿಣಿ. ಅನಿಸುತಿದೆ ಯಾಕೋ ಇಂದು.., ನಿನ್ನಿಂದಲೇ, ಮಿಂಚಾಗಿ ನೀನು ಬರಲು ಹೀಗೆ ಸಾಲು ಸಾಲು ಹಿಟ್ ಗೀತೆಗಳನ್ನು ಕೊಟ್ಟವರು ಜಯಂತರು. ಅವರು ಮುಂಗಾರು ಮಳೆಗೆ ಗೀತೆಯನ್ನು ಬರೆದು 10 ವರ್ಷಗಳೇ ಕಳೆದಿವೆ. ಈ ಹತ್ತು ವರ್ಷದ ನಂತರ ಮುಂಗಾರು ಮಳೆ ಚಿತ್ರದ ಮುಂದುವರಿದ ಭಾಗ ಬಿಡುಗಡೆಯಾಗಿದೆ. ಮುಂಗಾರು ಮಳೆ ಭಾಗ-2ರಲ್ಲಿ 2 ಗೀತೆಗಳನ್ನು ಜಯಂತ ಕಾಯ್ಕಿಣಿ ಅವರು ಬರೆದಿದ್ದು ಈ ಎರಡೂ ಗೀತೆಗಳು ಈಗಾಗಲೇ ಜನಮನ ಸೂರೆಗೊಂಡಿದ್ದು ವೈರಲ್ ಆಗಿದೆ. ಮುಂಗಾರುಮಳೆ ಭಾಗ-2 ಬಿಡುಗಡೆಯಾದ ಸಂದರ್ಭದಲ್ಲಿಯೇ ಮಾತಿಗೆ ಸಿಕ್ಕಿದ್ದ ಪ್ರೇಮಕವಿ ಜಯಂತ ಕಾಯ್ಕಿಣಿಯವರು ಚಿತ್ರರಂಗ, ಚಿತ್ರಗೀತೆಗಳು, ಚಿತ್ರ ಸಾಹಿತ್ಯದ ಬಗ್ಗೆ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದು ಹೀಗೆ..

ಪ್ರಶ್ನೆ : ಮುಂಗಾರು ಮಳೆ ಭಾಗ-2 ಬರುತ್ತಿದೆ. ಏನನ್ನಿಸುತ್ತಿದೆ?
ಮುಂಗಾರು ಮಳೆ ಭಾಗ ಎರಡು ಸಿನೆಮಾವನ್ನು ನಾನಿನ್ನೂ ನೋಡಿಲ್ಲ. ಆದರೆ ಕೆಲವು ಭಾಗಗಳನ್ನು ಮಾತ್ರ ನಾನು ನೋಡಿದ್ದೇನೆ. ಸಂತೋಷದ ಸಂಗತಿ ಎಂದರೆ ಮುಂಗಾರು ಮಲೆ ಭಾಗ ಎರಡಕ್ಕೆ ನಾನು ಬರೆದ ಎರಡೂ ಹಾಡುಗಳನ್ನು ಜನರು ಬಹಳ ಪ್ರೀತಿಯಿಂದ ಸ್ವೀಕರಿಸಿದ್ದಾರೆ. ಸರಿಯಾಗಿ ನೆನಪಿದೆ ನನಗೆ ಹಾಗೂ ಗಮನಿಸು ನೀ ಒಮ್ಮೆ ಎಂಬ ಹಾಡುಗಳು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ. ನಾನು ಹೋದ ಕಡೆಯಲ್ಲೆಲ್ಲ ಈ ಹಾಡುಗಳ ಬಗ್ಗೆ ನನಗೆ ಖುಷಿಯಿಂದ ಮಾತನಾಡುತ್ತಿದ್ದಾರೆ. ಇದು ನನಗೆ ವಯಕ್ತಿಕವಾಗಿ ಒಂದು ಶಾಪ ವಿಮೋಚನೆ.
ಸರಿಯಾಗಿ ಹತ್ತು ವರ್ಷಗಳ ಹಿಂದೆ ಮುಂಗಾರುಮಳೆ ಭಾಗ ಒಂದು ಬಿಡುಗಡೆಯಾಗಿತ್ತು. ಆ ಸಿನೆಮಾಕ್ಕೆ ಹಾಡನ್ನು ಬರೆದ ನಂತರದಲ್ಲಿ ನಾನು 300 ಹಾಡುಗಳನ್ನು ಬರೆದಿದ್ದೇನೆ. ಆದರೆ ಸಿಕ್ಕಿದವರೆಲ್ಲ ಮುಂಗಾರು ಮಳೆಯನ್ನೇ ಮಾತನಾಡುತ್ತಿದ್ದರು. ನೀವು ಏನೆ ಬರೆಯಿರಿ ಮುಂಗಾರು ಮಳೆ ಸಿನೆಮಾ ಹಾಡೇ ಬೆಸ್ಟ್ ಎಂದು ಹೇಳುತ್ತಿದ್ದರು. ಯಾವುದೇ ಒಂದು ದೊಡ್ಡ ಹಿಟ್ ಸಿನೆಮಾ ಬಂದರೆ ಅದರ ಮುಂದಿನ ಭಾಗದ ಸಿನೆಮಾ ಬಂದಾಗಲೂ ಕೂಡ ಮೊದಲನೇ ಭಾಗ ನೆನಪಿನಲ್ಲಿ ಉಳಿಯುತ್ತದೆ. ಇದೊಂಥರಾ ಮೊದಲನೇ ಪ್ರೇಮ ಇದ್ದಂತೆ. ಅದು ತಾಜಾ ಇರುತ್ತದೆ. ತಾಜಾ ಇದ್ದಾಗ ಎಲ್ಲರೂ ಇಷ್ಟ ಪಡುತ್ತಾರೆ. ಉದಾಹರಣೆಗೆ ನಿಮಗೆ ಯಾವುದಾದರೂ ಒಂದು ಹೊಟೆಲ್ಗೆ ಹೋಗಿ ಬನ್ಸ್ ಬಾಜಿ ತಿಂದಿರಿ, ಇಷ್ಟವಾಯಿತು ಎಂದುಕೊಳ್ಳಿ. ಅದನ್ನು ನಿಮ್ಮ ಗೆಳೆಯನಿಗೆ ಹೇಳಿ ಆತನನ್ನೂ ಕರೆದುಕೊಂಡು ಹೋಗುತ್ತೀರಿ. ಆಗ ಮೊದಲಿನ ರುಚಿಯಂತೆ ನಿಮಗೆ ಅನ್ನಿಸುವುದಿಲ್ಲ. ಆತನಿಗೆ ಅದು ರುಚಿಸುತ್ತದೆ. ಜನರು ಮೊದಲ ಭಾಗಕ್ಕೂ ಎರಡನೆ ಭಾಗಕ್ಕೂ ಹೋಲಿಕೆ ಮಾಡಿ ನೋಡುತ್ತಾರೆ. ಹೀಗಾಗಿ ಮುಂಗಾರು ಮಳೆ ಎನ್ನುವುದು ನನಗೆ ಒಂದು ರೀತಿಯಲ್ಲಿ ಶಾಪದ ಹಾಗೆ ಆಗಿತ್ತು. ಇದು ಒಳ್ಳೆಯ ಅರ್ಥದ ಶಾಪ. ಮುಂಗಾರು ಮಳೆಯ ಎರಡನೇ ಭಾಗದ ಚಿತ್ರದಲ್ಲಿನ ಹಾಡುಗಳು ಅದನ್ನು ಮರೆಸಿ ಹಿಟ್ ಆಗಿದೆ. ನನಗೆ ವಯಕ್ತಿಕವಾಗಿ ಇದೊಂದು ಖುಷಿಯ ಸಂಗತಿ. ಹತ್ತು ವರ್ಷಗಳಿಂದ ಬರೆಯುತ್ತಿದ್ದರೂ ಕೂಡ ಇದುವರೆಗೂ ಜನರಿಗೆ ಇಷ್ಟವಾಗುತ್ತಿದೆ. ಜನರಿಗೆ ಇಷ್ಟವಾಗುತ್ತಿದ್ದರೆ ಇನ್ನೂ ಕೆಲವು ದಿವಸಗಳ ಕಾಲ ಬರೆಯಬಹುದು ಎನ್ನುವ ಆತ್ಮವಿಶ್ವಾಸ.

ಪ್ರಶ್ನೆ : ಮುಂಗಾರು ಮಳೆ ಸಿನೆಮಾ ಬಂದ ನಂತರ ನೀವು ಪ್ರೇಮಕವಿ, ಮಳೆ ಕವಿ ಎಂದೇ ಖ್ಯಾತಿಯನ್ನು ಪಡೆದಿರಿ. ಈ ಸಿನೆಮಾಕ್ಕೂ ಮೊದಲಿನ ನಿಮ್ಮ ಬರಹಗಳು, ಪ್ರೇಮಕವಿತೆಗಳ ಬಗ್ಗೆ ಹೇಳಿ
ಮುಂಗಾರು ಮಳೆ ಸಿನೆಮಾಕ್ಕೂ ಮೊದಲು ನಾನು ಪ್ರೇಮ ಕವಿತೆಗಳನ್ನು ಬರೆದೇ ಇರಲಿಲ್ಲ. ನನ್ನದು ಬದುಕಿನ ಕುರಿತಾದ ಪ್ರೇಮ. ಬದುಕಿಗೆ ಬರೆದ ಪ್ರೇಮಪತ್ರಗಳು ಕವಿತೆಯಾಗುತ್ತವೆ. ಬದುಕಿ ಬರೆದ ಪ್ರೇಮಪತ್ರಗಳು ಕಥೆಯಾಗುತ್ತವೆ. ನನ್ನ ಮುಖ್ಯ ಸಾಹಿತ್ಯದಲ್ಲಿ ಪ್ರೇಮ ಸಣ್ಣ ವಿಷಯ. ಆದರೆ ಸಿನೆಮಾದಲ್ಲಿ ಪ್ರೇಮವೇ ಪ್ರಮುಖ ವಿಷಯ. ಹೀಗಾಗಿ ಸಿನೆಮಾ ಎನ್ನುವುದು ನನ್ನ ಜೀವನ ದರ್ಶನದ ಅಭಿವ್ಯಕ್ತಿ ಅಲ್ಲ. ಸಿನೆಮಾ ಹಾಡುಗಳು ಎಂದರೆ ಯಾವುದೋ ಸಂದರ್ಭಕ್ಕೆ, ಯಾವುದೋ ಪಾತ್ರಕ್ಕೆ ಹೊಸೆಯುವ ಹಾಡುಗಳಷ್ಟೆ. ಅದು ನನ್ನ ಜೀವನದ ದರ್ಶನ ಅಲ್ಲ. ಆ ಪಾತ್ರಕ್ಕೆ ಏನು ಬೇಕೋ ಅದನ್ನು ನೀಡುವುದು ಅಷ್ಟೆ.

ಪ್ರಶ್ನೆ : ನೀವು ಮುಂಗಾರು ಮಳೆ ಸಿನೆಮಾಕ್ಕೆ ಕವಿತೆಗಳನ್ನು ಬರೆದ ನಂತರ ನಿಮ್ಮನ್ನು ಅನುಕರಣೆ ಮಾಡುವವರು ಬಹಳ ಜನರಾದರು. ಬೇರೆಯವರು ಬರೆದರೂ ಇದು ಜಯಂತ ಕಾಯ್ಕಿಣಿಯವರು ಬರೆದ ಗೀತೆ ಎನ್ನುವ ಹಂತವನ್ನು ತಲುಪಿತು. ಈ ಬಗ್ಗೆ ಏನು ಹೇಳುತ್ತೀರಿ ?
ಭಾರತ ದೇಶದಲ್ಲಿ ಕೋಟಿಗಟ್ಟಲೆ ಹಾಡುಗಳು ಪ್ರೀತಿಯ ಮೇಲೆ ಬಂದು ಹೋಗಿದೆ. ಪ್ರೀತಿಯ ಕುರಿತು ಎಷ್ಟಾದರೂ ಹಾಡುಗಳನ್ನು ಬರೆಯಬಹುದು. ಅದೇ ಪ್ರೀತಿ, ಮೊದಲ ಪ್ರೀತಿ, ಏಕಮುಖ ಪ್ರೀತಿ, ಎರಡನೇ ಪ್ರೀತಿ, ಅದೇ ವಿರಹ, ಸರಸ, ಹೀಗೆ ಎಲ್ಲೆಲ್ಲೂ ಪ್ರೀತಿಯೇ. ಅದರ ಬಗ್ಗೆಯೇ ಮತ್ತೆ ಹೇಗೆ ಹೊಸದನ್ನು ಹೇಳಲು ಸಾಧ್ಯ? ಅದದೇ ಪ್ರೀತಿ ಮತ್ತೆ ಮತ್ತೆ ಮರುಕಳಿಸುತ್ತದೆ. ಪ್ರೀತಿಯ ಬಗ್ಗೆ ಹೊಸದಾಗಿ ಹೇಳುವುದು ಕಷ್ಟವೇ. ನಾನು ಚಿತ್ರಗೀತೆ ರಚನೆಕಾರನಾಗುವ ಮೊದಲು ಚಿತ್ರಗೀತೆ ರಚನೆಕಾರರನ್ನು ಬಹಳ ಉಢಾಫೆಯಾಗಿ ಕಾಣುತ್ತಿದ್ದೆ. ಇದನ್ನು ಯಾರು ಬೇಕಾದರೂ ಬರೆಯಬಹುದು ಎಂಬಂತೆ ಲೇವಡಿ ಮಾಡುತ್ತಿದ್ದೆ. ಬಾನಲ್ಲೂ ನೀನೆ, ಬಯಲಲ್ಲೂ ನೀನೆ, ಮನೆಯಲ್ಲೂ ನೀನೆ, ಹೊರಗೂ ನೀನೆ ಹೀಗೆ ಬರೆದುಕೊಂಡು ಹೋಗಬಹುದಲ್ಲ ಎಂದುಕೊಂಡಿದ್ದೆ. ಯಾವಾಗ ನಾನು ಚಿತ್ರಗೀತೆಗಳನ್ನು ಬರೆಯಲು ಆರಂಭಿಸಿದೆನೋ ಈಗ ಅದರ ಕಷ್ಟ ಸುಖಗಳೆಲ್ಲ ಗೊತ್ತಾಗಲು ಆರಂಭವಾಗಿದೆ. ಇದರ ಜೊತೆಗೆ ಸೆಟ್ ಆಗಿರುವ ಟ್ಯೂನಿಗೆ ಬರೆಯುವುದು ಸುಲಭವಲ್ಲ. ಅದಕ್ಕೆ ಅದರದೇ ಆದ ಕೌಶಲವಿದೆ. ಅದನ್ನು ಬಳಸಿಕೊಳ್ಳಬೇಕು. ಅದೇ ಪ್ರೀತಿಯ ಬಗ್ಗೆ ಹೊಸ ಮಾತನ್ನು ಹೇಗೆ ಹೇಳುವುದು? ಈ ಬಗ್ಗೆ ಬಹಳಷ್ಟು ಸಾರಿ ನನಗೆ ಕಾಡಿದ್ದಿದೆ. ಇದನ್ನೇ ನಾನು `ಏನೆಂದು ಹೆಸರಿಡಲಿ, ಅದೇ ಪ್ರೀತಿ, ಅದೇ ರೀತಿ, ಹೇಗಂತ ಹೇಳುವುದು..' ಅಂತ ಬರೆದಿದ್ದೆ. ಏಕೆಂದರೆ ನನಗೆ ಯಾವುದೇ ಸಾಲುಗಳು ಆಗ ಹೊಳೆಯುತ್ತಿರಲಿಲ್ಲ. ಇದು ಪ್ರತಿಯೊಬ್ಬ ಗೀತರ ರಚನೆಕಾರನ ಕಷ್ಟ.
ನನಗೆ ತುಂಬಾ ಹಿಂದಿ ಹಾಡುಗಳ ಪ್ರೇಮವಿದೆ. ಕೆಲವರಿಗೆ ಹಾಗಾಗಿ ನನ್ನ ಹಾಡುಗಳಲ್ಲಿ ಹಿಂದಿ ಹಾಡುಗಳ ಛಾಯೆ ಕಾಣಬಹುದು. `ಕೇದಿಗೆ ಗರಿಯಂತ ನಿನ್ನ ನೋಟ..' ಎಂಬ ಸಾಲು ನಿನ್ನಿಂದಲೇ... ಹಾಡಿನಲ್ಲಿದೆ. ಕೇದಿಗೆ ಗರಿ ಎಂದಕೂಡಲೇ ಬೇಂದ್ರೆ ನೆನಪಾಗುತ್ತಾರೆ. ಏಕೆಂದರೆ ಕೇದಿಗೆ ಗರಿ ಸಿಕ್ಕಿದ್ದೇ ಬೇಂದ್ರೆ ಅವರಿಂದ. ಕವಿತೆ ಬರೆಯುವುದು ಸಂಯುಕ್ತ ಕಲಾಪ. ಇದು ನನ್ನದು, ಅದು ನಿನ್ನದು ಎಂದು ಹೇಳಲು ಸಾಧ್ಯವಿಲ್ಲ. ಅದು ಬೆಳದಿಂಗಳಿನಂತೆ ಎಲ್ಲರಿಗೂ ಸೇರಿದ್ದು.

ಪ್ರಶ್ನೆ : ಸಾಮಾನ್ಯ ಸಾಹಿತ್ಯವನ್ನು ಇಷ್ಟಪಡುವವರು ಚಿತ್ರ ಸಾಹಿತ್ಯದ ಬಗ್ಗೆ ಮೂಗು ಮುರಿಯುತ್ತಾರೆ. ಈ ಬಗ್ಗೆ ನೀವೇನು ಹೇಳುತ್ತೀರಿ?
ಯಾವ ಸಾಹಿತ್ಯ ಯಾರಿಗೆ ಇಷ್ಟ ಎನ್ನುವುದು ಅವರವರ ಅಭಿವ್ಯಕ್ತಿಗೆ ಸೇರಿದ್ದು. ಅವರವರಲ್ಲಿ ಯಾವ ರೀತಿ ಅಭಿವ್ಯಕ್ತಿ ಇರುತ್ತದೆಯೋ ಅದಕ್ಕೆ ತಕ್ಕಂತೆ ಅವರು ಸಾಹಿತ್ಯವನ್ನು ಇಷ್ಟ ಪಡುತ್ತಾರೆ. ನಾನು ಎರಡೂ ಕವಿತೆಗಳನ್ನು ಬರೆಯುತ್ತಿರುತ್ತೇನೆ. ನನ್ನ ಕವನ ಸಂಕಲನಗಳೂ ಬರುತ್ತಿರುತ್ತವೆ. ಕಥಾ ಸಂಕಲನಗಳೂ ಬರುತ್ತಿರುತ್ತವೆ. ಸಿನೆಮಾ ಹಾಡುಗಳೂ ಬರುತ್ತಿರುತ್ತವೆ. ನನ್ನ ಹಾಡುಗಳನ್ನು ಇಷ್ಟಪಡುವವರು ಅಂಗಡಿಗಳಿಗೆ ಹೋದಾಗ `ಇವರು ಕಥೆಗಳನ್ನೂ ಬರೆಯುತ್ತಾರಾ..? ನೋಡ್ವಾ' ಎಂದು ಪುಸ್ತಕಗಳನ್ನು ಕೊಂಡ ಉದಾಹರಣೆಗಳಿವೆ. ಅದೇ ರೀತಿ ನನ್ನ ಸಾಹಿತ್ಯದ ಅಭಿಮಾನಿಗಳು `ಜಯಂತ ಏನೋ ಹಾಡು ಬರೆದಿದ್ದಾನಂತಲ್ಲ.. ಕೇಳ್ವಾ..' ಎಂದು ಹಾಡನ್ನು ಕೇಳಲು ಆರಂಭಿಸುತ್ತಾರೆ. ಹೀಗೆ ಒಂದನ್ನು ಇಷ್ಟ ಪಡುವವರು ಇನ್ನೊಂದರತ್ತ ಹೊರಳುತ್ತಲೇ ಇರುತ್ತಾರೆ. ಆದರೆ ಇದು ಶ್ರೇಷ್ಟ ಸಾಹಿತ್ಯ, ಇದು ಕನಿಷ್ಟ ಸಾಹಿತ್ಯ ಎಂಬಂತಹ ಮಡಿವಂತಿಕೆ ಸಲ್ಲ. ಇದು ಮುಖ್ಯ ಧಾರೆಯ ಸಾಹಿತ್ಯ, ಇದು ಬೇರೆಯದು ಎನ್ನುವ ಭಾವನೆಯೂ ಸಲ್ಲದು. ಎಲ್ಲವುಗಳಿಗೂ ಅದರದೇ ಆದ ಇತಿಮಿತಿಯಿದೆ. ಆದರೆ ಸಿನೆಮಾ ಸಾಹಿತ್ಯ ಎಂಬುದು ಪೂರಕ ಸಾಹಿತ್ಯ. ಇದೊಂಥರಾ ನಾಟಕಕ್ಕೆ ಹಾಡು ಬರೆದಂತೆ. ಯಾವುದೋ ಕಾರ್ಯಕ್ರಮಕ್ಕೆ ಸ್ವಾಗತಗೀತೆಯನ್ನು ಬರೆದಂತೆ. ಅದರ ಉದ್ದೇಶ ಅಷ್ಟಕ್ಕೇ ಸೀಮಿತವಾದದ್ದು. ನಾವು ಬರೆಯುವ ಸಾಹಿತ್ಯ ಸ್ವಂತದ ಸಾಹಿತ್ಯ. ಅಂದರೆ ಬದುಕಿನಕುರಿತಾದ ಸಾಹಿತ್ಯ.


ಪ್ರಶ್ನೆ : ಹೊಸ ಚಿತ್ರ ಸಾಹಿತಿಗಳ ಬಗ್ಗೆ ನಿಮ್ಮ ಅಭಿಪ್ರಾಯ. ಇತ್ತೀಚಿನ ಚಿತ್ರಗಳಲ್ಲಿ ಹೆಚ್ಚಿತ್ತಿರುವ ಅಶ್ಲೀಲ ಚಿತ್ರಗೀತೆಗಳ ಕುರಿತು ನೀವು ಏನು ಹೇಳಲು ಬಯಸುತ್ತೀರಿ?
ಎಲ್ಲ ಕಾಲದಲ್ಲಿಯೂ ಎಲ್ಲ ಕ್ಷೇತ್ರಗಳಲ್ಲಿಯೂ ಶೆ.20ರಷ್ಟು ಜೊಳ್ಳು ಇದ್ದೇ ಇರುತ್ತದೆ. ಅದೇ ರೀತಿ ಸಿನಿಮಾ ಲೋಕದಲ್ಲಿಯೂ ಕೂಡ ಶೆ.20ರಷ್ಟು ಜೊಳ್ಳು ಇದ್ದೇ ಇರುತ್ತವೆ. ಸಿನೆಮಾ ಸಾಹಿತ್ಯವನ್ನು ಹೊರತುಪಡಿಸಿ ಇತರ ಸಾಹಿತ್ಯಕ್ಕೆ ಬಂದರೆ ಅದರಲ್ಲಿಯೂ ನೂರಕ್ಕೆ ನೂರರಷ್ಟು ಉತ್ತಮ ಸಾಹಿತ್ಯ ಎಲ್ಲಿದೆ. ಕ್ರಿಕೆಟ್ ಆಟದಲ್ಲಿಯೂ ಶೇ.100ರಷ್ಟು ಶ್ರೇಷ್ಟವಾದುದು ಎಲ್ಲಿದೆ? ಪತ್ರಿಕೋದ್ಯಮದಲ್ಲಿ ಎಲ್ಲ ಶ್ರೇಷ್ಟ ಎಲ್ಲಿದೆ? ಅಂಗಡಿಯಲ್ಲಿ ಸಿಗುವ ಮಸಾಲೆದೋಸೆಯಲ್ಲಿಯೂ ಎಲ್ಲಾ ಶ್ರೇಷ್ಟವಾಗಿರುವುದಿಲ್ಲ. ಇವೆಲ್ಲದರಲ್ಲಿಯೂ ಶೆ.20ರಷ್ಟು ಕಳಪೆಯಾದದ್ದು ಹಾಗೂ ತೆಗೆದುಹಾಕಬಹುದಾದಂತಹವುಗಳು ಇದ್ದೇ ಇರುತ್ತವೆ. ಸಿನೆಮಾ ರಂಗ ಎನ್ನುವುದು ದೊಡ್ಡ ಉದ್ದಿಮೆ. ಹೀಗಾಗಿ ಇಲ್ಲಿಯೂ ಕೂಡ ಇಂತಹ ಜೊಳ್ಳುಗಳು ಇದ್ದೇ ಇರುತ್ತವೆ. ಕನ್ನಡ ಸಾಹಿತ್ಯವನ್ನು ಉದ್ಧಾರ ಮಾಡುತ್ತೇವೆ ಎಂದು ಯಾರೂ ಮಾಡುತ್ತಿಲ್ಲ. ದುಡ್ಡು ಮಾಡಬೇಕೆಂಬ ಕಾರಣಕ್ಕಾಗಿಯೇ ಎಲ್ಲರೂ ಮಾಡುತ್ತಿರುವುದು ಇದು. ಇದೊಂದು ಬ್ಯುಸಿನೆಸ್. ಅದರ ಉಪ ಉತ್ಪನ್ನಗಳಾಗಿ ಇಂಗತವುಗಳೆಲ್ಲ ಬರುತ್ತಿರುತ್ತವೆ. ಆದರೆ ಇಂತವುಗಳು ಬೇಗನೆ ಹೋಗುತ್ತವೆ. ಮನೆಯಲ್ಲಿ ಮಾಡಿದ ಗಂಜಿ ಅಥವಾ ಉಪ್ಪಿನಕಾಯಿಗಳು ಬಹಳ ಕಾಲ ಉಳಿಯುತ್ತವೆ. ಆದರೆ ರಸ್ತೆಯಲ್ಲಿ ಮಾಡಿದ ಭೇಲ್ಪುರಿಗಳನ್ನು ಪಾರ್ಸಲ್ ಮಾಡಿ ಮನೆಗೆ ತಂದು ಸ್ವಲ್ಪ ಲೇಟಾಗಿ ತಿಂದರೂ ಅದು ಸ್ವಾದ ಕಳೆದುಕೊಳ್ಳುತ್ತವೆ. ಇವೆಲ್ಲ ಭೇಲ್ಪುರಿ ತರಹದ ರಚನೆಗಳು. ಬೇಗನೆ ಉಳಿಯುವುದಿಲ್ಲ.


ಪ್ರಶ್ನೆ : ಹಿರಿಯ ಸಾಹಿತಿಗಳ ನಂತರ, ಇಂದಿನ ತಲೆಮಾರಿನ ಕವಿಗಳು ರಾಜ್ಯ ಮಟ್ಟದಲ್ಲಿ ಬೆಳೆಯುತ್ತಿಲ್ಲ ಎನ್ನುವ ಮಾತುಗಳಿದೆ. ಯಾವುದೇ ಜಿಲ್ಲೆಗಳಿಗೆ ಹೋಲಿಸಿದರೆ ಅಲ್ಲಿನ ಕವಿಗಳು ಅಲ್ಲಿಗಷ್ಟೇ ಸೀಮಿತರಾಗುತ್ತಿದ್ದಾರೆ. ಈ ಬಗ್ಗೆ ನಿಮ್ಮ ಅಭಿಪ್ರಾಯ.
ರಾಜ್ಯ ಮಟ್ಟ, ಜಿಲ್ಲಾ ಮಟ್ಟ ಇಂತಹದ್ದೆಲ್ಲ ಇಲ್ಲ. ಈ ಮಟ್ಟಗಳನ್ನೆಲ್ಲ ಮನುಷ್ಯರು ಮಾಡಿಕೊಂಡಿರುವುದು. ಒಮ್ಮೆ ವಿಷ್ಣು ನಾಯ್ಕ ಅವರು ನಮ್ಮ ಮನೆಗೆ ಬಂದಿದ್ದರು. ಅವರು ನಮ್ಮ ಗೋಕರ್ಣದ ಮನೆಗೆ ಬಂದಿದ್ದ ಸಂದರ್ಭದಲ್ಲಿ ತಂದೆಯವರ ಬಳಿ ನಾನೊಂದು ರಾಜ್ಯ ಮಟ್ಟದ ಸಾಹಿತ್ಯ ಕಾರ್ಯಕ್ರಮ ಮಾಡುತ್ತೇನೆ ಎಂದರು. ಆಗನ ನನ್ನ ತಂದೆ ಗೌರೀಶ ಕಾಯ್ಕಿಣಿಯವರು ಅಲ್ಲಿ ಇದ್ದ ನಿತ್ಯಪುಷ್ಪದ ಗಿಡವನ್ನು ತೋರಿಸಿ `ವಿಷ್ಣು ಇದು ಯಾವ ಮಟ್ಟದ್ದು..' ಎಂದು ಕೇಳಿದರು. ಏಕೆಂದರೆ ಆ ಗಿಡ ಇದ್ದಲ್ಲೇ ಇದ್ದು ವಿಶ್ವದ ಜೊತೆಗೆ ಸಂವಾದ ಮಾಡುತ್ತದೆ. ಹೋಬಳಿ ಮಟ್ಟ, ಆ ಮಟ್ಟ ಈ ಮಟ್ಟ ಎಲ್ಲ ರಾಜಕೀಯ ರಂಗಕ್ಕೆ ಸೇರಿದ್ದಷ್ಟೇ. ಸಾಹಿತ್ಯ ಇರುವುದು ಲೆಟರ್ಹೆಡ್ಡಿಗೆ, ವಿಸಿಟಿಂಗ್ ಕಾಡರ್ಿಗೆ, ಬಯೋಡೆಟಾಕ್ಕೆ ಇರುವ ವಿಷಯವಲ್ಲ. ಅದು ಜೀವನವನ್ನು ಅರ್ಥ ಮಾಡಿಕೊಳ್ಳಲು ಖಾಸಗಿಯಾಗಿ ನಡೆಯುವಂತದ್ದು. ಎಲ್ಲರ ಜೊತೆ ಸಂಬಂಧದಲ್ಲಿ ನಡೆಯುವಂತದ್ದು. ಅದರಲ್ಲಿ ಈ ರೀತಿಯ ಪಂಗಡಗಳೆಲ್ಲ ಇಲ್ಲ. ಒಳ್ಳೆಯ ಕವಿ ಒಳ್ಳೆಯ ಕವಿಯಷ್ಟೇ. ಅವನನ್ನು ರಾಜ್ಯದವರು ಗುರುತಿಸಬಹುದು ಅಥವಾ ದೇಶ ಮಟ್ಟದಲ್ಲಿ ಗುರುತಿಸಬಹುದು. ಅಥವಾ ಅವನ ಊರಿನವರು ಮಾತ್ರ ಗುರುತಿಸಬಹುದು. ನನಗೆ ಆ ಥರದ ಮಟ್ಟಗಳಲ್ಲಿ ನಂಬಿಕೆಯಿಲ್ಲ.

--------------

(ವಿಶ್ವವಾಣಿಗಾಗಿ ಮಾಡಿದ ಸಂದರ್ಶನ ಇದು. ಈ ಸಂದರ್ಶನವು ಸೆ.11ರ ಭಾನುವಾರದ ವಿಶ್ವವಾಣಿಯ ಸಂ-ಗಮ ಪುಟದಲ್ಲಿ ಪ್ರಕಟವಾಗಿದೆ)

Saturday, September 10, 2016

ಸಜ್ಜನರೊಡನೆ.. ಸಜ್ಜನಘಡದ ಕಡೆಗೆ-5

 
           ಸ್ವರ್ಗದಲ್ಲಿ ಇಂತಹ ಆಹಾರ ಇರಬಹುದೇನೋ ಎಂದುಕೊಂಡು ಸವಿದ ನಾವು ಶ್ರೀಧರ ಕುಟೀರದಿಂದ ಹೊರಕ್ಕೆ ಬಂದೆವು. ಶ್ರೀಧರ ಕುಟಿಯಿಂದ ನಾವು ಹೊರಟಿದ್ದು ಸಮರ್ಥ ರಾಮದಾಸರು ದೇವರಲ್ಲಿ ಐಕ್ಯರಾದ ಸ್ಥಳಕ್ಕೆ. ಅಲ್ಲೊಂದು ಸುಂದರ ದೇಗುಲ ನಿರ್ಮಾಣ ಮಾಡಲಾಗಿದೆ. ಪಕ್ಕದಲ್ಲಿಯೇ ಆಂಜನೇಯ ಸಮರ್ಥ ರಾಮದಾಸರ ಭಕ್ತಿಗೆ ಮೆಚ್ಚಿ ಬಾಣವನ್ನು ಹೂಡಿ ಗಂಗೆಯನ್ನು ಹರಿಸಿದ ಎಂಬ ಪ್ರತೀತಿಯನ್ನು ಹೊಂದಿರುವ ಚಿಲುಮೆ. ಅದನ್ನೆಲ್ಲ ನೋಡಿದೆವು.
            ಅದೇ ಸಮಯದಲ್ಲಿ ಪೂಜೆ ಆರಂಭವಾಗಿತ್ತು. ಪೂಜೆಯನ್ನು ವೀಕ್ಷಣೆ ಮಾಡಲು ಕುಳಿತೆವು. ಉಸಿರು ಕಟ್ಟುವಂತಹ ಕಿರಿದಾದ ಕೊಠಡಿ. ನೂರಾರು ಜನ ಸೇರಿದ್ದರು. ನಾವೂ ಹೋಗಿ ಕುಳಿತೆವು. ಬಗ್ಗಿ ಒಳಹೋದರೆ ಕಲ್ಲಿನ ಕುಟಿ. ಶಿವಾಜಿ ಮಹಾರಾಜರೇ ಕಟ್ಟಿಸಿದ್ದ ಗುಹೆ ಅದು. ಸಮರ್ಥ ರಾಮದಾಸರ ಸಮಾಧಿಗೆ ಅಲ್ಲಿ ಪೂಜೆ ನಡೆಯುತ್ತಿತ್ತು. ಚಿಕ್ಕ ಚಿಕ್ಕ ವಟುಗಳು ಶಾಸ್ತ್ರೋಕ್ತವಾಗಿ ಮಂತ್ರಗಳನ್ನು ಹೇಳುತ್ತಿದ್ದರೆ ಅಲ್ಲಿ ಹಾಕಿದ್ದ ಸಿಸಿಟಿವಿ ಅದನ್ನೆಲ್ಲ ಹೊರಗೆ ಬಿತ್ತರಿಸುತ್ತಿತ್ತು. ಜೊತೆಯಲ್ಲಿಯೇ ಜೈ ಜೈ ಸಮರ್ಥ ರಘುವೀರ ಎನ್ನುವ ಜಯಘೋಷ ಮೊಳಗುತ್ತಿತ್ತು. ನಾನು, ಪ್ರಶಾಂತ ಭಾವ ಹಾಗೂ ಸಂಜಯ ಅದೆಷ್ಟೋ ಅಮಯ ಕಣ್ಮುಚ್ಚಿ ಪ್ರಾರ್ಥನೆ ಮಾಡಿದೆವು. ಒಂದೋ, ಒಂದೂವರೆ ತಾಸೋ ಕಳೆದ ನಂತರ ಮಹಾ ಮಂಗಳಾರತಿ ಆರಂಭವಾಯಿತು. ಎಲ್ಲರೂ ಧನ್ಯರಾಗಿ ಅದನ್ನು ವೀಕ್ಷಣೆ ಮಾಡಿದೆವು. ಅದೇ ಸಂದರ್ಭದಲ್ಲಿ ಸದ್ಗುರು ಶ್ರೀಧರ ಸ್ವಾಮಿಗಳು ರಚಿಸಿದ ಕನ್ನಡ ಹಾಗೂ ಮರಾಠಿಯ ಭಜನೆ ವಾಚನವೂ ಆಯಿತು. ಪ್ರಸಾದ ಸ್ವೀಕರಿಸಿ ಹೊರ ಬಂದೆವು.
          ಸಮಾಧಿ ಮಂದಿರದ ಹೊರ ಬಂದರೆ ಸಣ್ಣಗೆ ಜಿಟಿ ಜಿಟಿ ಮಳೆ. ಮಳೆಯಲ್ಲಿಯೇ ಸಜ್ಜನಘಡದ ಗುಡ್ಡವನ್ನು ಸುತ್ತಲು ಹೊರಟೆವು. ಸಜ್ಜನಗಡದಲ್ಲೇ ಸಮರ್ಥ ರಾಮದಾಸರ ಸಮಾಧಿ ದೇಗುಲದ ಪಕ್ಕದಲ್ಲಿ ಮ್ಯೂಸಿಯಂ ಒಂದಿದೆ. ಅದರ ಒಳಹೊಕ್ಕೆವು. ಮ್ಯೂಸಿಯಮ್ಮಿನಲ್ಲಿ ಸಮರ್ಥ ರಾಮದಾಸರಿಗೆ ಮಾರುತಿ ಪ್ರತ್ಯಕ್ಷನಾಗಿ ನೀಡಿದ ಶ್ರೀರಾಮ ಧರಿಸುತ್ತಿದ್ದ ವಲ್ಕಲ ನೀಡಿದ್ದ ಎನ್ನುವ ಕುರುಹಾಗಿ ಸಂರಕ್ಷಿಸಿ ಇಡಲಾಗಿದ್ದ ನಾರು ಬಟ್ಟೆಯನ್ನು ನೋಡಿದೆವು.
            ಸಮರ್ಥ ರಾಮದಾಸರು ಆಧ್ಯಾತ್ಮಿಕ ಸಾಧನೆಗೆ ಬಳಸುತ್ತಿದ್ದ ವಸ್ತುಗಳು, ಶಿವಾಜಿ ಮಹಾರಾಜರು ಸಮರ್ಥ ರಾಮದಾಸರಿಗೆಂದೇ ನೀಡಿದ್ದ ಹಲವು ವಸ್ತುಗಳನ್ನೆಲ್ಲ ಅಲ್ಲಿ ಸಂಗ್ರಹಿಸಿ ಇಡಲಾಗಿತ್ತು. ಅದನ್ನೆಲ್ಲ ನೋಡಿದವು. ಹಳೆಯ ಭಾವಚಿತ್ರಗಳನ್ನು ಕಣ್ತುಂಬಿಕೊಂಡೆವು. ಸಮರ್ಥ ರಾಮದಾಸರ ಜೊತೆ ಮಾತನಾಡುತ್ತಿದ್ದ ಶಿವಾಜಿ ಮಹಾರಾಜರ ಚಿತ್ರವನ್ನು ಯಾವುದೋ ಕಲಾವಿದ ಬಿಡಿಸಿದ್ದ. ಅದನ್ನೂ ನೋಡಿದೆವು. ನಂತರ ಹೊರ ಬಂದವರೇ ಸೀದಾ ನಮ್ಮ ವಸತಿಗೃಹವನ್ನು ಹೊಕ್ಕು ಕೆಲಕಾಲ ವಿಶ್ರಾಂತಿ ಮಾಡಿದೆವು.
            ಪ್ರಶಾಂತ ಭಾವ ಒತ್ತಾಯಿಸಿದ. ನಾನು ಸಂಜಯ ಎದ್ದೆವು. ವಸತಿ ಗೃಹದ ಹಿಂಭಾಗದಲ್ಲಿ ಕಣ್ಣುಹಾಯಿಸಿದವರಿಗೆ ಉರ್ಮುಡಿ ನದಿಗೆ ಕಟ್ಟಿದ್ದ ಅಣೆಕಟ್ಟಿನ ವಿಹಂಗಮ ದೃಶ್ಯ ಕಣ್ಣಿಗೆ ಕಾಣುತ್ತಿತ್ತು. ಪಡುವಣ ಮೋಡದ ಸಾಲು ಗುಂಪು ಗುಂಪಾಗಿ ಬಂದು ಮಾಲೆ ಮಾಲೆಯಾಗಿ ಹನಿಮಳೆಯನ್ನು ಸುರಿಸುತ್ತಿತ್ತು. ಇದರಿಂದಾಗಿ ಮಂಜಿನ ಪರದೆ ಸರಿದಂತೆ ಕಾಣಿಸುತ್ತಿತ್ತು. ಅಲ್ಲೊಂದಷ್ಟು ಸೆಲ್ಫಿ ಕ್ಲಿಕ್ಕಿಸಿಕೊಂಡೆವು.
             ನಂತರ ಅಲ್ಲಿಂದ ಹೊರಟು ಸೀದಾ ಸಜ್ಜನಘಡದ ಇನ್ನೊಂದು ತುದಿಯತ್ತ ತೆರಳಿದೆವು. ಯಾರೋ ಖಡ್ಗದಿಂದ ಕಡಿದು ತುಂಡರಿಸಿದ್ದಾರೇನೋ ಎಂಬಂತೆ ಸಜ್ಜನ ಗಡ ಅಲ್ಲಿ ಕೊನೆಯಾಗಿತ್ತು. ಕೆಳಗೆ ಆಳದ ಪ್ರಪಾತದಂತಹ ಪ್ರದೇಶ. ಆ ಆಳದಿಂದ ಬೀಸಿ ಬರುವ ರಭಸದ ಗಾಳಿ. ನಾವು ಆ ತುದಿಗೆ ಹೋಗಿ ನಿಂತಾಗ ಬೀಸಿ ಬಂದ ಗಾಳಿ ನಮ್ಮನ್ನು ನಾಲ್ಕು ಹೆಜ್ಜೆ ಹಿಂದಕ್ಕೆ ತಳ್ಳಿತು. ಅಲ್ಲೊಂದಿಷ್ಟು ಪೋಟೋಗಳನ್ನು ಕ್ಲಿಕ್ಕಿಸಿದೆವು. ಸಂಜಯ ಒಂದಿಷ್ಟು ವೀಡಿಯೋಗಳನ್ನು ಮಾಡಿಕೊಂಡ. ಸಜ್ಜನಘಡ ಧಾರ್ಮಿಕ ಕ್ಷೇತ್ರವಾಗಿದ್ದರೂ ಅಲ್ಲಿನ ನಿಸರ್ಗ ಸೌಂದರ್ಯದಿಂದಾಗಿ ಅದೆಷ್ಟೋ ಪ್ರೇಮಿಗಳು ಸಜ್ಜನಘಡಕ್ಕೆ ಆಗಮಿಸಿದ್ದವು. ಅದೆಷ್ಟೋ ಜೋಡಿ ಹಕ್ಕಿಗಳೂ ಕೂಡ ಪೋಟೋ ತೆಗೆಸಿಕೊಳ್ಳುವುದರಲ್ಲಿ ನಿರತರಾಗಿದ್ದವು. ನಾನು, ಸಂಜಯ ಹಾಗೂ ಪ್ರಶಾಂತ ಭಾವ ಲುಂಗಿಧಾರಿಗಳಾಗಿದ್ದೆವು. ನಮ್ಮನ್ನು ಬೇರೆ ಯಾವುದೋ ಗ್ರಹದಿಂದ ಬಂದಿದ್ದಾರೆ ಎಂಬಂತೆ ನೋಡುತ್ತಿದ್ದರು. ಒಂದಿಷ್ಟು ಜನರು ನಮ್ಮನ್ನು ನೋಡಿ `ಮಲೆಯಾಳಿಗಳು' ಎಂದೂ ಹೇಳುತ್ತಿದ್ದು ಕಿವಿಗೆ ಕೇಳುತ್ತಿತ್ತು.
             ಸೀದಾ ಮುಂದಕ್ಕೆ ಸಾಗಿದೆವು. ಅಲ್ಲೊಂದಷ್ಟು ಕಡೆ ಘಡದ ತುದಿಗೆ ಕಲ್ಲಿನ ಗೋಡೆ ಕಟ್ಟಲಾಗಿತ್ತು. ಶಿವಾಜಿ ಮಹಾರಾಜರು ಕಟ್ಟಿಸಿದ್ದೇ ಇರಬೇಕು. ಗೋಡೆ ಶಿಥಿಲವಾಗಿತ್ತು. ಅದೆಷ್ಟು ಜನ ಆ ಕಲ್ಲಿನ ಮೇಲೆ ಹತ್ತಿಳಿದಿದ್ದರೋ. ಥೇಟು ನಮ್ಮೂರಿನಲ್ಲಿ ಇದ್ದಂತೆ ಆ ಕಲ್ಲುಗಳ ಮೇಲೂ ಅಕ್ಷರಸ್ಥರ ಕೈಚಳಕ ಸಾಗಿತ್ತು. ........ ವೆಡ್ಸ್......... ಎಂದೋ.. ......ಲವ್ಸ್.. ಎಂದೋ ಬರೆದಿದ್ದವು. ಎಲ್ಲೋದ್ರೂ ಇವರ ಬುದ್ದಿ ಹಿಂಗೇ... ಎಂದುಕೊಂಡೆ.
         ಕೊನೆಯಲ್ಲೊಂದು ಆಂಜನೇಯನ ದೇವಸ್ಥಾನ. ಆ ದೇವಸ್ಥಾನಕ್ಕೆ ತೆರಳಿ ಹನುಮನಿಗೆ ಶಿರಬಾಗಿದೆವು. ಹೊರಬಂದ ಕೂಡಲೇ ನಮ್ಮ ಕಣ್ಣ ಸೆಳೆದ ದೃಶ್ಯ ಆಹ್ ವರ್ಣಿಸಲಸದಳ. ಒಂದೆಡೆ ಉರ್ಮುಡಿ ನದಿಯ ಅಣೆಕಟ್ಟೆ. ಇನ್ನೊಂದು ಕಡೆಯಲ್ಲಿ ದೂರದಲ್ಲಿ ಕಾಅಣುತ್ತಿದ್ದ ಗಾಳಿಯ ಪಂಖಗಳು. ಹೆಬ್ಬಾವು ಹರಿದು ಹೋದಂತೆ ಕಾಣುತ್ತಿದ್ದ ರಸ್ತೆ. ಅದರಲ್ಲಿ ಸಾಗುತ್ತಿದ್ದ ವಾಹನಗಳು. ಇರುವೆಯಂತೆ ಕಾಣುತ್ತಿದ್ದವು. ಸಂಜಯ ಸಜ್ಜನ ಗಡದ ತುತ್ತ ತುದಿಗೆ ಹೋದ. ಅಲ್ಲಿ ಕೆಲ ಜಾಗ ಮುಂಚಾಚಿಕೊಂಡಿತ್ತು. ಅಲ್ಲಿ ನಿಂತವನು ತನ್ನೆರಡೂ ಕೈಗಳನ್ನು ಪಕ್ಷಿಯಂತೆ ಚಾಚಿದ. ದೂರದಿಂದ ನೋಡಿದರೆ ರಿಯೋಡಿ ಜನೈರೋದ ಗುಡ್ಡದ ಮೇಲೆ ನಿಲ್ಲಿಸಿದ್ದ ಏಸು ಕ್ರಿಸ್ತನ ಪ್ರತಿಮೆಯಂತೆ ಭಾಸವಾಗುತ್ತಿತ್ತು. ನಿಂತವನೇ ದೊಡ್ಡದಾಗಿ ಸಜ್ಜನಘಡವನ್ನೂ, ಶಿವಾಜಿ ಮಹಾರಾಜರನ್ನೂ ನೆನಪುಮಾಡಿಕೊಳ್ಳತೊಡಗಿದ. ನಾನು ವೀಡಿಯೋ ಮಾಡಿಕೊಂಡೆ. ನನ್ನ ಹಿಂದೆ ನಿಂತಿದ್ದ ಅದೆಷ್ಟೋ ಪ್ರವಾಸಿಗರು ಬೆಪ್ಪಾಗಿ ನಮ್ಮಿಬ್ಬರನ್ನು ನೋಡಲು ಆರಂಭಿಸಿದ್ದರು.

(ಮುಂದುವರಿಯುತ್ತದೆ)